Homeಮುಖಪುಟಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

- Advertisement -
- Advertisement -

ಕೊರೊನಾ ‘ಲಾಕ್‌ಡೌನ್’ ದೇಶದ ಆರ್ಥಿಕತೆಯನ್ನು ಹಾಳುಗೆಡವಿದೆ. ಅಪಾರ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ. ಇವುಗಳಿಗಿಂತಲೂ ಅತಿದೊಡ್ಡ ಅನಾಹತಕ್ಕೆ ಅದು ಎಡೆಮಾಡಿಕೊಟ್ಟಿದೆ. ಗ್ರಾಮೀಣ ಭಾರತದಲ್ಲಿ ‘ಬಾಲ್ಯವಿವಾಹ’ವೆಂಬ ಸೋಂಕು ರೌದ್ರನರ್ತನ ಮಾಡಿದೆ. ಕಂಗೆಟ್ಟ ಪೋಷಕರು ಜವಾಬ್ದಾರಿಯಿಂದ ಪಾರಾಗಲು ‘ಬಾಲ್ಯವಿವಾಹ’ದ ವ್ಯಾಪಾರದಲ್ಲಿ ಮುಳುಗಿದ್ದಾರೆ.

ಅದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಕೊಣ್ಣುರು ಗ್ರಾಮ. 16 ವರ್ಷದ ಹುಡುಗಿಯನ್ನು ಓದಿಸುವುದಾಗಿ ಸೋದರತ್ತೆ ಮತ್ತು ಮಾವ ಕರೆದೊಯ್ದು 24 ವರ್ಷದ ಯುವಕನಿಗೆ ವಿವಾಹ ಮಾಡಿಸಲು ಮುಂದಾಗಿದ್ದರು. ವಿಚಾರ ಅರಿತ ಹುಡುಗಿಯ ಅಣ್ಣ ಸ್ಥಳೀಯ ಪೊಲೀಸರ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಅಧಿಕಾರಿಗಳ ನೆರವು ಪಡೆದು ತಂಗಿಯನ್ನು ರಕ್ಷಿಸಿದ್ದಾನೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೇ ರೀತಿಯ ಪ್ರಕರಣ ಉತ್ತರ ಪ್ರದೇಶದ, ಬುಲಹಂದರ್ ಜಿಲ್ಲೆಯ ಅನುಪ್‌ಶಹರ್ ಪಟ್ಟಣದಲ್ಲಿಯೂ ನಡೆದಿದೆ. ಅಲ್ಲಿ ನತದೃಷ್ಟೆ 13 ವಯಸ್ಸಿನ ಬಾಲಕಿ. ಆಕೆಯ ಶಿಕ್ಷಕಿ ಉದ್ವಿಗ್ನತೆಗೆ ಬಿದ್ದು ಕರೆ ಮಾಡದಿದ್ದಲ್ಲಿ ಪರಿಸ್ಥಿತಿ ಕೈಮೀರುತ್ತಿತ್ತು. ನೆರೆಯ ಆಂಧ್ರದ ರಾಜಮಹೇಂದ್ರವರಂ ಪಟ್ಟಣದಲ್ಲಿಯೂ ಅಪ್ರಾಪ್ತ ವಯಸ್ಸಿನ ಬಾಲಕ-ಬಾಲಕಿಯರಿಬ್ಬರು ವಿವಾಹ ಮಾಡಿಕೊಂಡಿದ್ದಾರೆ. ಒಡಿಶಾದ ಭಾವನಿಪಟ್ನಾ ಜಿಲ್ಲೆಯಲ್ಲಿ ತಾಳಿಕಟ್ಟುವ ವೇಳೆ ವಧು ಪರಾರಿಯಾದಳೆಂದು, ವಧುವಿನ 15 ವರ್ಷದ ತಂಗಿಯನ್ನು ಹಸೆಮಣೆಯಲ್ಲಿ ಕೂರಿಸಿ ಮದುವೆ ನೆರವೇರಿಸಿದ್ದಾರೆ. ಇವೆಲ್ಲ ಪ್ರಕರಣಗಳಲ್ಲೂ 2006ರ ಬಾಲ್ಯವಿವಾಹ ತಡೆ ಕಾಯ್ದೆಯಡಿ ಕೇಸು ದಾಖಲಿಸಿ ಕ್ರಮ ಜರುಗಿಸಲಾಗಿದೆ. ಓರ್ವ ಬಾಲಕಿ ವಿವಾಹದ ವಯಸ್ಸಿಗೆ ಬರಲು 18 ವರ್ಷ ಆಗಿರಲೇಬೇಕು.

