Homeಅಂಕಣಗಳುಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?

ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?

- Advertisement -
- Advertisement -

ತಬ್ಲೀಘೀ ಜಮಾಅತ್ ಸಂಘಟನೆಯ ಹೆಸರನ್ನು ಮುಸಲ್ಮಾನ ಸಮುದಾಯದ ಆಚೆಗೆ ಮೊನ್ನೆ ಮೊನ್ನೆಯ ತನಕ ಕೇಳಿದವರ ಸಂಖ್ಯೆ ಅತಿ ವಿರಳ. ತಬ್ಲೀಘೀ ಜಮಾಅತ್ ನ ಅಕ್ಷರಶಃ ಅರ್ಥ ಧರ್ಮಪ್ರಸಾರ. ಇದೊಂದು ಸುನ್ನಿ ಮುಸಲ್ಮಾನ ಮಿಶನರಿ ಆಂದೋಲನ. ಸಾಮಾನ್ಯ ಮುಸಲ್ಮಾನರನ್ನು ತಲುಪಿ ಅವರ ಧರ್ಮಶ್ರದ್ಧೆಯನ್ನು ಮರುಜಾಗೃತಗೊಳಿಸುವುದು ಇದರ ಉದ್ದೇಶ. ರೂಢಿ ಆಚಾರಗಳು, ದಿರಿಸು, ಹಾಗೂ ವ್ಯಕ್ತಿಗತ ನಡವಳಿಕೆಯ ಮೇಲೆ ಒತ್ತು ನೀಡಲಾಗುತ್ತದೆ. ಆ ಆಂದೋಲನವನ್ನು ಹರಿಯಾಣದ ಮೇವಾಟ್ ಎಂಬಲ್ಲಿ 1927ರಲ್ಲಿ ಹುಟ್ಟಿ ಹಾಕಿದ್ದು ಧಾರ್ಮಿಕ ವಿದ್ವಾಂಸ ಮೌಲಾನಾ ಮಹಮ್ಮದ್ ಇಲ್ಯಾಸ್ ಖಾಂದಾಲಾ. ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದ ಮೇವಾಟ್ ನ ಮುಸಲ್ಮಾನ ರೈತರು ಬಹುತೇಕ ಹಿಂದೂ ರೂಢಿ ಆಚಾರಗಳನ್ನು ಪಾಲಿಸುತ್ತಿದ್ದರು. ಅವರನ್ನು ಪುನಃ ಇಸ್ಲಾಮ್ ತೆಕ್ಕೆಗೆ ಕರೆತಂದು ಇಸ್ಲಾಮ್ ನ ಸುವರ್ಣಯುಗ (ಖಿಲಾಫತ್) ಸ್ಥಾಪಿಸುವ ಗುರಿಯೊಂದಿಗೆ ಶುರುವಾದ ಚಳವಳಿಯಿದು. ವೇಗವಾಗಿ ಬೆಳೆಯಿತು. 150 ದೇಶಗಳಲ್ಲಿ ಸುಮಾರು ಎಂಟು ಕೋಟಿ ಅನುಯಾಯಿಗಳುಂಟು. ಸಾಮಾನ್ಯವಾಗಿ ರಾಜಕೀಯೇತರ ಮತ್ತು ಶಾಂತಿಪ್ರಿಯ ಆಂದೋಲನ. ಮತಾಂತರದ ಉದ್ದೇಶವಿಲ್ಲದ್ದು.

