Homeಕರ್ನಾಟಕ'ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ' ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

- Advertisement -
- Advertisement -

‘ಅಪ್ರತಿಮ ದೇಶಪ್ರೇಮಿ, ಕ್ರಾಂತಿಕಾರಿ ಆಡಳಿತಗಾರ ಟಿಪ್ಪು ಸುಲ್ತಾನ್ ವಿರುದ್ಧ ಚೇಷ್ಟೆಯ ಕಟ್ಟುಕತೆ ಉರಿಗೌಡ ನಂಜೇಗೌಡರನ್ನು ಛೂ ಬಿಟ್ಟಾಗ ಅವು ನೆಗೆದುಬಿದ್ದವು. ನಮ್ಮ ಸಂತರು ಹೇಳುವ ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ಈ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ ಎಂದು ನನಗನ್ನಿಸುತ್ತಿದೆ’ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಹೇಳಿದರು.

ಮಂಡ್ಯದಲ್ಲಿ ಹಿಂದುತ್ವ ಕೋಮುವಾದಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ರಾಜಕೀಯಕ್ಕಾಗಿ ಸೃಷ್ಟಿಸಿದ ಧ್ವಜ ವಿವಾದದ ವಿರುದ್ಧ ಗುರುವಾರ ನಡೆದ ‘ಮಂಡ್ಯ ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳಿವಿಗಾಗಿ ಶಾಂತಿ, ಸೌಹಾರ್ದತೆ, ಸಹಬಾಳ್ವೆಗಾಗಿ ಪ್ರತಿಭಟನಾ ಧರಣಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಳೆ-ಬೆಳೆ ಇಲ್ಲದ ನಮ್ಮ ಕಡೆಯ ಜನರು ಮಂಡ್ಯ ಜಿಲ್ಲೆಯ ಗದ್ದೆಸೀಮೆಗೆ ಕಟಾವು ಟೈಮಲ್ಲಿ ಕೂಲಿನಾಲಿಗೆ ಹೋಗಿ ಬರುತ್ತಿದ್ದರು. ಅವರು ಮಂಡ್ಯ ಜಿಲ್ಲೆಯಲ್ಲಿ ಎಲ್ಲೆಲ್ಲು ಹಸಿರಾಗಿರುವ ಪರಿ, ನೀರು ಹರಿಯುವ ವೈಭೋಗ ವರ್ಣಿಸುತ್ತಿದ್ದರು. ನಾನು ಮಂಡ್ಯದ ಅಳಿಯನಾದ ಮೇಲೆ, ಗೆಳೆಯ ಕೆ.ಎಸ್.ಪುಟ್ಟಣ್ಣಯ್ಯ ಅವರ ಜೊತೆ ‘ಸರ್ವೋದಯ ಕರ್ನಾಟಕ’ ಪಕ್ಷ ಕಟ್ಟಿ ಇಲ್ಲಿ ಹೆಚ್ಚು ಓಡಾಡಿದ ಮೇಲೆ ನನಗೆ ತಿಳೀತು. ಇವರಿಗೂ ಇವರದೇ ಆದ ಕಷ್ಟ ಸುಖ, ದುಃಖ ದುಮ್ಮಾನಗಳು ಇವೆ ಅಂತ. ಈಗ ನಾನು ಮಾತಾಡಬೇಕಾಗಿರುವುದು ಇದಲ್ಲ; ಇಲ್ಲಿ ಹೆಚ್ಚಾಗಿ ನೀರು ಮಾತ್ರ ಹರಿಯುತ್ತಿಲ್ಲ. ಈ ನೆಲದಲ್ಲಿ ಕಣ್ಣಿಗೆ ಕಾಣದ ಒಳಿತಿನ ಅಂತರಲವೂ ಹರಿಯುತ್ತಿದೆ’ ಎಂದರು.