‘ಬಾಲ್ಯವಿವಾಹ’ವನ್ನು 1929ರ ಬಾಲ್ಯವಿವಾಹ ನಿಷೇಧ ಕಾಯ್ದೆಯು ‘ಅಪರಾಧ’ವನ್ನಾಗಿಸಿದೆ. ಇದು 1930ರ ಜುಲೈ 1ರಿಂದ ನಮ್ಮ ದೇಶದಲ್ಲಿ ಜಾರಿಗೆ ಬಂದಿದೆ. 9 ದಶಕ ಕಳೆದರೂ ಇಂದಿಗೂ ‘ಬಾಲ್ಯವಿವಾಹ’ ನಿರ್ಮೂಲನೆಯಾಗದಿರುವುದು ದುರಂತ. ಕೇಂದ್ರ ಸರ್ಕಾರದ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಅನ್ವಯ ಕರ್ನಾಟಕದಲ್ಲಿ ಶೇಕಡ 21.3ರಷ್ಟು ಹೆಣ್ಣುಮಕ್ಕಳು 18 ವರ್ಷ ಪೂರ್ಣಗೊಳ್ಳುವ ಮುಂಚೆಯೇ ವಿವಾಹಬಂಧನಕ್ಕೆ ಒಳಗಾಗುತ್ತಿದ್ದಾರೆ. ನಗರ ಪ್ರದೇಶದಲ್ಲಿ ಶೇಕಡ 16.1ರಷ್ಟು ಬಾಲ್ಯವಿವಾಹ ನಡೆದರೆ, ಗ್ರಾಮೀಣ ಭಾಗದಲ್ಲಿ ಶೇಕಡ 24.7ರಷ್ಟು ನಡೆಯುತ್ತಿವೆ. ಕರಾವಳಿ, ಮಲೆನಾಡಿನಲ್ಲಿ ಕಡಿಮೆ ಇದ್ದರೆ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ನಡೆಯುತ್ತಿವೆ.

ಮೊದಲ ಲಾಕ್‌ಡೌನ್ ತೆರವಾದ ನಂತರ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ 17 ವರ್ಷದ ಬಾಲಕಿ ತನಗೆ ಒಲ್ಲದ ವಿವಾಹ ನೆರವೇರಿಸುತ್ತಿದ್ದಾರೆಂದು 11 ಮೈಲಿ ದೂರ ಓಡಿ ಸರ್ಕಾರಿ ಕಛೇರಿಯೊಂದರಲ್ಲಿ ಆಶ್ರಯ ಪಡೆದಿದ್ದಳು. ಇನ್ನೊಂದು ಪ್ರಕರಣದಲ್ಲಿ ಚಾಮರಾಜನಗರ ತಾಲ್ಲೂಕಿನ ಗ್ರಾಮವೊಂದರಲ್ಲಿ ‘ಬಾಲ್ಯವಿವಾಹ’ ನಿಲ್ಲಿಸಲು ಸರ್ಕಾರಿ ಅಧಿಕಾರಿಗಳು ದಾಳಿ ನಡೆಸುವರೆಂದು ಅರಿತು ಬೇರೆ ಯುವತಿಯನ್ನು ತೋರಿಸಿ, ವಧುವನ್ನು ಮುಚ್ಚಿಟ್ಟಿದ್ದರು. ಸತತ ವಿಚಾರಣೆಗೆ ಹೆದರಿ ಅಧಿಕಾರಿಗಳ ಕಣ್ತಪ್ಪಿಸಲು ವಧುವನ್ನು ಬದಲಾಯಿಸಿ ಮುಚ್ಚಿಟ್ಟಿರುವುದಾಗಿ ಪೋಷಕರು ಒಪ್ಪಿಕೊಂಡಿದ್ದರು. ಕಂಪ್ಲಿ ಸಮೀಪದ ಹರಳಹಳ್ಳಿ ತಾಂಡದ 17 ವರ್ಷದ ಬಾಲಕಿ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವಾಗ ಲಾಕ್‌ಡೌನ್ ಆಗಿತ್ತು. ಮನೆಯಲ್ಲಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದರು. ಚೈಲ್ಡ್ ಲೈನ್ ಸಂಸ್ಥೆಯ ಸಹಕಾರದಿಂದ ಬಾಲ್ಯವಿವಾಹದಿಂದ ಪಾರಾದಳು. ಇದರ ಬೆನ್ನುಹತ್ತಿದ ಮೇಲೆ, ಮಾರ್ಚ್ 20ರಿಂದ ಜೂನ್ 20ರವರೆಗೆ 5584 ಕರೆಗಳು ಇದೇ ಕಾರಣಕ್ಕಾಗಿ ಚೈಲ್ಡ್ ಲೈನ್ 1098ಕ್ಕೆ ಬಂದಿದ್ದು ತಿಳಿದು ನಾನು ಬೆಚ್ಚಿಬಿದ್ದೆ. ಮೊದಲ ಲಾಕ್‌ಡೌನ್‌ಗೂ ಮುಂಚಿನ ವರ್ಷದಲ್ಲಿ 150 ಬಾಲ್ಯವಿವಾಹ ನಡೆದಿದೆ. ಮೊದಲ ಲಾಕ್‌ಡೌನ್‌ನ ನಾಲ್ಕೇ ತಿಂಗಳಲ್ಲಿ 107 ಬಾಲ್ಯವಿವಾಹಗಳು ಜರುಗಿವೆ. 2020 ಮಾರ್ಚ್‌ನಿಂದ ಜೂನ್‌ವರೆಗೆ 550ಕ್ಕೂ ಹೆಚ್ಚು ದೂರುಗಳು ಮಕ್ಕಳ ಆಯೋಗದಲ್ಲಿ ದಾಖಲಾಗಿವೆ. ಅದರಲ್ಲೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಂದ ಹೆಚ್ಚಿನ ದೂರುಗಳು ಸ್ವೀಕೃತಗೊಂಡಿವೆ. ಗಾಬರಿಯಾಗುವ ಅಂಶವೆಂದರೆ, ಬಲವಂತದ ಮದುವೆಯಿಂದ ಕಾಪಾಡಿ ಎಂದು ಅಂಗಲಾಚಿದವರಲ್ಲಿ ಶೇಕಡ 91ರಷ್ಟು ‘ಅಪ್ರಾಪ್ತ ಬಾಲಕಿ’ಯರಿದ್ದಾರೆ. ಇವರುಗಳು ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣಕ್ಕೆ ಸೇರಿದವರಾಗಿದ್ದಾರೆ.

