Homeಮುಖಪುಟಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

- Advertisement -
- Advertisement -

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತಿರುವನಂತಪುರಂ ಜಿಲ್ಲೆಯ ನೇಮಮ್ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ನ ಕೆ.ಎಸ್ ಶಬರಿನಾಥನ್ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ ಕೂಡ, ಆಯೋಗವು ಚಂದ್ರಶೇಖರ್ ಅವರ ನಾಮಪತ್ರವನ್ನು ಅಂಗೀಕರಿಸಿದೆ ಎಂದು ಹೇಳಲಾಗಿದೆ.

ಬೆಂಗಳೂರಿನ ಐಷಾರಾಮಿ ಪ್ರದೇಶವಾದ ಕೋರಮಂಗಲದಲ್ಲಿ ಚಂದ್ರಶೇಖರ್ ಅವರು 49,000 ಚದರ ಅಡಿಯ ಮನೆಯನ್ನು ಹೊಂದಿದ್ದಾರೆ ಎಂದು ಕೇರಳ ಕಾಂಗ್ರೆಸ್ ಘಟಕ ಹೇಳಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ಕಂದಾಯ ಇಲಾಖೆಯ ಆಸ್ತಿ ತೆರಿಗೆ ರಸೀದಿಯನ್ನು ಸೋಮವಾರ (ಮಾರ್ಚ್ 23) ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ಮನೆಯ ವಿವರವನ್ನು ಚುನಾವಣಾ ಅಫಿಡವಿಟ್‌ನಲ್ಲಿ ಚಂದ್ರಶೇಖರ್ ಉಲ್ಲೇಖಿಸಿಲ್ಲ ಎಂದು ಆರೋಪಿಸಿದೆ.

ಕೋರಮಂಗಲದಲ್ಲಿರುವ ಆಸ್ತಿಗೆ ಸಂಬಂಧಿಸಿದಂತೆ ಚಂದ್ರಶೇಖರ್ ಮಾರ್ಚ್ 17, 2026ರಂದು 5 ಲಕ್ಷ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಪಾವತಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

“ಇದು ದೇಶದ ಅತ್ಯಂತ ದುಬಾರಿ ಸ್ಥಳಗಳ ಪೈಕಿ ಒಂದರಲ್ಲಿ ಇರುವ 1.07 ಎಕರೆ ಆಸ್ತಿಯಾಗಿದ್ದು, ಇಲ್ಲಿ ಅನೇಕ ಭಾರತೀಯ ಶತಕೋಟ್ಯಾಧಿಪತಿಗಳು ವಾಸಿಸುತ್ತಿದ್ದಾರೆ. ಇಲ್ಲಿನ ಭೂಮಿಯ ಬೆಲೆ ಪ್ರತಿ ಚದರ ಅಡಿಗೆ ಸುಮಾರು 35,000 ರಿಂದ 50,000 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿದೆ. ಅಂದಾಜಿನ ಪ್ರಕಾರ, ಚಂದ್ರಶೇಖರ್ ಅವರ ಭೂಮಿಯ ಮೌಲ್ಯ ಮಾತ್ರ ಸುಮಾರು 200 ಕೋಟಿ ರೂ. ಆಗಿರಬಹುದು” ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಪರಿಶೀಲನೆಗಾಗಿ ಅರ್ಜಿಯ ಸಂಖ್ಯೆಯೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, “ತೆರಿಗೆಯನ್ನು ಕೇವಲ ಆರು ದಿನಗಳ ಹಿಂದೆ, ಅಂದರೆ ಮಾರ್ಚ್ 17ರಂದು ಪಾವತಿಸಲಾಗಿದೆ, ಇದನ್ನು ನೀವು ಸ್ವತಃ ಪರಿಶೀಲಿಸಬಹುದು” ಎಂದು ತಿಳಿಸಿದೆ. ಅಷ್ಟೇ ಅಲ್ಲದೆ, ಚಂದ್ರಶೇಖರ್ ಅವರು 2024ರ ಅಫಿಡವಿಟ್‌ನಲ್ಲಿ ಇದೇ ವಸತಿ ವಿಳಾಸವನ್ನು ನೀಡಿದ್ದರು ಎಂಬ ಅಂಶವನ್ನು ಒತ್ತಿ ಹೇಳಿದೆ.