‘ಇದಕ್ಕೆ ಒಂದೆರಡು ಉದಾಹರಣೆ; ಇಸವಿ 1939, ಸ್ಥಳ: ಕೆರೆಗೋಡು ಪಕ್ಕದ ಹೊನಗಾನಹಳ್ಳಿ, ಅಲ್ಲೊಬ್ಬರು ಪ್ರಜ್ಞೆ ಇರುವ ವ್ಯಕ್ತಿ ಪುಟ್ಟಣ್ಣ ಅಂತ. ಇವರು ತಮ್ಮ ಊರ ಕೆರೆಯಲ್ಲಿ ಅಸ್ಪೃಶ್ಯರೂ ನೀರು ಬಳಸುವಂತೆ ಮಾಡುತ್ತಾರೆ. ಆ ಊರಿನ ಜಾತಿ ಮೂಢಾತ್ಮರು ಪುಟ್ಟಣ್ಣನವರಿಗೆ ಹಿಗ್ಗಾಮುಗ್ಗಾ ಥಳಿಸುತ್ತಾರೆ. ಅಂದು ಪುಟ್ಟಣ್ಣ ‘ಮನುಷ್ಯರಿಲ್ಲದ ಈ ಊರಲ್ಲಿ ನಾನು ಇರಲ್ಲ’ ಅಂತ ನಿರ್ಧರಿಸಿ ಹೇಮಗಿರಿಬೆಟ್ಟದಲ್ಲಿ ನೆಲೆಸುತ್ತಾರೆ. ಅಲ್ಲೊಂದು ವಿದ್ಯಾಸಂಸ್ಥೆಯನ್ನು ಸ್ಥಾಪಿಸುತ್ತಾರೆ; ಇದು ಮಂಡ್ಯ ಮಣ್ಣೆಳಗೆ ಹರಿಯುತ್ತಿರುವ ಐಕ್ಯತೆಯ ಚೈತನ್ಯ’ ಎಂದರು.

