ಮದ್ಯ ನೀತಿ ಹಗರಣದಲ್ಲಿ ಬಂಧಿತ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 18ರವರೆಗೆ ವಿಸ್ತರಿಸಿದೆ.
ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರನ್ನು ಇಂದು ಮುಂಜಾನೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆ ತರಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಏಜೆನ್ಸಿಗಳಿಗೆ ಯಾವುದೇ ಹಣ ತನ್ನ ಕೈ ಸೇರಿದೆ ಎಂಬುದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಅವರು ಏಪ್ರಿಲ್ 2ರಂದು ಆರೋಪಿಸಿದ್ದರು.
2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸುತ್ತಿದ್ದಾರೆ.
ಸಿಸೋಡಿಯಾ ಅವರು ಹಿರಿಯ ವಕೀಲ ಮೋಹಿತ್ ಮಾಥುರ್ ಅವರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಸಿಸೋಡಿಯಾ ವಿರುದ್ಧದ ತನಿಖೆ ಮುಕ್ತಾಯವಾಗಿದೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ಅವರ ಮೇಲಿನ ಆರೋಪಗಳು ಇನ್ನೂ ದೃಢಪಟ್ಟಿಲ್ಲ. ಹಾಗಾಗಿ ಜಾಮೀನು ಪಡೆಯಲು ಅವರು ಅರ್ಹರಾಗಿದ್ದಾರೆ. ಸಿಸೋಡಿಯಾ ಹನ್ನೊಂದು ತಿಂಗಳಿನಿಂದ ಜೈಲಿನಲ್ಲಿದ್ದಾರೆ, ತನಿಖೆ ಪೂರ್ಣಗೊಂಡಿದೆ. ಆರೋಪಗಳನ್ನು ಸಾಬೀತುಪಡಿಸಬೇಕಿದೆ, ಅವರಿಗೆ ಸಂಬಂಧಪಟ್ಟಂತೆ ಯಾವುದೇ ಆರೋಪ ಸಾಬೀತಾಗಿಲ್ಲ ಎಂದು ಸಿಸೋಡಿಯಾ ಪರವಾಗಿರುವ ವಕೀಲರು ಹೇಳಿದ್ದಾರೆ.
ಸರಕಾರದ ಬೊಕ್ಕಸಕ್ಕೆ ಅಥವಾ ಯಾವುದೇ ವ್ಯಕ್ತಿಗೆ ಯಾವುದೇ ನಷ್ಟವಾಗದ ಕಾರಣ ಸಿಸೋಡಿಯಾ ಜಾಮೀನಿಗೆ ಅರ್ಹರಾಗಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ಯಾವುದೇ ನಷ್ಟವಾಗಿಲ್ಲ. ಯಾವುದೇ ವ್ಯಕ್ತಿಗೆ ನಷ್ಟವಿಲ್ಲ. ಗ್ರಾಹಕರಿಗೂ ಯಾರೂ ಮೋಸ ಮಾಡಿಲ್ಲ ಎಂದು ಮಾಥುರ್ ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಮದುವೆಯಲ್ಲಿ ಪಾಲ್ಗೊಳ್ಳಲು ನನಗೆ ಮಧ್ಯಂತರ ಜಾಮೀನು ನೀಡಲಾಯಿತು. ನಾನು ಮದುವೆಯಲ್ಲಿ ಭಾಗವಹಿಸಿ ಹಿಂತಿರುಗಿದ್ದೇನೆ. ನನಗೆ ನೀಡಿದ ಸ್ವಾತಂತ್ರ್ಯವನ್ನು ನಾನು ದುರುಪಯೋಗಪಡಿಸಿಕೊಂಡಿದ್ದೇನೆ ಎಂಬ ಆರೋಪದ ಗುಸುಗುಸು ಕೂಡ ನನ್ನ ವಿರುದ್ಧ ಇರಲಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಸಿಸೋಡಿಯಾ ಈ ಹಿಂದೆ ಇಡಿ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು, ಅದನ್ನು ಏಪ್ರಿಲ್ 28, 2023ರಂದು ವಜಾಗೊಳಿಸಲಾಯಿತು. ಸಿಬಿಐ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಮಾರ್ಚ್ 31, 2023ರಂದು ವಜಾಗೊಳಿಸಲಾಯಿತು. ನಂತರ ಅವರು ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದ್ದರು. ED ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಜುಲೈ 3, 2023ರಂದು ಮತ್ತು ಸಿಬಿಐ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಮೇ 30, 2023ರಂದು ವಜಾಗೊಳಿಸಲಾಯಿತು. ನಂತರ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಇದನ್ನು ಓದಿ: ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್