Homeಮುಖಪುಟನೀಲಿ-ಕೆಂಪು ಒಂದಾಗಬೇಕೆಂಬುದು ಆಕೆಯ ಆಸೆಯಾಗಿತ್ತು

ನೀಲಿ-ಕೆಂಪು ಒಂದಾಗಬೇಕೆಂಬುದು ಆಕೆಯ ಆಸೆಯಾಗಿತ್ತು

- Advertisement -
- Advertisement -

 

ಡಿ.ಉಮಾಪತಿ

ಚಿತ್ರದುರ್ಗದ ಡಿ.ಉಮಾಪತಿಯವರು ದೀರ್ಘಕಾಲ ದೆಹಲಿಯಿಂದ ಕನ್ನಡದ ಮೂರು ಪ್ರಮುಖ ದಿನಪತ್ರಿಕೆಗಳಿಗೆ (ಕನ್ನಡಪ್ರಭ, ವಿಜಯ ಕರ್ನಾಟಕ, ಪ್ರಜಾವಾಣಿ) ವರದಿ ಮಾಡಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಿಡಿ ಘಟನೆಗಳನ್ನು ವಿಶಾಲ ಭಿತ್ತಿಯಲ್ಲಿಟ್ಟು ನೋಡುವ ಅವರ ಸಾಂದ್ರವಾದ ಬರಹಗಳು ಓದುಗರನ್ನು ಆಳವಾಗಿ ಕಲಕುತ್ತವೆ. ಅವರ `ಡೆಲ್ಲಿ ಡೈರಿ’ ಮತ್ತು `ದೆಹಲಿ ನೋಟ’ ಅಂಕಣಗಳು ಹೆಚ್ಚು ಓದುಗರನ್ನು ಸೆಳೆದಿದ್ದವು. ಪ್ರಸ್ತುತ `ನ್ಯಾಯಪಥ’ ಪತ್ರಿಕೆಯ ಕನ್ಸಲ್ಟಿಂಗ್ ಎಡಿಟರ್ ಆಗಿದ್ದಾರೆ ಮತ್ತು ಪ್ರತಿಧ್ವನಿ ಅಂತರ್ಜಾಲ ಪತ್ರಿಕೆ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಅವರ ಬರಹಗಳು ಮುಂದುವರೆದಿವೆ.

ಮೂವತ್ತೆರಡು ವರ್ಷಗಳಷ್ಟು ಕಾಲದ ವರದಿಗಾರನ ಕಸುಬಿನಲ್ಲಿ ಇಪ್ಪತ್ತು ವರ್ಷಗಳನ್ನು ದಿಲ್ಲಿಯಲ್ಲೇ ಸವೆಸಿದ ಕಾರಣ ಗೌರಿ ಲಂಕೇಶ್ ಅವರ ಸಂಪರ್ಕ ನನಗೆ ಕೆಲಕಾಲ ಹತ್ತಿರದ್ದು ಮತ್ತು ಬಹುಕಾಲ ದೂರದ್ದೂ ಆಗಿ ಉಳಿಯಿತು.