‘ಇನ್ನೊಂದು, ಇಸವಿ 1931ರ ರಾಜರ ಆಳ್ವಿಕೆಯ ಕಾಲ; ಸ್ಥಳ ಸೋಮನಹಳ್ಳಿ, ಇಲ್ಲೊಂದು ಧೀರೋದಾತ್ತ ಹೃದಯವಂತಿಕೆಯ ಚಿಲುಮೆ ಇದೇ ನೆಲದಿಂದ ಉಕ್ಕುತ್ತದೆ. ಇದಕ್ಕೆ ಕಾರಣರು ಎಸ್.ಸಿ.ಮಲ್ಲಯ್ಯ. ಇವರು ಪ್ರಜಾಪ್ರತಿನಿಧಿ ಸಭೆಯ ಸದಸ್ಯರೂ ಆಗಿದ್ದರು. ಇವರು ‘ಒಕ್ಕಲಿಗರ ವಸತಿ ನಿಲಯ’ ಸ್ಥಾಪಿಸಿ, ಅಲ್ಲಿ ಅಸ್ಪೃಶ್ಯ ಮಕ್ಕಳನ್ನೂ ಜೊತೆಗೆ ಸೇರಿಸಿ ಅವರ ವಿದ್ಯಾಭ್ಯಾಸವನ್ನೂ ನೋಡಿಕೊಂಡಿದ್ದರು. ಅಷ್ಟೇ ಅಲ್ಲ, ಊರಾಚೆ ಇದ್ದ ಅಸ್ಪೃಶ್ಯರನ್ನು ತಮ್ಮ ಮನೆ ಎದುರಿಗಿನ ತಮ್ಮದೇ ಜಾಗ ನೀಡಿ ಸಹಬಾಳ್ವೆಯಿಂದ ಸಮಾನವಾಗಿ ವಾಸಿಸುವಂತೆ ಮಾಡಿದ್ದರು. ಗಾಂಧಿ ಈ ಊರಿಗೆ ಭೇಟಿ ನೀಡಿ ಬೆರಗಾಗುತ್ತಾರೆ. ಪಂಚಮರ ಪ್ರತ್ಯೇಕ ಶಾಲೆಯು ಕಷ್ಟಪಟ್ಟು ನಡೆಯುತ್ತಿದ್ದ ಆ ಕಾಲದಲ್ಲಿ ಬೆರೆತು ಒಳಗೊಳ್ಳುವ ಈ ಚೋದ್ಯ ಈ ಊರಲ್ಲಿ ಸಂಭವಿಸಿದೆ.
ಮತ್ತೊಂದು.. ಕೋಡಳ್ಳಿ ಶಿವರಾಂ ಉಜ್ಜನಿಯ ಚೌಡೇಶ್ವರಿ ದೇವಸ್ಥಾನದಲ್ಲಿ ಕೊಂಡ ಹಾಯುವುದನ್ನು ನೋಡಲು ಕರೆದೊಯ್ದಿದ್ದರು. ದಾರಿಯಲ್ಲಿ ಒಂದು ಸೇತುವೆ ಬಳಿ ಕಾರು ಗಕ್ಕನೆ ನಿಂತಿತು; ಕೆಳಕ್ಕೆ ಇಳಿದೆವು. ಶಿವರಾಂ ಹೇಳಿದರು.. ಈ ಸೇತುವೆ ಕಟ್ಟಿದ ಕಂಟ್ರಾಕ್ಟರ್ ಸ್ವಾತಂತ್ರ್ಯ ಪೂರ್ವದ ನಿಡುಘಟ್ಟದ ಅಣ್ಣೆಗೌಡ. ಆ ಸೇತುವೆಯಲ್ಲಿ ಹುಳುಕು ಹುಡುಕಿ ಮೇಲಿನವರು ಒಂದಾಣೆ ದಂಡ ಹಾಕಿದಾಗ ಅವಮಾನ ತಾಳಲಾರದೆ ಸ್ವಾಭಿಮಾನಿ ಅಣ್ಣೆಗೌಡ ಆ ಸೇತುವೆಯಿಂದಲೇ ಕೆಳಕ್ಕೆ ಬಿದ್ದು ಪ್ರಾಣ ತ್ಯಜಿಸುತ್ತಾರೆ. ನಾನು ಸುಸ್ತಾಗಿ ಗಟ್ಟಿಮುಟ್ಟಾಗಿದ್ದ ಆ ಸೇತುವೆ ಮೇಲೆ ಕುಳಿತುಕೊಂಡೆ. ಒಂದೆರಡು ಸಿಗರೇಟು ಸೇದಿದೆ. ಇಂತವು ಎಷ್ಟೊ ಇನ್ನೆಷ್ಟೋ ಈ ನೆಲದೊಳಗೆ ಉಸಿರಾಡುತ್ತ ಕುಳಿತಿವೆ’ ಎಂದು ಹಳೆ ಘಟನೆಗಳನ್ನು ಸಭೆಯ ಮುಂದಿಟ್ಟರು.

