HomeUncategorizedಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ...

ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಪ್ರಜಾವಾಣಿಯ ದೀಪಾವಳಿ ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡುತ್ತ ಮೈಸೂರಿನಲ್ಲಿ ದೇವನೂರು ಆಡಿದ ಮಾತುಗಳು...

- Advertisement -
- Advertisement -

ಪ್ರಜಾವಾಣಿ ದೀಪಾವಳಿ ಸಂಚಿಕೆಯ ಕಥಾ ಕವನ ಸ್ಪರ್ಧಾ ವಿಜೇತರಿಗೆ ನಾನೀಗ ಬಹುಮಾನ ವಿತರಣೆ ಮಾಡಬೇಕಾಗಿ ಬಂದಿದೆ. ಇಲ್ಲೊಂದು ಗುಟ್ಟು ಹೇಳುವೆ. ಆದರೆ ಒಂದು ಕಂಡೀಷನ್ನು. ಕೇಳಿದ ಮೇಲೆ ಬಹುಮಾನಿತರಾದ ನೀವು- ಎಂಥವನ ಕೈಯಲ್ಲಿ ಪ್ರೈಜ್ ಪಡೆಯಬೇಕಾಗಿ ಬಂತು ಎಂದು ಪರಿತಪಿಸಬಾರದು! ಆ ಗುಟ್ಟು ಏನೆಂದರೆ- ನಾನೂ ಈ ಹಿಂದೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಗೆ ಎರಡು ಸಲ ಕತೆ ಕಳಿಸಿದ್ದೆ. ಪ್ರೈಜ್ ಇರಲಿ, ಮೆಚ್ಚಿಗೇನೂ ಬರಲಿಲ್ಲ. ಆದರೆ ಒಂದು ಕತೆ ಸ್ವಲ್ಪ ದಿನಗಳಾದ ಮೇಲೆ ವಾರದ ಪುರವಣಿಯಲ್ಲಿ ಪ್ರಕಟವಾಯ್ತು. ತಲೆಬರಹವೇನೋ- ‘ವೃತ್ತದಾಚೆ’ ಎಂದು ಇರಬೇಕು. ಆ ಕತೆ ಹೆಚ್ಚೂಕಮ್ಮಿ ದ್ಯಾವನೂರು ಸಂಕಲನದಲ್ಲಿನ ‘ಒಂದು ದಹನದ ಕತೆ’ ಇದೆಯಲ್ಲಾ, ಅಂಥದು.

ಅದಿರಲಿ, ಕನ್ನಡದ ಕಥಾ ಕ್ಷೇತ್ರದಲ್ಲಿನ ಸೂಕ್ಷ್ಮಜ್ಞತೆ ಮತ್ತು ಸಂವೇದನಾಶೀಲತೆಯ ಸ್ತರ ಹೆಚ್ಚಾಗುವಂತಾಗಲು ಪ್ರಜಾವಾಣಿಯ ಕಥಾಸ್ಪರ್ಧೆಯ ಪಾತ್ರ ದೊಡ್ಡದು ಎಂದೆನಿಸುತ್ತದೆ. ಇದಕ್ಕೊಂದು ಉದಾಹರಣೆ ನೀಡುವೆ- ಪ್ರಜಾವಾಣಿ ಕಥಾಸ್ಪರ್ಧೆಗೆ ಸಾಮಾನ್ಯವಾಗಿ ನೂರಾರು ಕತೆಗಳು ಬರುತ್ತವೆ. 1ನೇ ರೌಂಡ್‌ನಲ್ಲಿ ಉಪಸಂಪಾದಕರೊಬ್ಬರು, ಪರಿಗಣಿಸಬಹುದಾದ ಕಥೆಗಳನ್ನು ಆಯ್ಕೆ ಮಾಡಿ ಸಂಪಾದಕರಿಗೆ ನೀಡುವುದು ಮಾಮೂಲಿ. ಯಾವ ಕತೆಗಳನ್ನು ಪರಿಗಣಿಸುವುದಿಲ್ಲವೊ ಅದಕ್ಕೆ ಒಂದು ವಾಕ್ಯದ ನಿರಾಕರಣೆಗೆ ಕಾರಣ ನೀಡಿರುತ್ತಾರೆ. ಹೀಗೊಂದು ಸಲ, ಉಪಸಂಪಾದಕರು ‘ಪೋಲಿ ಕತೆ’ ಎಂದು ಕಾಮೆಂಟ್ ಮಾಡಿ ಕತೆಯೊಂದನ್ನು ರಿಜೆಕ್ಟ್ ಮಾಡಿರುವುದು ಸಂಪಾದಕರ ಕಣ್ಣಿಗೆ ಬೀಳುತ್ತದೆ. ಏನೋ ಪೋಲಿ ಕತೆ, ಓದೇ ಬಿಡುವ ಎಂಬ ಕುತೂಹಲಕ್ಕೋ ಏನೋ ಸಂಪಾದಕರು ಆ ಕತೆ ತರಿಸಿಕೊಂಡು ಓದುತ್ತಾರೆ. ಓದಿ ಬೆರಗಾಗುತ್ತಾರೆ. ಅದೊಂದು ಅತ್ಯುತ್ತಮ ಕತೆಯಾಗಿರುತ್ತದೆ. ಎಂಥಾ ಅನ್ಯಾಯವಾಗಿ ಬಿಡ್ತು ಎಂದು ಹಣೆ ಚಚ್ಚಿಕೊಳ್ಳುತ್ತಾರೆ. ಯಾಕೆಂದರೆ ಪರಿಗಣಿಸಲ್ಪಟ್ಟ ಕತೆಗಳನ್ನು ಆಯ್ಕೆ ಸಮಿತಿಗೆ ಆಗಲೇ ಕಳಿಸಿ ಆಗಿಬಿಟ್ಟಿರುತ್ತದೆ. ಆದರೂ ಆ ಕತೆಯನ್ನು ಆಯ್ಕೆ ಸಮಿತಿಯ ಗಮನಕ್ಕೆ ಕಳಿಸಿಕೊಡುತ್ತಾರೆ.

