Homeಮುಖಪುಟಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ...

ಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ ಆಗ್ರಹ

- Advertisement -
- Advertisement -

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಪ್ರಶ್ನೆ ಕೇಳಿದ್ದಕ್ಕೆ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ, ಸಾಮಾಜಿಕ ಮಾಧ್ಯಮ ಪ್ರಭಾವಿ ಅಪೂರ್ವ ಮಖಿಜಾ, ಹಾಸ್ಯನಟ ಸಮಯ್ ರೈನಾ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಔಪಚಾರಿಕ ದೂರು ದಾಖಲಾಗಿದ್ದು, ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ತನಿಖೆ ನಡೆಯುತ್ತಿದೆ” ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಮುಂಬೈ ಪೊಲೀಸ್ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ದೂರಿನಲ್ಲಿ, ಕಾರ್ಯಕ್ರಮದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

‘ಬೀರ್ ಬೈಸೆಪ್ಸ್’ ಎಂದೇ ಹೆಸರು ಗಳಿಸಿರುವ ಪಾಡ್‌ಕಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ, ಕಾರ್ಯಕ್ರಮದ ಇಡೀ ತಂಡದ ವಿರುದ್ದ ದೂರು ದಾಖಲಾಗಿದೆ.

ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಯನ್ನು ಪಡೆದ ಆನ್‌ಲೈನ್ ಕಂಟೆಂಟ್ ಕ್ರಿಯೇಟರ್‌ಗಳಲ್ಲಿ ಅಲ್ಲಾಬಾದಿಯಾ ಕೂಡ ಒಬ್ಬರು. ಈ ಹಿಂದೆ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನೊಂದಿಗೆ ಒಪ್ಪಂದ ಮಾಡಿಕೊಂಡು ಅಲ್ಲಾಬಾದಿಯಾ ಅವರು ಕೇಂದ್ರ ಸಂಪುಟ ಸಚಿವರ ಸರಣಿಯ ಸಂದರ್ಶನಗಳನ್ನು ನಡೆಸಿದ್ದರು.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ಅಲ್ಲಾಬಾದಿಯಾ “ನಿನ್ನ ಪೋಷಕರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಾ ಇರುತ್ತೀಯಾ? ಇಲ್ಲ ಒಮ್ಮೆ ಅದರಲ್ಲಿ ಭಾಗವಹಿಸಿ ಶಾಶ್ವತವಾಗಿ ನಿಲ್ಲಿಸುತ್ತೀಯಾ?” ಎಂದು ಮಹಿಳಾ ಸ್ಪರ್ಧಿಯೊಬ್ಬರಿಗೆ ಕೇಳಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ತಮ್ಮ ಖಾಸಗಿ ಭಾಗದ ಉದ್ದ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಜೋಕ್‌ ಮಾಡಿದ್ದಾರೆ. 

ಪೋಷಕರು, ಲೈಂಗಿಕತೆಯ ವಿಷಯವನ್ನು ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅಲ್ಲಾಬಾದಿಯ ಟೀಕೆಗೆ ಗುರಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ ಬಲಪಂಥೀಯ ವಿಚಾರಧಾರೆಗಳನ್ನು ಪ್ರಚಾರ ಮಾಡುವ ರಣವೀರ್ ಅಲ್ಲಾಬಾದಿಯ, ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿದ್ದಾರೆ.  

ಆನ್‌ಲೈನ್ ಪ್ರಸಾರದ ಮೂಲಕ ಜನಪ್ರಿಯತೆ ಮತ್ತು ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಕಾರ್ಯಕ್ರಮದ ಆಯೋಜಕರು ಮತ್ತು ಭಾಗವಹಿಸುವವರು ಉದ್ದೇಶಪೂರ್ವಕವಾಗಿ ಮಹಿಳೆಯರ ಖಾಸಗಿ ಭಾಗಗಳ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಜಾಗತಿಕವಾಗಿ ಪ್ರಸಾರವಾದ ಈ ಕಾರ್ಯಕ್ರಮ ಅಲ್ಲಾಬಾದಿಯ ಮಹಿಳೆಯರನ್ನು ಗುರಿಯಾಗಿಸಿ ನಗುವುದು ಮತ್ತು ಅನುಚಿತ ಹಾಸ್ಯಗಳನ್ನು ಮಾಡುವುದನ್ನು ಒಳಗೊಂಡಿದೆ. ಇದನ್ನು ದೂರುದಾರರು ಗಂಭೀರ ಅಪರಾಧ ಎಂದು ಹೇಳಿದ್ದಾರೆ.