ದಕ್ಷಿಣ ದೆಹಲಿಯ ಮರ್ಕಾಝ್ ನಿಜಾಮುದ್ದೀನ್ ತಬ್ಲೀಘೀ ಜಮಾಅತ್ ನ ಪ್ರಧಾನ ಕೇಂದ್ರ. ಆರು ಅಂತಸ್ತುಗಳ ಕಟ್ಟಡ. ಇದೇ ಮಾರ್ಚ್ 13ರಿಂದ 15ರ ನಡುವೆ ಅಲ್ಲಿ ಜರುಗಿದ ಅಂತಾರಾಷ್ಟ್ರೀಯ ಸಮ್ಮೇಳನವೊಂದಕ್ಕೆ ನಾಲ್ಕು ಸಾವಿರ ಮಂದಿ ಸೇರಿದ್ದರು. ದೇಶದ ನಾನಾ ರಾಜ್ಯಗಳಿಂದ ಮಾತ್ರವಲ್ಲದೆ ಬಾಂಗ್ಲಾದೇಶ, ಇಂಡೋನೇಶ್ಯಾ, ಮಲೇಶಿಯಾ, ಸಿಂಗಪುರ ಮುಂತಾದ ದೇಶಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು. ನಿಜಾಮುದ್ದೀನ್ ಸೋಂಕಿನ ಮೂಲ ಈ ವಿದೇಶೀಯರೇ ಎಂದು ಶಂಕಿಸಲಾಗಿದೆ.

ಸಮ್ಮೇಳನ ಮತ್ತು ಹಿಂದು ಮುಂದಿನ ದಿನಗಳಲ್ಲಿ (ಮಾ.10-24) ಒಟ್ಟು ಆರೇಳು ಸಾವಿರ ಮಂದಿಯಾದರೂ ಈ ಕೇಂದ್ರವನ್ನ ಹೊಕ್ಕು ಬಳಸಿರುವ ಅಂದಾಜಿದೆ. ಸಮ್ಮೇಳನ ಮುಗಿದ ನಂತರ ಇನ್ನೂ ಅಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದ 2346 ಮಂದಿಯನ್ನು ಇದೇ ಏಪ್ರಿಲ್ ಒಂದರಂದು ಖಾಲಿ ಮಾಡಿಸಿ ಆಸ್ಪತ್ರೆಗಳು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿದೆ. ಈ ಮೊದಲು ಇಲ್ಲಿಂದ ನಾನಾ ರಾಜ್ಯಗಳಿಗೆ ತೆರಳಿದವರು ತಮಗೆ ಅರಿವಿಲ್ಲದೆಯೇ ಕರೋನಾ ಸೋಂಕನ್ನು ಹೊತ್ತೊಯ್ದಿದ್ದರು.

ನಿಜಾಮುದ್ದೀನ್ ಪೊಲೀಸ್ ಠಾಣೆಯ ಮೂಗಿನಡಿಯಲ್ಲೇ ಈ ಸಮ್ಮೇಳನವನ್ನು ನಡೆಯಗೊಟ್ಟ ಸರ್ಕಾರಿ ಆಡಳಿತವೂ ಈ ಪ್ರಕರಣದ ದೋಷವನ್ನು ಹೊರಲೇಬೇಕು. ಆದರೆ ಸೋಂಕಿನ ದಿನಗಳಲ್ಲಿ ಇಷ್ಟು ದೊಡ್ಡ ಸಮ್ಮೇಳನವನ್ನು ತಬ್ಲೀಘೀ ಸೂತ್ರಧಾರರು ಮುಂದೂಡದೆ ನಡೆಸಿದ್ದು ಹೊಣೆಗೇಡಿತನ ಮಾತ್ರವಲ್ಲದೆ ಕ್ರಿಮಿನಲ್ ಕೃತ್ಯವೂ ಹೌದು.