‘ಜೊತೆಗೇ, ನಾವು ಕಂಡಂತೆ ಸಾಂಸ್ಕೃತಿಕ ನಾಯಕರಾಗಿದ್ದ ಕೆ.ವಿ.ಶಂಕರೇಗೌಡರು ರಾಜಕಾರಣಿಯೂ ಆಗಿದ್ದರು. ಸಚಿವರಾಗಿ ನ್ಯಾಯವಂತಿಕೆಯ ಆಡಳಿತ ನಡೆಸಿದ್ದನ್ನು ಕಂಡಿದ್ದೇವೆ. ರಾಜ್ಯದ ಜನಪರ ಹೋರಾಟಗಳಿಗೆ ನಾಯಕತ್ವ ಕೊಟ್ಟ ಕೆ.ಎಸ್.ಪುಟ್ಟಣ್ಣಯ್ಯನವರ ಹೃದಯ ಬಡಿತಗಳೂ ಈ ನೆಲದಲ್ಲಿದೆ. ಹೀಗೆಲ್ಲಾ ಚೈತನ್ಯದ ಅಂತರಲ ಈ ಭೂಮಿಯಲ್ಲಿ ಹರಿಯುತ್ತಿದ್ದುದರಿಂದಲೇ, ಅಪ್ರತಿಮ ದೇಶಪ್ರೇಮಿ, ಕ್ರಾಂತಿಕಾರಿ ಆಡಳಿತಗಾರ ಟಿಪ್ಪು ಸುಲ್ತಾನ್ ವಿರುದ್ಧ ಚೇಷ್ಟೆಯ ಕಟ್ಟುಕತೆ ಉರಿಗೌಡ ನಂಜೇಗೌಡರನ್ನು ಛೂ ಬಿಟ್ಟಾಗ ಅವು ನೆಗೆದುಬಿದ್ದವು. ನಮ್ಮ ಸಂತರು ಹೇಳುವ ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ಈ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ ಎಂದು ನನಗನ್ನಿಸುತ್ತಿದೆ’ ಎಂದು ಬಣ್ಣಿಸಿದರು.

‘ಇಂತಹ ನೆಲದಲ್ಲಿ, 1938ರಲ್ಲಿ ಶಿವಪುರ ಸ್ವಾತಂತ್ರ್ಯ ಧ್ವಜಸ್ಮಾರಕಕ್ಕೆ ನಾಕಾರು ಎಕರೆ ಭೂಮಿ ನೀಡಿದ ಈಡಿಗ ಸಮುದಾಯದ ಉದಾರ ವ್ಯಕ್ತಿ ಜೀವಿಸಿದ್ದ ಈ ಮಣ್ಣಲ್ಲಿ, ಧ್ವಜಾರೋಹಣ ಸಂದರ್ಭದಲ್ಲಿ ಮೊದಲ ಏಟುತಿಂದ ಧೀಮಂತ ಮಹಿಳೆಯ ಈ ನೆಲದಲ್ಲಿ ಇತ್ತೀಚೆಗೆ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಬಂದು ಊರನ್ನು ಛಿದ್ರಗೊಳಿಸಿದೆ. ದೇವರು, ಧರ್ಮ, ಧ್ವಜ, ಬಣ್ಣ ಇವುಗಳನ್ನು ಹಣ ಮಾಡುವುದಕ್ಕೆ, ಅಧಿಕಾರ ಹಿಡಿಯುವುದಕ್ಕೆ ನಿಜಭಕ್ತಿ ಇಲ್ಲದ ಕೆಲವರು ದುರುಪಯೋಗಪಡಿಸಿಕೊಂಡ ಪರಿಣಾಮ ಇದು. ಛಿದ್ರತೆ, ಭಿನ್ನಬಾವ ಹೆಚ್ಚುತ್ತಿದೆ. ಅಂದರೆ, ಯಾಕೋ ದೆವ್ವ, ಪಿಶಾಚಿಗಳು ಅಲ್ಲಿಗೆ ಎಂಟ್ರಿ ಕೊಟ್ಟಿವೆ ಅಂತಲೇ ಅರ್ಥ; ಮಂಡ್ಯ ನೆಲದಲ್ಲಿ ಯಾರೂ ಇದನ್ನು ನಿರೀಕ್ಷಿಸಿರಲಿಲ್ಲ’ ಎಂದರು.