ಕುಟುಂಬದ ವಿಷಯದಲ್ಲಿ ನಾನು ಎಂದಿಗೂ ಅಗೌರವ ತೋರುವುದಿಲ್ಲ: ಅಲ್ಲಾಬಾದಿಯಾ

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಅಲ್ಲಾಬಾದಿಯಾ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತನ್ನ ಹೇಳಿಕೆ ಅನುಚಿತ ಮತ್ತು ಸೂಕ್ಷ್ಮತೆಯ ಕೊರತೆಯನ್ನು ಹೊಂದಿದ್ದವು ಎಂದು ಒಪ್ಪಿಕೊಂಡಿದ್ದಾರೆ.

“ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಆ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಕ್ಷಮಿಸಿ” ಎಂದು ಅಲ್ಲಾಬಾದಿಯಾ ವಿಡಿಯೋದಲ್ಲಿ ಹೇಳಿದ್ದಾರೆ. “ನನ್ನ ಹೇಳಿಕೆ ಕೇವಲ ಅನುಚಿತವಾಗಿರಲಿಲ್ಲ, ಅದು ತಮಾಷೆಯೂ ಆಗಿರಲಿಲ್ಲ. ಹಾಸ್ಯ ನನ್ನ ಸಾಮರ್ಥ್ಯವಲ್ಲ. ವೈಯಕ್ತಿಕವಾಗಿ ನಾನು ನಿರ್ಣಯಿಸುವಲ್ಲಿ ಒಂದು ಲೋಪವನ್ನು ಹೊಂದಿದ್ದೇನೆ, ಅದು ಸಾಮಾನ್ಯ ವಿಷಯವಲ್ಲ. ವಿಶೇಷವಾಗಿ ಎಲ್ಲಾ ವಯಸ್ಸಿನ ಜನರು ವೀಕ್ಷಿಸುವ ವೇದಿಕೆಯಲ್ಲಿ” ಎಂದಿದ್ದಾರೆ.

“ತಾನು ಆ ವೇದಿಕೆಯನ್ನು ಜವಾಬ್ದಾರಿಯಿಂದ ಬಳಸಬೇಕಿತ್ತು ಎಂದಿರುವ ಅಲ್ಲಾಬಾದಿಯಾ, ಕುಟುಂಬವನ್ನು ಅವಮಾನಿಸುವುದು ಎಂದಿಗೂ ನನಗೆ ಅಷ್ಟೊಂದು ಕನಿಷ್ಠ ವಿಷಯವಿಲ್ಲ. ಈ ವೇದಿಕೆಯನ್ನು ಉತ್ತಮವಾಗಿ ಬಳಸಬೇಕಿದೆ. ಅದು ಇಡೀ ಅನುಭವದಿಂದ ನಾನು ಕಲಿತ ಪಾಠ” ಎಂದು ಹೇಳಿದ್ದಾರೆ.

“ವಿಡಿಯೊದ ಸೂಕ್ಷ್ಮವಲ್ಲದ ಭಾಗಗಳನ್ನು ತೆಗೆದುಹಾಕುವಂತೆ ನಿರ್ಮಾಪಕರನ್ನು ವಿನಂತಿಸಿದ್ದೇನೆ. ಮುಂದೆ ಸುಧಾರಿಸುವುದಾಗಿ ಭರವಸೆ ನೀಡಿದ್ದೇನೆ. ಕ್ಷಮಿಸಿ ಎಂದಷ್ಟೇ ನಾನು ಹೇಳಬಲ್ಲೆ, ನೀವು ಮನುಷ್ಯರಾಗಿ ನನ್ನನ್ನು ಕ್ಷಮಿಸುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ: ದೂರು