‘ಸಾಮಾಜಿಕ ದೂರ’ ಕಾಯ್ದುಕೊಳ್ಳಬೇಕೆಂಬ ಕಟ್ಟಳೆಯನ್ನು ಲೇವಡಿ ಮಾಡಿದ ತಬ್ಲೀಘಿ ಮುಖ್ಯಸ್ಥರ ನಡವಳಿಕೆ ಖಂಡನೀಯ.
ತಬ್ಲೀಘೀ ಜಮಾಅತ್ ಇಡೀ ಮುಸಲ್ಮಾನ ಸಮುದಾಯದ ಪ್ರಾತಿನಿಧಿಕ ಸಂಸ್ಥೆಯೇನೂ ಅಲ್ಲ. ಆದರೆ ತನ್ನ ತೀವ್ರ ಉಡಾಫೆಯ ಮತ್ತು ಬೇಜವಾಬ್ದಾರಿ ವ್ಯವಹಾರದಿಂದಾಗಿ ಇಡೀ ಮುಸಲ್ಮಾನ ಸಮುದಾಯವನ್ನು ಬಹುಸಂಖ್ಯಾತ ಕೋಮುವಾದಿಗಳ ದ್ವೇಷದ ದಳ್ಳುರಿಗೆ ತಳ್ಳಿದೆ. ಸಿಎಎ ಮತ್ತು ಎನ್.ಆರ್.ಸಿ. ವಿವಾದ ಹಿನ್ನೆಲೆಗೆ ಸರಿದ ನಂತರ ಹಿಂದು-ಮುಸ್ಲಿಮ್ ಮತ್ತು ಭಾರತ-ಪಾಕಿಸ್ತಾನದ ಕಿಚ್ಚನ್ನು ಹೊತ್ತಿಸಿ ಬೇಳೆ ಬೇಯಿಸುವವರು ನಿರುದ್ಯೋಗಿಗಳೂ, ಹತಾಶರೂ ಆಗಿಬಿಟ್ಟಿದ್ದರು. ಕರೋನ ವೈರಸ್ ಮಹಾಮಾರಿಯಲ್ಲಿ ಕೋಮುವಾದವನ್ನು ನುಗ್ಗಿಸುವ ಬಗೆ ಕಾಣದೆ ಕಂಗೆಟ್ಟಿದ್ದರು. ಹೀಗೆ ಹಸಿದು ಕಾದು ಕುಳಿತಿದ್ದ ರಣಹದ್ದುಗಳಿಗೆ ಹಸಿಮಾಂಸವನ್ನಾಗಿ ಅಮಾಯಕ ಮುಸ್ಲಿಮ್ ಸಮುದಾಯವನ್ನು ಉಣಬಡಿಸಿದೆ ತಬ್ಲೀಘೀ ಜಮಾಅತ್.

ವಿಶೇಷವಾಗಿ ಕಳೆದ ಐದಾರು ವರ್ಷಗಳಿಂದ ಹಿಂದೂ ಕಟ್ಟರ್ ವಾದಿಗಳ ದ್ವೇಷದ ಕಾವಲಿಯಲ್ಲಿ ಬೇಯತೊಡಗಿದ್ದ ಸಮುದಾಯವನ್ನು ಕರೋನಾ ಕಳಂಕದ ಬೆಂಕಿಗೆ ಎಸೆದಿದೆ. ದೇಶಾದ್ಯಂತ ತಲೆ ಎತ್ತಿ ನಿಂತಿರುವ ಮತಾಂಧ ಫೇಕ್ ನ್ಯೂಸ್ ಫ್ಯಾಕ್ಟರಿಗಳು ದಿನ ಬೆಳಗಾಗುವುದರೊಳಗೆ ಸಕ್ರಿಯವಾಗಿವೆ. ಹಳೆಯ ಮತ್ತು ಸಂಬಂಧವೇ ಇಲ್ಲದ ನಾನಾ ವಿಡಿಯೋಗಳನ್ನು ಬಳಸಿ ಮುಸಲ್ಮಾನರ ವಿರುದ್ದ ಸುಳ್ಳು ಸುದ್ದಿಗಳ ಪ್ರವಾಹವನ್ನೇ ಹರಿಯಬಿಟ್ಟಿವೆ. ಆಳುವವರ ಕಾಲು ನೆಕ್ಕಿ ಕುಂಯ್ಗುಡುವ ಟೀವಿ ಸುದ್ದಿ ಮಾಧ್ಯಮಗಳಂತೂ ತಬ್ಲೀಘಿ ಅವಿವೇಕದ ಹಿನ್ನೆಲೆಯಲ್ಲಿ ಹಗಲಿರುಳು ಮುಸ್ಲಿಮ್ ದ್ವೇಷವನ್ನು ಕಾರತೊಡಗಿವೆ. ಗೋರಕ್ಷಣೆಯ ಹೆಸರಿನಲ್ಲಿ ಮುಸಲ್ಮಾನರನ್ನು ರಸ್ತೆ ರಸ್ತೆಗಳಲ್ಲಿ ಹಾಡುಹಗಲೇ ಜಜ್ಜಿ ಕೊಂದ ನಂತರ, ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ನಂತರ, ಸಿಎಎ-ಎನ್ನಾರ್ಸಿ ತಂದು ಅವರ ನಾಗರಿಕತೆಯನ್ನು ಕಸಿಯುವ ಕಾರ್ಯಸೂಚಿಗೆ ವೇಗ ದೊರೆತ ನಂತರ, ದಿಲ್ಲಿ ಕೋಮು ಗಲಭೆಗಳಲ್ಲಿ ಅವರಿಗೆ ‘ಗುಜರಾತ್ ಮಾದರಿಯ ಪಾಠ ಕಲಿಸಿದ’ ನಂತರ ಕರೋನಾ ಕಾಲಿಟ್ಟಿತ್ತು. ಹಠಾತ್ತನೆ ಮುಸ್ಲಿಮ್ ದ್ವೇಷದ ಕಾರ್ಯಕ್ರಮಕ್ಕೆ ತಾತ್ಕಾಲಿಕ ತೆರೆ ಬಿದ್ದಿತ್ತು.

