HomeUncategorizedಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ...

ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಪ್ರಜಾವಾಣಿಯ ದೀಪಾವಳಿ ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡುತ್ತ ಮೈಸೂರಿನಲ್ಲಿ ದೇವನೂರು ಆಡಿದ ಮಾತುಗಳು...

- Advertisement -
- Advertisement -

ಪ್ರಜಾವಾಣಿ ದೀಪಾವಳಿ ಸಂಚಿಕೆಯ ಕಥಾ ಕವನ ಸ್ಪರ್ಧಾ ವಿಜೇತರಿಗೆ ನಾನೀಗ ಬಹುಮಾನ ವಿತರಣೆ ಮಾಡಬೇಕಾಗಿ ಬಂದಿದೆ. ಇಲ್ಲೊಂದು ಗುಟ್ಟು ಹೇಳುವೆ. ಆದರೆ ಒಂದು ಕಂಡೀಷನ್ನು. ಕೇಳಿದ ಮೇಲೆ ಬಹುಮಾನಿತರಾದ ನೀವು- ಎಂಥವನ ಕೈಯಲ್ಲಿ ಪ್ರೈಜ್ ಪಡೆಯಬೇಕಾಗಿ ಬಂತು ಎಂದು ಪರಿತಪಿಸಬಾರದು! ಆ ಗುಟ್ಟು ಏನೆಂದರೆ- ನಾನೂ ಈ ಹಿಂದೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಗೆ ಎರಡು ಸಲ ಕತೆ ಕಳಿಸಿದ್ದೆ. ಪ್ರೈಜ್ ಇರಲಿ, ಮೆಚ್ಚಿಗೇನೂ ಬರಲಿಲ್ಲ. ಆದರೆ ಒಂದು ಕತೆ ಸ್ವಲ್ಪ ದಿನಗಳಾದ ಮೇಲೆ ವಾರದ ಪುರವಣಿಯಲ್ಲಿ ಪ್ರಕಟವಾಯ್ತು. ತಲೆಬರಹವೇನೋ- ‘ವೃತ್ತದಾಚೆ’ ಎಂದು ಇರಬೇಕು. ಆ ಕತೆ ಹೆಚ್ಚೂಕಮ್ಮಿ ದ್ಯಾವನೂರು ಸಂಕಲನದಲ್ಲಿನ ‘ಒಂದು ದಹನದ ಕತೆ’ ಇದೆಯಲ್ಲಾ, ಅಂಥದು.

ಅದಿರಲಿ, ಕನ್ನಡದ ಕಥಾ ಕ್ಷೇತ್ರದಲ್ಲಿನ ಸೂಕ್ಷ್ಮಜ್ಞತೆ ಮತ್ತು ಸಂವೇದನಾಶೀಲತೆಯ ಸ್ತರ ಹೆಚ್ಚಾಗುವಂತಾಗಲು ಪ್ರಜಾವಾಣಿಯ ಕಥಾಸ್ಪರ್ಧೆಯ ಪಾತ್ರ ದೊಡ್ಡದು ಎಂದೆನಿಸುತ್ತದೆ. ಇದಕ್ಕೊಂದು ಉದಾಹರಣೆ ನೀಡುವೆ- ಪ್ರಜಾವಾಣಿ ಕಥಾಸ್ಪರ್ಧೆಗೆ ಸಾಮಾನ್ಯವಾಗಿ ನೂರಾರು ಕತೆಗಳು ಬರುತ್ತವೆ. 1ನೇ ರೌಂಡ್‌ನಲ್ಲಿ ಉಪಸಂಪಾದಕರೊಬ್ಬರು, ಪರಿಗಣಿಸಬಹುದಾದ ಕಥೆಗಳನ್ನು ಆಯ್ಕೆ ಮಾಡಿ ಸಂಪಾದಕರಿಗೆ ನೀಡುವುದು ಮಾಮೂಲಿ. ಯಾವ ಕತೆಗಳನ್ನು ಪರಿಗಣಿಸುವುದಿಲ್ಲವೊ ಅದಕ್ಕೆ ಒಂದು ವಾಕ್ಯದ ನಿರಾಕರಣೆಗೆ ಕಾರಣ ನೀಡಿರುತ್ತಾರೆ. ಹೀಗೊಂದು ಸಲ, ಉಪಸಂಪಾದಕರು ‘ಪೋಲಿ ಕತೆ’ ಎಂದು ಕಾಮೆಂಟ್ ಮಾಡಿ ಕತೆಯೊಂದನ್ನು ರಿಜೆಕ್ಟ್ ಮಾಡಿರುವುದು ಸಂಪಾದಕರ ಕಣ್ಣಿಗೆ ಬೀಳುತ್ತದೆ. ಏನೋ ಪೋಲಿ ಕತೆ, ಓದೇ ಬಿಡುವ ಎಂಬ ಕುತೂಹಲಕ್ಕೋ ಏನೋ ಸಂಪಾದಕರು ಆ ಕತೆ ತರಿಸಿಕೊಂಡು ಓದುತ್ತಾರೆ. ಓದಿ ಬೆರಗಾಗುತ್ತಾರೆ. ಅದೊಂದು ಅತ್ಯುತ್ತಮ ಕತೆಯಾಗಿರುತ್ತದೆ. ಎಂಥಾ ಅನ್ಯಾಯವಾಗಿ ಬಿಡ್ತು ಎಂದು ಹಣೆ ಚಚ್ಚಿಕೊಳ್ಳುತ್ತಾರೆ. ಯಾಕೆಂದರೆ ಪರಿಗಣಿಸಲ್ಪಟ್ಟ ಕತೆಗಳನ್ನು ಆಯ್ಕೆ ಸಮಿತಿಗೆ ಆಗಲೇ ಕಳಿಸಿ ಆಗಿಬಿಟ್ಟಿರುತ್ತದೆ. ಆದರೂ ಆ ಕತೆಯನ್ನು ಆಯ್ಕೆ ಸಮಿತಿಯ ಗಮನಕ್ಕೆ ಕಳಿಸಿಕೊಡುತ್ತಾರೆ.

