HomeUncategorizedಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ...

ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಪ್ರಜಾವಾಣಿಯ ದೀಪಾವಳಿ ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡುತ್ತ ಮೈಸೂರಿನಲ್ಲಿ ದೇವನೂರು ಆಡಿದ ಮಾತುಗಳು...

- Advertisement -
- Advertisement -

ಪ್ರಜಾವಾಣಿ ದೀಪಾವಳಿ ಸಂಚಿಕೆಯ ಕಥಾ ಕವನ ಸ್ಪರ್ಧಾ ವಿಜೇತರಿಗೆ ನಾನೀಗ ಬಹುಮಾನ ವಿತರಣೆ ಮಾಡಬೇಕಾಗಿ ಬಂದಿದೆ. ಇಲ್ಲೊಂದು ಗುಟ್ಟು ಹೇಳುವೆ. ಆದರೆ ಒಂದು ಕಂಡೀಷನ್ನು. ಕೇಳಿದ ಮೇಲೆ ಬಹುಮಾನಿತರಾದ ನೀವು- ಎಂಥವನ ಕೈಯಲ್ಲಿ ಪ್ರೈಜ್ ಪಡೆಯಬೇಕಾಗಿ ಬಂತು ಎಂದು ಪರಿತಪಿಸಬಾರದು! ಆ ಗುಟ್ಟು ಏನೆಂದರೆ- ನಾನೂ ಈ ಹಿಂದೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಗೆ ಎರಡು ಸಲ ಕತೆ ಕಳಿಸಿದ್ದೆ. ಪ್ರೈಜ್ ಇರಲಿ, ಮೆಚ್ಚಿಗೇನೂ ಬರಲಿಲ್ಲ. ಆದರೆ ಒಂದು ಕತೆ ಸ್ವಲ್ಪ ದಿನಗಳಾದ ಮೇಲೆ ವಾರದ ಪುರವಣಿಯಲ್ಲಿ ಪ್ರಕಟವಾಯ್ತು. ತಲೆಬರಹವೇನೋ- ‘ವೃತ್ತದಾಚೆ’ ಎಂದು ಇರಬೇಕು. ಆ ಕತೆ ಹೆಚ್ಚೂಕಮ್ಮಿ ದ್ಯಾವನೂರು ಸಂಕಲನದಲ್ಲಿನ ‘ಒಂದು ದಹನದ ಕತೆ’ ಇದೆಯಲ್ಲಾ, ಅಂಥದು.

ಅದಿರಲಿ, ಕನ್ನಡದ ಕಥಾ ಕ್ಷೇತ್ರದಲ್ಲಿನ ಸೂಕ್ಷ್ಮಜ್ಞತೆ ಮತ್ತು ಸಂವೇದನಾಶೀಲತೆಯ ಸ್ತರ ಹೆಚ್ಚಾಗುವಂತಾಗಲು ಪ್ರಜಾವಾಣಿಯ ಕಥಾಸ್ಪರ್ಧೆಯ ಪಾತ್ರ ದೊಡ್ಡದು ಎಂದೆನಿಸುತ್ತದೆ. ಇದಕ್ಕೊಂದು ಉದಾಹರಣೆ ನೀಡುವೆ- ಪ್ರಜಾವಾಣಿ ಕಥಾಸ್ಪರ್ಧೆಗೆ ಸಾಮಾನ್ಯವಾಗಿ ನೂರಾರು ಕತೆಗಳು ಬರುತ್ತವೆ. 1ನೇ ರೌಂಡ್‌ನಲ್ಲಿ ಉಪಸಂಪಾದಕರೊಬ್ಬರು, ಪರಿಗಣಿಸಬಹುದಾದ ಕಥೆಗಳನ್ನು ಆಯ್ಕೆ ಮಾಡಿ ಸಂಪಾದಕರಿಗೆ ನೀಡುವುದು ಮಾಮೂಲಿ. ಯಾವ ಕತೆಗಳನ್ನು ಪರಿಗಣಿಸುವುದಿಲ್ಲವೊ ಅದಕ್ಕೆ ಒಂದು ವಾಕ್ಯದ ನಿರಾಕರಣೆಗೆ ಕಾರಣ ನೀಡಿರುತ್ತಾರೆ. ಹೀಗೊಂದು ಸಲ, ಉಪಸಂಪಾದಕರು ‘ಪೋಲಿ ಕತೆ’ ಎಂದು ಕಾಮೆಂಟ್ ಮಾಡಿ ಕತೆಯೊಂದನ್ನು ರಿಜೆಕ್ಟ್ ಮಾಡಿರುವುದು ಸಂಪಾದಕರ ಕಣ್ಣಿಗೆ ಬೀಳುತ್ತದೆ. ಏನೋ ಪೋಲಿ ಕತೆ, ಓದೇ ಬಿಡುವ ಎಂಬ ಕುತೂಹಲಕ್ಕೋ ಏನೋ ಸಂಪಾದಕರು ಆ ಕತೆ ತರಿಸಿಕೊಂಡು ಓದುತ್ತಾರೆ. ಓದಿ ಬೆರಗಾಗುತ್ತಾರೆ. ಅದೊಂದು ಅತ್ಯುತ್ತಮ ಕತೆಯಾಗಿರುತ್ತದೆ. ಎಂಥಾ ಅನ್ಯಾಯವಾಗಿ ಬಿಡ್ತು ಎಂದು ಹಣೆ ಚಚ್ಚಿಕೊಳ್ಳುತ್ತಾರೆ. ಯಾಕೆಂದರೆ ಪರಿಗಣಿಸಲ್ಪಟ್ಟ ಕತೆಗಳನ್ನು ಆಯ್ಕೆ ಸಮಿತಿಗೆ ಆಗಲೇ ಕಳಿಸಿ ಆಗಿಬಿಟ್ಟಿರುತ್ತದೆ. ಆದರೂ ಆ ಕತೆಯನ್ನು ಆಯ್ಕೆ ಸಮಿತಿಯ ಗಮನಕ್ಕೆ ಕಳಿಸಿಕೊಡುತ್ತಾರೆ.