ಹಿಂದು-ಮುಸ್ಲಿಮ್ ದ್ವೇಷದಿಂದಲೇ ತಮ್ಮ ಅಸ್ತಿತ್ವ ಕಟ್ಟಿಕೊಂಡಿರುವವರು ಚಡಪಡಿಸಿದ್ದರು. ಅವರ ಪಾಲಿನ ವರವಾಗಿ ಬಂದದ್ದು ತಬ್ಲೀಘೀ ಪ್ರಕರಣ. ಮೂರನೆಯ ದರ್ಜೆಯ ಪ್ರಜೆಗಳಂತೆ ಬಿದ್ದಿರಬೇಕೆಂಬ ಇಂಗಿತವನ್ನು ಮುಸಲ್ಮಾನರಿಗೆ ಬಗೆಬಗೆಯಾಗಿ ರವಾನಿಸುತ್ತ ಬಂದಿರುವ ಆಳುವ ವರ್ಗ ತಬ್ಲೀಘೀ ಪ್ರಕರಣವನ್ನು ಕರೋನಾ ಭಯೋತ್ಪಾದನೆ, ಕರೋನಾ ಜಿಹಾದ್ ಎಂದೆಲ್ಲ ವಿಷ ಕಾರಿದೆ. ಕರೋನಾ ಜಾತಿ ಧರ್ಮಗಳನ್ನು ನೋಡಿ ಅಂಟುವ ರೋಗವಲ್ಲ ಎಂಬ ವಿವೇಕದ ಒಂದು ಮಾತನ್ನು ದೇಶ ನಡೆಸುವವರು ಆಡಿಲ್ಲ. ಆಡುವ ಮನಸ್ಥಿತಿಯೂ ಅವರದಲ್ಲ.

ಈ ಎಲ್ಲ ವಿಷದ ಬಿತ್ತನೆ, ಫೇಕ್ ನ್ಯೂಸ್ ಹಾಗೂ ಟೀವಿ ಛಾನೆಲ್ಲುಗಳ ದ್ವೇಷ ಪ್ರಸಾರದ ಪರಿಣಾಮವಾಗಿ ಸಾಮಾನ್ಯ ಮುಸಲ್ಮಾನರ ಬದುಕು ದುರ್ಭರವಾಗತೊಡಗಿದೆ. ಮುಸಲ್ಮಾನ ದ್ವೇಷ ಹಳ್ಳಿ ಹಳ್ಳಿಗಳನ್ನು ಪ್ರವೇಶಿಸತೊಡಗಿದೆ. ಅವರ ಬಹಿಷ್ಕಾರದ ಘಟನೆಗಳು ಕೇಳಿಬರುತ್ತಿವೆ. ಬೆಂಗಳೂರಿನ ಪದ್ಮನಾಭನಗರ ಬಡಾವಣೆಯಲ್ಲಿ ಸೊಪ್ಪು ಮಾರಲು ಬಂದ ಮುಸಲ್ಮಾನನ್ನು ಓಡಿಸಲಾಗಿದೆ.