ಆ ‘ಪೋಲಿ’ ಕತೆಗೆ ಬಹುಮಾನ ಬರುತ್ತದೆ. ಕತೆ ಹೆಸರು- ಹಾಲು ಕುಡಿದ ಹುಡುಗಾ, ಬರೆದವರು- ಅಬ್ದುಲ್ ರಷೀದ್. ಈ ಕತೆ ಹೇಗಿದೆ ಅಂದರೆ- ಒಂದು ಬೆಂಕಿಪೊಟ್ಟಣದಲ್ಲಿ ಇಡಬಹುದಾಗಿದ್ದಂತಹ ಸೂಕ್ಷ್ಮ ನೇಯ್ಗೆಯ ಢಾಕಾದ ನವಿರು ಮಸ್ಲಿನ್ ಸೀರೆಯಂತೆ. ಮುಷ್ಟಿಗೆ ಸಿಗದ ಈ ಕತೆಯನ್ನು ಗುರುತಿಸುವುದು ಸಾಮಾನ್ಯ ವಿಷಯವಲ್ಲ. ಆದರೆ ಸೂಕ್ಷ್ಮಜ್ಞತೆ, ಸಂವೇದನಾಶೀಲತೆ ಇಲ್ಲದ ವಾತಾವರಣ? ಅದು ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗದ ಆಳ್ವಿಕೆಯಲ್ಲಿ ಪ್ರಜೆಗಳೂ ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗಿಗಳು ತುಂಬಿರುವಂತೆ. ಇದಕ್ಕೊಂದು ಉದಾಹರಣೆ ಬೇಕೆ? ನವೆಂಬರ್ 11 ರಂದು ವಾರ್ತಾಭಾರತಿ ಪತ್ರಿಕೆಯಲ್ಲಿ ಒಂದು ಸಣ್ಣ ಸುದ್ದಿ ಒಳಪುಟದಲ್ಲಾದರೂ ಪ್ರಕಟವಾಗಿದೆ. ಅದು ತುಷಾರ್ ಗಾಂಧಿ ಹೇಳಿಕೆ. ಅವರು ಹೇಳುತ್ತಾರೆ: “ಗಾಂಧಿ ಕೊಲೆ ಪ್ರಕರಣವನ್ನು ಇಂದು ಸರ್ವೋಚ್ಛ ನ್ಯಾಯಾಲಯವು ಮರು ವಿಚಾರಣೆ ನಡೆಸಿದ್ದರೆ `ಗೋಡ್ಸೆ ಕೊಲೆಗಾರ, ಆದರೆ ದೇಶಭಕ್ತ’ ಎಂದು ತೀರ್ಪು ಬರುತ್ತಿತ್ತು” ಎನ್ನುತ್ತಾರೆ. ಮುಂದೆ, “ಈ ತೀರ್ಪಿನಿಂದ ನ್ಯಾಯಾಂಗ ವ್ಯವಸ್ಥೆಗೆ ‘ನಂಬಿಕೆಯ ಅಪರಾಧ (crime of belief)’ ಎಂಬ ಹೊಸ ಕೆಟಗರಿ ಸೇರ್ಪಡೆಯಾದಂತಾಯಿತು” ಎನ್ನುತ್ತಾರೆ. ಜೊತೆಗೆ, “ತೀರ್ಪನ್ನು ಒಪ್ಪದಿದ್ದರೂ ಅದನ್ನು ಸ್ವೀಕರಿಸಬೇಕು ಹಾಗೂ ಅದಕ್ಕೆ ವಿಧೇಯರಾಗಿರಬೇಕು” ಎನ್ನುತ್ತಾರೆ. ಕನಿಷ್ಠ ನಮ್ಮ ಮಾಧ್ಯಮಗಳಾದರೂ ಸಂವೇದನಾಶೀಲತೆ ಉಳಿಸಿಕೊಂಡಿದ್ದಲ್ಲಿ ಇದು ಪತ್ರಿಕೆಗಳಲ್ಲಿ ಮುಖಪುಟದ ಸುದ್ದಿಯಾಗುತ್ತಿತ್ತು. ದೃಶ್ಯಮಾಧ್ಯಮಗಳಲ್ಲಿ ಗಂಭೀರ ಚರ್ಚೆ ವಿಷಯವಾಗುತ್ತಿತ್ತು.

