ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಮೇಕೆಗಳಿಗೆ ಮಾವಿನ ಸೊಪ್ಪು ಕಿತ್ತ ದಲಿತ ಯುವಕನ ಮೇಲೆ ಗುಂಪೊಂದು ತೀವ್ರ ಹಲ್ಲೆ ನಡೆಸಿದ್ದು, ಅವಮಾನ ತಾಳಲಾರದೆ ಆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಈ ಕುರಿತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಧರ್ಮಪಾಲ್ ದಿವಾಕರ್ ಎಂಬ ದಲಿತ ಯುವಕನೊಬ್ಬ ತನ್ನ ಮೇಕೆಗಳಿಗೆ ಮಾವಿನ ಸೊಪ್ಪನ್ನು ಕಿತ್ತಿದ್ದಾನೆ. ಇದರಿಂದ ರೊಚ್ಚಿಗೆದ್ದ ಗುಂಪೊಂದು ಆತನ ಮೇಲೆ ತೀವ್ರ ಹಲ್ಲೆ ನಡೆಸಿದೆ. ನಂತರ ಮನೆಗೆ ಬಂದ ಆತ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡು ಎಷ್ಟು ಹೊತ್ತಾದರೂ ತೆರೆದಿಲ್ಲ. ನಂತರ ಮನೆಯವರು ಬಾಗಿಲು ಮುರಿದು ಒಳಪ್ರವೇಶಿಸಿದಾಗ ನೇಣು ಹಾಕಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಪಾಲ್ ದಿವಾಕರ್ ಮನೆಯ ಸ್ಟೋರ್ ರೂಮಿನಲ್ಲಿ ನೇಣು ಹಾಕಿಕೊಂಡಿದ್ದು, ಇದಕ್ಕೆ ಆತನ ಮೇಲೆ ಹಲ್ಲೆ ನಡೆಸಿದವರೇ ಕಾರಣ ಎಂದು ಕುಟುಂಬ ಸದಸ್ಯರು ದೂರಿದ್ದಾರೆ. ಯಾವುದೇ ಆತ್ಮಹತ್ಯಾ ಪತ್ರ ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನ ಕುಟುಂಬ ಸದಸ್ಯರು ನೀಡಿದ ದೂರಿನ ಮೇರೆಗೆ ನಾವು ಎಫ್ಐಆರ್ ದಾಖಲಿಸಿದ್ದೇವೆ ಮತ್ತು ಇಬ್ಬರನ್ನು ಬಂಧಿಸಿದ್ದೇವೆ. ತನಿಖೆ ಇನ್ನು ನಡೆಯುತ್ತಿದೆ ಎಂದು ಫತೇಪುರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಹೇಳಿದ್ದಾರೆ.
ನೂರ್ ಮೊಹಮ್ಮದ್ ಮತ್ತು ಸಲ್ಮಾನ್ ಎಂಬುವವರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಭಾಗಿಯಾದ ನೂರ್ ಮೊಹಮ್ಮದ್ನ ಸಹೋದರನ ಬಂಧನಕ್ಕೆ ಬಲೇ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಲ್ವಾನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಎಲ್ಲಾ ಆರೋಪಿಗಳ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಐಪಿಸಿ 306 ಕಲಂ ಅಡಿ ಪ್ರಕರಣ ದಾಖಲಿಸಲಾಗಿದೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