PC : ಮೈಸೂರು ಟುಡೆ

ಈ ಅಂಕಿಸಂಖ್ಯೆಗಳು ವಾಸ್ತವಕ್ಕಿಂತ ಕಡಿಮೆಯೂ ಆಗಿರಬಹುದು. ಅತ್ಯಂತ ನೋವಿನ ವಿಚಾರ ಎಂದರೆ, ಪ್ರತಿ ವರ್ಷ 12 ಮಿಲಿಯನ್ ಅಪ್ರಾಪ್ತ ಬಾಲಕಿಯರಿಗೆ ವಿವಾಹ ಮಾಡಿಸಲಾಗುತ್ತಿದೆ ಎಂಬ ವಿಷಯ.

ಇನ್ನು ನಮ್ಮ ದೇಶದಲ್ಲಿ 2020ರ ಮಾರ್ಚ್‌ನಿಂದ ಜೂನ್ ನಡುವೆ 5584 ‘ಬಾಲ್ಯವಿವಾಹ’ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೇಳಿದೆ. ಅಲ್ಲದೆ ಮಕ್ಕಳ ಸಹಾಯವಾಣಿಗೆ ಬರುವ ತೊಂದರೆ ಕರೆಗಳಲ್ಲಿಯೂ ಶೇಕಡ 17ರಷ್ಟು ಹೆಚ್ಚಾಗಿದೆ. ದೂರುಗಳು ಹೆಚ್ಚಾದ ಮಾತ್ರಕ್ಕೆ ವಿವಾಹಗಳೂ ಜಾಸ್ತಿ ಆಗಿವೆ ಎಂದರ್ಥವಲ್ಲವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿಂದಿನ ನಿರ್ದೇಶಕ ಕೆ.ಎ. ದಯಾನಂದ ಅವರು ತಿಳಿಸಿದ್ದರು. ಬಾಲ್ಯವಿವಾಹ ತಡೆಗಟ್ಟಲು ಮೊದಲು ಸಕ್ಷಮ ಪ್ರಾಧಿಕಾರದ ಅಧಿಕಾರಿಗಳ ಸಂಖ್ಯೆ ಕಡಿಮೆ ಇತ್ತು. ಈಗ ನಮ್ಮಲ್ಲಿ 5,800 ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿದ್ದಾರೆ. ಒಟ್ಟಾರೆ ನಮ್ಮ ದೇಶದಲ್ಲಿ 10-19 ವರ್ಷ ವಯಸ್ಸಿನ ಹದಿಹರೆಯದವರಲ್ಲಿ 17.26 ಮಿಲಿಯನ್ ವಿವಾಹಿತರಿದ್ದಾರೆ. ಇದು ‘ಮಕ್ಕಳ ಹಕ್ಕುಗಳ ಗುಂಪು CRY’ನ ಅಧ್ಯಯನ ವರದಿ’ಯಾಗಿದೆ. ಇದನ್ನು 2020ರ ಅಕ್ಟೋಬರ್ 11ರಂದು ಆಚರಿಸಿದ ಅಂತಾರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆಯಂದು ಬಿಡುಗಡೆಗೊಳಿಸಲಾಗಿದೆ.