ಇಂತಹ ವಿಷಮ ವಾತಾವರಣದಲ್ಲಿ ಒಂದು ಕುತೂಹಲ ನನಗೆ. ಆ ನವಿರು ಕತೆ ಬರೆದ ರಷೀದ್ ಈ ಕಾಲದ ಇಪ್ಪತ್ತು ವರ್ಷದ ಯುವಕನಾಗಿದ್ದರೆ, ಇಂದಿನ ವಾಟ್ಸಪ್, ಫೇಸ್‌ಬುಕ್ ಗೀಳಿನ ನಡುವೆ ಅಂಥ ಕತೆ ಬರೆಯುತ್ತಿದ್ದನೆ? ರಷೀದ್‌ನಂತಹ ಪ್ರತಿಭಾವಂತರು ಈ ಕಾಲದಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಮುಳುಗೇಳುತ್ತ ಕಳೆದು ಹೋಗುತ್ತಿರಬಹುದೆ? ನಾನು ಹೇಳುತ್ತಿರುವುದು ಇರಬಹುದು ಅಥವಾ ಇಲ್ಲದೇನೂ ಇರಬಹುದು. ಇಂದಿನ ವಾಟ್ಸಪ್, ಫೇಸ್‌ಬುಕ್‌ಗಳ ಕಡೆ ಕಣ್ಣಾಡಿಸಿದರೆ ಬಹುತೇಕ ಸ್ವಯ ಇಲ್ಲದ ಬಯಲು ಶೌಚಾಲಯದಂತೆ ಕಂಡುಬರುತ್ತದೆ. ಇದು ಸ್ನಾನಗೃಹವಾಗಿದ್ದರೆ ಚೆನ್ನಾಗಿತ್ತು ಅನಿಸುತ್ತದೆ. ಇದನ್ನು ಯಾಕೆ ಹೇಳಿದೆನೆಂದರೆ- ಸೂಕ್ಷ್ಮತೆ, ಸಂವೇದನಾಶೀಲತೆಯ ಅಭಿರುಚಿ ಉಂಟಾಗಲು ತನ್ನ ಕಾಣ್ಕೆ ನೀಡುತ್ತಿರುವ ಪ್ರಜಾವಾಣಿಗೆ ಒಂದು ಸಾಧ್ಯತೆಯ ಬಗ್ಗೆ ಗಮನ ಸೆಳೆಯುವುದಕ್ಕಾಗಿ. ಏನೆಂದರೆ, ಹೇಗೂ ವೆಬ್-ಪೋರ್ಟಲ್ ಇದೆ. ಅದರಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಪ್ರಕಟವಾಗುವ ಕಥೆ, ಕವನ, ಚುಟುಕು, ಚಿತ್ರ, ಪ್ರಬಂಧ, ವರದಿ, ಇತ್ಯಾದಿಗಳಲ್ಲಿ ಉತ್ತಮ ಗುಣಮಟ್ಟದವುಗಳನ್ನು ಆಯ್ಕೆ ಮಾಡಿ ಪ್ರಕಟಿಸುವುದಾದರೆ ಇದರಿಂದಾಗಿ ವಾಟ್ಸಪ್, ಫೇಸ್‌ಬುಕ್‌ಗಳ ಅಭಿರುಚಿ ಹೆಚ್ಚುವಂತಾಗಬಹುದೆ? ಈ ಆಸೆ ನನ್ನದು.