ಆ ‘ಪೋಲಿ’ ಕತೆಗೆ ಬಹುಮಾನ ಬರುತ್ತದೆ. ಕತೆ ಹೆಸರು- ಹಾಲು ಕುಡಿದ ಹುಡುಗಾ, ಬರೆದವರು- ಅಬ್ದುಲ್ ರಷೀದ್. ಈ ಕತೆ ಹೇಗಿದೆ ಅಂದರೆ- ಒಂದು ಬೆಂಕಿಪೊಟ್ಟಣದಲ್ಲಿ ಇಡಬಹುದಾಗಿದ್ದಂತಹ ಸೂಕ್ಷ್ಮ ನೇಯ್ಗೆಯ ಢಾಕಾದ ನವಿರು ಮಸ್ಲಿನ್ ಸೀರೆಯಂತೆ. ಮುಷ್ಟಿಗೆ ಸಿಗದ ಈ ಕತೆಯನ್ನು ಗುರುತಿಸುವುದು ಸಾಮಾನ್ಯ ವಿಷಯವಲ್ಲ. ಆದರೆ ಸೂಕ್ಷ್ಮಜ್ಞತೆ, ಸಂವೇದನಾಶೀಲತೆ ಇಲ್ಲದ ವಾತಾವರಣ? ಅದು ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗದ ಆಳ್ವಿಕೆಯಲ್ಲಿ ಪ್ರಜೆಗಳೂ ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗಿಗಳು ತುಂಬಿರುವಂತೆ. ಇದಕ್ಕೊಂದು ಉದಾಹರಣೆ ಬೇಕೆ? ನವೆಂಬರ್ 11 ರಂದು ವಾರ್ತಾಭಾರತಿ ಪತ್ರಿಕೆಯಲ್ಲಿ ಒಂದು ಸಣ್ಣ ಸುದ್ದಿ ಒಳಪುಟದಲ್ಲಾದರೂ ಪ್ರಕಟವಾಗಿದೆ. ಅದು ತುಷಾರ್ ಗಾಂಧಿ ಹೇಳಿಕೆ. ಅವರು ಹೇಳುತ್ತಾರೆ: “ಗಾಂಧಿ ಕೊಲೆ ಪ್ರಕರಣವನ್ನು ಇಂದು ಸರ್ವೋಚ್ಛ ನ್ಯಾಯಾಲಯವು ಮರು ವಿಚಾರಣೆ ನಡೆಸಿದ್ದರೆ `ಗೋಡ್ಸೆ ಕೊಲೆಗಾರ, ಆದರೆ ದೇಶಭಕ್ತ’ ಎಂದು ತೀರ್ಪು ಬರುತ್ತಿತ್ತು” ಎನ್ನುತ್ತಾರೆ. ಮುಂದೆ, “ಈ ತೀರ್ಪಿನಿಂದ ನ್ಯಾಯಾಂಗ ವ್ಯವಸ್ಥೆಗೆ ‘ನಂಬಿಕೆಯ ಅಪರಾಧ (crime of belief)’ ಎಂಬ ಹೊಸ ಕೆಟಗರಿ ಸೇರ್ಪಡೆಯಾದಂತಾಯಿತು” ಎನ್ನುತ್ತಾರೆ. ಜೊತೆಗೆ, “ತೀರ್ಪನ್ನು ಒಪ್ಪದಿದ್ದರೂ ಅದನ್ನು ಸ್ವೀಕರಿಸಬೇಕು ಹಾಗೂ ಅದಕ್ಕೆ ವಿಧೇಯರಾಗಿರಬೇಕು” ಎನ್ನುತ್ತಾರೆ. ಕನಿಷ್ಠ ನಮ್ಮ ಮಾಧ್ಯಮಗಳಾದರೂ ಸಂವೇದನಾಶೀಲತೆ ಉಳಿಸಿಕೊಂಡಿದ್ದಲ್ಲಿ ಇದು ಪತ್ರಿಕೆಗಳಲ್ಲಿ ಮುಖಪುಟದ ಸುದ್ದಿಯಾಗುತ್ತಿತ್ತು. ದೃಶ್ಯಮಾಧ್ಯಮಗಳಲ್ಲಿ ಗಂಭೀರ ಚರ್ಚೆ ವಿಷಯವಾಗುತ್ತಿತ್ತು.

