ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ತಡೆಯಲು ಕೋವಿಡ್ ಹೆಸರು ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಮತ್ತು ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಟೀಕಿಸಲಾಗಿದೆ.
“ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ನಿಯಮಾವಳಿ ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಬೇಕು. ಪ್ರೊಟೊಕಾಲ್ ಅನುಸರಿಸುತ್ತಿಲ್ಲವಾದರೆ ರಾಷ್ಟ್ರೀಯ ಹಿತಾಸಕ್ತಿಯ ಕಾರಣದಿಂದ ಯಾತ್ರೆಯನ್ನು ನಿಲ್ಲಿಸಬೇಕು” ಎಂದು ಕೇಂದ್ರ ಆರೋಗ್ಯ ಸಚಿವರ ಮನ್ಸುಖ್ ಮಾಂಡವಿಯಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಜೈರಾಂ ರಮೇಶ್, “Omicron ಸಬ್-ವೇರಿಯಂಟ್ BF.7 ಉಲ್ಬಣದ 4 ಪ್ರಕರಣಗಳು ಗುಜರಾತ್ ಮತ್ತು ಒಡಿಶಾದಲ್ಲಿ ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್ನಲ್ಲಿ ವರದಿಯಾಗಿದೆ. ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಮತ್ತು ಇಂದು ಪ್ರಧಾನಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. #BharatJodoYatra ಮರುದಿನ ದೆಹಲಿ ಪ್ರವೇಶಿಸಲಿದೆ. ಕ್ರೊನಾಲಜಿ ಅರ್ಥ ಮಾಡಿಕೊಳ್ಳಿ” ಎಂದು ಟೀಕಿಸಿದ್ದಾರೆ.
4 cases of Omicron sub-variant BF.7 driving Chinese surge were reported in Gujarat & Odisha in July, Sept & Nov. Health Minister writes a letter to @RahulGandhi yesterday. PM is reviewing situation today. #BharatJodoYatra will enter Delhi day after. Ab Aap Chronology Samjhiye…
— Jairam Ramesh (@Jairam_Ramesh) December 22, 2022
ಇನ್ನೊಂದೆಡೆ ಸಾಮ್ನಾ ಕೂಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. “ಭಾರತ್ ಜೋಡೋ’ ಯಾತ್ರೆಯ ಯಶಸ್ಸಿನಿಂದಾಗಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಭೀತಿ ಸರಿಯಾಗಿದೆ. ಆದರೆ ಮೂರು ವರ್ಷಗಳ ಹಿಂದೆ ಕೊರೊನಾ ವಿನಾಶವನ್ನುಂಟುಮಾಡಿದಾಗ ಅಂದಿನ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಗುಜರಾತ್ಗೆ ಆಹ್ವಾನಿಸಿ, ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿದ್ದು ನೀವೇ” ಎಂದು ಕಿಡಿಕಾರಿದೆ.
“ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಚುನಾವಣಾ ಯಾತ್ರೆಗಳನ್ನು ನಡೆಸುತ್ತಿದೆ. ಆರೋಗ್ಯ ಸಚಿವರು ಅವರಿಗೆ ಪತ್ರ ಕಳುಹಿಸಿದ್ದಾರೆಯೇ? ದಯವಿಟ್ಟು ಕೋವಿಡ್ ಪ್ರೋಟೋಕಾಲ್ಗಳನ್ನು ಪ್ರಕಟಿಸಿ. ನಾವು ಅವುಗಳನ್ನು ಅನುಸರಿಸುತ್ತೇವೆ” ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿಳಿಸಿದ್ದಾರೆ.
ಈ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ದೃಷ್ಟಿಯಿಂದ ಮತ್ತು ಕೋವಿಡ್ ಸಾಂಕ್ರಾಮಿಕ ರೋಗದ ಸಮಸ್ಯೆ ದೇಶದಲ್ಲಿ ಉಂಟಾಗದಂತೆ, ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ಯನ್ನು ಮುಂದೂಡುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ” ಎಂದು ಆರೋಗ್ಯ ಸಚಿವರು ಪತ್ರದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ; ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದರೆ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವರ ಪತ್ರ