ಯಾಕೆಂದರೆ, ಇಂದು ನಮ್ಮ ಯುವಜನತೆ ಅಭಿವ್ಯಕ್ತಗೊಳ್ಳಬೇಕಾಗಿದೆ. ಸಮುದಾಯದ ಧ್ವನಿಯಾಗಬೇಕಾಗಿದೆ. ಭಾರತದಲ್ಲಿ ಸುಮಾರು 137 ಕೋಟಿ ಬಾಯಿಗಳಿವೆ. 137 ಕೋಟಿ ಹೊಟ್ಟೆಗಳು ಇವೆ. 274 ಕೋಟಿ ಕೈಗಳಿವೆ. ಈ ಕೈಗಳಿಗೆ ಕೆಲಸ ಸಿಗುವಂತಾಗಿ ಅವುಗಳ ಹೊಟ್ಟೆ ತುಂಬಿಸಬೇಕಾಗಿದೆ. ಇಂದು ಉದ್ಯೋಗ ಕುಸಿತವಾಗುತ್ತ ಜನರು ಉದುರಿ ಹೋಗುತ್ತಿದ್ದಾರೆ. ಇಂಥಲ್ಲಿ ಜೀವಗಳನ್ನು ಉಳಿಸುವ ಯೋಜನೆ ರೂಪಿಸಬೇಕಾಗಿದೆ. ಆದರೆ ಹೊಟ್ಟೆಗೆ ಹೊಡೆಯುವುದನ್ನೆ ಆಳ್ವಿಕೆಯು ಅಭಿವೃದ್ಧಿ ಎಂದುಕೊಂಡಿದೆ. ಇದಕ್ಕೆ ಉದಾಹರಣೆ- ಇಂದು ಇಲ್ಲಿ ಚರ್ಚಿತವಾಗುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ- ಇಂಥವು. ಎಷ್ಟಂತ ಹೇಳುವುದು? ಭಾರತದಲ್ಲೀಗ ಆಳ್ವಿಕೆ ಮತ್ತು ಪೂತನಿ (crony) ಬಂಡವಾಳಶಾಹಿ ಜೊತೆಗೂಡಿಕೊಂಡು ಉದ್ಯೋಗನಾಶ ಯಜ್ಞ ಮಾಡುತ್ತಿವೆ. ಉದ್ಯೋಗದ ಸ್ಥಿತಿಗತಿ ಸ್ವ್ವಾತಂತ್ರ್ಯ ಪೂರ್ವ ಕಾಲದ ದಯಾನೀಯ ಸ್ಥಿತಿಗೆ ತಲುಪಲು ಧಾವಿಸುತ್ತಿದೆ. ಜನ ಸಮುದಾಯಕ್ಕೆ ಬೀದಿಗೆ ಬೀಳುವುದರ ಅರಿವು ಬಾರದಿರಲೆಂದು ಆ ಅಮಾಯಕರಿಗೆ ಭಾವನಾತ್ಮಕ ಅಫೀಮು ಕುಡಿಸಲಾಗುತ್ತಿದೆ. ಟಿಪ್ಪು ಅಂತಾರೆ, ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಅನ್ನುತ್ತಾರೆ, ಗೋಮಾತೆ ಅನ್ನುತ್ತಾರೆ, ಮೈಸೂರು ಪಾಕು ನಮ್ಮದು ಅನ್ನುತ್ತಾರೆ, ಪಾಕಿಸ್ತಾನದ ಭೀತಿ ತೋರಿಸುತ್ತಾರೆ, ದೇವರಿಗೆ ಹೆಡಮುರಿ ಕಟ್ಟಿ ಬೀದಿಗೆ ಎಸೆಯುತ್ತಾರೆ. ಹೀಗೆ ಹೀಗೆ ನೂರೆಂಟು ಭಾವಯಮಪಾಶಗಳನ್ನು ಎಸೆಯುತ್ತಾರೆ. ಮಾದಕಲೋಕ ಸೃಷ್ಟಿಸುತ್ತಾರೆ. ಇಂದು ವ್ಯಾಘ್ರನ ಗೋಮುಖವನ್ನು ಬಯಲಿಗೆ ಎಳೆಯಬೇಕಾಗಿದೆ. ಸರ್ಕಾರಕ್ಕೆ ನಾವು ಕೇಳಬೇಕಾಗಿದೆ- “ಒಂದು ಗ್ಯಾರಂಟಿ ಉದ್ಯೋಗ ನೀಡು, ಆಮೇಲೆ ಮಾತಾಡು” ಎಂದು ಮೊದಲು ಕೇಳಿ ಆಮೇಲೆ ಉಳಿದುದೆಲ್ಲ.