ಇಂತಹ ವಿಷಮ ವಾತಾವರಣದಲ್ಲಿ ಒಂದು ಕುತೂಹಲ ನನಗೆ. ಆ ನವಿರು ಕತೆ ಬರೆದ ರಷೀದ್ ಈ ಕಾಲದ ಇಪ್ಪತ್ತು ವರ್ಷದ ಯುವಕನಾಗಿದ್ದರೆ, ಇಂದಿನ ವಾಟ್ಸಪ್, ಫೇಸ್‌ಬುಕ್ ಗೀಳಿನ ನಡುವೆ ಅಂಥ ಕತೆ ಬರೆಯುತ್ತಿದ್ದನೆ? ರಷೀದ್‌ನಂತಹ ಪ್ರತಿಭಾವಂತರು ಈ ಕಾಲದಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಮುಳುಗೇಳುತ್ತ ಕಳೆದು ಹೋಗುತ್ತಿರಬಹುದೆ? ನಾನು ಹೇಳುತ್ತಿರುವುದು ಇರಬಹುದು ಅಥವಾ ಇಲ್ಲದೇನೂ ಇರಬಹುದು. ಇಂದಿನ ವಾಟ್ಸಪ್, ಫೇಸ್‌ಬುಕ್‌ಗಳ ಕಡೆ ಕಣ್ಣಾಡಿಸಿದರೆ ಬಹುತೇಕ ಸ್ವಯ ಇಲ್ಲದ ಬಯಲು ಶೌಚಾಲಯದಂತೆ ಕಂಡುಬರುತ್ತದೆ. ಇದು ಸ್ನಾನಗೃಹವಾಗಿದ್ದರೆ ಚೆನ್ನಾಗಿತ್ತು ಅನಿಸುತ್ತದೆ. ಇದನ್ನು ಯಾಕೆ ಹೇಳಿದೆನೆಂದರೆ- ಸೂಕ್ಷ್ಮತೆ, ಸಂವೇದನಾಶೀಲತೆಯ ಅಭಿರುಚಿ ಉಂಟಾಗಲು ತನ್ನ ಕಾಣ್ಕೆ ನೀಡುತ್ತಿರುವ ಪ್ರಜಾವಾಣಿಗೆ ಒಂದು ಸಾಧ್ಯತೆಯ ಬಗ್ಗೆ ಗಮನ ಸೆಳೆಯುವುದಕ್ಕಾಗಿ. ಏನೆಂದರೆ, ಹೇಗೂ ವೆಬ್-ಪೋರ್ಟಲ್ ಇದೆ. ಅದರಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಪ್ರಕಟವಾಗುವ ಕಥೆ, ಕವನ, ಚುಟುಕು, ಚಿತ್ರ, ಪ್ರಬಂಧ, ವರದಿ, ಇತ್ಯಾದಿಗಳಲ್ಲಿ ಉತ್ತಮ ಗುಣಮಟ್ಟದವುಗಳನ್ನು ಆಯ್ಕೆ ಮಾಡಿ ಪ್ರಕಟಿಸುವುದಾದರೆ ಇದರಿಂದಾಗಿ ವಾಟ್ಸಪ್, ಫೇಸ್‌ಬುಕ್‌ಗಳ ಅಭಿರುಚಿ ಹೆಚ್ಚುವಂತಾಗಬಹುದೆ? ಈ ಆಸೆ ನನ್ನದು.

