HomeಮುಖಪುಟExplained: ರಾಜ್ಯಪಾಲ-ಸಿಎಂ ಜಗಳದಲ್ಲಿ ಕೇರಳ ಬಡವಾಯ್ತು

Explained: ರಾಜ್ಯಪಾಲ-ಸಿಎಂ ಜಗಳದಲ್ಲಿ ಕೇರಳ ಬಡವಾಯ್ತು

- Advertisement -
- Advertisement -

ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವಿನ ಜಟಾಪಟಿ ತಾರಕಕ್ಕೇರಿದೆ. ಇದುವರೆಗೆ ಸಿಎಂ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿದ್ದ ಶೀತಲ ಸಮರ ಈಗ ಬೀದಿ ರಂಪವಾಗಿ ಮಾರ್ಪಟ್ಟಿದೆ.

ಹಾಗಾದರೆ, ಕೇರಳದಲ್ಲಿ ನಡೆಯುತ್ತಿರುವುದೇನು? ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಸಮಸ್ಯೆ ಏನು? ಎಂಬುವುದರ ಬಗ್ಗೆ ಮಾಹಿತಿ ಇಲ್ಲಿದೆ.

ಕೇರಳದ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಕಿತ್ತಾಟ ಇಂದು ನಿನ್ನೆಯದ್ದಲ್ಲ. ಸೆಪ್ಟೆಂಬರ್ 6, 2019ರಂದು ಕೇಂದ್ರ ಸರ್ಕಾರ ಆರಿಫ್ ಮೊಹಮ್ಮದ್ ಖಾನ್ ಅವರನ್ನು ರಾಜ್ಯಪಾಲರಾಗಿ ನೇಮಕಗೊಳಿಸಿದ ಕೆಲ ದಿನಗಳಲ್ಲಿ ಶುರುವಾದ ಜಗಳ ಇದು. ಇವತ್ತಿಗೂ ಮುಂದುವರೆದಿದೆ.

ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಹಲವು ವಿಚಾರಗಳಿಗೆ ಜಟಾಪಟಿ ನಡೆದರೂ, ನಾವಿಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಗಮನಹರಿಸಿದ್ದೇವೆ. ಅವುಗಳು ಹೀಗಿವೆ..

1. ಸಿಎಎ ಮತ್ತು ಸುಪ್ರೀಂ ಕೋರ್ಟ್‌

2019 ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಕೇರಳದ ಎಡ ರಂಗ (ಎಲ್‌ಡಿಎಫ್) ಸರ್ಕಾರ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವೆ ಹಗ್ಗಜಗ್ಗಾಟ ನಡೆದಿತ್ತು. ತನಗೆ ತಿಳಿಸದೆ ಕೇರಳ ಸರ್ಕಾರ ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಡಿಸೆಂಬರ್ 11, 2019ರಂದು ಸಿಎಎ ಮಸೂದೆ ಸಂಸತ್‌ನಲ್ಲಿ ಅಂಗೀಕಾರಗೊಂಡಿತ್ತು. ಇದರ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದ ಸರ್ಕಾರ, ಜನವರಿ 13 ರಂದು ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದು ಭಾರತದ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಸರ್ಕಾರ ಆರೋಪಿಸಿತ್ತು.

ರಾಜ್ಯ ಸರ್ಕಾರ ಕೋರ್ಟ್‌ ಮೆಟ್ಟಿಲೇರಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು, “ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗುವುದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಅವರು ಈ ವಿಷಯವನ್ನು ಮೊದಲು ನನಗೆ ತಿಳಿಸಬೇಕಿತ್ತು. ಸಾಂವಿಧಾನಿಕ ಮುಖ್ಯಸ್ಥನಾದ ನನಗೆ, ಸರ್ಕಾರ ಕೋರ್ಟ್‌ಗೆ ಹೋದ ವಿಚಾರ ಪತ್ರಿಕೆಗಳ ಮೂಲಕ ಗೊತ್ತಾಗಿದೆ. ನಾನು ಕೇವಲ ರಬ್ಬರ್ ಸ್ಟಾಂಪ್ ಅಲ್ಲ. ಸರ್ಕಾರ ಶಿಷ್ಟಾಚಾರ ಮತ್ತು ಸೌಜನ್ಯ ಉಲ್ಲಂಘಿಸಿದೆ” ಕಿಡಿಕಾರಿದ್ದರು.

