ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ.
ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ ನೇತೃತ್ವವನ್ನು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ವಹಿಸಲಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಮೇ 24, 2026ರಂದು ಬೆಂಗಳೂರಿನ ಟೌನ್ ಹಾಲ್ ಬಳಿ ಪಕ್ಷದ ವತಿಯಿಂದ ಮೊದಲ ಬಹಿರಂಗ ಮಾನವ ಸರಪಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಬೆಂಗಳೂರು ಪೊಲೀಸರು ಈ ಕಾರ್ಯಕ್ರಮಕ್ಕೆ ಕಾನೂನುಬದ್ಧ ಅನುಮತಿ ನಿರಾಕರಿಸಿದ್ದರಿಂದ ಅದು ಯಶಸ್ವಿಯಾಗಿಲ್ಲ.
ನಿರುದ್ಯೋಗ ಮತ್ತು ಬೆಲೆ ಏರಿಕೆ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ರಚಿಸಲು ಕರೆ ನೀಡಲಾಗಿತ್ತು. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸೂಕ್ತ ಅನುಮತಿ ಇಲ್ಲದ ಕಾರಣಕ್ಕಾಗಿ ಬೆಂಗಳೂರು ನಗರ ಪೊಲೀಸರು ಈ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿದ್ದರು.
ದೇಶದಲ್ಲಿ ಇತ್ತೀಚೆಗೆ ನಡೆದ ನೀಟ್ ಮತ್ತು ಸಿಬಿಎಸ್ಸಿ ಪರೀಕ್ಷೆಗಳ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುವುದು ಈ ಪ್ರತಿಭಟನೆಯ ಪ್ರಮುಖ ಉದ್ದೇಶವಾಗಿದೆ ಎಂದು ಸಿಜೆಪಿಯ ವಕ್ತಾರರು ಹೇಳಿಕೊಂಡಿದ್ದಾರೆ.
ಜೂನ್ 6ರಂದು ಅಭಿಜಿತ್ ದೀಪ್ಕೆ ಭಾರತಕ್ಕೆ
ಜೂನ್ 6, 2026ರ ಶನಿವಾರ ಬೆಳಿಗ್ಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಬೋಸ್ಟನ್ನಿಂದ ನೇರವಾಗಿ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅವರು ಪ್ರಸ್ತುತ ಅಮೆರಿಕದ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ತಮ್ಮನ್ನು ಬರಮಾಡಿಕೊಳ್ಳಲು ಮತ್ತು ಚಳುವಳಿಗೆ ಬೆಂಬಲ ನೀಡಲು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಬೆಂಬಲಿಗರು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು ಎಂದು ಅವರು ಸೋಶಿಯಲ್ ಮೀಡಿಯಾ ಮೂಲಕ ಕರೆ ನೀಡಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಬಲಿಗರೊಂದಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ, ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅಧಿಕೃತ ಅನುಮತಿ ಕೋರಲಿದ್ದಾರೆ ಎಂದು ವರದಿಯಾಗಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂಬುವುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿದೆ. ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಹಮ್ಮಿಕೊಂಡಿರುವ ಆನ್ಲೈನ್ ಅರ್ಜಿಗೆ ಈಗಾಗಲೇ 8 ಲಕ್ಷಕ್ಕೂ ಹೆಚ್ಚು ಜನರು ಸಹಿ ಹಾಕಿದ್ದಾರೆ.
ಅಭಿಜೀತ್ ದೀಪ್ಕೆ ಭಾರತಕ್ಕೆ ಕಾಲಿಡುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸುವ ಅಥವಾ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ಅವರ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಜೀತ್, “ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಮತ್ತು ಸಂವಿಧಾನ ನೀಡಿರುವ ಹಕ್ಕಿನ ಅಡಿಯಲ್ಲಿ ಶಾಂತಿಯುತವಾಗಿ ಧ್ವನಿ ಎತ್ತಲು ನಾನು ಸಿದ್ಧನಾಗಿದ್ದೇನೆ, ಅಗತ್ಯಬಿದ್ದರೆ ದೆಹಲಿಯಲ್ಲಿ ಬಂಧನಕ್ಕೊಳಗಾಗಲೂ ನಾನು ಸಿದ್ಧ” ಎಂದು ಇಂಟರ್ವ್ಯೂಗಳಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಿಜೆಪಿ ವಕ್ತಾರರಿಂದ ಮೊದಲ ಸುದ್ದಿಗೋಷ್ಠಿ
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಚೊಚ್ಚಲ ಅಧಿಕೃತ ಸುದ್ದಿಗೋಷ್ಠಿಯನ್ನು ಜೂನ್ 3, 2026 ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಯಶಸ್ವಿಯಾಗಿ ನಡೆಸಿದೆ. ಪಕ್ಷದ ನೂತನ ವಕ್ತಾರರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಮುಂಬರುವ ಜೂನ್ 6ರ ಬೃಹತ್ ಪ್ರತಿಭಟನೆಯ ಸಂಪೂರ್ಣ ಕ್ರಿಯಾ ಯೋಜನೆಯನ್ನು ಪ್ರಕಟಿಸಿದ್ದಾರೆ.
