Homeಕರ್ನಾಟಕಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

- Advertisement -
- Advertisement -

“ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ರಾಜ್ಯಸಭೆಯಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹಲವರು ಕಿಡಿಕಾರಿದ್ದಾರೆ.

ಅಂಬೇಡ್ಕರ್ ವಿರುದ್ಧದ ಹೇಳಿಕೆ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ, ಕೇಂದ್ರ ಗೃಹ ಸಚಿವರಿಗೆ ತಿರುಗೇಟು ನೀಡಿದ್ದಾರೆ.

ಈ  ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್‌ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು” ಎಂದು ಹೇಳಿದ್ದಾರೆ.

“ಅಮಿತ್ ಶಹಾ ಅವರೇ, ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ” ಎಂದು ಸವಾಲು ಹಾಕಿದ್ದಾರೆ.

“ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ, ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ” ಎಂದು ಕಿಡಿಕಾರಿದ್ದಾರೆ.

“ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ. ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ” ಎಂದು ಸಿಎಂ ಹೇಳಿದ್ದಾರೆ.

“ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ” ಎಂದಿದ್ದಾರೆ.

“ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಯಾಕೆ ತಿರಸ್ಕರಿಸಿತ್ತು? ಆರ್‌ಎಸ್‌ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು. ಆದರೆ, ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಡಾ. ಎಚ್‌.ಸಿ. ಮಹದೇವಪ್ಪ ಆಗ್ರಹ

“ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ” ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌ಸಿ ಮಹದೇವಪ್ಪ ಆಗ್ರಹಿಸಿದ್ದಾರೆ.

“ಅಂಬೇಡ್ಕರ್ ಅವರ ಹೆಸರನ್ನು ಪದೇಪದೆ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದವರೆಗೆ ಸ್ವರ್ಗ ಸಿಗುತ್ತಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದಿದ್ದಾರೆ.

“ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ ಮಾಡಿದ ಉದಾಹರಣೆ ಇಲ್ಲ.
ಆದರೆ, ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತರ ಬದುಕನ್ನು ತನ್ನ ತ್ಯಾಗ, ಅಧ್ಯಯನ, ಬದ್ಧತೆ ಮತ್ತು ಮಹಾಲೋಕದೃಷ್ಟಿಯ ಮೂಲಕ ಪ್ರತಿದಿನವೂ ರಕ್ಷಣೆ ಮಾಡುತ್ತಿರುವ ನಿಜವಾದ ಶಕ್ತಿ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರು ಮತ್ತವರ ಸಂವಿಧಾನ ಎಂಬುದನ್ನು ನಾನು ಎದೆ ತಟ್ಟಿಕೊಂಡು ಹೇಳುತ್ತೇನೆ.
ಭಾರತದ ಸಂದರ್ಭದಲ್ಲಿ ಅಸ್ಪೃಶ್ಯತೆ ಅನುಭವಿಸಿದ ನಮ್ಮ ಜನರು, ಇಲ್ಲಿನ ಮಹಿಳೆಯರು ಮತ್ತು ಶೋಷಿತ ವರ್ಗಗಳು ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಅವರೆಲ್ಲರೂ ದೇವರ ಪಾದ ಸೇರಬೇಕಾಗಿತ್ತು” ಎಂದು ಹೇಳಿದ್ದಾರೆ.

“ಹೀಗಾಗಿ ಪುಣ್ಯಗಿಣ್ಯ ಎಂದು ಹೇಳುತ್ತಾ ಸಮಾಜಕ್ಕೆ ಕಂಟಕಪ್ರಾಯವಾದ ಮೌಢ್ಯತೆಯನ್ನು ಆಚರಿಸುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಈ ಮೂಲಕ ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

“ಜೊತೆಗೆ ಯಾವ ಧರ್ಮ ಅಥವಾ ದೇವರು ನಮ್ಮನ್ನು ರಕ್ಷಣೆ ಮಾಡುವುದಿಲ್ಲ, ಬದಲಿಗೆ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವೇ ನಮ್ಮ ಬದುಕನ್ನು ಬದಲಿಸುವ ಕೀಲಿಕೈ ಎಂಬ ಬಾಬಾ ಸಾಹೇಬರ ಮಾತನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇನೆ” ಎಂದು ಅಮಿತ್ ಶಾ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...