ಗಣಿ ಉದ್ಯಮಿ, ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ಬಿಜೆಪಿ ಸರ್ಕಾರವನ್ನು ರಾಜ್ಯ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು, ಐದು ವರ್ಷಗಳಿಂದ ಒಪ್ಪಿಗೆ ನೀಡುವ ಬಗ್ಗೆ ಏಕೆ ನಿರ್ಧಾರ ಕೈಗೊಂಡಿಲ್ಲ ಎಂದು ಪೀಠವು ಸರ್ಕಾರವನ್ನು ಪ್ರಶ್ನಿಸಿದೆ.
“ಸರ್ಕಾರದ ಪ್ರಕಾರ, ಕ್ರಮ ಕೈಗೊಳ್ಳದಿರುವುದು ಕೂಡ ‘ಕ್ರಿಯೆ’ ಆಗಿರಬಹುದು. ಆದರೆ, ಇದು ನ್ಯಾಯಾಲಯಕ್ಕೆ ಸ್ವೀಕಾರಾರ್ಹವಲ್ಲ” ಎಂದು ಪೀಠ ಹೇಳಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆಯೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಕೇಂದ್ರೀಯ ತನಿಖಾ ದಳ (ಸಿಬಿಐ) ಆಗಸ್ಟ್ 30, 2022 ರಂದು ಜನಾರ್ದನ ರೆಡ್ಡಿ ಅವರ ಆಸ್ತಿಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಆರೋಪಿಸಿ ಅವರ ಆಸ್ತಿಯನ್ನು ವಶಕ್ಕೆ ಪಡೆಯಲು ಸರ್ಕಾರದ ಒಪ್ಪಿಗೆಯನ್ನು ಕೇಳಿತ್ತು.
ಆದರೆ, ಸರಕಾರ ಇದುವರೆಗೂ ಒಪ್ಪಿಗೆ ನೀಡಿಲ್ಲ. ಈ ಬೆಳವಣಿಗೆಯ ಬೆನ್ನಲ್ಲೇ ಸಿಬಿಐ ಈ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿತ್ತು.
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 219 ಹೊಸ ಆಸ್ತಿಗಳನ್ನು ಪತ್ತೆ ಮಾಡಿದ್ದು, ಅಕ್ರಮ ಆದಾಯದ ಮೂಲಗಳ ಮೂಲಕ ಈ ಆಸ್ತಿಗಳನ್ನು ಖರೀದಿಸಲಾಗಿದೆ ಎಂದು ತನಿಖೆಗಳು ತೋರಿಸಿವೆ ಎಂದು ಸಿಬಿಐ ಹೇಳಿದೆ.
ಜನಾರ್ದನ ರೆಡ್ಡಿ ಅವರ ವಿರುದ್ಧ ಕ್ರಮ ಕೈಗೊಂಡ ನಂತರ ಅವರು ಕರ್ನೂಲ್ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಸಿಬಿಐ ಹೇಳಿಕೊಂಡಿದೆ. ಜನಾರ್ದನ ರೆಡ್ಡಿ ಅವರು ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದು, ಚುನಾವಣಾ ಪ್ರಚಾರವನ್ನೂ ಪ್ರಾರಂಭಿಸಿದ್ದಾರೆ.