ಚಂದ್ರಶೇಖರ್ ಅವರನ್ನು ‘ಹಬಿಚ್ಯುವಲ್ ಒಫೆಂಡರ್’ ಎಂದು ಕರೆದಿರುವ ಕಾಂಗ್ರೆಸ್, ಅವರನ್ನು ಅನರ್ಹಗೊಳಿಸಬೇಕೆಂದು ಒತ್ತಾಯಿಸಿದೆ.

ವರದಿಗಳ ಪ್ರಕಾರ, ಚಂದ್ರಶೇಖರ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಕೋರಮಂಗಲದ ಮೂರನೇ ಬ್ಲಾಕ್‌ನಲ್ಲಿರುವ ನಂ. 419 ವಿಳಾಸದ ಕೃಷಿಯೇತರ ಭೂಮಿಯನ್ನು ಮಾತ್ರ ಸ್ಥಿರಾಸ್ತಿಯೆಂದು ಘೋಷಿಸಿದ್ದಾರೆ. ಅವರು ಈ ಆಸ್ತಿಯನ್ನು 2006ರಲ್ಲಿ 5.26 ಕೋಟಿ ರೂಪಾಯಿಗೆ ಖರೀದಿಸಿದ್ದು, ಪ್ರಸ್ತುತ ಇದರ ಮಾರುಕಟ್ಟೆ ಮೌಲ್ಯ ಸುಮಾರು 15.07 ಕೋಟಿ ರೂಪಾಯಿ ಎಂದು ಅಂದಾಜಿಸಿದ್ದಾರೆ.

ತಮ್ಮ ಅಫಿಡವಿಟ್‌ನಲ್ಲಿ 2024-25ರ ಹಣಕಾಸು ವರ್ಷದ ಆದಾಯದ ಮೂಲಗಳ ಬಗ್ಗೆ ಮಾಹಿತಿ ನೀಡಿರುವ ಭಾಗದಲ್ಲಿ, ಚಂದ್ರಶೇಖರ್ ಅವರು ಕೋರಮಂಗಲದ ಮೂರನೇ ಬ್ಲಾಕ್‌ನಲ್ಲಿರುವ ‘ಪ್ಲಾಟ್ 408’ ವಿಳಾಸವನ್ನು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್‌ನ ಆಕ್ಷೇಪಣೆಗಳ ಹೊರತಾಗಿಯೂ, ಚುನಾವಣಾಧಿಕಾರಿಯು ಚಂದ್ರಶೇಖರ್ ಅವರ ನಾಮಪತ್ರವನ್ನು ಅಂಗೀಕರಿಸಿದ್ದಾರೆ. ಅಭ್ಯರ್ಥಿಗಳ ಕೈಪಿಡಿ 2023ರ ಪ್ರಕಾರ ನಾಮಪತ್ರವನ್ನು ತಿರಸ್ಕರಿಸಲು ಯಾವುದೇ ಪೂರಕ ಕಾರಣಗಳಿಲ್ಲ ಎಂದು ಅಧಿಕಾರಿ ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಮಂಗಳವಾರ ಕೇರಳ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್‌ನ ಆರೋಪಗಳು ಸುಳ್ಳು ಎಂದು ತಳ್ಳಿಹಾಕಿದೆ. “ಚಂದ್ರಶೇಖರ್ ಅವರು ಕೋರಮಂಗಲದಲ್ಲಿ ಮನೆ ಹೊಂದಿದ್ದಾರೆ ಮತ್ತು ಆ ಮಾಹಿತಿಯನ್ನು ಚುನಾವಣಾ ಅಫಿಡವಿಟ್‌ನಲ್ಲಿ ಮರೆಮಾಚಿದ್ದಾರೆ ಎಂದು ‘ಕಾಂಗ್ರೆಸ್ ಸೈಬರ್ ತಂಡಗಳು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿ ಹರಡುತ್ತಿವೆ” ಎಂದು ಬಿಜೆಪಿ ಹೇಳಿದೆ.

