ಮಂಡ್ಯದ ಮದ್ದೂರು ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣದ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬುಧವಾರ (ಸೆ.10) ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದಾಗ ಸಿಟಿ ರವಿ ಹೇಳಿಕೆ ನೀಡಿದ್ದರು. ಸೆಪ್ಟೆಂಬರ್ 7ರಂದು ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಬುಧವಾರ ಸಾಮೂಹಿಕ ಗಣೇಶ ವಿಸರ್ಜನೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಕಾರ್ಯಕ್ರಮ ಒಂದು ರೀತಿ ಹಿಂದುತ್ವ ಗುಂಪುಗಳ ಶಕ್ತಿ ಪ್ರದರ್ಶನವಾಗಿ ಬದಲಾಗಿತ್ತು.
ಸಿಟಿ ರವಿ ತಮ್ಮ ಭಾಷಣದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು (ಮುಸ್ಲಿಮರನ್ನು) ಗುರಿಯಾಗಿಸಿಕೊಂಡು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ, ಮದ್ದೂರು ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196(1)(ಎ) (ಧಾರ್ಮಿಕ ಅಥವಾ ಇತರ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.
ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 22 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಭಾನುವಾರ ನಡೆದ ಹಿಂಸಾಚಾರದ ನಂತರ ಮದ್ದೂರು ಮತ್ತು ಹತ್ತಿರದ ಪ್ರದೇಶಗಳಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಸೋಮವಾರ ಬಲಪಂಥೀಯ ಗುಂಪುಗಳಿಂದ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದಿದ್ದವು. ತರುವಾಯ ಬಿಜೆಪಿ ಮಂಗಳವಾರ ಮದ್ದೂರು ಬಂದ್ಗೆ ಕರೆ ಕೊಟ್ಟಿತ್ತು.
ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-II ಸಮರ್ಪಕವಾಗಿ ನಡೆಸುವಂತೆ ಆಗ್ರಹ