ಲೋಕಸಭೆಯ ಬಾಕಿ ಇದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಳ್ಳಾರಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಅವರಿಗೆ ನೀಡಲಾಗಿದೆ. ಈ ಕ್ಷೇತ್ರದ ಟಿಕೆಟ್ ತಮಗೇ ನೀಡಬೇಕೆಂದು ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಎನ್.ಹೆಚ್ ಶಿವಶಂಕರ ರೆಡ್ಡಿ ಮತ್ತು ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಪಟ್ಟು ಹಿಡಿದಿದ್ದರು. ಅವರನ್ನು ಮನವೊಲಿಸಿದ ಕೈ ನಾಯಕರು, ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದ್ದಾರೆ.
ಚಾಮರಾಜನಗರದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಮಗ ಸುನಿಲ್ ಬೋಸ್ಗೆ ಟಿಕೆಟ್ ನೀಡಲಾಗಿದೆ. ಸುನಿಲ್ ಬೋಸ್ಗೆ ಟಿಕೆಟ್ ನೀಡುವುದಕ್ಕೆ ಕ್ಷೇತ್ರದ ಕೆಲ ಕೈ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ನಾಯಕರು, ಅಭ್ಯರ್ಥಿ ಘೋಷಣೆ ಮಾಡಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಂಡೂರು ಶಾಸಕ ಇ. ತುಕರಾಂ ಅವರಿಗೆ ನೀಡಲಾಗಿದೆ.
ಕಗ್ಗಂಟಾದ ಕೋಲಾರ :
ಇನ್ನು ಕೋಲಾರ ಒಂದು ಕ್ಷೇತ್ರದ ಅಭ್ಯರ್ಥಿ ಘೋಷಣೆ ಬಾಕಿ ಇದೆ. ಈ ಕ್ಷೇತ್ರದ ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಇಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಮಾಜಿ ಸಚಿವ ಕೆ.ಆರ್ ರಮೇಶ್ ಕುಮಾರ್ ಬಣಗಳ ನಡುವೆ ಕಿತ್ತಾಟ ನಡೆಯುತ್ತಿದೆ.
ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದಕ್ಕೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿ ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಅತ್ತ ಮುನಿಯಪ್ಪ ಬಣ ತಮ್ಮವರಿಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದೆ.
ಹಾಗಾಗಿ, ಎಡಗೈ ಸಮುದಾಯದ ಕೆ.ವಿ ಗೌತಮ್ ಅಥವಾ ಎಲ್. ಹನುಮಂತಯ್ಯ ಅವರಿಗೆ ಟಿಕೆಟ್ ನೀಡಿ ಎರಡೂ ಬಣಗಳನ್ನು ಸಮಾಧಾನಗೊಳಿಸುವ ಪ್ರಯತ್ನವನ್ನು ಸಿಎಂ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಡಿದ್ದಾರೆ. ಆದರೆ, ಇದಕ್ಕೂ ಮುನಿಯಪ್ಪ ತಕರಾರು ಎತ್ತಿದ್ದಾರೆ ಎನ್ನಲಾಗಿದೆ. ಹಾಗಾಗಿ, ಎರಡೂ ಕರೆಯವರಿಗೂ ಒಪ್ಪಿಗೆಯಾಗುವ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಕೈ ನಾಯಕರಿಗೆ ಸವಾಲಾಗಿದೆ.
ಇದನ್ನೂ ಓದಿ : ‘ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಕುಟುಂಬದವರು ಎಲ್ಲಿದ್ದರು..?’: ಡಿಕೆ ಶಿವಕುಮಾರ್ ವಾಗ್ದಾಳಿ