1996ರಲ್ಲಿ ‘ಕನ್ನಡಪ್ರಭ’ ನನ್ನನ್ನು ದಿಲ್ಲಿಗೆ ಕಳಿಸುವ ತನಕ ಹನ್ನೆರಡು ವರ್ಷಗಳ ಕಾಲ ಬೆಂಗಳೂರಲ್ಲಿ ಕೆಲಸ. ಇಂಗ್ಲಿಷ್ ಪತ್ರಕರ್ತರು ಅದರಲ್ಲಿಯೂ ಹೆಣ್ಣುಮಕ್ಕಳು ಕನ್ನಡ ಪತ್ರಕರ್ತರೊಂದಿಗೆ ದೂರ ಕಾಯ್ದುಕೊಳ್ಳುತ್ತಿದ್ದರು. ಕೃತಕ ಗೋಡೆಗಳನ್ನು ಎಬ್ಬಿಸಿ ನಿಲ್ಲಿಸುತ್ತಿದ್ದರು. ಈ ಮಾತಿಗೆ ಅಪವಾದದಂತೆ ನಡೆದುಕೊಳ್ಳುತ್ತಿದ್ದ ವಿರಳರಲ್ಲಿ ಗೌರಿಯೂ ಒಬ್ಬರು. ಹೌದು, ಗೌರಿ ಇಂಗ್ಲಿಷ್ ಪತ್ರಕರ್ತೆಯಾಗಿದ್ದರು. ನಿತ್ಯದ ವರದಿಗಾರಿಕೆಯಲ್ಲಿ ಆಗಾಗ ಸಿಗುತ್ತಿದ್ದರು. ನಿಗರ್ವಿಯೂ ಸ್ನೇಹಪರರೂ ಹಾಗೂ ಸರಳ ಸ್ವಭಾವದವರೂ ಆಗಿರುತ್ತಿದ್ದರು. ಕನ್ನಡ ಇಂಗ್ಲಿಷಿನ ದೂರದಲ್ಲಿ ಅವರಿಗೆ ನಂಬಿಕೆ ಇರಲಿಲ್ಲ. ಎಂಬತ್ತರ ದಶಕ. ಆ ವೇಳೆಗಾಗಲೆ ಅವರು ದೆಹಲಿಯ ಪ್ರತಿಷ್ಠಿತ ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಮಾಸ್ ಕಮ್ಯೂನಿಕೇಷನ್ ಸಂಸ್ಥೆಯಲ್ಲಿ ಓದಿ ಪದವಿ ಪಡೆದವರಾಗಿದ್ದರು. ಅವರ ಮೇಲೆ ತಂದೆ ಲಂಕೇಶರ ಪ್ರಭಾವವಿತ್ತು. ದೆಹಲಿಯ ಜೆ.ಎನ್.ಯು.ವಿನ ಸಮ ಸಮಾಜದ ಆಶಯದ ವಾತಾವರಣ ಅದನ್ನು ಗಟ್ಟಿಗೊಳಿಸಿತ್ತು.

ಲಂಕೇಶ್ ಪತ್ರಿಕೆಯ ಯಶಸ್ಸಿನ ನೆರಳಿನಿಂದ ಪ್ರಜ್ಞಾಪೂರ್ವಕವಾಗಿ ದೂರ ಉಳಿಯಬಯಸಿದ್ದರು. ಹೀಗಾಗಿ ಇಂಗ್ಲಿಷ್ ಪತ್ರಿಕೋದ್ಯಮ ಅವರ ಆಯ್ಕೆಯಾಗಿತ್ತು. Mid Day, Sunday ಆಗ ರಭಸದ ಪತ್ರಿಕೋದ್ಯಮ ನಡೆಸಿದ ಪತ್ರಿಕೆಗಳು. ಆನಂತರ Times of India, ಇಂಗ್ಲಿಷ್ ದೈನಿಕ, ETV, News Timeಗೆ ವರದಿ ಮಾಡಿದರು. ಇಂಡಿಯಾ ಟುಡೇ ಸಮೂಹದ Headlines Todayಯಲ್ಲೂ ಕೆಲಸ ಅವರ ವರದಿಗಾರಿಕೆಗೆ ಸಾಣೆ ಹಿಡಿದಿತ್ತು. ಹೊಳಪು ಹರಿತ ಎರಡೂ ದಕ್ಕಿದ್ದವು.

