ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯ ಸಂದೀಪನ್ ಘಾಟ್ ಪ್ರದೇಶದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ದಲಿತ ಕುಟುಂಬದ ಮೂವರು ಸದಸ್ಯರ ಹತ್ಯೆ ನಡೆದಿದ್ದು, ಇದೀಗ ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮತ್ತು ಹೊರಠಾಣೆ ಪ್ರಭಾರ ಅಧಿಕಾರಿಯನ್ನು ವರ್ಗಾಯಿಸಲಾಗಿದೆ.
ಸಾಂದೀಪನ್ ಘಾಟ್ ಠಾಣೆಯ ಅಧಿಕಾರಿ ದಿಲೀಪ್ ಕುಮಾರ್ ಸಿಂಗ್ ಮತ್ತು ಹರ್ ರಾಯ್ಪುರ ಪೊಲೀಸ್ ಹೊರ ಠಾಣೆ ಉಸ್ತುವಾರಿ ಅನುರಾಗ್ ಸಿಂಗ್ ಅವರನ್ನು ವರ್ಗಾಯಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವರ್ಗಾವಣೆಯಿಂದ ತೆರವಾಗಿದ್ದ ಠಾಣಾಧಿಕಾರಿ ಸ್ಥಾನಕ್ಕೆ ಭುವನೇಶ್ ಚೌಬೆ ನಿಯುಕ್ತಿಗೊಂಡಿದ್ದರೆ, ಸಬ್ಇನ್ಸ್ಪೆಕ್ಟರ್ ಶೈಲೇಂದ್ರ ಕುಮಾರ್ ಅವರಿಗೆ ಔಟ್ಪೋಸ್ಟ್ನ ಉಸ್ತುವಾರಿ ವಹಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಸೆ.14 ರಂದು ಜಮೀನು ವಿವಾದದ ಹಿನ್ನೆಲೆಯಲ್ಲಿ ದಲಿತ ಕುಟುಂಬದ ಮೂವರನ್ನು ಹತ್ಯೆ ಮಾಡಲಾಗಿತ್ತು. ಶಿವಶರನ್ (30), ಅವರ ಪತ್ನಿ ಬ್ರಿಜ್ಕಾಳಿ (25) ಮತ್ತು ಅವರ ಮಾವ ಹೋರಿಲಾಲ್ (60) ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.
ಸಂದೀಪನ್ ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಮೊಹಿಯುದ್ದೀನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಎಂಟು ಜನರ ವಿರುದ್ಧ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಕಾನೂನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನು ಓದಿ: ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