ಪ್ರವಾಹ ಹಾಗೂ ಬರಪೀಡಿತ ಪ್ರದೇಶಗಳಿಗೆ ನೆರವು ಒದಗಿಸುವಲ್ಲಿ ವಿಫಲವಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಸೇರಿದಂತೆ ರಾಜ್ಯದ 22 ಜಿಲ್ಲೆಗಳು ಭೀಕರ ಪ್ರವಾಹಕ್ಕೆ ಸಿಲುಕಿ ತತ್ತರಿಸಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ತಾತ್ಕಾಲಿಕ್ ಶೆಡ್ ವ್ಯವಸ್ಥೆ ಇಲ್ಲ, ವಾರದೊಳಗೆ ಗಂಜಿ ಕೇಂದ್ರಗಳು ಮುಚ್ಚಿದವು, ಶಾಲೆಗಳು ನಡೆಯುತ್ತಿಲ್ಲ. ಈಗಲೂ ಸಂತ್ರಸ್ತರು ಬಸ್ ಸ್ಟ್ಯಾಂಡ್ಗಳು, ರಸ್ತೆಯಲ್ಲಿ ಜೀವನ ಸಾಗಿಸಬೇಕಾದ ಪರಿಸ್ಥಿತಿಯಿದೆ. ಗ್ರಾಮಗಳ ಸ್ಥಳಾಂತರ, ಪುನರ್ವಸತಿ ಒದಗಿಸುವ ಕಾರ್ಯ ಇನ್ನೂ ಆರಂಭಗೊಂಡಿಲ್ಲ. ನೆಪಮಾತ್ರಕ್ಕೆ ಪರಿಹಾರ ನೀಡಲಾಗಿದೆಯೇ ಹೊರತು ಅದರಿಂದ ಜನರಿಗೆ ಪ್ರಯೋಜನವಾಗುತ್ತಿಲ್ಲ. ಕೇಂದ್ರ ಸರ್ಕಾರವಂತೂ ಪ್ರವಾಹಕ್ಕೂ ತಮಗೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಬಿತ್ತನೆಗೆ ನೀರಿನ ಸೌಲಭ್ಯವಿಲ್ಲದೆ ಜನ ಕಂಗಾಲಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಜಿಲ್ಲೆಗಳನ್ನು ಇನ್ನೂ ಸಹ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿ, ಪರಿಹಾರ ಕಾರ್ಯಾಚರಣೆ ಕೈಗೊಂಡಿಲ್ಲ. ಸರ್ಕಾರ ಇನ್ನೂ ನಿದ್ರಾವಸ್ಥೆಯಲ್ಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಈ ತಾತ್ಸಾರ ಧೋರಣೆಯ ವಿರುದ್ಧ ಈ ತಿಂಗಳ 24ನೇ ತಾರೀಖಿನಂದು ಬೆಳಗಾವಿಯಲ್ಲಿ ‘ಬೃಹತ್ ಪ್ರತಿಭಟನೆ’ ನಡೆಸಲು ನಿರ್ಧರಿಸಲಾಗಿದೆ ಎಂದರು.
ಪ್ರತಿಭಟನೆಯಲ್ಲಿ ರಾಜ್ಯದ ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು ಮತ್ತು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.