ಆ ‘ಪೋಲಿ’ ಕತೆಗೆ ಬಹುಮಾನ ಬರುತ್ತದೆ. ಕತೆ ಹೆಸರು- ಹಾಲು ಕುಡಿದ ಹುಡುಗಾ, ಬರೆದವರು- ಅಬ್ದುಲ್ ರಷೀದ್. ಈ ಕತೆ ಹೇಗಿದೆ ಅಂದರೆ- ಒಂದು ಬೆಂಕಿಪೊಟ್ಟಣದಲ್ಲಿ ಇಡಬಹುದಾಗಿದ್ದಂತಹ ಸೂಕ್ಷ್ಮ ನೇಯ್ಗೆಯ ಢಾಕಾದ ನವಿರು ಮಸ್ಲಿನ್ ಸೀರೆಯಂತೆ. ಮುಷ್ಟಿಗೆ ಸಿಗದ ಈ ಕತೆಯನ್ನು ಗುರುತಿಸುವುದು ಸಾಮಾನ್ಯ ವಿಷಯವಲ್ಲ. ಆದರೆ ಸೂಕ್ಷ್ಮಜ್ಞತೆ, ಸಂವೇದನಾಶೀಲತೆ ಇಲ್ಲದ ವಾತಾವರಣ? ಅದು ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗದ ಆಳ್ವಿಕೆಯಲ್ಲಿ ಪ್ರಜೆಗಳೂ ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗಿಗಳು ತುಂಬಿರುವಂತೆ. ಇದಕ್ಕೊಂದು ಉದಾಹರಣೆ ಬೇಕೆ? ನವೆಂಬರ್ 11 ರಂದು ವಾರ್ತಾಭಾರತಿ ಪತ್ರಿಕೆಯಲ್ಲಿ ಒಂದು ಸಣ್ಣ ಸುದ್ದಿ ಒಳಪುಟದಲ್ಲಾದರೂ ಪ್ರಕಟವಾಗಿದೆ. ಅದು ತುಷಾರ್ ಗಾಂಧಿ ಹೇಳಿಕೆ. ಅವರು ಹೇಳುತ್ತಾರೆ: “ಗಾಂಧಿ ಕೊಲೆ ಪ್ರಕರಣವನ್ನು ಇಂದು ಸರ್ವೋಚ್ಛ ನ್ಯಾಯಾಲಯವು ಮರು ವಿಚಾರಣೆ ನಡೆಸಿದ್ದರೆ `ಗೋಡ್ಸೆ ಕೊಲೆಗಾರ, ಆದರೆ ದೇಶಭಕ್ತ’ ಎಂದು ತೀರ್ಪು ಬರುತ್ತಿತ್ತು” ಎನ್ನುತ್ತಾರೆ. ಮುಂದೆ, “ಈ ತೀರ್ಪಿನಿಂದ ನ್ಯಾಯಾಂಗ ವ್ಯವಸ್ಥೆಗೆ ‘ನಂಬಿಕೆಯ ಅಪರಾಧ (crime of belief)’ ಎಂಬ ಹೊಸ ಕೆಟಗರಿ ಸೇರ್ಪಡೆಯಾದಂತಾಯಿತು” ಎನ್ನುತ್ತಾರೆ. ಜೊತೆಗೆ, “ತೀರ್ಪನ್ನು ಒಪ್ಪದಿದ್ದರೂ ಅದನ್ನು ಸ್ವೀಕರಿಸಬೇಕು ಹಾಗೂ ಅದಕ್ಕೆ ವಿಧೇಯರಾಗಿರಬೇಕು” ಎನ್ನುತ್ತಾರೆ. ಕನಿಷ್ಠ ನಮ್ಮ ಮಾಧ್ಯಮಗಳಾದರೂ ಸಂವೇದನಾಶೀಲತೆ ಉಳಿಸಿಕೊಂಡಿದ್ದಲ್ಲಿ ಇದು ಪತ್ರಿಕೆಗಳಲ್ಲಿ ಮುಖಪುಟದ ಸುದ್ದಿಯಾಗುತ್ತಿತ್ತು. ದೃಶ್ಯಮಾಧ್ಯಮಗಳಲ್ಲಿ ಗಂಭೀರ ಚರ್ಚೆ ವಿಷಯವಾಗುತ್ತಿತ್ತು.