‘ಬಾಲ್ಯವಿವಾಹ’ವು ಬಾಲಕಿ ಮತ್ತು ಬಾಲಕರಿಬ್ಬರ ಮೇಲೆಯೂ ಪರಿಣಾಮ ಬೀರುತ್ತದೆ. ಅದರಲ್ಲೂ ಹೆಣ್ಣುಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಅವರ ಮೂಲ ಹಕ್ಕುಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ‘ಬಾಲ್ಯವಿವಾಹ’ ನಿರ್ಬಂಧಿತ ಕಾಯ್ದೆ 2006ನ್ನು ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕೆಂದು ತಜ್ಞರು ಸಲಹೆ ನೀಡಿದ್ದಾರೆ. ನಿರ್ದಿಷ್ಟವಾಗಿ ತಳಮಟ್ಟದಲ್ಲಿ, ‘ಬಾಲ್ಯವಿವಾಹ’ದ ವಿರುದ್ಧ ಸುಲಭವಾಗಿ ದೂರು ನೀಡಲು ಸಾಧ್ಯವಾಗುವ ‘ಸಾಮಾಜಿಕ ಪರಿಸ್ಥಿತಿ’ಯನ್ನು ನಿರ್ಮಾಣ ಮಾಡಬೇಕಿದೆ.

‘ಕಡ್ಡಾಯ ಹಕ್ಕು ಶಿಕ್ಷಣ ವೇದಿಕೆ’ಯ ‘ಶಿಕ್ಷಣ ಹಕ್ಕು ಜಾಲ’ ಹೇಳಿದಂತೆ, ನಮ್ಮ ದೇಶದಲ್ಲಿ ಸುಮಾರು ಶೇಕಡ 40ರಷ್ಟು ಹೆಣ್ಣುಮಕ್ಕಳು 15-18 ವರ್ಷದೊಳಗಡೆ ಶಾಲೆಯನ್ನು ಬಿಡುತ್ತಿದ್ದಾರೆ. ಇಂತಹ ಆಘಾತಕಾರಿ ಹಂತವನ್ನು ಅಂತಾರಾಷ್ಟ್ರೀಯ ಶಿಕ್ಷಣ ದಿನಾಚರಣೆ ಮತ್ತು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಜನವರಿ 24ರಂದು ಬಿಡುಗಡೆ ಮಾಡಲಾಗಿದೆ. ಕೊರೊನಾ ಒಂದು ಮತ್ತು ಎರಡನೇ ಅಲೆ ಸದ್ಯದ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಇದು ಬಾಲಕರಿಗಿಂತ ಬಾಲಕಿಯರ ಮೇಲೆ ಹೆಚ್ಚು ಮತ್ತು ಅಸಮಾನವಾದ ಪರಿಣಾಮ ಬೀರಿದೆ. ಒಂದು ಅಂದಾಜಿನಂತೆ ಸುಮಾರು 10 ಮಿಲಿಯನ್ ಪ್ರೌಢಶಾಲಾ ವಿದ್ಯಾರ್ಥಿನಿಯರು ಕಲಿಕೆಯಿಂದ ವಿಮುಕ್ತರಾಗಿದ್ದಾರೆ. ಇದರಿಂದಾಗಿ ಇವರುಗಳು ಬೇಗನೆ ಮದುವೆಯಾಗುತ್ತಿದ್ದಾರೆ. ಸಾಲದ್ದಕ್ಕೆ ‘ಬಡತನ’, ‘ಮಾನವ ಕಳ್ಳಸಾಗಾಣಿಕೆ’ ಹಾಗೂ ‘ಹಿಂಸಾಚಾರ’ಕ್ಕೂ ಗುರಿಯಾಗುತ್ತಿದ್ದಾರೆ.