ಅಂದಿನ ಅನ್ನವನ್ನು ಅಂದೇ ದುಡಿದು ಉಣ್ಣಬೇಕಿರುವ ದೇಶದ ಕೋಟ್ಯಂತರ ಅಸಂಘಟಿತ ಕಾರ್ಮಿಕರು ಲಾಕ್ ಡೌನ್ ನಿಂದ ಕಂಗೆಟ್ಟಿದ್ದಾರೆ. ಇದೇ ವರ್ಗಕ್ಕೆ ಸೇರಿರುವ ಮುಸಲ್ಮಾನ ನಿರ್ಗತಿಕರು ಲಾಕ್ ಡೌನ್ ಗಾಯದ ಮೇಲೆ ಕೋಮುದ್ವೇಷದ ಬರೆಯನ್ನೂ ಎಳೆಸಿಕೊಳ್ಳುವ ದುಪ್ಪಟ್ಟು ಸಂಕಟಕ್ಕೆ ಗುರಿಯಾಗಿದ್ದಾರೆ.

ನಿಜಾಮುದ್ದೀನ್ ಮರ್ಕಾಝ್ ಗೆ ಮುನ್ನ ಫೆಬ್ರವರಿಯಲ್ಲಿ ಮಲೇಷಿಯಾದಲ್ಲಿ ಜರುಗಿದ ಅಂತಾರಾಷ್ಟ್ರೀಯ ತಬ್ಲೀಘೀ ಸಮ್ಮೇಳನದಲ್ಲಿ 16 ಸಾವಿರ ಮಂದಿ ಭಾಗವಹಿಸಿದ್ದರು. ನೆರೆಹೊರೆಯ ಥಾಯ್ಲೆಂಡ್ ಮತ್ತು ಬ್ರೂನೇ ದೇಶಗಳಿಗೆ ಕರೋನಾ ಹಬ್ಬಿತ್ತು. ಪಾಕಿಸ್ತಾನದ ಲಾಹೋರಿನಲ್ಲಿ ಒಂದೂವರೆ ಲಕ್ಷ ಮಂದಿಯ ಮಾರ್ಚ್ ಸಮ್ಮೇಳನವನ್ನು ಕಡೆಯ ನಿಮಿಷಗಳಲ್ಲಿ ರದ್ದು ಮಾಡಲಾಗಿತ್ತು. ಆದರೆ ಆ ಹೊತ್ತಿಗಾಗಲೆ ದೂರ ದೇಶಗಳಿಂದ ಪ್ರತಿನಿಧಿಗಳು ಇಳಿದುಬಿಟ್ಟಿದ್ದರು. ಕರೋನಾ ಸೋಂಕನ್ನು ಕೆಣಕಿದ್ದರು.

ಮಾರ್ಚ್ 20ರ ಹೊತ್ತಿಗೆ ಪವಿತ್ರ ಮೆಕ್ಕಾ ಮತ್ತು ಮದೀನಾದಲ್ಲಿ ಜನಸಂದಣಿಯ ಪ್ರಾರ್ಥನೆಗಳನ್ನು ಸೌದಿ ಅರೇಬಿಯಾ ನಿಲ್ಲಿಸಿಬಿಟ್ಟಿದೆ. ಇಸ್ಲಾಮಿಕ್ ಗಣರಾಜ್ಯ ಇರಾನ್ ಸೇರಿದಂತೆ ಅರಬ್ ಜಗತ್ತಿನ ಎಲ್ಲೆಡೆ ಮಸೀದಿಗಳು ಮತ್ತಿತರೆ ಪವಿತ್ರ ಸ್ಥಾನಗಳಲ್ಲಿ ಸಾಮಾಜಿಕ ದೂರದ ನಿರ್ಬಂಧಗಳನ್ನು ವಿಧಿಸಲಾಗಿದೆ.