ಇಂತಹ ವಿಷಮ ವಾತಾವರಣದಲ್ಲಿ ಒಂದು ಕುತೂಹಲ ನನಗೆ. ಆ ನವಿರು ಕತೆ ಬರೆದ ರಷೀದ್ ಈ ಕಾಲದ ಇಪ್ಪತ್ತು ವರ್ಷದ ಯುವಕನಾಗಿದ್ದರೆ, ಇಂದಿನ ವಾಟ್ಸಪ್, ಫೇಸ್‌ಬುಕ್ ಗೀಳಿನ ನಡುವೆ ಅಂಥ ಕತೆ ಬರೆಯುತ್ತಿದ್ದನೆ? ರಷೀದ್‌ನಂತಹ ಪ್ರತಿಭಾವಂತರು ಈ ಕಾಲದಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಮುಳುಗೇಳುತ್ತ ಕಳೆದು ಹೋಗುತ್ತಿರಬಹುದೆ? ನಾನು ಹೇಳುತ್ತಿರುವುದು ಇರಬಹುದು ಅಥವಾ ಇಲ್ಲದೇನೂ ಇರಬಹುದು. ಇಂದಿನ ವಾಟ್ಸಪ್, ಫೇಸ್‌ಬುಕ್‌ಗಳ ಕಡೆ ಕಣ್ಣಾಡಿಸಿದರೆ ಬಹುತೇಕ ಸ್ವಯ ಇಲ್ಲದ ಬಯಲು ಶೌಚಾಲಯದಂತೆ ಕಂಡುಬರುತ್ತದೆ. ಇದು ಸ್ನಾನಗೃಹವಾಗಿದ್ದರೆ ಚೆನ್ನಾಗಿತ್ತು ಅನಿಸುತ್ತದೆ. ಇದನ್ನು ಯಾಕೆ ಹೇಳಿದೆನೆಂದರೆ- ಸೂಕ್ಷ್ಮತೆ, ಸಂವೇದನಾಶೀಲತೆಯ ಅಭಿರುಚಿ ಉಂಟಾಗಲು ತನ್ನ ಕಾಣ್ಕೆ ನೀಡುತ್ತಿರುವ ಪ್ರಜಾವಾಣಿಗೆ ಒಂದು ಸಾಧ್ಯತೆಯ ಬಗ್ಗೆ ಗಮನ ಸೆಳೆಯುವುದಕ್ಕಾಗಿ. ಏನೆಂದರೆ, ಹೇಗೂ ವೆಬ್-ಪೋರ್ಟಲ್ ಇದೆ. ಅದರಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಪ್ರಕಟವಾಗುವ ಕಥೆ, ಕವನ, ಚುಟುಕು, ಚಿತ್ರ, ಪ್ರಬಂಧ, ವರದಿ, ಇತ್ಯಾದಿಗಳಲ್ಲಿ ಉತ್ತಮ ಗುಣಮಟ್ಟದವುಗಳನ್ನು ಆಯ್ಕೆ ಮಾಡಿ ಪ್ರಕಟಿಸುವುದಾದರೆ ಇದರಿಂದಾಗಿ ವಾಟ್ಸಪ್, ಫೇಸ್‌ಬುಕ್‌ಗಳ ಅಭಿರುಚಿ ಹೆಚ್ಚುವಂತಾಗಬಹುದೆ? ಈ ಆಸೆ ನನ್ನದು.