ಕೊನೆಗೊಂದು ಮಾತು. ಆಸೆಯೇ ದುಃಖಕ್ಕೆ ಕಾರಣ ಎಂಬ ಪ್ರಸಿದ್ಧ ಮಾತಿದೆ. ಇದು ಬುದ್ಧನ ನುಡಿಗಳು. ಪಾಳಿಯಲ್ಲಿ ಆಸೆ ಎನ್ನುವುದಕ್ಕೆ ‘ತನ್ಹಾ’ ಎಂದಿದೆ. ಸಂಸ್ಕೃತದಲ್ಲಿ ‘ತೃಷ್ಣೆ’ ಎಂದಿದೆ. ಇಂಗ್ಲೀಷ್‌ನಲ್ಲಿ craving ಎಂದಿದೆ. ಇದನ್ನು ನೋಡಿದಾಗ ‘ಆಸೆ’ ಪದ ಸಾಲದು ಅನ್ನಿಸುತ್ತದೆ. ಸಿಗರೇಟ್ ಇಲ್ಲದಿದ್ದಾಗ ನಾನು ತಹತಹಿಸುವುದು ಆಸೆ ಅಲ್ಲ, ಅದು craving. ಇದಕ್ಕೆ ಹತ್ತಿರದ ಪದ ಹುಡುಕುತ್ತ ಕಂಡದ್ದು- ‘ದಾಹ’. ‘ದಾಹ’ ಅಂದರೆ ‘ದಹಿಸುವುದು’ ಎಂದೂ ಅರ್ಥವಂತೆ. ಸದ್ಯಕ್ಕೆ ದಾಹವೇ ದುಃಖಕ್ಕೆ ಕಾರಣ- ಎಂದಿಟ್ಟುಕೊಳ್ಳಬಹುದೇನೊ.

ಇಂದು ಭೂಮಿಯೇ ಮನುಷ್ಯನ ದಾಹಕ್ಕೆ ಸಿಲುಕಿ ದಹಿಸುತ್ತಿದೆ. ಭೂಮಿ ಬಾಯಾರಿಕೆಯನ್ನು ನೀಗಿಸಬಹುದು, ದಾಹವನ್ನಲ್ಲ. ಇಂದಿನ ಮನುಷ್ಯನ ದಾಹದಿಂದಾಗಿ ತಾಪಮಾನ ಹೆಚ್ಚಾಗಿ- ಹಿಮಗಡ್ಡೆ ಕರಗುತ್ತಿವೆ. ಸಮುದ್ರದ ಮಟ್ಟ ಏರುತ್ತಿದೆ. ಸೈಕ್ಲೋನ್‌ಗಳು ಅಪ್ಪಳಿಸುತಿವೆ. ಹುಚ್ಚು ಮಳೆ ಬರುತ್ತಿದೆ. ಭೂಮಿ ಕುಸಿಯುತ್ತಿದೆ. ಎಲ್ಲವೂ ಕೊಚ್ಚಿಹೋಗುತ್ತಿದೆ. ವಿಪರ್ಯಾಸವೆಂದರೆ ಒಂದು ಕಡೆ ಪ್ರವಾಹ. ಅದರ ಪಕ್ಕದಲ್ಲೆ ನೀರಿಲ್ಲದ ಬರ. ಬದುಕುವುದೆಂತು?

ಪುಣ್ಯಕ್ಕೆ, ಭೂಮಿತಾಯಿಯೇ ಸ್ವೀಡನ್‌ನ ಹದಿನಾರು ವರ್ಷದ ಬಾಲೆ ಗ್ರೆಟಾ ಥನ್ಬರ್ಗ್‌ಳ ಮೈಮೇಲೆ ಬಂದು ನುಡಿಸಿದಂತೆ ಗ್ರೆಟಾ ನುಡಿಯುತ್ತಿದ್ದಾಳೆ. ಈ ಅನಾಹುತಗಳಿಗೆಲ್ಲಾ ಕಾರಣರಾದ ಜಗತ್ತಿನ ನಾಯಕರಿಗೆ “how dare you?” ಎಂದು ಕೇಳುತ್ತಿದ್ದಾಳೆ. ಹೀಗೆ ಕೇಳಬಹುದಾದ ಬಾಲಕ-ಬಾಲಕಿಯರು ಇಲ್ಲೂ ಇರಬಹುದು. ಎಲ್ಲೆಲ್ಲೂ ಇರಬಹುದು. ಅವರೀಗ ಮಾತಾಡಬೇಕಾಗಿದೆ. ಯಾಕೆಂದರೆ ಅವರು ಉಳಿಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...