ಚುನಾವಣಾ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿ ಮಹಿಳಾ ವಿಭಾಗದ ಮುಖ್ಯಸ್ಥೆಯೊಬ್ಬರು ತಲೆ ಬೋಳಿಸಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದಲ್ಲಿ ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ನವದೆಹಲಿಯಲ್ಲಿ ಬಿಡುಗಡೆ ಮಾಡಿತ್ತು. ಅಭ್ಯರ್ಥಿಗಳ ಪಟ್ಟಿಯಲ್ಲಿ ಲತಿಕಾ ಸುಭಾಷ್ ಹೆಸರು ಇಲ್ಲದ್ದಕ್ಕೆ ಈ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.
ಕೇರಳದ ಎಟ್ಟುಮಣ್ಣೂರು ಕ್ಷೇತ್ರದಿಂದ ಕೇರಳ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಲತಿಕಾ ಸುಭಾಷ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೀಗಾಗಿ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪ್ರತಿಭಟನೆಯ ಸಂಕೇತವಾಗಿ ಪಕ್ಷದ ಕಚೇರಿಯ ಮುಂಭಾಗದ ಅಂಗಳದಲ್ಲಿ ಕುಳಿತಿದ್ದ ಲತಿಕಾ ಸುಭಾಷ್ ತಲೆ ಬೋಳಿಸಿಕೊಂಡಿದ್ದಾರೆ.
ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ
ಪಕ್ಷದ ಮುಖ್ಯಸ್ಥ ಮುಲ್ಲಪ್ಪಲ್ಲಿ ರಾಮಚಂದ್ರನ್ ಅವರು ನವದೆಹಲಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಕೂಡಲೇ, ತಿರುವನಂತಪುರಂನ ಪಕ್ಷದ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಲತಿಕಾ ಸುಭಾಷ್, ಪಟ್ಟಿಯಲ್ಲಿ ಮಹಿಳಾ ಅಭ್ಯರ್ಥಿಗಳ ಕೊರತೆ ಇದೆ ಎಂದು ಹೇಳಿದ್ದಾರೆ.
ಮೊದಲ ಬಾರಿ ಕೇರಳ ಕಾಂಗ್ರೆಸ್ನಲ್ಲಿ ಈ ರೀತಿಯ ಘಟನೆ ನಡೆದಿದೆ. ಚುನಾವಣಾ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಯಾವುದೇ ರಾಜಕೀಯ ಪಕ್ಷದ ಯಾವುದೇ ನಾಯಕರು ಪಕ್ಷದ ಹೈಕಮಾಂಡ್ ವಿರುದ್ಧ ಈ ರೀತಿ ಪ್ರತಿಭಟನೆ ನಡೆಸಿರುವುದು ಇದೇ ಮೊದಲು ಎನ್ನಲಾಗಿದೆ.
ಕೇರಳದಲ್ಲಿ ಏಪ್ರಿಲ್ 06 ರಂದು ಚುನಾವಣೆ ನಡೆಯಲಿದ್ದು, ಮೇ 02 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ: ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