ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ (80) ರವರು ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಇಂದು ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಜುಲೈ 18 ರಂದು ಯೋಗ ಮಾಡುತ್ತಿದ್ದಾಗ ಜಾರಿ ಬಿದ್ದು ತಲೆಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿತ್ತು. ಆನಂತರ ಅವರನ್ನು ಖಾಸಗೀ ಆಸ್ಪತ್ರೆಯಲ್ಲಿ ಐಸಿಯುನಲ್ಲಿರಿಸಲಾಗಿತ್ತು. ಆದರೆ ಅವರು ಚೇತರಿಸಿಕೊಳ್ಳದೇ ನಿಧನರಾಗಿದ್ದಾರೆ.
ಆರಂಭದಲ್ಲಿ ತಲೆಗೆ ಪೆಟ್ಟಾದಾಗ ಅವರು ನಿರ್ಲಕ್ಷಿಸಿದ್ದರು. ಆದರೆ ನಂತರ ವೈದ್ಯರು ಗಂಭೀರ ಗಾಯದ ಬಗ್ಗೆ ಅರಿತು ಶಸ್ತ್ರ ಚಿಕಿತ್ಸೆಗೆ ಶಿಫಾರಸ್ಸು ಮಾಡಿದ್ದರು ಎಂದು ವರದಿಯಾಗಿದೆ.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಆಸ್ಕರ್ ಫರ್ನಾಂಡಿಸ್ ರವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.
ಸರಳ,ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು.
ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿಕೋರುವೆ. pic.twitter.com/p3txQfO6qj— Siddaramaiah (@siddaramaiah) September 13, 2021
ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) September 13, 2021
1941, ಮಾರ್ಚ್ 27 ರಂದು ಜನಿಸಿದ ಆಸ್ಕರ್ ಫರ್ನಾಂಡಿಸ್ ರವರು ನಾಲ್ಕು ಬಾರಿ ಸಂಸತ್ ಸದಸ್ಯರಾಗಿ ಮತ್ತು ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಕೇಂದ್ರ ಸಾರಿಗೆ ಸಚಿವರಾಗಿ ಮತ್ತು ಕಾರ್ಮಿಕ ಸಚಿವರಾಗಿ ಗಮನಸೆಳೆದಿದ್ದರು.
“ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡೀಸ್ ಅವರು ಇಹಲೋಕ ತ್ಯಜಿಸಿರುವುದು ಮನಸ್ಸಿಗೆ ತೀವ್ರ ನೋವನ್ನುಂಟುಮಾಡಿದೆ. ದೇಶಕ್ಕಾಗಿ ಮತ್ತು ಪಕ್ಷಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಶ್ರೀಯುತರು, ತಮ್ಮ ದೂರದೃಷ್ಟಿ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳಿಂದಾಗಿ ಜನಮಾನಸದಲ್ಲಿ ಯಾವತ್ತಿಗೂ ನೆನಪಿನಲ್ಲುಳಿಯಲಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ; ಮೃತರ ಸಂಖ್ಯೆ 8ಕ್ಕೆ ಏರಿಕೆ