ಇದಕ್ಕೆ ಶಾಲೆ ಮುಚ್ಚಿರುವುದೂ ದೊಡ್ಡ ಕಾರಣವಾಗಿದೆ. ಒಂದು ವೇಳೆ ಶಾಲೆಗಳು ತೆರೆದಿದ್ದರೆ ಅವು ಅಪ್ರಾಪ್ತ ಹೆಣ್ಣುಮಕ್ಕಳನ್ನು ಬಹುಮಟ್ಟಿಗೆ ಕಾಪಾಡುತ್ತಿತ್ತು. ಒಂದೊಮ್ಮೆ ಈ ಸಾಲಿಗೂ ಶಾಲೆಗಳು ತೆರೆಯದಿದ್ದರೆ ಬಾಲಕಿಯರಿಗೆ ‘ಬಾಲ್ಯವಿವಾಹ’ ಬೆನ್ನುಹತ್ತುವ ಅಪಾಯ ಇದೆ. ಹೀಗಾಗಿಯೇ ‘ಬಾಲ್ಯವಿವಾಹ’ ಮತ್ತು ‘ಬಲವಂತದ ವಿವಾಹ’ಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯುನಿಸೆಫ್‌ನ 2020ರ ಜೂನ್‌ನ ವರದಿಯ ಪ್ರಕಾರ ನಮ್ಮ ದೇಶದಲ್ಲಿ ಶಾಲೆಗಳನ್ನು ಮುಚ್ಚಿರುವುದರಿಂದ 247 ಮಿಲಿಯನ್ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

ನಮ್ಮ ದೇಶದಲ್ಲಿ ‘ಬಾಲ್ಯವಿವಾಹ’ ನಿರ್ಮೂಲನೆ ಒಂದು ಸಂಕೀರ್ಣ ಸಮಸ್ಯೆಯಾಗಿ ಕೂತಿದೆ.
ಇದಕ್ಕೆ ‘ಬಡತನ’ ಒಂದೇ ಕಾರಣವಲ್ಲ. ಬದಲಿಗೆ ಸಂಕುಚಿತ ಮತ್ತು ಪ್ರತಿಗಾಮಿ ಮನಸ್ಥಿತಿ ಹೊಂದಿರುವ ಬಹುಸಂಖ್ಯಾತ ‘ಪಿತೃಪ್ರಧಾನ ವ್ಯವಸ್ಥೆ’ ಪ್ರಧಾನ ಕಾರಣವಾಗಿದೆ. ಇದು ‘ಲಿಂಗಸಮಾನತೆ’ಯನ್ನು ಹತ್ತಿಕ್ಕುತ್ತಿದೆ. ಉತ್ತರ ಪ್ರದೇಶದ ಪನ್ನಲಾಲ್‌ಗೆ ನಾಲ್ಕು ಹೆಣ್ಣುಮಕ್ಕಳಿದ್ದವು. ಐದನೇ ಮಗು ಹೆರಲು ಈತನ ಹೆಂಡತಿ ಅನಿತಾದೇವಿ ಗರ್ಭವತಿಯಾಗಿದ್ದಳು. 6 ತಿಂಗಳ ಗರ್ಭವತಿಯ ಹೊಟ್ಟೆಯಲ್ಲಿರುವುದು ಗಂಡೋ, ಹೆಣ್ಣೋ ಎಂದು ಪರೀಕ್ಷಿಸಲು ಪತ್ನಿಯ ಹೊಟ್ಟೆಯನ್ನೇ ಸೀಳಿದ್ದ ಪೈಶಾಚಿಕ ಪ್ರಕರಣ ನಡೆದಿತ್ತು. ಅನಿತಾದೇವಿ ಪ್ರಾಣಾಪಾಯದಿಂದ ಪಾರಾದರು. ಗರ್ಭದಲ್ಲಿದ್ದ ಗಂಡು ಉಳಿಯಲಿಲ್ಲ. ಇಂತಹ ಘಟನೆಗಳು ಜರುಗದಂತಹ ರಕ್ಷಣೆಯ ಹೊಣೆಯನ್ನು ನಾವೆಲ್ಲರೂ ಹೊರುವಂತಾಗಬೇಕು. ಇಲ್ಲಿ ಹೆಣ್ಣುಮಗು ಸದಾ ಸಂತ್ರಸ್ಥೆಯೇ ಆಗಿರುತ್ತಾಳೆ. ಹೆಸರಿಗಷ್ಟೆ ಹೆಣ್ಣು ಪಾಲುದಾರಳಾಗಿದ್ದಾಳೆ. ‘ಸಮಾಜ ಆತ್ಮಾವಲೋಕನ’ ಮಾಡಿಕೊಳ್ಳುವ ಅಗತ್ಯವಿದೆ.

