ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 25 ರಂದು ಪ್ರಧನಿ ನರೇಂದ್ರ ಮೋದಿ ಆರು ರಾಜ್ಯಗಳ ಆಯ್ದ ರೈತರುಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಮಾತುಕತೆ ಕುತೂಹಲ ಮೂಡಿಸಿದೆ.
ಈ ಮಾತುಕತೆಯ ಸಂದರ್ಭದಲ್ಲಿ ಕೃಷಿ ಕಾನೂನುಗಳ ಕುರಿತು ಕೇಂದ್ರ ಸರಕಾರವು ತನ್ನ ದೃಢ ನಿಲುವನ್ನು ಸ್ಪಷ್ಟಪಡಿಸಲಿದ್ದು, ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್’ ಯೋಜನೆಯಡಿ 9 ಕೋಟಿ ರೈತರುಗಳ ಬ್ಯಾಂಕ್ ಖಾತೆಗಳಿಗೆ ಒಟ್ಟು 18,000 ಕೋಟಿ ರೂ. ಜಮಾ ಮಾಡಲಾಗುವುದು ಎಂದು ಪ್ರಧಾನ ಮಂತ್ರಿಯ ಕಛೇರಿಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಹಾರಾಷ್ಟ್ರ: EWS ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಘೋಷಣೆ
6 ರಾಜ್ಯಗಳ ಆಯ್ದ ರೈತರೊಂದಿಗೆ ಪ್ರಧಾನಿ ಸಮಾಲೋಚನೆ ನಡೆಸಲಿದ್ದು, ರೈತರ ಕಲ್ಯಾಣಕ್ಕಾಗಿ ಸರಕಾರ ತೆಗೆದುಕೊಂಡಿರುವ ಉಪಕ್ರಮಗಳ ಕುರಿತು ಪ್ರಧಾನಿ ತಿಳಿಸಲಿದ್ದಾರೆ. ಜೊತೆಗೆ ಇಲ್ಲಿ ರೈತರು ತಮ್ಮ ಅನುಭವವನ್ನು ಹಂಚಿಕೊಳ್ಳಬಹುದು.
ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 28 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದಾರೆ.
ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.
ಇದನ್ನೂ ಓದಿ: ರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.
ಕರ್ನಾಟಕದಲ್ಲಿಯೂ ಕೂಡ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ರೈತರ ಕರೆಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಸಾವಿರಾರು ಜನರು ಒಪ್ಪತ್ತಿನ ಊಟ ಬಿಡುವ ಮೂಲಕ ಅನ್ನದಾತರಿಗೆ ಬೆಂಬಲ ಸೂಚಿಸಿದ್ದಾರೆ.
ಇದನ್ನೂ ಓದಿ: ನುಡಿ ನಮನ: ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್…