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಲಾಗಿದೆ. ಮಹಿಳೆಯರ ಘನತೆಗೆ ಉಂಟಾಗುವ ಹಾನಿ ಅಥವಾ ಯುವ ಪ್ರೇಕ್ಷಕರ ಮೇಲೆ, ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಬಗ್ಗೆ ಯಾವುದೇ ಗಮನ ಹರಿಸಲಾಗಿಲ್ಲ ಎಂದು ದೂರಿನಲ್ಲಿ ಒತ್ತಿ ಹೇಳಲಾಗಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು “ನನಗೆ ಅದರ ಬಗ್ಗೆ ಮಾಹಿತಿ ದೊರೆತಿದೆ. ನಾನು ಇನ್ನೂ ವಿಡಿಯೋ ನೋಡಿಲ್ಲ. ವಿಷಯಗಳನ್ನು ತಪ್ಪಾದ ರೀತಿಯಲ್ಲಿ ಹೇಳಲಾಗಿದೆ ಮತ್ತು ಪ್ರಸ್ತುತಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ, ನಾವು ಇತರರ ಸ್ವಾತಂತ್ರ್ಯವನ್ನು ಅತಿಕ್ರಮಿಸಿದಾಗ ನಮ್ಮ ಸ್ವಾತಂತ್ರ್ಯ ಕೊನೆಗೊಳ್ಳುತ್ತದೆ. ನಮ್ಮ ಸಮಾಜದಲ್ಲಿ, ನಾವು ಕೆಲವು ನಿಯಮಗಳನ್ನು ಮಾಡಿದ್ದೇವೆ, ಯಾರಾದರೂ ಅವುಗಳನ್ನು ಉಲ್ಲಂಘಿಸಿದರೆ ಅದು ಸಂಪೂರ್ಣವಾಗಿ ತಪ್ಪು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಮತ್ತು ರಾಜ್ಯಸಭಾ ಸಂಸದೆ ರೇಖಾ ಶರ್ಮಾ ಕೂಡ ರಣವೀರ್ ಅಲ್ಲಾಬಾದಿಯಾ ಅವರ ಹೇಳಿಕೆಗಳ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ವಿಡಿಯೋ ತುಂಬಾ ಆಘಾತಕಾರಿಯಾಗಿದೆ. ಮಹಿಳೆಯಾಗಿರಲಿ, ಪುರುಷನಾಗಿರಲಿ, ಈ ರೀತಿಯ ಹಾಸ್ಯವನ್ನು ಸಮಾಜ ಎಂದಿಗೂ ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಾಯಿ ಅಥವಾ ಮಹಿಳೆಯ ದೇಹದ ಬಗ್ಗೆ ಹಾಸ್ಯ ಮಾಡುವುದು ಒಳ್ಳೆಯದಲ್ಲ. ಎಲ್ಲೋ ಇಂದಿನ ಯುವಕರು ನೈತಿಕವಾಗಿ ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ. ಇಂತಹ ಹಾಸ್ಯಗಳು ಸೃಜನಶೀಲ ಕೆಲಸಗಳಲ್ಲಿ ತೊಡಗಿರುವ ಇತರರ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಭಾವಿಸುತ್ತೇನೆ. ಕ್ರಮ ಕೈಗೊಳ್ಳಲು ನಾನು ಆ ವಿಡಿಯೋವನ್ನು ಎನ್‌ಸಿಡಬ್ಲ್ಯು ಅಧ್ಯಕ್ಷರಿಗೆ ರವಾನಿಸಿದ್ದೇನೆ” ಎಂದಿದ್ದಾರೆ.

ಶಿವಸೇನೆಯು ತನ್ನ ವಕ್ತಾರ ರಾಜು ವಾಗ್ಮರೆ ಮೂಲಕ ರಣವೀರ್ ಅಲ್ಲಾಬಾದಿಯಾ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ನೀಡಿದ ಹೇಳಿಕೆಗಳನ್ನು ಖಂಡಿಸಿದೆ

“ಶಿವಾಜಿ ಮಹಾರಾಜರ ಪರಂಪರೆಯಡಿಯಲ್ಲಿ, ಮಹಾರಾಷ್ಟ್ರ ರಾಜ್ಯದಲ್ಲಿ ಇಂತಹ ಭಾಷೆಯನ್ನು ಸಹಿಸಲಾಗುವುದಿಲ್ಲ. ಅವರು ಇದನ್ನೆಲ್ಲಾ ತಕ್ಷಣವೇ ನಿಲ್ಲಿಸಬೇಕು; ಇಲ್ಲದಿದ್ದರೆ ನಾವು ನಮ್ಮದೇ ಆದ ಶೈಲಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ರಾಜು ವಾಗ್ಮರೆ ಕಾರ್ಯಕ್ರಮದ ನಿರ್ಮಾಪಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕ್ರಮದ ಆಯೋಜಕರ ವಿರುದ್ಧ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಬಂಧನದ ತಡೆಯಾಜ್ಞೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...