ದೆಹಲಿಯಲ್ಲಿ ಹಲವು ವರ್ಷ ಕೆಲಸ ಮಾಡಿದ ಅವರಿಗೆ ರಾಜಧಾನಿಯ ರಾಜಕಾರಣದ ಒಳಸುಳಿಗಳ ಮೇಲೆ ಹಿಡಿತ ಸಿಕ್ಕಿತ್ತು. ಇಲ್ಲಿ ಕೂಡ ನನ್ನ ಪಾಲಿಗೆ ಅವರು ಅದೇ ಬೆಂಗಳೂರಿನ ನಿಗರ್ವಿ ಸಹೋದ್ಯೋಗಿ. ದೆಹಲಿಯಲ್ಲಿ ಕನ್ನಡ ಮೂಲದ ಮತ್ತೊಬ್ಬ ಯಶಸ್ವೀ ಇಂಗ್ಲಿಷ್ ಪತ್ರಕರ್ತ ಗಿರೀಶ್ ನಿಕ್ಕಮ್, ಗೌರಿ, ಔಟ್‍ಲುಕ್ ನಿಯತಕಾಲಿಕದ ವರದಿಗಾರ್ತಿ ಭಾವದೀಪ್ ಕಾಂಗ್ ಹೆಚ್ಚಾಗಿ ಕಲೆತು ಹರಟೆ ಹೊಡೆಯುತ್ತಿದ್ದೆವು. ದೈನಿಕ್ ಜಾಗರಣ್‍ನ ಹಿರಿಯ ವರದಿಗಾರ ನಿರ್ಮಲ್ ಪಾಠಕ್ ಒಂದು ಗುಂಪಾಗಿ ಸುದ್ದಿ ಸಂಗ್ರಹಕ್ಕೆಂದು ಅಲೆಯುತ್ತಿದ್ದೆವು. ಅನುಕೂಲಸ್ಥ ತಂದೆಯಿದ್ದಾರೆ ಎಂಬ ಭಾವದಿಂದ ಗೌರಿ ಯಾವೊತ್ತೂ ಕೆಲಸ ಕದಿಯಲಿಲ್ಲ. ಕಠಿಣ ಪರಿಶ್ರಮಕ್ಕೆ ಅಳುಕಲಿಲ್ಲ. ಅದಾಗಲೇ ಲಂಕೇಶರು ಅನಾರೋಗ್ಯಕ್ಕೆ ಒಳಗಾಗಿದ್ದರು. ತಂದೆ ಮಗಳು ಒಬ್ಬರನ್ನೊಬ್ಬರು ಬಹಳ ಹಚ್ಚಿಕೊಂಡಿದ್ದವರು. ತಂದೆಯ ಅನಾರೋಗ್ಯ ನೆನೆಸಿಕೊಂಡು ಗೌರಿ ಆಗಾಗ ಹನಿಗಣ್ಣಾಗುತ್ತಿದ್ದರು. ಬೆಂಗಳೂರಿಗೆ ತೆರಳಿ ಕೆಲ ದಿನ ಇದ್ದು ಬರುತ್ತಿದ್ದರು. ಯಾವ ಸುದ್ದಿಯನ್ನು ಕೇಳುವ ದಿನದ ಹೆದರಿಕೆಯಿತ್ತೋ ಆ ಕೆಟ್ಟ ಸುದ್ದಿ ಬಂದೇ ಬಿಟ್ಟಿತು. ಲಂಕೇಶರ ಆರೋಗ್ಯ ಬಿಗಡಾಯಿಸಿತ್ತು. ಒಮ್ಮೆ ಹೀಗೆ ಅಳುತ್ತಲೇ ಬೆಂಗಳೂರಿಗೆ ತೆರಳಿದ ಗೌರಿ ಮತ್ತೆ ದೆಹಲಿಗೆ ವಾಪಸು ಬರಲಿಲ್ಲ.

