ಬಿಜೆಪಿ ಪಕ್ಷವು ಕಾಂಗ್ರೆಸ್ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ಅವರು ಹೇಳಿದ್ದು, ಐಟಿ ಇಲಾಖೆಯು ಕಾಂಗ್ರೆಸ್ನ ಖಾತೆಯಿಂದ 5.89 ಕೋಟಿ ಕಡಿತಗೊಳಿಸಿರುವ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಎಐಸಿಸಿ, ಭಾರತೀಯ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಖಾತೆಗಳಿಂದ ಆದಾಯ ತೆರಿಗೆ ಇಲಾಖೆ 65.89 ಕೋಟಿ ಕಡಿತಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಕೆ.ಸಿ ವೇಣುಗೋಪಾಲ್ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದಾಗ ಬಿಜೆಪಿಯನ್ನು ಎಂದಿಗೂ ಈ ರೀತಿ ನಡೆಸಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ.
ಅವರು (ಬಿಜೆಪಿ) ನಮ್ಮ ಹಣವನ್ನು ಬ್ಯಾಂಕ್ಗಳಿಂದ ಕದಿಯುತ್ತಿದ್ದಾರೆ. ನಾವೂ ಈ ದೇಶವನ್ನು ಆಳಿದ್ದೇವೆ. ಅಂತಹ ಯಾವುದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಥವಾ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ರೀತಿಯಾಗಿ ಮಾಡಿರುವ ನಿದರ್ಶನ ಇದ್ದರೆ ಬಿಜೆಪಿ ಪ್ರಸ್ತುತಪಡಿಸಬಹುದು ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.
ರಾಜಕೀಯ ಪಕ್ಷವಾಗಿ ಬಿಜೆಪಿಯು ಯಾವತ್ತೂ ಆದಾಯ ತೆರಿಗೆ ಪಾವತಿ ಮಾಡಿಲ್ಲ ಎಂದ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಪಕ್ಷದ ಆದಾಯ ತೆರಿಗೆ ಕಡಿತವು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳ ಮೇಲಿನ ದಾಳಿಯಾಗಿದೆ. ಅವರು ಭಾರತದ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ ಇದು ನಿಜಕ್ಕೂ ಸ್ಪಷ್ಟವಾಗಿ ಸರ್ವಾಧಿಕಾರದ ಉದಾಹರಣೆಯಾಗಿದೆ. ಬಿಜೆಪಿಗಿಂತ ಭಿನ್ನವಾಗಿ ಕಾಂಗ್ರೆಸ್ ಈ ಹಣವನ್ನು ಪಕ್ಷದ ಕಾರ್ಯಕರ್ತರಿಂದ ಪಡೆದುಕೊಂಡಿದೆ ಎಂದು ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
ಬ್ಯಾಂಕ್ಗಳ ಇತ್ತೀಚಿನ ಮಾಹಿತಿಯ ಪ್ರಕಾರ, ಬಿಜೆಪಿ ಸರ್ಕಾರವು ನಮ್ಮ ಠೇವಣಿಗಳಿಂದ ಸರಿಸುಮಾರು 65.89 ಕೋಟಿಗಳನ್ನು ಸರ್ಕಾರಕ್ಕೆ ವರ್ಗಾಯಿಸುವಂತೆ ಬ್ಯಾಂಕ್ಗಳನ್ನು ಒತ್ತಾಯಿಸಿದೆ. ಈ ಮೊತ್ತವು AICC ಮತ್ತು ಭಾರತೀಯ ಯುವ ಕಾಂಗ್ರೆಸ್ ಖಾತೆ ಮತ್ತು NSUIಯಿಂದ ಬಂದಿದೆ. ಬಿಜೆಪಿಗಿಂತ ಭಿನ್ನವಾಗಿ, ನಾವು ಈ ಹಣವನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತರಿಂದ ಪಡೆದುಕೊಂಡಿದ್ದೇವೆ. ಸಂಸತ್ ಚುನಾವಣೆಗೆ ಮುನ್ನ, ಪ್ರಮುಖ ವಿರೋಧ ಪಕ್ಷದ ಖಾತೆಯನ್ನು ಬಿಜೆಪಿ ಸರ್ಕಾರ ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬುಧವಾರ, ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಇದು ಆತಂಕಕಾರಿ ಬೆಳವಣಿಗೆ, ಕೇಂದ್ರ ಸರ್ಕಾರದ ಏಜೆನ್ಸಿಗಳ ಕ್ರಮಗಳ ಬಗ್ಗೆ ಕಳವಳ ಹೆಚ್ಚುತ್ತಿದೆ. ಭಾರತದಲ್ಲಿ ಬಹು ಪಕ್ಷ ವ್ಯವಸ್ಥೆಗೆ ಸಂಭಾವ್ಯ ಅಪಾಯವಿದೆ. ಇದನ್ನು ತಡೆಯದಿದ್ದರೆ, ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳಲಿದೆ. ನ್ಯಾಯಾಂಗದ ಮಧ್ಯಪ್ರವೇಶ ಇಲ್ಲವಾದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳೇ ನಾಶವಾಗಲಿವೆ ಎಂದು ಮಾಕನ್ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಬಾಕಿ ಇರುವ ತೆರಿಗೆ ವಸೂಲಾತಿ ವಿರುದ್ಧ ಕಾಂಗ್ರೆಸ್, ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಮೊರೆ ಹೋಗಿದೆ. ಕಾಂಗ್ರೆಸ್ ನಿಯಮಗಳನ್ನು ಉಲ್ಲಂಘಿಸಿದೆ ಮತ್ತು ಆದ್ದರಿಂದ ಸಾಮಾನ್ಯ ತೆರಿಗೆ ಪಾವತಿದಾರ ಎಂದು ಪರಿಗಣಿಸಲಾಗುತ್ತಿದೆ ಎಂದು ಇಲಾಖೆ ಬುಧವಾರ ನ್ಯಾಯಾಲಯಕ್ಕೆ ತಿಳಿಸಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಗುರಿಯಾಗಿಸಲಾಗುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಕೂಡ ಕಾಂಗ್ರೆಸ್ ಪಕ್ಷವು ಮಾಡುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರತ್ಯಾರೋಪವನ್ನು ಮಾಡಿದೆ.
ಆದಾಯ ತೆರಿಗೆ ಇಲಾಖೆಯು ತನ್ನ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಬಿಲ್ಗಳನ್ನು ಪಾವತಿಸಲು ಹಣವಿಲ್ಲ ಎಂದು ಕಳೆದ ವಾರ ಕಾಂಗ್ರೆಸ್ ಹೇಳಿತ್ತು. ಅಧಿಕಾರದ ಅಮಲಿನಲ್ಲಿ ಮೋದಿ ಸರಕಾರವು ಲೋಕಸಭೆ ಚುನಾವಣೆಗೆ ಮುನ್ನವೇ ದೇಶದ ಅತಿದೊಡ್ಡ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದು ಭಾರತದ ಪ್ರಜಾಪ್ರಭುತ್ವದ ಮೇಲೆ ಆಳವಾದ ಆಕ್ರಮಣವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.
65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆಯಿಂದ ವಿವಿಧ ಬ್ಯಾಂಕ್ಗಳಿಗೆ ಪತ್ರ
ತೆರಿಗೆ ಪಾವತಿ ವಿಳಂಬದ ಕಾರಣ ನೀಡಿ ಕಳೆದ ಶುಕ್ರವಾರ ಕಾಂಗ್ರೆಸ್ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಐಟಿ ಇಲಾಖೆಯ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿತ್ತು. ಪ್ರಾಧಿಕಾರವು ಮುಂದಿನ ವಿಚಾರಣೆಯವರೆಗೆ ಬ್ಯಾಂಕ್ ಖಾತೆ ಬಳಸಲು ಕಾಂಗ್ರೆಸ್ಗೆ ಅನುವು ಮಾಡಿಕೊಟ್ಟಿತ್ತು. ಇದರಿಂದ ಪಕ್ಷ ತಾತ್ಕಾಲಿಕ ನಿರಾಳವಾಗಿತ್ತು.
ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಪ್ರಕರಣ ಮೇಲ್ಮನವಿ ಪ್ರಾಧಿಕಾರದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ
ಕಾಂಗ್ರೆಸ್ ಮತ್ತು ಭಾರತೀಯ ಯುವ ಕಾಂಗ್ರೆಸ್, ಎನ್ಎಸ್ಯುಐಗೆ ಸೇರಿದ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆ ವಿವಿಧ ಬ್ಯಾಂಕ್ಗಳಿಗೆ ಪತ್ರ ಬರೆದಿದೆ ಎಂದು ಮಾಕನ್ ಹೇಳಿದ್ದಾರೆ.
ಇದನ್ನು ಓದಿ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