ಶಿಕ್ಷಣ ಮತ್ತು ಪ್ರಜಾಪ್ರಭುತ್ವದ ಮಧ್ಯೆ ಸಂಬಂಧವಿದೆ. ಶಾಲೆಗಳು ಎಲ್ಲರನ್ನು ಒಳಗೊಂಡಿದೆಯೇ ಎಂಬುದನ್ನು ನಾವಿಂದು ಕೇಳಿಕೊಳ್ಳಬೇಕಿದೆ ಮತ್ತು ಚಿಂತಿಸಬೇಕಿದೆ. ಇವತ್ತಿಗೂ ದೇಶದ ಬಹುತೇಕ ಕಡೆ ಶಾಲೆಯ ಬೋರ್ಡ್‌ನ್ನು ಗಂಡುಮಕ್ಕಳು ಶುಚಿಗೊಳಿಸಿದರೆ, ಹೆಣ್ಣುಮಕ್ಕಳು ಶಾಲೆಯ ಕಸಗುಡಿಸುತ್ತಾರೆ. ಬಾಲಕರು ಫುಟ್ಬಾಲ್, ಕ್ರಿಕೆಟ್ ಆಡಿದರೆ, ಹೆಣ್ಣುಮಕ್ಕಳು ಖೋ-ಖೋ, ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಇಂತಹ ತಾರತಮ್ಯದ ಆಚರಣೆ ದೇಶಾದ್ಯಂತ ಎಲ್ಲಾ ಶಾಲೆಗಳಲ್ಲಿದ್ದರೂ, ಬಾಲಕಿಯರು ಯಾವುದೇ ಪ್ರತಿರೋಧ ತೋರದೆ ಒಪ್ಪಿಕೊಂಡು ಸಾಗುತ್ತಿದ್ದಾರೆ. ಇದರೊಂದಿಗೆ ಲೈಂಗಿಕ ಕಿರುಕುಳ ಕೂಡಿ ವಿದ್ಯಾರ್ಥಿನಿಯರ ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸಿದೆ.

ಲಾಕ್‌ಡೌನ್ ಕಾಲದ ಸಂಕಷ್ಟಗಳನ್ನು ಮತ್ತು ಪರಿಸ್ಥಿತಿಯನ್ನು ನಿರ್ವಹಿಸುವ ಸಲುವಾಗಿ 2020ರ ಜೂನ್‌ನಲ್ಲಿ ದೆಹಲಿ ಮೂಲದ ‘ಶಕ್ತಿವಾಹಿನಿ’ ಸಹಾಯವಾಣಿ ಪ್ರಾರಂಭಿಸಿತ್ತು. ಇದು ‘ಬಾಲ್ಯವಿವಾಹ’ ಮತ್ತು ‘ಮಾನವ ಕಳ್ಳಸಾಗಾಣಿಕೆ’ ವಿರುದ್ಧವೂ ಕಾರ್ಯನಿರ್ವಹಿಸಿತು. ಲಾಕ್‌ಡೌನ್ ಸಂದರ್ಭದಲ್ಲಿನ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ನಿಸ್ಸಹಾಯಕ ಪೋಷಕರಿಂದ ಅಪ್ರಾಪ್ತ ಬಾಲಕಿಯರನ್ನು ಕೊಂಡು ‘ಕಳ್ಳಸಾಗಾಣಿಕೆ’ಯನ್ನು ಮಾಡಲಾಗಿರುವಂತಿದೆ.

ನಮ್ಮ ರಾಜದಲ್ಲಿ ‘ಬಾಲ್ಯವಿವಾಹ’ದ ಬಗ್ಗೆ ಕಟ್ಟುನಿಟ್ಟಾದ ಪರಿವೀಕ್ಷಣೆ ಇದೆ. ಹಲವು ಯೋಜನೆಗಳು ‘ಬಾಲ್ಯವಿವಾಹ’ವನ್ನು ನಿರುತ್ತೇಜನಗೊಳಿಸುತ್ತಿವೆ. ಜೊತೆಗೆ ಅರಿವನ್ನು ಮೂಡಿಸುತ್ತಿವೆ. ಇಂತಹ ಮಹತ್ಕಾರ್ಯದಲ್ಲಿ ಚೈಲ್ಡ್ ರೈಟ್ ಟ್ರಸ್ಟ್ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಇದು ಬಾಲ್ಯವಿವಾಹ ಸಂತ್ರಸ್ಥೆಯರು ಅಧಿಕ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಪತ್ತೆಹಚ್ಚಿ, ಅವರ ಜೀವನ ನಿರ್ವಹಣೆಗಾಗಿ ವಿವಿಧ ರೀತಿಯ ತರಬೇತಿ ನೀಡುವ ಮೂಲಕ ಸಬಲೀಕರಿಸುತ್ತಿದೆ. ಹೊಲಿಗೆ, ಕಂಪ್ಯೂಟರ್ ತರಬೇತಿ, ಓದಿಗೆ ನೆರವು, ಕರಕುಶಲ ತರಬೇತಿಗಳನ್ನು ಚೈಲ್ಡ್ ರೈಟ್ ಟ್ರಸ್ಟ್ ನೀಡುತ್ತಿದೆ.