ತಂದೆ ತೊರೆದು ಹೋದ ಹೊಸ ರೂಹಿನ ಪತ್ರಿಕೋದ್ಯಮದ ‘ಬೃಹತ್ ಪಾದರಕ್ಷೆ’ಗಳಲ್ಲಿ ಗೌರಿ ತಮ್ಮ ಪುಟ್ಟ ಪಾದಗಳನ್ನು ಅಳುಕದೆ ಇರಿಸಿದ ದಿಟ್ಟ ಹೆಣ್ಣುಮಗಳು. ಪತ್ರಿಕೆಯೊಂದರ ಸಂಪಾದಕಿ ಆಗುವಷ್ಟು, ಪರಿಣಾಮಕಾರಿಯಾಗಿ ಬರೆಯುವಷ್ಟು ಕನ್ನಡ ಕಲಿತರು. ಅಲ್ಲಲ್ಲಿ ನ್ಯೂನತೆಗಳನ್ನು ಎಣಿಸಲು ಬಂದೀತು, ಆದರೆ ಒಟ್ಟಾರೆ ಲಂಕೇಶರು ನಡೆಸಿದ್ದು ಕೇವಲ ಪತ್ರಿಕೋದ್ಯಮ ಮಾತ್ರ ಆಗಿರಲಿಲ್ಲ. ಸಾಮಾಜಿಕ ಎಚ್ಚರದ ಹೊಸ ಪೀಳಿಗೆಯನ್ನೇ ರೂಪಿಸಿದರು. ತಂದೆಯ ಪ್ರಖರ ಪ್ರತಿಭೆ, ಭಾಷೆಯೊಂದಿಗಿನ ಮಾಂತ್ರಿಕ ಸ್ಪರ್ಶ, ಅಪಾರ ಓದು, ಆಳದ ಸಾಮಾಜಿಕ ರಾಜಕೀಯ ಒಳನೋಟಗಳು ಮಗಳಿಗಿರಲಿಲ್ಲ ನಿಜ. ಆದರೆ ತಂದೆ ಹಾಕಿಕೊಂಡಿದ್ದ ಗೆರೆಯನ್ನು ದಾಟಿ ಮುಂದೆ ಹೋದ ಮಗಳು ಪತ್ರಿಕೆಯನ್ನು ತುಳಿಸಿಕೊಂಡ ಜನರ ನೋವಿನ ದನಿಯಾಗಿಸಲು, ಕೋಮುವಾದಿಗಳ ವಿರುದ್ಧದ ಹತಾರು ಆಗಿಸಲು ಶ್ರಮಿಸಿದರು. ಹೋರಾಟಗಾರ್ತಿ ಪತ್ರಕರ್ತೆ ಆದರು.

ತಂದೆ ಆರಂಭಿಸಿದ ಪತ್ರಿಕೆ ತಮ್ಮನ ಪಾಲಾದಾಗಲೂ ಧೃತಿಗೆಡದೆ ಮತ್ತೊಂದನ್ನು ಶುರು ಮಾಡಿದರು. ಕಾಲಾನುಕ್ರಮದಲ್ಲಿ ಬರೆಯಲು ಮಾತ್ರವೇ ಅಲ್ಲ, ಕನ್ನಡದಲ್ಲಿ ಆಲೋಚಿಸಲೂ ಕಲಿತರು. ‘ಕಂಡ ಹಾಗೆ’ ಶೀರ್ಷಿಕೆಯಡಿ ಅವರು ಬರೆದ ಸಂಪಾದಕೀಯ ಸರಳ ಸಂವಹನಕ್ಕೆ ಮಾದರಿಯಾಗಿ ರೂಪುಗೊಂಡಿತು. ಹೊಸ ಪತ್ರಿಕೆ ಪತ್ರಿಕೆಯಷ್ಟೇ ಆಗಿ ಉಳಿಯಲಿಲ್ಲ. ಅದೊಂದು ಚಳವಳಿಯಾಗಿ ಬೆಳೆಯಿತು. ಗೌರಿಯವರನ್ನೂ ಬೆಳೆಸಿತು. ಅವರ ಅಂತರಂಗವನ್ನು ಅರಳಿಸಿತು.

ತುಂಟುತನ, ಜೀವಕಾರುಣ್ಯ, ಜೀವನಪ್ರೀತಿ ಅವರನ್ನು ಸುತ್ತಮುತ್ತಲ ಕನ್ನಡ ಸಮಾಜದೊಂದಿಗೆ ಮತ್ತಷ್ಟು ಗಟ್ಟಿಯಾಗಿ ಬೆಸೆಯಿತು. ಯುವಪೀಳಿಗೆಯೊಂದಿಗೆ ಸಂವಾದಕ್ಕೆ ಅವರಷ್ಟು ತೆರೆದುಕೊಂಡ ಅವರ ಓರಗೆಯ ಮತ್ತೊಬ್ಬ ಪತ್ರಕರ್ತರನ್ನು ನಾನು ಕಂಡಿಲ್ಲ. ಅಮ್ಮನ- ಅಕ್ಕನ ವಾತ್ಸಲ್ಯ ಅವರದು.

