Homeಮುಖಪುಟರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

- Advertisement -
- Advertisement -

ರೈತ ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಮುಖಂಡರಾದ ರಾಕೇಶ್‌ ಟಿಕಾಯತ್‌ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಜೂನ್‌ 9ರಂದು ಕೊಲ್ಕತ್ತಾದಲ್ಲಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದರ ಕುರಿತು ಟಿಕಾಯತ್‌ರವರು ಮಮತಾ ಅವರೊಂದಿಗೆ ಚರ್ಚಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವು ಚುನಾವಣೆಯಲ್ಲಿ ವಿಜಯ ಸಾಧಿಸಿದ್ದಕ್ಕೆ ಅಭಿನಂದಿಸಿ, ರೈತರ ಪ್ರತಿಭಟನೆಯ ಮುಂದಿನ ನಡೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಟಿಕಾಯತ್‌ ಪಂಚ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ರೈತ ವಿರೋಧಿ ಬಿಜೆಪಿಗೆ ಮತ ನೀಡದಂತೆ ಪ್ರಚಾರ ನಡೆಸಿದ್ದರು. ಅದೇ ಸಮಯದಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪರವಾಗಿ ಪ್ರಚಾರ ನಡೆಸಿದ್ದರು. ಅದೇ ರೀತಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊಸ ಕೃಷಿ ಕಾನೂನುಗಳ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತಿದ್ದರು. ಹಾಗೂ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದರು.

ಕಳೆದ ವರ್ಷ ನವೆಂಬರ್‌ನಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಿಗೆ ಟಿಎಂಸಿಯ ಹಲವಾರು ಸಂಸದರು ಭೇಟಿ ನೀಡಿ ಬೆಂಬಲಿಸಿದ್ದರು. ಕೋವಿಡ್‌ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ, ಹೋರಾಟವನ್ನು ತೀವ್ರಗೊಳಿಸಲು ರೈತ ಮುಖಂಡರು ಯೋಜಿಸುತ್ತಿದ್ದಾರೆ.

ಹರಿಯಾಣದಲ್ಲಿ ಬಂಧಿತ ರೈತರ ಬಿಡುಗಡೆ

ಈ ನಡುವೆ, ಬಂಧಿತ ರೈತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಶನಿವಾರ ರಾತ್ರಿಯಿಂದ ಹರಿಯಾಣದ ಫತೇಬಾದ್‌ ಜಿಲ್ಲೆಯ ತೋಹಾನ ಸದರ್‌ ಪೊಲೀಸ್‌ ಠಾಣೆಯ ಎದುರು ರೈತ ಮುಖಂಡರಾದ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ನೇತೃತ್ವದಲ್ಲಿ ಸಾವಿರಾರ ರೈತರು ಪ್ರತಿಭಟನೆ ನಡೆಸಿದ್ದು, ಸೋಮವಾರ ಬಂಧಿತ ರೈತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಳೆದ ವರ್ಷ ರೈತ ವಿರೋಧಿಯಾದ ಮೂರು ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದನ್ನು ವಿರೋಧಿಸಿ, ಅವುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಚಳಿ, ಮಳೆ, ಬಿರು ಬಿಸಿಲು, ಬಿರುಗಾಳಿಗೂ ಅಂಜದೇ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಸರ್ಕಾರ ಹಲವು ಸುತ್ತಿನಲ್ಲಿ ಮಾತುಕತೆ ನಡೆಸಿದೆ. ಆದರೆ ಎಲ್ಲಾ ಮಾತುಕತೆಗಳು ವಿಫಲವಾಗಿದ್ದು ರೈತರು ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...