ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಂಘಪರಿವಾರದ ಕಾರ್ಯಕರ್ತರ ತಂಡವೊಂದು ತಡೆದು ಸಾಗಾಟಗಾರರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಕೇರಳದ ಮಂಜೇಶ್ವರ ತಾಲೂಕಿನ ಪಾತೂರು ನಿವಾಸಿ ಮೂಸಾ, ಇಬ್ರಾಹಿಂ, ಹಮೀದ್ ಮತ್ತು ಸಾಲೆತ್ತೂರಿನ ಹಮೀದ್ ಎಂದು ಗುರುತಿಸಲಾಗಿದೆ.
ಸಂಘಪರಿವಾರದ ಕಾರ್ಯಕರ್ತರಾದ ಜಯ ಪ್ರಶಾಂತ, ಲಕ್ಷೀಶ ಮತ್ತು ಇತರ ಮೂವರು ಜಾನುವಾರು ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ತಡೆದು ಅದರಲ್ಲಿದ್ದ ನಾಲ್ವರ ಮೇಲೆ ಬ್ಯಾಟ್ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಈ ಬಗ್ಗೆ ಹಲ್ಲೆಗೊಳಗಾದ ಮೂಸಾ ಅವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ 341, 307, 324, 323, 506,143, 147, 148 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ”ಐದು ಜಾನುವಾರಗಳನ್ನು ಮುಳಿಯ ಎಂಬಲ್ಲಿ ಖರೀದಿಸಿ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ತೆರಳುತ್ತಿದ್ದಾಗ ಆರೋಪಿಗಳಾದ ಜಯ ಪ್ರಶಾಂತ, ಲಕ್ಷೀಶ ಮತ್ತು ಇತರ ಮೂವರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.
ಸಂತ್ರಸ್ತರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ”ಯಾವುದೇ ಪರವಾನಿಗೆ ಇಲ್ಲದೆ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ, ಮೂಸಾ, ಕನ್ಯಾನ ನಿವಾಸಿ ಹಮೀದ್ ಹಾಗೂ ಸಾಲೆತ್ತೂರಿನ ಹಮೀದ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ನಟ ಪ್ರಕಾಶ್ ರಾಜ್ಗೆ ಸಂಘಪರಿವಾರದ ಕಾರ್ಯಕರ್ತನಿಂದ ಕೊಲೆ ಬೆದರಿಕೆ