ಲಂಕೇಶರು ನಂಬಿದ್ದ ಲೋಹಿಯಾವಾದಿ-ಸಮಾಜವಾದ ಮತ್ತು ಗಾಂಧೀವಾದದ ಆಚೆಗೂ ಸರಿದ ಗೌರಿ, ಎಡಪಂಥೀಯ ವಿಚಾರಧಾರೆಯನ್ನು ದೂರ ಇರಿಸಲಿಲ್ಲ. ದಲಿತರು ಮತ್ತು ಎಡಪಂಥೀಯರನ್ನು ತಾವು ನಡೆಸಿದ ಪತ್ರಿಕೆಯಲ್ಲಿ ತಂದೆಗಿಂತ ಹೆಚ್ಚು ಹತ್ತಿರವಿಟ್ಟುಕೊಂಡರು. ಜನಾಂದೋಲನಗಳ ಜೊತೆ ಸಕ್ರಿಯವಾಗಿ ಬೆರೆತು ಗುರುತಿಸಿಕೊಂಡರು. ತಮ್ಮನ್ನು ‘ಆ್ಯಕ್ಟಿವಿಸ್ಟ್ ಜರ್ನಲಿಸ್ಟ್’ ಎಂದು ಹೆಮ್ಮೆಯಿಂದ ಕರೆದುಕೊಂಡರು.

ಪ್ರಚಂಡ ಕೋಮುವಾದಿ ಫ್ಯಾಸಿಸ್ಟ್ ರಾಜಕೀಯ ಎದುರಾಳಿಯ ಎದುರು ದಲಿತರ ನೀಲಿ ಮತ್ತು ಎಡಪಂಥೀಯರ ಕೆಂಪು ರಂಗುಗಳು ಎಲ್ಲ ಮತಭೇದವನ್ನೂ ಬದಿಗಿಟ್ಟು ಒಂದಾಗಬೇಕೆಂಬುದು ಅವರ ಅಚಲ ಆಶಯವಾಗಿತ್ತು. ನೀಲಿ ಮತ್ತು ಕೆಂಪು ಎರಡರ ಗೌರವವನ್ನೂ ಸಂಪಾದಿಸಿಕೊಂಡ ಪ್ರೀತಿ ವಾತ್ಸಲ್ಯದ ‘ಅಮ್ಮ’ನಾಗಿ ಹೊರಹೊಮ್ಮಿದ್ದರು. ಈ ಎರಡೂ ರಂಗುಗಳ ನಡುವೆ ನಡೆದ ವೈಚಾರಿಕ ಕದನಗಳು ಆಕೆಯ ಮನಸ್ಸನ್ನು ಘಾಸಿಗೊಳಿಸಿತ್ತು. ಅಲ್ಪಸಂಖ್ಯಾತರು, ಲೈಂಗಿಕ ಅಲ್ಪಸಂಖ್ಯಾತರ ಕುರಿತು ತಂದೆಯದೇ ಬದ್ಧತೆ, ಪ್ರೀತಿ ಅವರಿಗಿತ್ತು. ಕನ್ಹಯ್ಯಕುಮಾರ್ ಮತ್ತು ಜಿಗ್ನೇಶ್ ಮೇವಾನಿ, ಶೆಹ್ಲಾ ರಷೀದ್ ಅವರನ್ನು ತಮ್ಮ ದತ್ತುಮಕ್ಕಳೆಂದು ಬಹಿರಂಗವಾಗಿ ಕರೆದುಕೊಂಡಿದ್ದರು. ಹಂತಕರ ಗುಂಡು ಆಕೆಯನ್ನು ಬಲಿ ತೆಗೆದುಕೊಳ್ಳುವ ಕೆಲ ತಿಂಗಳುಗಳ ಹಿಂದೆ ದೆಹಲಿಗೆ ಬಂದಿದ್ದಾಗ ಕನ್ಹಯ್ಯನಿಗೆ ಹೊಸ ಉಡುಪುಗಳ ಉಡುಗೊರೆ ತಂದಿದ್ದುಂಟು.