ಈ ವಿಚಾರ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಕೆಲ ಸಮಯ ಪರಪಸ್ಪರ ವಾಗ್ವಾದಕ್ಕೆ ಕಾರಣವಾಗಿತ್ತು. ಬಳಿಕ ತಣ್ಣಗಾಗಿತ್ತು. ಇದರಲ್ಲಿ ಜನರಿಗೆ ಆದ ಉಪಕಾರ ಮಾತ್ರ ಶೂನ್ಯ.

2.ಕುಲಪತಿಗಳ ನೇಮಕ ಜಟಾಪಟಿ

ಕೇರಳದ 9 ವಿಶ್ವವಿದ್ಯಾನಿಲಯಗಳ ಉಪ ಕುಲಪತಿಗಳ ನೇಮಕ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಮತ್ತೊಂದು ದೊಡ್ಡ ಜಟಾಪಟಿಯಾಗಿದೆ. 2022ರ ಅಕ್ಟೋಬರ್ 22ರಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಏಕಾಏಕಿ ಕೇರಳದ 9 ವಿವಿಗಳ ಉಪ ಕುಲಪತಿಗಳ ರಾಜೀನಾಮೆ ಕೇಳಿದ್ದರು.

ಅಕ್ಟೋಬರ್ 24, 2022ರ ಬೆಳಿಗ್ಗೆ 11:30ರ ಒಳಗಾಗಿ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಉಪ ಕುಲಪತಿಗಳ ನೇಮಕದ ವೇಳೆ ಯುಜಿಸಿ ನಿಯಮ ಪಾಲನೆಯಾಗಿಲ್ಲ ಎಂದು ಅವರು ಹೇಳಿದ್ದರು. ಶೋಧನಾ ಸಮಿತಿ ವಿಷಯ ಪರಿಣಿತರಲ್ಲದವರನ್ನು ಕುಲಪತಿಗಳಾಗಿ ನೇಮಿಸಲು ಶಿಫಾರಸು ಮಾಡಿದೆ ಎಂದು ರಾಜ್ಯಪಾಲರು ಆರೋಪಿಸಿದ್ದರು. ಎಪಿಜೆ ಅಬ್ದುಲ್‌ ಕಲಾಂ ವಿವಿಯ ಉಪ ಕುಲಪತಿ ನೇಮಕ ರದ್ದು ಮಾಡಿದ್ದ ಸುಪ್ರೀಂ ಕೋರ್ಟ್‌ ಆದೇಶ ಮುಂದಿಟ್ಟುಕೊಂಡು ರಾಜ್ಯಪಾಲರು ಇತರ ವಿವಿಗಳ ಕುಲಪತಿಗಳ ರಾಜೀನಾಮೆ ಕೇಳಿದ್ದರು.

ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯ, ಕೊಚ್ಚಿನ್‌ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾನಿಲಯ, ಕೇರಳ ಮೀನುಗಾರಿಕೆ ಹಾಗೂ ಸಾಗರ ಅಧ್ಯಯನಗಳ ವಿಶ್ವವಿದ್ಯಾನಿಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾನಿಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾನಿಲಯ, ಕೋಝಿಕ್ಕೋಡ್ ವಿಶ್ವವಿದ್ಯಾನಿಲಯ, ಕ್ಯಾಲಿಕಟ್ ವಿಶ್ವ ವಿದ್ಯಾನಿಲಯ ಹಾಗೂ ತುಂಜತ್ತ್ ಎಳುತಚ್ಚನ್ ಮಲೆಯಾಳಂ ವಿಶ್ವವಿದ್ಯಾನಿಲಯ ಉಪ ಕುಲಪತಿಗಳ ರಾಜೀನಾಮೆ ಕೇಳಲಾಗಿತ್ತು.

ರಾಜ್ಯಪಾಲರ ದಿಢೀರ್ ನಿರ್ಧಾರಕ್ಕೆ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸರ್ಕಾರದ ಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಉಪ ಕುಲಪತಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ರಾಜ್ಯಪಾಲರ ಅಂತಿಮ ಆದೇಶದವರೆಗೂ ಹುದ್ದೆಯಲ್ಲಿ ಮುಂದುವರಿಯಲು ಉಪ ಕುಲಪತಿಗಳಿಗೆ ಸೂಚನೆ ನೀಡಿತ್ತು.

ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಮತ್ತೊಮ್ಮೆ ಕುಲಪತಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದ ರಾಜ್ಯಪಾಲರು, ‘ತಮ್ಮ ಆದೇಶ ಪಾಲಿಸದ ನಿಮ್ಮ ಮೇಲೆ ಏಕೆ ಕ್ರಮ ತೆಗೆದುಕೊಳ್ಳಬಾರದು ಎಂದು ಕೇಳಿದ್ದರು? ನವೆಂಬರ್‌ 3ರ ಸಂಜೆ 5 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ನಿಮ್ಮನ್ನು ವಜಾಗೊಳಿಸಲಾಗುವುದು. ಅಲ್ಲದೆ ನಿಮ್ಮ ನೇಮಕಾತಿಯೂ ಕಾನೂನು ಬಾಹಿರ ಎಂದು ಘೋಷಣೆ ಮಾಡಬೇಕಾಗುತ್ತದೆ’ ಎಂದು ನೋಟಿಸ್‌ನಲ್ಲಿ ಎಚ್ಚರಿಸಿದ್ದರು.

ಆದರೆ, ಯಾವುದೇ ಉಪ ಕುಲಪತಿಗಳು ರಾಜ್ಯಪಾಲರು ಹೇಳಿದ ಸಮಯಕ್ಕೆ ರಾಜೀನಾಮೆ ನೀಡಿರಲಿಲ್ಲ. ಸರ್ಕಾರ ಉಪ ಕುಲಪತಿಗಳ ಬೆನ್ನಿಗೆ ನಿಂತಿತ್ತು. ಕಾನೂನು ಸಮರದ ಧೈರ್ಯ ತುಂಬಿತ್ತು. ಈ ನಡುವೆ ಸರ್ಕಾರ ಉಪ ಕುಲಪತಿಗಳನ್ನು ನೇಮಿಸುವ ಅಧಿಕಾರದಿಂದ ರಾಜ್ಯಪಾಲರನ್ನೇ ಕೆಳಗಿಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದಿತ್ತು. ಆದರೆ, ಈ ಮಸೂದೆಗೆ ಅಂಗೀಕಾರಕ್ಕೆ ರಾಜ್ಯಪಾಲರು ಸಹಿ ಹಾಕುವುದಿಲ್ಲ ಎಂದು ತಿಳಿದು ಸುಗ್ರಿವಾಜ್ಞೆ ಹೊರಡಿಸಿತ್ತು.

ಬಳಿಕ ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಡಾ.ಗೋಪಿನಾಥ್ ರವೀಂದ್ರನ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ವಿಚಾರದಲ್ಲಿ ಕೇರಳದ ಪಿಣರಾಯಿ ವಿಜಯನ್ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿತ್ತು. ರಾಜ್ಯ ಸರ್ಕಾರದ ಗೋಪಿನಾಥ್ ರವೀಂದ್ರನ್ ನೇಮಕದ ವಿಚಾರದಲ್ಲಿ ನನ್ನ ಮೇಲೆ ಒತ್ತಡ ಹಾಕಿತ್ತು ಎಂದು ರಾಜ್ಯಪಾಲರು ಹೇಳಿದ್ದರು.

3. ಮಸೂದೆಗಳ ಅಂಗೀಕಾರ ವಿಳಂಬ

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳನ್ನು ಇತ್ಯರ್ಥಪಡಿಸುವಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಳಂಬ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲಿ ವಿಲೇವಾರಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ಕೇರಳ ಸರ್ಕಾರ ನವೆಂಬರ್ 2,2023ರಂದು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಸುಮಾರು 8 ಮಸೂದೆಗಳು ವಿಲೇವಾರಿಗೆ ಬಾಕಿಯಿದೆ. ಈ ಪೈಕಿ ಮೂರು ಮಸೂದೆಗಳನ್ನು ಎರಡು ವರ್ಷಗಳಿಂದ ಅಂಗೀಕಾರ ಮತ್ತು ತಿರಸ್ಕಾರ ಯಾವುದೂ ಮಾಡದೆ ರಾಜ್ಯಪಾಲರು ಮೌನವಾಗಿದ್ದಾರೆ. ಹಾಗಾಗಿ, ಬಾಕಿ ಇರುವ ಮಸೂದೆಗಳನ್ನು ಶೀಘ್ರವಾಗಿ ಇತ್ಯರ್ಥ ಮಾಡಲು ರಾಜ್ಯಪಾಲರಿಗೆ ನಿರ್ದೇಶನ ನೀಡುವಂತೆ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲ, ಮನೋಜ್ ಮಿಶ್ರಾ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ, ರಾಜ್ಯಪಾಲರಿಗೆ ಎಚ್ಚರಿಕೆ ನೀಡಿತ್ತು. ರಾಜ್ಯಪಾಲರು ತಾವು ಚುನಾಯಿತ ಪ್ರತಿನಿಧಿ ಅಲ್ಲ ಎಂಬುವುದನ್ನು ಮರೆಯಬಾರದು ಎಂದು ಹೇಳಿತ್ತು. ಈ ಕುರಿತು ವರದಿ ನೀಡುವಂತೆ ಅಟಾರ್ನಿ ಜನರಲ್‌ಗೆ ಸೂಚಿಸಿತ್ತು.

