ದೆಹಲಿಯ ಜಂತರ್ ಮಂತರ್ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಅವರು, ನೀಟ್ ಪತ್ರಿಕೆ ಸೋರಿಕೆ ಆರೋಪದ ಮೇಲೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ಹೋರಾಟ ನಡೆಸುತ್ತಿದ್ದರು.
ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಹೈಕೋರ್ಟ್ ಆದೇಶ ಮತ್ತು ತಜ್ಞರ ವೈದ್ಯಕೀಯ ಸಲಹೆಯ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸೋನಮ್ ವಾಂಗ್ಚುಕ್ ಅವರನ್ನು ಅಗತ್ಯ ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ವಾಂಗ್ಚುಕ್ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿದ್ದು, ಅವರು ಪ್ರಜ್ಞೆ ಹೊಂದಿದ್ದಾರೆ, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಪ್ರತಿಭಟನಾಕಾರರಿಗೆ ಜಂತರ್ ಮಂತರ್ನಿಂದ ಶಾಂತಿಯುತವಾಗಿ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದ್ದಾರೆ.
“ಗೌರವಾನ್ವಿತ ಹೈಕೋರ್ಟ್ನ ಆದೇಶಗಳನ್ನು ಪಾಲಿಸುವಾಗ ಪ್ರತಿಭಟನಾಕಾರರು ಅಡಚಣೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು. ಆದರೆ ಸ್ವಲ್ಪ ಗದ್ದಲ ಉಂಟಾಯಿತು. ಆದರೂ, ಪೊಲೀಸರು ಗರಿಷ್ಠ ಸಂಯಮವನ್ನು ಪ್ರದರ್ಶಿಸಿದರು, ಸುರಕ್ಷಿತವಾಗಿ ಸ್ಥಳಾಂತರ ಪ್ರಕ್ರಿಯೆ ನಡೆಸಿದರು. ಜಂತರ್ ಮಂತರ್ನಲ್ಲಿರುವ ಸಾಧ್ಯವಾದಷ್ಟು ಬೇಗ ಸ್ಥಳದಿಂದ ಶಾಂತಿಯುತವಾಗಿ ಸ್ಥಳದಿಂದ ತೆರಳುವಂತೆ ನಾವು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ.
ದೆಹಲಿ ಹೈಕೋರ್ಟ್ನಲ್ಲಿ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ವಿಚಾರಣೆಗೆ ನಡೆಯುವ ಮುಂಚಿತವಾಗಿ ದೆಹಲಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಸೋನಮ್ ವಾಂಗ್ಚುಕ್ ಅವರ ದೈನಂದಿನ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸುವಂತೆ ನ್ಯಾಯಾಲಯ ಎರಡು ದಿನಗಳ ಹಿಂದೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. “ಯಾವುದೇ ನಾಗರಿಕನ ಜೀವ ಅಮೂಲ್ಯ” ಎಂದು ಗಮನಿಸಿದ ನ್ಯಾಯಾಲಯವು ನಿಯಮಿತ ವೈದ್ಯಕೀಯ ಮೇಲ್ವಿಚಾರಣೆ ಮತ್ತು ಅಗತ್ಯ ವೈದ್ಯಕೀಯ ಹಸ್ತಕ್ಷೇಪಕ್ಕೆ ಆದೇಶಿಸಿತು. “ವಾಂಗ್ಚುಕ್ ಅವರ ಜೀವವನ್ನು ರಕ್ಷಿಸಲು ಏನಾದರೂ ಮಾಡಲೇಬೇಕು” ಎಂದು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.
ಶುಕ್ರವಾರ, ವಾಂಗ್ಚುಕ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರ ಅಂಗಾಂಗಗಳು ವಿಫಲಗೊಳ್ಳುವ ಭಯದಿಂದ ಅವರ ಸ್ಥಿತಿಯನ್ನು ತುರ್ತು ಪರಿಸ್ಥಿತಿ ಎಂದು ಕರೆದಿದ್ದರು.
ದೈನಂದಿನ ವೈದ್ಯಕೀಯ ಬುಲೆಟಿನ್ಗಳು ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಎರಡು ದಿನಗಳ ಹಿಂದೆ ವೈದ್ಯಕೀಯ ವರದಿಯ ಪ್ರಕಾರ ಅವರು 8 ಕಿಲೋಗ್ರಾಂಗಳಿಗಿಂತ ಹೆಚ್ಚು ತೂಕವನ್ನು ಕಳೆದುಕೊಂಡಿದ್ದರು.
59 ವರ್ಷದ ಅವರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
ಕಳೆದ ಕೆಲವು ದಿನಗಳಲ್ಲಿ ವಿರೋಧ ಪಕ್ಷಗಳ ಹಲವಾರು ರಾಜಕಾರಣಿಗಳು ವಾಂಗ್ಚುಕ್ ಅವರನ್ನು ಭೇಟಿ ಮಾಡಿ ಅವರ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ನ ಪವನ್ ಖೇರಾ, ಎಸ್ಪಿ ಸಂಸದ ಡಿಂಪಲ್ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ನಾಯಕರು ಕಳೆದ ಎರಡು ದಿನಗಳಲ್ಲಿ ವಾಂಗ್ಚುಕ್ ಅವರನ್ನು ಭೇಟಿ ಮಾಡಿ ಅವರ ಆರೋಗ್ಯದ ದೃಷ್ಟಿಯಿಂದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು.
ಜುಲೈ 20 ರಂದು ಮಳೆಗಾಲದ ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆಗೆ ಪ್ರತಿಭಟನಾಕಾರರು ಕರೆ ನೀಡಿದ್ದಾರೆ. ಅವರು ರಾಜಕೀಯ ಪಕ್ಷಗಳಿಗೆ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಜಂತರ್ ಮಂತರ್ನಲ್ಲಿ ಪ್ರತಿಭಟನೆಯನ್ನು ಆನ್ಲೈನ್ ವಿಡಂಬನಾತ್ಮಕ ಚಳುವಳಿ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಪ್ರಾರಂಭಿಸಿತು. ಅವರು ಭಾರತದಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ಒತ್ತಾಯಿಸುತ್ತಿದ್ದಾರೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ, ಸಿಜೆಪಿಯ ತಕ್ಷಣದ ಬೇಡಿಕೆಯೆಂದರೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಾಗಿದೆ.
ಸಚಿವ ಪ್ರಧಾನ್ ಅವರು ಪ್ರಶ್ನೆ ಪತ್ರಿಕೆ ಸೋರಿಕೆಗೆ ನೈತಿಕ ಜವಾಬ್ದಾರಿಯನ್ನು ತೆಗೆದುಕೊಂಡು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಹೇಳುತ್ತಾರೆ.