ಪತ್ರಿಕೆ ನಡೆಸಲು ಆಕೆ ತನ್ನ ಕಟಿಬದ್ಧ ತಂಡದೊಂದಿಗೆ ಪಡುತ್ತಿದ್ದ ಪಡಿಪಾಟಲಿನ ಕಲ್ಪನೆಯೇ ನನಗಿರಲಿಲ್ಲ. ದೆಹಲಿ ರಾಜಕಾರಣದ ದಿಕ್ಕು ದೆಸೆಗಳನ್ನು ತಿಳಿದುಕೊಳ್ಳಲು ಆಗಾಗ ಫೋನ್ ಮಾಡುತ್ತಿದ್ದರು. ಚುನಾವಣೆಗಳ ಸಂದರ್ಭದಲ್ಲಿ ಕರ್ನಾಟಕದ ಚುನಾವಣಾ ರಾಜಕಾರಣದ ಸ್ಥಿತಿಗತಿಗಳ ವ್ಯಾಖ್ಯಾನಕಾರ್ತಿಯಾಗಿ ದೆಹಲಿಯಲ್ಲಿ ಖ್ಯಾತ ಟೀವಿ ಚಾನೆಲ್ಲುಗಳ ಪ್ಯಾನೆಲ್ ಡಿಸ್ಕಷನ್‍ಗಳಲ್ಲಿ ವಾರಗಟ್ಟಲೆ ಕುಳಿತುಕೊಳ್ಳುತ್ತಿದ್ದರು. ಅದರಿಂದ ಬಂದ ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ಪತ್ರಿಕೆ ನಡೆಸಲು ಬಳಸುತ್ತಿದ್ದ ವಿಚಾರ ನನಗೆ ತಿಳಿದದ್ದು ಆಕೆ ಗತಿಸಿದ ನಂತರವೇ. ಈ ದಿನಗಳಲ್ಲಿ ಊಟಕ್ಕೆ ಕುಳಿತಾಗಲೂ ಈ ಕಷ್ಟವನ್ನು ಹೇಳಿಕೊಳ್ಳದೆ ನಗುತ್ತಿದ್ದ ದೊಡ್ಡ ಹೃದಯದ ಹೆಣ್ಣುಮಗಳು ಗೌರಿ.

ಸಾಮಾಜಿಕ-ರಾಜಕೀಯ-ಧಾರ್ಮಿಕ-ವೈಚಾರಿಕ ಅಸಹಿಷ್ಣುತೆ ಅತ್ಯುಗ್ರ ರೀತಿಯಲ್ಲಿ ಪ್ರಕಟವಾದಾಗ ಪತ್ರಿಕೆಯ ಕಚೇರಿಯಲ್ಲಿ ಕುಳಿತುಕೊಳ್ಳದೆ ಬಯಲಿಗಿಳಿದು ಪ್ರವಾಸ ನಡೆಸಿ ಅದನ್ನು ಮುಖಾಮುಖಿಯಾದ ಅಪರೂಪದ ಪತ್ರಕರ್ತೆ ಆಕೆ.

ತಾವು ಗುಂಡಿಟ್ಟದ್ದು ಗೌರಿಯ ದೇಹಕ್ಕೇ ವಿನಾ ವಿಚಾರಕ್ಕಲ್ಲ ಎಂಬುದನ್ನು ದುರುಳರೂ ಮೂರ್ಖರೂ ಆದ ಹಂತಕರಿಗೆ ಈಗಲೂ ತಿಳಿದಿಲ್ಲ, ಮುಂದೆಯೂ ತಿಳಿಯುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...