ಇಮಾಮ್ ಸೈಯದ್ ಅಹ್ಮದ್ ಬುಖಾರಿ, ಇಮಾಮ್ ಮುಫ್ತಿ ಮುಕರ್ರಮ್ ಅಹ್ಮದ್ ಹಾಗೂ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಹಾಗೂ ದೇವೋಬಂದ್ ದಾರುಲ್ ಉಲೂಮ್ ನ ಫತ್ವಾ ಮಾತ್ರವಲ್ಲದೆ ಅನೇಕ ಮಸೀದಿಗಳು ಗುಂಪು ಪ್ರಾರ್ಥನೆಗಳು ಕರೋನಾ ಸೋಂಕಿಗೆ ದಾರಿ ಮಾಡುತ್ತವೆ ಎಂದು ಸಾರಿ ಆಗಿದೆ. ಆದರೂ ಕೆಲವೆಡೆ ಇಂತಹ ಪ್ರಾರ್ಥನೆಗಳು ನಡೆಯುತ್ತಿವೆ. ಸಾಂಕ್ರಾಮಿಕ ರೋಗಗಳು ಮತ್ತು ಮಹಾಮಾರಿಗಳ ವಿಪತ್ತು ಎರಗಿದಾಗ ಯಾರೂ ಮತ್ತೊಬ್ಬರ ಮನೆಗೆ ಹೋಗಕೂಡದು ಮತ್ತು ಯಾರನ್ನೂ ತಮ್ಮ ಮನೆಗೆ ಕರೆಯಬಾರದು ಎಂದು ಪ್ರವಾದಿ ಮಹಮ್ಮದರು ಹೇಳಿದ್ದಾರೆ. ಭಾರೀ ಮಳೆ ಸುರಿಯುತ್ತಿದ್ದ ಒಂದು ದಿನ ಪ್ರಾರ್ಥನೆಯ ಹೊತ್ತು ಸಮೀಪಿಸಿದಾಗ ನಿಮ್ಮ ಮನೆಗಳಲ್ಲೇ ಪ್ರಾರ್ಥಿಸಿ ಎಂದು ಪ್ರವಾದಿ ಹೇಳಿದ್ದರು. ಒಂಟೆಗಳಿಗೆ ಮಾರಣಾಂತಿಕ ಸಾಂಕ್ರಾಮಿಕ ಜಾಡ್ಯ ತಗುಲಿದಾಗ ಸೋಂಕಿತ ಒಂಟೆಗಳನ್ನು ಆರೋಗ್ಯವಂತ ಒಂಟೆಗಳಿಂದ ದೂರ ಇಡುವಂತೆಯೂ ಸೂಚಿಸಿದ್ದರಂತೆ. ಹೀಗಿರುವಾಗ ಮಸೀದಿಗಳಲ್ಲಿ ಪ್ರಾರ್ಥಿಸುವುದನ್ನು ನಿರ್ಬಂಧಿಸಿರುವ ಸರ್ಕಾರ ಮುಸಲ್ಮಾನ ಸಮುದಾಯದ ಒಗ್ಗಟ್ಟನ್ನು ಮುರಿಯತೊಡಗಿದೆ ಎಂಬ ಧರ್ಮಗುರುಗಳ ಮಾತುಗಳು ಅಸಂಬದ್ಧ. ಸಾಮಾನ್ಯ ಅಮಾಯಕ ಮುಸ್ಲಿಮರನ್ನು ಕಾವಲಿಯಿಂದ ಕೆಂಡಕ್ಕೆ ತಳ್ಳುವ ಈ ಕೃತ್ಯ ನಿಲ್ಲಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...