ಯಾಕೆಂದರೆ, ಇಂದು ನಮ್ಮ ಯುವಜನತೆ ಅಭಿವ್ಯಕ್ತಗೊಳ್ಳಬೇಕಾಗಿದೆ. ಸಮುದಾಯದ ಧ್ವನಿಯಾಗಬೇಕಾಗಿದೆ. ಭಾರತದಲ್ಲಿ ಸುಮಾರು 137 ಕೋಟಿ ಬಾಯಿಗಳಿವೆ. 137 ಕೋಟಿ ಹೊಟ್ಟೆಗಳು ಇವೆ. 274 ಕೋಟಿ ಕೈಗಳಿವೆ. ಈ ಕೈಗಳಿಗೆ ಕೆಲಸ ಸಿಗುವಂತಾಗಿ ಅವುಗಳ ಹೊಟ್ಟೆ ತುಂಬಿಸಬೇಕಾಗಿದೆ. ಇಂದು ಉದ್ಯೋಗ ಕುಸಿತವಾಗುತ್ತ ಜನರು ಉದುರಿ ಹೋಗುತ್ತಿದ್ದಾರೆ. ಇಂಥಲ್ಲಿ ಜೀವಗಳನ್ನು ಉಳಿಸುವ ಯೋಜನೆ ರೂಪಿಸಬೇಕಾಗಿದೆ. ಆದರೆ ಹೊಟ್ಟೆಗೆ ಹೊಡೆಯುವುದನ್ನೆ ಆಳ್ವಿಕೆಯು ಅಭಿವೃದ್ಧಿ ಎಂದುಕೊಂಡಿದೆ. ಇದಕ್ಕೆ ಉದಾಹರಣೆ- ಇಂದು ಇಲ್ಲಿ ಚರ್ಚಿತವಾಗುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ- ಇಂಥವು. ಎಷ್ಟಂತ ಹೇಳುವುದು? ಭಾರತದಲ್ಲೀಗ ಆಳ್ವಿಕೆ ಮತ್ತು ಪೂತನಿ (crony) ಬಂಡವಾಳಶಾಹಿ ಜೊತೆಗೂಡಿಕೊಂಡು ಉದ್ಯೋಗನಾಶ ಯಜ್ಞ ಮಾಡುತ್ತಿವೆ. ಉದ್ಯೋಗದ ಸ್ಥಿತಿಗತಿ ಸ್ವ್ವಾತಂತ್ರ್ಯ ಪೂರ್ವ ಕಾಲದ ದಯಾನೀಯ ಸ್ಥಿತಿಗೆ ತಲುಪಲು ಧಾವಿಸುತ್ತಿದೆ. ಜನ ಸಮುದಾಯಕ್ಕೆ ಬೀದಿಗೆ ಬೀಳುವುದರ ಅರಿವು ಬಾರದಿರಲೆಂದು ಆ ಅಮಾಯಕರಿಗೆ ಭಾವನಾತ್ಮಕ ಅಫೀಮು ಕುಡಿಸಲಾಗುತ್ತಿದೆ. ಟಿಪ್ಪು ಅಂತಾರೆ, ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಅನ್ನುತ್ತಾರೆ, ಗೋಮಾತೆ ಅನ್ನುತ್ತಾರೆ, ಮೈಸೂರು ಪಾಕು ನಮ್ಮದು ಅನ್ನುತ್ತಾರೆ, ಪಾಕಿಸ್ತಾನದ ಭೀತಿ ತೋರಿಸುತ್ತಾರೆ, ದೇವರಿಗೆ ಹೆಡಮುರಿ ಕಟ್ಟಿ ಬೀದಿಗೆ ಎಸೆಯುತ್ತಾರೆ. ಹೀಗೆ ಹೀಗೆ ನೂರೆಂಟು ಭಾವಯಮಪಾಶಗಳನ್ನು ಎಸೆಯುತ್ತಾರೆ. ಮಾದಕಲೋಕ ಸೃಷ್ಟಿಸುತ್ತಾರೆ. ಇಂದು ವ್ಯಾಘ್ರನ ಗೋಮುಖವನ್ನು ಬಯಲಿಗೆ ಎಳೆಯಬೇಕಾಗಿದೆ. ಸರ್ಕಾರಕ್ಕೆ ನಾವು ಕೇಳಬೇಕಾಗಿದೆ- “ಒಂದು ಗ್ಯಾರಂಟಿ ಉದ್ಯೋಗ ನೀಡು, ಆಮೇಲೆ ಮಾತಾಡು” ಎಂದು ಮೊದಲು ಕೇಳಿ ಆಮೇಲೆ ಉಳಿದುದೆಲ್ಲ.