ಸೋಲುವ ಭಯದಿಂದ ಕಾಂಗ್ರೆಸ್ ಈ ಆರೋಪಗಳನ್ನು ಮಾಡುತ್ತಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಕಾಂಗ್ರೆಸ್ ಇದೇ ರೀತಿಯ ದೂರುಗಳನ್ನು ನೀಡಿತ್ತು ಎಂದು ಬಿಜೆಪಿ ಪ್ರತಿಪಾದಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜೀವ್ ಚಂದ್ರಶೇಖರ್ ಕೂಡ ಕಾಂಗ್ರೆಸ್‌ನ ಆರೋಪಗಳನ್ನು ನಿರಾಕರಿಸಿದ್ದಾರೆ. “ಅವರು ಲೋಕಸಭಾ ಚುನಾವಣೆಯ ವೇಳೆಯೂ ಇದನ್ನು ಪ್ರಯತ್ನಿಸಿದ್ದರು. ನನ್ನ ಆದಾಯ ತೆರಿಗೆ ಮತ್ತು ಮನೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಅವರು ಕೇರಳದ ಜನರಿಗೆ ಉತ್ತಮ ಭವಿಷ್ಯವನ್ನು ನೀಡುವ ಬದಲು, ಕೇವಲ ಸುಳ್ಳು ಮತ್ತು ಅಪಪ್ರಚಾರಗಳನ್ನು ನಂಬುವ ಅತ್ಯಂತ ದಡ್ಡ ಪಕ್ಷವಾಗಿ ಮಾರ್ಪಟ್ಟಿದ್ದಾರೆ. ನನ್ನ ಜೀವನದಲ್ಲಿ ಪ್ರತಿಯೊಂದು ಕೆಲಸವನ್ನೂ ಮುಕ್ತವಾಗಿ ಮತ್ತು ಪಾರದರ್ಶಕವಾಗಿ ಮಾಡಿದ್ದೇನೆ” ಎಂದು ಅವರು ಚಂದ್ರಶೇಖರ್ ಹೇಳಿದ್ದಾರೆ.

ಈ ನಡುವೆ, ಬಿಜೆಪಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ, “ನಮ್ಮ ಆರೋಪವು ಸುಳ್ಳಾಗಿದ್ದರೆ, ನಾವು ಹಂಚಿಕೊಂಡಿರುವ ಆಸ್ತಿ ತೆರಿಗೆ ರಸೀದಿಯು ಖಂಡಿತವಾಗಿಯೂ ನಕಲಿಯಾಗಿರಬೇಕು” ಎಂದಿದೆ.

ಕಾಂಗ್ರೆಸ್ ಪಕ್ಷವು ತನ್ನ ವಾದವನ್ನು ಪುನರುಚ್ಚರಿಸಿದ್ದು, ಇದೇ ಆಸ್ತಿಯನ್ನು (ಕೋರಮಂಗಲದ ಮನೆ) ಚಂದ್ರಶೇಖರ್ ಅವರು 2024ರ ಅಫಿಡವಿಟ್‌ನಲ್ಲಿ ಘೋಷಿಸಿದ್ದರು ಎಂದು ತಿಳಿಸಿದೆ. ಅಲ್ಲದೆ, ಈ ಬಗ್ಗೆ ಬಿಜೆಪಿ ಸ್ವತಃ ಪರಿಶೀಲಿಸಿಕೊಳ್ಳಲಿ ಎಂದು ಸವಾಲು ಹಾಕಿದೆ.