ಯಾಕೆಂದರೆ, ಇಂದು ನಮ್ಮ ಯುವಜನತೆ ಅಭಿವ್ಯಕ್ತಗೊಳ್ಳಬೇಕಾಗಿದೆ. ಸಮುದಾಯದ ಧ್ವನಿಯಾಗಬೇಕಾಗಿದೆ. ಭಾರತದಲ್ಲಿ ಸುಮಾರು 137 ಕೋಟಿ ಬಾಯಿಗಳಿವೆ. 137 ಕೋಟಿ ಹೊಟ್ಟೆಗಳು ಇವೆ. 274 ಕೋಟಿ ಕೈಗಳಿವೆ. ಈ ಕೈಗಳಿಗೆ ಕೆಲಸ ಸಿಗುವಂತಾಗಿ ಅವುಗಳ ಹೊಟ್ಟೆ ತುಂಬಿಸಬೇಕಾಗಿದೆ. ಇಂದು ಉದ್ಯೋಗ ಕುಸಿತವಾಗುತ್ತ ಜನರು ಉದುರಿ ಹೋಗುತ್ತಿದ್ದಾರೆ. ಇಂಥಲ್ಲಿ ಜೀವಗಳನ್ನು ಉಳಿಸುವ ಯೋಜನೆ ರೂಪಿಸಬೇಕಾಗಿದೆ. ಆದರೆ ಹೊಟ್ಟೆಗೆ ಹೊಡೆಯುವುದನ್ನೆ ಆಳ್ವಿಕೆಯು ಅಭಿವೃದ್ಧಿ ಎಂದುಕೊಂಡಿದೆ. ಇದಕ್ಕೆ ಉದಾಹರಣೆ- ಇಂದು ಇಲ್ಲಿ ಚರ್ಚಿತವಾಗುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ- ಇಂಥವು. ಎಷ್ಟಂತ ಹೇಳುವುದು? ಭಾರತದಲ್ಲೀಗ ಆಳ್ವಿಕೆ ಮತ್ತು ಪೂತನಿ (crony) ಬಂಡವಾಳಶಾಹಿ ಜೊತೆಗೂಡಿಕೊಂಡು ಉದ್ಯೋಗನಾಶ ಯಜ್ಞ ಮಾಡುತ್ತಿವೆ. ಉದ್ಯೋಗದ ಸ್ಥಿತಿಗತಿ ಸ್ವ್ವಾತಂತ್ರ್ಯ ಪೂರ್ವ ಕಾಲದ ದಯಾನೀಯ ಸ್ಥಿತಿಗೆ ತಲುಪಲು ಧಾವಿಸುತ್ತಿದೆ. ಜನ ಸಮುದಾಯಕ್ಕೆ ಬೀದಿಗೆ ಬೀಳುವುದರ ಅರಿವು ಬಾರದಿರಲೆಂದು ಆ ಅಮಾಯಕರಿಗೆ ಭಾವನಾತ್ಮಕ ಅಫೀಮು ಕುಡಿಸಲಾಗುತ್ತಿದೆ. ಟಿಪ್ಪು ಅಂತಾರೆ, ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಅನ್ನುತ್ತಾರೆ, ಗೋಮಾತೆ ಅನ್ನುತ್ತಾರೆ, ಮೈಸೂರು ಪಾಕು ನಮ್ಮದು ಅನ್ನುತ್ತಾರೆ, ಪಾಕಿಸ್ತಾನದ ಭೀತಿ ತೋರಿಸುತ್ತಾರೆ, ದೇವರಿಗೆ ಹೆಡಮುರಿ ಕಟ್ಟಿ ಬೀದಿಗೆ ಎಸೆಯುತ್ತಾರೆ. ಹೀಗೆ ಹೀಗೆ ನೂರೆಂಟು ಭಾವಯಮಪಾಶಗಳನ್ನು ಎಸೆಯುತ್ತಾರೆ. ಮಾದಕಲೋಕ ಸೃಷ್ಟಿಸುತ್ತಾರೆ. ಇಂದು ವ್ಯಾಘ್ರನ ಗೋಮುಖವನ್ನು ಬಯಲಿಗೆ ಎಳೆಯಬೇಕಾಗಿದೆ. ಸರ್ಕಾರಕ್ಕೆ ನಾವು ಕೇಳಬೇಕಾಗಿದೆ- “ಒಂದು ಗ್ಯಾರಂಟಿ ಉದ್ಯೋಗ ನೀಡು, ಆಮೇಲೆ ಮಾತಾಡು” ಎಂದು ಮೊದಲು ಕೇಳಿ ಆಮೇಲೆ ಉಳಿದುದೆಲ್ಲ.