ಕೊನೆಗೊಂದು ಮಾತು. ಆಸೆಯೇ ದುಃಖಕ್ಕೆ ಕಾರಣ ಎಂಬ ಪ್ರಸಿದ್ಧ ಮಾತಿದೆ. ಇದು ಬುದ್ಧನ ನುಡಿಗಳು. ಪಾಳಿಯಲ್ಲಿ ಆಸೆ ಎನ್ನುವುದಕ್ಕೆ ‘ತನ್ಹಾ’ ಎಂದಿದೆ. ಸಂಸ್ಕೃತದಲ್ಲಿ ‘ತೃಷ್ಣೆ’ ಎಂದಿದೆ. ಇಂಗ್ಲೀಷ್‌ನಲ್ಲಿ craving ಎಂದಿದೆ. ಇದನ್ನು ನೋಡಿದಾಗ ‘ಆಸೆ’ ಪದ ಸಾಲದು ಅನ್ನಿಸುತ್ತದೆ. ಸಿಗರೇಟ್ ಇಲ್ಲದಿದ್ದಾಗ ನಾನು ತಹತಹಿಸುವುದು ಆಸೆ ಅಲ್ಲ, ಅದು craving. ಇದಕ್ಕೆ ಹತ್ತಿರದ ಪದ ಹುಡುಕುತ್ತ ಕಂಡದ್ದು- ‘ದಾಹ’. ‘ದಾಹ’ ಅಂದರೆ ‘ದಹಿಸುವುದು’ ಎಂದೂ ಅರ್ಥವಂತೆ. ಸದ್ಯಕ್ಕೆ ದಾಹವೇ ದುಃಖಕ್ಕೆ ಕಾರಣ- ಎಂದಿಟ್ಟುಕೊಳ್ಳಬಹುದೇನೊ.

ಇಂದು ಭೂಮಿಯೇ ಮನುಷ್ಯನ ದಾಹಕ್ಕೆ ಸಿಲುಕಿ ದಹಿಸುತ್ತಿದೆ. ಭೂಮಿ ಬಾಯಾರಿಕೆಯನ್ನು ನೀಗಿಸಬಹುದು, ದಾಹವನ್ನಲ್ಲ. ಇಂದಿನ ಮನುಷ್ಯನ ದಾಹದಿಂದಾಗಿ ತಾಪಮಾನ ಹೆಚ್ಚಾಗಿ- ಹಿಮಗಡ್ಡೆ ಕರಗುತ್ತಿವೆ. ಸಮುದ್ರದ ಮಟ್ಟ ಏರುತ್ತಿದೆ. ಸೈಕ್ಲೋನ್‌ಗಳು ಅಪ್ಪಳಿಸುತಿವೆ. ಹುಚ್ಚು ಮಳೆ ಬರುತ್ತಿದೆ. ಭೂಮಿ ಕುಸಿಯುತ್ತಿದೆ. ಎಲ್ಲವೂ ಕೊಚ್ಚಿಹೋಗುತ್ತಿದೆ. ವಿಪರ್ಯಾಸವೆಂದರೆ ಒಂದು ಕಡೆ ಪ್ರವಾಹ. ಅದರ ಪಕ್ಕದಲ್ಲೆ ನೀರಿಲ್ಲದ ಬರ. ಬದುಕುವುದೆಂತು?

ಪುಣ್ಯಕ್ಕೆ, ಭೂಮಿತಾಯಿಯೇ ಸ್ವೀಡನ್‌ನ ಹದಿನಾರು ವರ್ಷದ ಬಾಲೆ ಗ್ರೆಟಾ ಥನ್ಬರ್ಗ್‌ಳ ಮೈಮೇಲೆ ಬಂದು ನುಡಿಸಿದಂತೆ ಗ್ರೆಟಾ ನುಡಿಯುತ್ತಿದ್ದಾಳೆ. ಈ ಅನಾಹುತಗಳಿಗೆಲ್ಲಾ ಕಾರಣರಾದ ಜಗತ್ತಿನ ನಾಯಕರಿಗೆ “how dare you?” ಎಂದು ಕೇಳುತ್ತಿದ್ದಾಳೆ. ಹೀಗೆ ಕೇಳಬಹುದಾದ ಬಾಲಕ-ಬಾಲಕಿಯರು ಇಲ್ಲೂ ಇರಬಹುದು. ಎಲ್ಲೆಲ್ಲೂ ಇರಬಹುದು. ಅವರೀಗ ಮಾತಾಡಬೇಕಾಗಿದೆ. ಯಾಕೆಂದರೆ ಅವರು ಉಳಿಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...