ರಾಜ್ಯಪಾಲರ ಕಚೇರಿಯ ಪರವಾಗಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಸಲ್ಲಿಸಿದ ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಗಮನಿಸಿತು. ರಾಜ್ಯಪಾಲರು ಎಂಟು ಮಸೂದೆಗಳ ಪೈಕಿ ಏಳು ಮಸೂದೆಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಿದ್ದು, ಒಂದನ್ನು ಅಂಗೀಕರಿಸಿದ್ದರು.

ಹಾಗಾಗಿ, ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳನ್ನು ಕಾಲಮಿತಿಯಲ್ಲಿ ಇತ್ಯರ್ಥ ಮಾಡಲು ರಾಜ್ಯಪಾಲರಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಮನವಿಯನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ರಾಜ್ಯಪಾಲರು ಮುಖ್ಯಮಂತ್ರಿ ಮತ್ತು ಸಂಬಂಧಿತ ಸಚಿವರೊಂದಿಗೆ ಮಸೂದೆಗೆ ಕುರಿತು ಚರ್ಚಿಸಲಿದ್ದಾರೆ ಎಂದು ಪೀಠ ತಿಳಿಸಿತ್ತು.

ರಾಜ್ಯಪಾಲರ ಕಾರಿಗೆ ಮುತ್ತಿಗೆ

ಮಸೂದೆ ಜಟಾಪಟಿಯ ಬಳಿಕ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಗುದ್ದಾಟ ಕೊಂಚ ತಣ್ಣಗಾಗಿತ್ತು. ಈ ನಡುವೆ ಡಿಸೆಂಬರ್ 11ರಂದು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು.

ರಾಜ್ಯಪಾಲರು ದೆಹಲಿಗೆ ಪ್ರಯಾಣಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತೆರಳುವ ದಾರಿ ಮಧ್ಯೆ ಈ ಘಟನೆ ನಡೆದಿತ್ತು. ತಕ್ಷಣ ಕಾರಿನಿಂದ ಕೆಳಗಿಳಿದಿದ್ದ ರಾಜ್ಯಪಾಲರು, ಸಿಎಂ ಕಳಿಸಿದ ಗೂಂಡಾಗಳು ನನ್ನ ಮೇಲೆ ದಾಳಿಗೆ ಯತ್ನಿಸಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶ ಅವರಿಗಿತ್ತು ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು.

ರಾಜ್ಯಪಾಲರು V/s ಎಸ್ಎಫ್‌ಐ

ಇದೀಗ ಕಳೆದ ಎರಡು ದಿನಗಳಿಂದ ರಾಜ್ಯಪಾಲರು ಕ್ಯಾಲಿಕಟ್ ವಿಶ್ವ ವಿದ್ಯಾನಿಯಲದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದು, ವಿವಿಯ ಹೊರಗಡೆ ಎಸ್ಎಫ್ಐ ಕಾರ್ಯಕರ್ತರು ಕಪ್ಪು ಬಟ್ಟೆಗಳನ್ನು ಕಟ್ಟಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು, ಅವರು ಸಿಎಂ ಕಡೆಯ ಕ್ರಿಮಿನಲ್‌ಗಳು, ಗೂಂಡಾಗಳು ಎಂದಿದ್ದರು. ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಪಿಣರಾಯಿ ವಿಜಯನ್ ರಾಜ್ಯಪಾಲರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಒಟ್ಟಾರೆಯಾಗಿ ಇದು ಮುಂದೆ ಎಲ್ಲಿಗೆ ಹೋಗಿ ತಲುಪಲಿದೆ ಎಂದು ಗೊತ್ತಿಲ್ಲ. ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎನ್ನುವ ಹಾಗೆ, ರಾಜ್ಯಪಾಲ-ಸಿಎಂ ಜಗಳಲ್ಲಿ ಕೇರಳ ಬಡವಾಗಿರುವುದಂತು ನಿಜ.

ಇದನ್ನೂ ಓದಿ: ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...