ರಾಜ್ಯ ವಿರೋಧ ಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ವಿಳಂಬ ಮಾಡಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಅವರು ಟೀಕೆ ಮಾಡಿದ್ದಾರೆ. ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನೂ ಆಯ್ಕೆ ಮಾಡಲಾಗದಷ್ಟು ಅರಾಜಕತೆ ಬಿಜೆಪಿಯಲ್ಲಿ ತಾಂಡವಾಡುತ್ತಿದೆ ಎಂದು ಹೇಳಿದ್ದಾರೆ.
ಬುಧವಾರ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಕಳೆದ ಬಾರಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ತನ್ನ ಸ್ಥಾನಮಾನ ಕಳೆದುಕೊಂಡಿದೆ. ಆ ಪಕ್ಷ ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದು ಹೋಗಿದೆ” ಎಂದು ಟೀಕಿಸಿದ್ದಾರೆ.
”ಬಿಜೆಪಿ ನನಗೆ ಸಾಕಷ್ಟು ಸ್ಥಾನಮಾನ, ಗೌರವ ನೀಡಿದೆ. ನಾನೂ ಕೂಡ ಅಷ್ಟೇ ಶ್ರದ್ಧೆಯಿಂದ ಪಕ್ಷವನ್ನು ಕಟ್ಟಿದ್ದೇವೆ. ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬರುವ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಪಕ್ಷದಿಂದ ಹೊರಗೆ ಬರಬೇಕಾಯಿತು. ಕೊಟ್ಟ ಮಾತಿನಂತೆ ಕಾಂಗ್ರೆಸ್ ನಡೆದುಕೊಂಡಿದೆ. ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸ್ಥಾನಮಾನ ನೀಡುವುದಾಗಿ ನಾಯಕರು ಹೇಳಿದ್ದಾರೆ” ಎಂದರು.
”ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಪಕ್ಷ ಹೇಳಿಲ್ಲ ಅದರ ಬಗ್ಗೆ ಚರ್ಚೆಯೂ ಆಗಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿ ಭದ್ರವಾಗಿದೆ. ಲೋಕಸಭಾ ಚುನಾವಣೆಯಲ್ಲಿ 15ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಚುನಾವಣೆ ವೇಳೆ ಪಕ್ಷ ನೀಡುವ ಎಲ್ಲ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವೆ” ಎಂದರು.
What Shetter has told is absolutely correct. He knows each and everything about BJP.