ಪ್ರಮುಖ ತನಿಖಾ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸೌರವ್ ದಾಸ್ ಸಿಜೆಪಿಯ ಮುಖ್ಯ ವಕ್ತರನಾಗಿ ನೇಮಕಗೊಂಡಿದ್ದಾರೆ. ರಾಜಕೀಯ ಸಂಶೋಧಕಿ ಮತ್ತು ಚಲನಚಿತ್ರ ನಿರ್ಮಾಪಕಿ ವಿಜೇತಾ ದಹಿಯಾ, ಮಾಜಿ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಅಶುತೋಷ್ ರಾಂಕಾ ಪಕ್ಷದ ಇನ್ನಿಬ್ಬರು ವಕ್ತಾರರು.
ದೇಶದಲ್ಲಿ ನೀಟ್-ಯುಜಿ, ಸಿಬಿಎಸ್ಸಿ ಮತ್ತು ಸಿಯುಇಟಿ ಪರೀಕ್ಷೆಗಳಲ್ಲಿ ನಡೆದಿರುವ ಸರಣಿ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಗಳ ಸಂಪೂರ್ಣ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸೌರವ್ ದಾಸ್ ಒತ್ತಾಯಿಸಿದ್ದಾರೆ.
ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಜೂನ್ 6ರ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಮೆರಿಕದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಅವರು ನೇರವಾಗಿ ಬೆಂಬಲಿಗರೊಂದಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಜಂತರ್ ಮಂತರ್ ಪ್ರತಿಭಟನೆಗೆ ಕಾನೂನುಬದ್ಧ ಅನುಮತಿ ಕೋರಲಿದ್ದಾರೆ ಎಂದಿದ್ದಾರೆ.
ಪ್ರಖ್ಯಾತ ಶಿಕ್ಷಣ ಸುಧಾರಕ ಮತ್ತು ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಜೂನ್ 6ರಂದು ದೆಹಲಿಯಲ್ಲಿ ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಕ್ತಾರರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.
ಈ ಹೋರಾಟವು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷದ ಬ್ಯಾನರ್ ಅಡಿಯಲ್ಲಿ ಸೀಮಿತವಾಗಿಲ್ಲ. ದೇಶದ ಯುವಕರ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಹಾಗೂ ನಾಗರಿಕರು ಪಕ್ಷಾತೀತವಾಗಿ ಈ ಪ್ರತಿಭಟನೆಯಲ್ಲಿ ಕೈಜೋಡಿಸಬೇಕೆಂದು ಸಿಜೆಪಿ ವಿನಂತಿಸಿದೆ.
“ಭ್ರಷ್ಟತೆಯಿಂದ ಸಂಪೂರ್ಣವಾಗಿ ಕೊಳೆತುಹೋಗಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಕನಿಷ್ಠ ಹೊಣೆಗಾರಿಕೆಯನ್ನು ಸರ್ಕಾರದಿಂದ ನಿರೀಕ್ಷಿಸುತ್ತಿದ್ದೇವೆ. ಭಾರತದ ರಾಜಕೀಯ ಚರ್ಚೆಯ ಸ್ವರೂಪವನ್ನೇ ಬದಲಾಯಿಸಲು ನಮ್ಮ ಹೊಸ ಪೀಳಿಗೆಯ ನಾಯಕರು ಸಜ್ಜಾಗಿದ್ದಾರೆ” ಎಂದು ಮುಖ್ಯ ವಕ್ತಾರ ಸೌರವ್ ದಾಸ್ ಸುದ್ದಿಗೋಷ್ಠಿಯಲ್ಲಿ ತೀಕ್ಷ್ಣವಾಗಿ ಹೇಳಿದ್ದಾರೆ.
ನಮಗೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮಾತ್ರ ಮುಖ್ಯವಲ್ಲ. ಈ ಭ್ರಷ್ಟ ವ್ಯವಸ್ಥೆ ಸರಿಯಾಗಬೇಕು. ಪೇಪರ್ ಲೀಕ್ ಆಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾದರೂ , ಪ್ರತಿಕ್ರಿಯಿಸದೆ ಮೌನ ಪಾಲಿಸುವ ಈ ಪದ್ದತಿ ಬದಲಾಗಬೇಕು. ಇಷ್ಟು ದೊಡ್ಡ ವಿಷಯವನ್ನು ಗಂಭೀರವಾಗಿ ಪರಿಗಣಿಸದ ವ್ಯವಸ್ಥೆ ಬದಲಾಗಬೇಕು ಎಂದಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಒಂದು ರಾಜಕೀಯ ಪಕ್ಷವಲ್ಲ. ಇದು ಯುವಜನತೆಯ ಒಂದು ಆಂದೋಲನ ಅಥವಾ ಚಳುವಳಿ ಎಂದು ಸೌರವ್ ದಾಸ್ ಸ್ಪಷ್ಟಪಡಿಸಿದ್ದಾರೆ.