“ಅವರು (ಚಂದ್ರಶೇಖರ್) ತಾವು ಮನೆ ಸಂಖ್ಯೆ 408ರಲ್ಲಿ ವಾಸಿಸುತ್ತಿರುವುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಹೆಸರಿನಲ್ಲಿ ಯಾವುದೇ ವಸತಿ ಆಸ್ತಿ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ, ಯಾವುದು ನಿಜ? ಅವರು ತದ್ರೂಪಿ ಹೆಸರಿನ ಬೇರೆಯವರ ಮಾಲೀಕತ್ವದ 50,000 ಚದರ ಅಡಿಯ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆಯೇ ಅಥವಾ ಇದು ಸುಳ್ಳು ಅಫಿಡವಿಟ್ ಸಲ್ಲಿಸಿರುವ ಸ್ಪಷ್ಟ ಪ್ರಕರಣವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ಲಾಟ್ ಸಂಖ್ಯೆ 419 ಕೇವಲ ಅವರ ಕಾರು ಶೆಡ್ ಆಗಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ಇದರೊಂದಿಗೆ, 408 ಮತ್ತು 445 ಸಂಖ್ಯೆಯ ಆಸ್ತಿಗಳನ್ನು ಅವರು ಘೋಷಿಸಿಲ್ಲ ಎಂದು ಪಕ್ಷವು ಆರೋಪಿಸಿದೆ.

ಶಬರಿನಾಥನ್ ಅವರು ಈ ವಿಷಯದಲ್ಲಿ ಕಾಂಗ್ರೆಸ್ ಮತ್ತು ಅದರ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುಂಬರುವ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.

ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಬರಿನಾಥ್, “ನಮ್ಮ ಬಳಿ ಈ ಬಗ್ಗೆ ಸ್ಪಷ್ಟವಾದ ಪುರಾವೆಗಳಿವೆ. ಮಿಲಿಯನೇರ್ ಆಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಚುನಾವಣೆ ಎದುರಿಸುವ ಹಕ್ಕಿದೆ, ಆದರೆ, ಅವರು ಉದ್ದೇಶಪೂರ್ವಕವಾಗಿಯೇ ಮಾಹಿತಿಯನ್ನು ಮರೆಮಾಚಿದ್ದಾರೆ. ತಾವೇ ಸುಮಾರು 5 ಲಕ್ಷ ರೂ. ಆಸ್ತಿ ತೆರಿಗೆ ಪಾವತಿಸಿರುವ ಆಸ್ತಿಯ ವಿವರವನ್ನು ಅವರು ಬಹಿರಂಗಪಡಿಸಿಲ್ಲ. ದುರದೃಷ್ಟವಶಾತ್, ಅವರ ವಕೀಲರು ಇದು ಅವರ ಕಡೆಯಿಂದಾದ ತಪ್ಪು ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಸಾಂವಿಧಾನಿಕ ವ್ಯವಸ್ಥೆಯಲ್ಲಿ ಕೇವಲ ಈ ಆಧಾರದ ಮೇಲೆ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಕಾನೂನಾತ್ಮಕ ಅಧಿಕಾರ ಚುನಾವಣಾಧಿಕಾರಿಗೆ ಇಲ್ಲ. ಆದ್ದರಿಂದ, ನಾವು ಖಂಡಿತವಾಗಿಯೂ ಈ ಬಗ್ಗೆ ಚುನಾವಣಾ ಮೊಕದ್ದಮೆಯನ್ನು ಹೂಡಲಿದ್ದೇವೆ” ಎಂದು ಹೇಳಿದ್ದಾರೆ.

ಬಿಜೆಪಿ ಕೇರಳ ಘಟಕದ ಸೀಲ್ ಇರುವ ಚುನಾವಣಾ ಆಯೋಗದ ಪತ್ರದ ಕುರಿತಾದ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಕೇರಳ ಪೊಲೀಸರು ಸೂಚಿಸಿದ ದಿನವೇ ಈ ಬೆಳವಣಿಗೆ ನಡೆದಿದೆ. ಚುನಾವಣಾ ಆಯೋಗದ ಪತ್ರದ ಕುರಿತಾದ ಪೋಸ್ಟ್‌ಗಳು ಆಯೋಗವನ್ನು ಬಹಿರಂಗವಾಗಿ ಅವಮಾನಿಸುತ್ತಿವೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು ಹರಡುತ್ತಿವೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...