ರಾಮನವಮಿ ಮೆರವಣಿಗೆಯ ವೇಳೆ ಬಿಹಾರದ ರೋಹ್ತಾಸ್ ಮತ್ತು ನಳಂದಾ ಜಿಲ್ಲೆಗಳಲ್ಲಿ ನಡೆದ ಹಿಂದೂ-ಮುಸ್ಲಿಂ ಸಮುದಾಯಗಳ ಕೋಮು ಸಂಘರ್ಷ ಇನ್ನೂ ಮುಂದುವರೆದಿದೆ. ಶನಿವಾರ ಸಂಜೆ ಬಾಂಬ್ ಸ್ಫೋಟ ನಡೆದಿದ್ದು, ಮತ್ತೊಮ್ಮೆ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ.
ನಳಂದದ ಬಿಹಾರ್ಶರೀಫ್ನಲ್ಲಿ, ನಿನ್ನೆ ಸಂಜೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದರೆ, ರೋಹ್ತಾಸ್ ಜಿಲ್ಲೆಯ ಸಸಾರಾಮ್ ಪಟ್ಟಣದಲ್ಲಿ ನಡೆದ ಸ್ಫೋಟದಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಸಸಾರಾಮ್ನ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳದಿಂದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಸಾರಾಮ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಬಗ್ಗೆ ಮಾತನಾಡಿರುವ ಸಸಾರಾಮ್ ಜಿಲ್ಲಾಧಿಕಾರಿ ಧರ್ಮೇಂದ್ರ ಕುಮಾರ್, ”ಸಸರಾಮ್ ಪಟ್ಟಣದಲ್ಲಿ ಶನಿವಾರ ಬಾಂಬ್ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಬಿಎಚ್ಯು ಆಸ್ಪತ್ರೆಗೆ ಸೇರಿಸಲಾಗಿದೆ. ನಾವು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.
”ಈ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ” ಎಂದು ಅವರು ಹೇಳಿದರು.
”ಗುಡಿಸಲೊಂದರಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಸ್ಕೂಟಿ ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಮೇಲ್ನೋಟಕ್ಕೆ ಇದು ಕೋಮು ಹಿನ್ನೆಲೆಯದ್ದಲ್ಲ ಎಂದು ಗೊತ್ತಾಗಿದೆ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಬಿಹಾರ: ರಾಮನವಮಿ ಮೆರವಣಿಗೆ ವೇಳೆ ಕೋಮು ಉದ್ವಿಗ್ನತೆ; 13 ಜನರಿಗೆ ಗಾಯ
ಹಿಂಸಾಚಾರದ ಹಿನ್ನೆಲೆಯಲ್ಲಿ ಸಸಾರಾಮ್ನಲ್ಲಿ ಶನಿವಾರ ಪೊಲೀಸ್ ತಂಡ, ವಿಶೇಷ ಕಾರ್ಯ ಪಡೆ (ಎಸ್ಟಿಎಫ್), ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಜಂಟಿ ಪಥಸಂಚಲನ ನಡೆಸಿದ್ದವು.
ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಳಂದಾದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಶುಕ್ರವಾರ ಎರಡು ಜಿಲ್ಲೆಗಳಲ್ಲಿ ಮೊದಲ ಬಾರಿಗೆ ಘರ್ಷಣೆಯ ವರದಿಯಾಗಿದೆ.
ರಾಮನವಮಿ ಮೆರವಣಿಗೆ ನಡೆಸುವ ವಿಚಾರದಲ್ಲಿ ಗುರುವಾರದಿಂದ ಉದ್ವಿಗ್ನತೆ ಉಂಟಾಗಿತ್ತು. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ, ಉದ್ವಿಗ್ನತೆಯು ಪೂರ್ಣ ಪ್ರಮಾಣದ ಘರ್ಷಣೆಗೆ ತಿರುಗಿತು, ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದವು.
ಈಗಾಗಲೇ ಕನಿಷ್ಠ 80 ಜನರನ್ನು ಬಂಧಿಸಲಾಗಿದೆ ಮತ್ತು ಶಾಂತಿ ಕಾಪಾಡಲು ಸಮುದಾಯದ ಮುಖಂಡರೊಂದಿಗೆ ಸಭೆಗಳನ್ನು ಆಯೋಜಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಳಂದಾ ಮತ್ತು ರೋಹ್ತಾಸ್ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮುಖಾಂ ಹೂಡಿದ್ದಾರೆ. ಯಾವುದೇ ಸುಳ್ಳು ಅಥವಾ ಪ್ರಚೋದನಕಾರಿ ಸುದ್ದಿ ಹರಡುವುದನ್ನು ತಡೆಯಲು ಸಾಮಾಜಿಕ ಮಾಧ್ಯಮವನ್ನು ಸಹ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಈ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ, ”ಸಸಾರಾಮ್ ಮತ್ತು ಬಿಹಾರ್ಷರೀಫ್ನಲ್ಲಿ ಕೋಮು ಉದ್ವಿಗ್ನತೆ ಉಂಟುಮಾಡಲು ಕೆಲವರು “ಗಡ್ಬದ್” (ಕಿಡಿಗೇಡಿತನ)ದಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು.
”ರಾಮನವಮಿ ಹಬ್ಬದ ಸಂದರ್ಭದಲ್ಲಿ ಸಸಾರಾಮ್ ಮತ್ತು ಬಿಹಾರ ಷರೀಫ್ನಲ್ಲಿ ಕೋಮು ಉದ್ವಿಗ್ನತೆ ಉಂಟಾಗಿರುವುದು ಗೊಂದಲವನ್ನು ಉಂಟುಮಾಡುತ್ತಿವೆ. ಇಂತಹ ಘಟನೆಗಳು ಈ ಪ್ರದೇಶದಲ್ಲಿ ಹಿಂದೆಂದೂ ಸಂಭವಿಸಿರಲಿಲ್ಲ, ಇದೇ ಮೊದಲ ಬಾರಿಗೆ ನಡೆದಿದೆ” ಎಂದು ಸಸಾರಾಮ್ ಜಿಲ್ಲಾಧಿಕಾರಿ ಧರ್ಮೇಂದ್ರ ಕುಮಾರ್ ಹೇಳಿದರು.
ದುಷ್ಕೃತ್ಯ ಎಸಗುವವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.