ಇಷ್ಟಕ್ಕೂ, ಆಳವಾಗಿ ಬೇರೂರಿರುವ ಸಾಮಾಜಿಕ-ಧಾರ್ಮಿಕ ಪೂರ್ವಾಗ್ರಹಗಳ ವಿರುದ್ಧ ಕಾನೂನು ಮಾತ್ರವೇ ಮದ್ದಾಗಿ, ಪ್ರತಿರೋಧ ಒಡ್ಡಲು ಸಾಧ್ಯವಿಲ್ಲ.

‘ಬಾಲ್ಯವಿವಾಹ’ ಎಂಬುದು ಗ್ರಾಮೀಣ ಪ್ರದೇಶದ ಬಡಕುಟುಂಬಗಳಲ್ಲಿ ಮಾತ್ರವಲ್ಲದೆ, ನಗರಗಳ ಶ್ರೀಮಂತ ಕುಟುಂಬಗಳಲ್ಲಿಯೂ ನಡೆಯುತ್ತಿವೆ. ಇದಕ್ಕೆ ಪರಿಣಾಮಕಾರಿ ಪರಿಹಾರ ಒದಗಬೇಕೆಂದರೆ, ನಮ್ಮ ‘ಶಿಕ್ಷಣ ವ್ಯವಸ್ಥೆ’ಯನ್ನು ಅಮೂಲಾಗ್ರವಾಗಿ ಬದಲಿಸಬೇಕಿದೆ.

ಇವತ್ತು ಕೊರೊನಾ ಸಾವಿರಾರು ಮಕ್ಕಳನ್ನು ಅದರಲ್ಲೂ ಹೆಣ್ಣುಮಕ್ಕಳನ್ನು ಕಲಿಕೆಯಿಂದ ಹೊರಗೆ ತಳ್ಳುವ ಮೂಲಕ ವಿಷಮ ಪರಿಸ್ಥಿತಿಯನ್ನು ಸೃಷ್ಟಿಸಿದೆ. ‘ಸಾಮಾನ್ಯ ಶಾಲಾ ವ್ಯವಸ್ಥೆ’ ಅತ್ಯಂತ ಪ್ರಮುಖವಾದದ್ದು. ಕಾರಣ ಇಲ್ಲಿ ‘ಅಹಿಂದ’ ಮಕ್ಕಳು ಶಾಲೆ ಕಡೆ ಬರುವಂತೆ ಉತ್ತೇಜಿಸಲಾಗುತ್ತದೆ.