ಕೊನೆಗೊಂದು ಮಾತು. ಆಸೆಯೇ ದುಃಖಕ್ಕೆ ಕಾರಣ ಎಂಬ ಪ್ರಸಿದ್ಧ ಮಾತಿದೆ. ಇದು ಬುದ್ಧನ ನುಡಿಗಳು. ಪಾಳಿಯಲ್ಲಿ ಆಸೆ ಎನ್ನುವುದಕ್ಕೆ ‘ತನ್ಹಾ’ ಎಂದಿದೆ. ಸಂಸ್ಕೃತದಲ್ಲಿ ‘ತೃಷ್ಣೆ’ ಎಂದಿದೆ. ಇಂಗ್ಲೀಷ್‌ನಲ್ಲಿ craving ಎಂದಿದೆ. ಇದನ್ನು ನೋಡಿದಾಗ ‘ಆಸೆ’ ಪದ ಸಾಲದು ಅನ್ನಿಸುತ್ತದೆ. ಸಿಗರೇಟ್ ಇಲ್ಲದಿದ್ದಾಗ ನಾನು ತಹತಹಿಸುವುದು ಆಸೆ ಅಲ್ಲ, ಅದು craving. ಇದಕ್ಕೆ ಹತ್ತಿರದ ಪದ ಹುಡುಕುತ್ತ ಕಂಡದ್ದು- ‘ದಾಹ’. ‘ದಾಹ’ ಅಂದರೆ ‘ದಹಿಸುವುದು’ ಎಂದೂ ಅರ್ಥವಂತೆ. ಸದ್ಯಕ್ಕೆ ದಾಹವೇ ದುಃಖಕ್ಕೆ ಕಾರಣ- ಎಂದಿಟ್ಟುಕೊಳ್ಳಬಹುದೇನೊ.

ಇಂದು ಭೂಮಿಯೇ ಮನುಷ್ಯನ ದಾಹಕ್ಕೆ ಸಿಲುಕಿ ದಹಿಸುತ್ತಿದೆ. ಭೂಮಿ ಬಾಯಾರಿಕೆಯನ್ನು ನೀಗಿಸಬಹುದು, ದಾಹವನ್ನಲ್ಲ. ಇಂದಿನ ಮನುಷ್ಯನ ದಾಹದಿಂದಾಗಿ ತಾಪಮಾನ ಹೆಚ್ಚಾಗಿ- ಹಿಮಗಡ್ಡೆ ಕರಗುತ್ತಿವೆ. ಸಮುದ್ರದ ಮಟ್ಟ ಏರುತ್ತಿದೆ. ಸೈಕ್ಲೋನ್‌ಗಳು ಅಪ್ಪಳಿಸುತಿವೆ. ಹುಚ್ಚು ಮಳೆ ಬರುತ್ತಿದೆ. ಭೂಮಿ ಕುಸಿಯುತ್ತಿದೆ. ಎಲ್ಲವೂ ಕೊಚ್ಚಿಹೋಗುತ್ತಿದೆ. ವಿಪರ್ಯಾಸವೆಂದರೆ ಒಂದು ಕಡೆ ಪ್ರವಾಹ. ಅದರ ಪಕ್ಕದಲ್ಲೆ ನೀರಿಲ್ಲದ ಬರ. ಬದುಕುವುದೆಂತು?

ಪುಣ್ಯಕ್ಕೆ, ಭೂಮಿತಾಯಿಯೇ ಸ್ವೀಡನ್‌ನ ಹದಿನಾರು ವರ್ಷದ ಬಾಲೆ ಗ್ರೆಟಾ ಥನ್ಬರ್ಗ್‌ಳ ಮೈಮೇಲೆ ಬಂದು ನುಡಿಸಿದಂತೆ ಗ್ರೆಟಾ ನುಡಿಯುತ್ತಿದ್ದಾಳೆ. ಈ ಅನಾಹುತಗಳಿಗೆಲ್ಲಾ ಕಾರಣರಾದ ಜಗತ್ತಿನ ನಾಯಕರಿಗೆ “how dare you?” ಎಂದು ಕೇಳುತ್ತಿದ್ದಾಳೆ. ಹೀಗೆ ಕೇಳಬಹುದಾದ ಬಾಲಕ-ಬಾಲಕಿಯರು ಇಲ್ಲೂ ಇರಬಹುದು. ಎಲ್ಲೆಲ್ಲೂ ಇರಬಹುದು. ಅವರೀಗ ಮಾತಾಡಬೇಕಾಗಿದೆ. ಯಾಕೆಂದರೆ ಅವರು ಉಳಿಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...