ಓದುಗರೆ ಮರೆಯದಿರಿ, ಚಾಲಕರ, ಸೆಕ್ಯುರಿಟಿ ಗಾರ್ಡ್‌ಗಳ, ಮನೆಗೆಲಸದವರ, ದಿನಗೂಲಿ ಮಾಡುವವರ ಮಕ್ಕಳು ‘ಬಾಲ್ಯವಿವಾಹ’ವೆಂಬ ರಕ್ಕಸ ಆಚರಣೆಗೆ ಬಲಿಯಾದಲ್ಲಿ, ಪಾಪಕೃತ್ಯದ ಪಾಲನ್ನು ನಾವುಗಳೇ ಹೊರಬೇಕಾಗುತ್ತದೆ. ಇಷ್ಟೇ ಅಲ್ಲ, ಅಸಹಾಯಕ ಬಾಲಕಿಯರನ್ನು ವಿವರಿಸಲಾಗದ ಯಾತನೆಯ ಪ್ರಪಂಚಕ್ಕೆ ದೂಡಿದ ಹೊಣೆಯನ್ನು ಹೊರಬೇಕಾಗುತ್ತದೆ. ಅರೆ, ಲೇಖನ ಓದಿದ ಮಾತ್ರಕ್ಕೆ ಅಥವಾ ನೆರೆಹೊರೆಯಲ್ಲಿ ಘಟನೆ ಕೇಳಿದಾಕ್ಷಣ ಅಥವಾ ನೋಡಿದಾಕ್ಷಣ ನಾವು ‘ಭಾದ್ಯಸ್ಥರಲ್ಲ’ ಎಂದು ಮೈಮರೆಯದಿರಿ. ಹಾಗೆಯೇ ಇಂತಹ ‘ಸಾಮಾಜಿಕ ಅನಿಷ್ಠ’ಗಳನ್ನು ಸರ್ಕಾರ ನಿಲ್ಲಿಸಲಿ. ಪೊಲೀಸರು ‘ನಿರ್ಬಂಧಿಸಲಿ’ ಅಥವಾ ಸರ್ಕಾರೇತರ ಸಂಘಟನೆಗಳು ‘ಕೊನೆಗಾಣಿಸಲಿ’ ಎಂಬ ದುರಾಲೋಚನೆಯನ್ನು ಇವತ್ತೇ ಕೈಬಿಡಿ. ಕಾರಣ ನಮಗೂ ‘ಜವಾಬ್ದಾರಿ’ ಇದೆ. ಇಂತಹ ಕ್ರೂರ ಹೊತ್ತಿನಲ್ಲಿ ನಾವಷ್ಟೆ ಅಲ್ಲ, ದೇಶವಾಸಿಗಳು ಮಾತ್ರವಲ್ಲ, ಜಗತ್ತಿನ ಜನತೆ ಬದುಕುಳಿಯಲು ಒಂದು ಸಮಾಜವಾಗಿ ಕಾರ್ಯನಿರ್ವಹಿಸಬೇಕಿದೆ. ಜೊತೆಗೆ ‘ಲಸಿಕೆ’ ಮತ್ತು ‘ಸಂಪನ್ಮೂಲ’ಗಳ ಹಂಚುವಿಕೆಯನ್ನು ಸಮಾನವಾಗಿ ಒಗ್ಗಟ್ಟಿನಿಂದ ಹಂಚಿಕೊಳ್ಳುವುದನ್ನು ಕಲಿಯಬೇಕಿದೆ.

ನನ್ನ ದೇಶ ಮುನ್ನಡೆಸುವವರೇ, ಸ್ವಿಸ್ ಬ್ಯಾಂಕಿನಿಂದ ಹಣ ತರದಿದ್ದರೂ ಪರವಾಗಿಲ್ಲ, ದುಬಾರಿ ತೆರಿಗೆ ವಿಧಿಸುವುದರಿಂದ ವಿಮುಖರಾಗದಿದ್ದರೂ ಪರವಾಗಿಲ್ಲ, ಮೊದಲು ‘ಬಾಲ್ಯವಿವಾಹ’ ತಡೆಯಿರಿ. ಹೆಣ್ಣುಮಕ್ಕಳಿಗೆ ‘ಆರೋಗ್ಯ’ ಮತ್ತು ‘ಪೌಷ್ಠಿಕಾಂಶ’ ಒದಗಿಸಿಕೊಡುವುದನ್ನು ಖಾತ್ರಿಪಡಿಸಿ. ಪ್ರಧಾನವಾಗಿ ಪ್ರತಿಯೊಂದು ಹೆಣ್ಣುಮಗು ಕನಿಷ್ಠ 12 ವರ್ಷದ ವಿದ್ಯಾಭ್ಯಾಸವನ್ನು ಕಡ್ಡಾಯವಾಗಿ ಪೂರೈಸಲು ನೀತಿ ತನ್ನಿ. ಜೀವನ ನಡೆಸಲು ಬೇಕಾದ ‘ಕೌಶಲ್ಯ ಆಧಾರಿತ ಶಿಕ್ಷಣ’ ಮತ್ತು ‘ಉನ್ನತ ಶಿಕ್ಷಣ’ ಕಲಿಕೆಗೂ ಅವಕಾಶ ಕಲ್ಪಿಸಿಕೊಡಿ.

ಡಾ. ಎಂ.ಎಸ್. ಮಣಿ

ಡಾ. ಎಂ.ಎಸ್. ಮಣಿ
ಸಾಮಾಜಿಕ ಮತ್ತು ಸಂಶೋಧನಾತ್ಮಕ ಲೇಖನಗಳನ್ನು ಬರೆಯುವ ಡಾ.ಎಂ.ಎಸ್.ಮಣಿ ಅವರು ಪತ್ರಕರ್ತರ ಸಂಘಟನೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಇವರ ತಲ್ಲಣ, ಹರಿವು, ಒಡಲಾಗ್ನಿ, ಭಾವಭಿತ್ತಿ ಪುಸ್ತಕಗಳು ಪ್ರಕಟವಾಗಿದೆ.


ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...