‘ನನಗೆ ಅನಿಸುವಂತೆ, ಇಗಾಗಲೆ ಜನತಾದಳ (ಜಾತ್ಯಾತೀತ) ಪಕ್ಷವು ಜಾತ್ಯಾತೀತವನ್ನು ತುಳಿದು, ‘ಚಾತುತ್ವರ್ಣ ಸಮಾಜವನ್ನೇ ತನ್ನ ದೇವರು’ ಅಂದುಕೊಂಡ ಆರ್‌ಎಸ್‌ಎಸ್‌ನ ಬಿಜೆಪಿ ಪಕ್ಷವನ್ನು ಆಲಂಗಿಸಿಕೊಂಡಿದ್ದು ಕಾರಣ; ಆ ಗಳಿಗೆಯಲ್ಲಿ ಅದರ ನೈತಿಕತೆ ಪತನವಾಯ್ತು. ಕೇವಲ ತಮ್ಮ ಹತ್ತು ತಿಂಗಳ ಪ್ರಧಾನಮಂತ್ರಿ ಅವಧಿಯಲ್ಲಿ ನೆನಪಲ್ಲಿಡುವಂತಹ ಕಾರ್ಯ ನಿರ್ವಹಿಸಿದಂತಹ ಮುತ್ಸದ್ಧಿ ಹೆಚ್.ಡಿ.ದೇವೇಗೌಡರ ಪಕ್ಷಕ್ಕೆ ಈ ಅವನತಿ ಬರಬಾರದಿತ್ತು. ಈಗ ಜನತಾದಳದ ಬೆನ್ನ ಮೇಲೆ, ತಲೆ ಮೇಲೆ ಸಂಘ ಪರಿವಾರದ ಬಿಜೆಪಿಯ ಛಿದ್ರಕಾರಿ ಶಕ್ತಿಗಳು ಸವಾರಿ ಮಾಡುತ್ತಿವೆ; ಆದ್ದರಿಂದ, ಕೆರಗೋಡು ಪ್ರಕರಣ ಉಂಟಾಗಿದೆ’ ಎಂದು ಜೆಡಿಎಸ್ ನಾಯಕರ ನಡೆಯನ್ನು ಖಂಡಿಸಿದರು.

‘ಈ ಕೆರಗೋಡು ಪ್ರಕರಣಕ್ಕೆ ನನಗೆ ಅನ್ನಿಸುವುದಿಷ್ಟೇ.. ಅದನ್ನು ನೋಡುವುದು ಬೇಡ, ನಮ್ಮನ್ನು ನಾವು ನೋಡಿಕೊಳ್ಳೋಣ. ನನ್ನನ್ನೂ ಸೇರಿ ನಾವೆಲ್ಲರೂ ಏನೇನೋ ಮಾಡಬೇಕಿತ್ತೊ, ಎಷ್ಟೆಷ್ಟೋ ಮಾಡಬೇಕಿತ್ತೊ ಅವುಗಳನ್ನು ಮಾಡಲಿಲ್ಲ. ಅದಕ್ಕೆ ಕೆರಗೋಡು ಪ್ರಕರಣ ನಡೆದಿದೆ. ಅವರು ಪಂಜು ಹಿಡಿದುಕೊಂಡು ಸಮಾಜದಲ್ಲಿ ಬೆಂಕಿ ಹಂಚಲು ಬಂದರೆ, ನಾವು ಮನೆಮನೆಗಳಲ್ಲಿ ಸಹಬಾಳ್ವೆಯ ಹಣತೆಯ ಬೆಳಕು ಬೆಳಗಿಸೋಣ’ ಎಂದು ಸಲಹೆ ನೀಡಿದರು.

‘ಹಾಗೆ ಇನ್ನೊಂದು ಮಾತು.. ನಂನಮ್ಮ ಸಂಘಟನೆಗಳು ಹೋರಾಡುವುದು, ಬೇಡಿಕೆ ಇಡುವುದು ಎಲ್ಲವೂ ತಾವು ಪ್ರತಿನಿಧಿಸುವ ಸಮುದಾಯಗಳದು ಮಾತ್ರ. ಇದರಾಚೆಗೆ ನಾವು ನೋಡಿದ್ದೀವಾ? ಹಾಗಾದರೆ, ಹೇಳುವವರು.. ಕೇಳುವವರು ಯಾರೂ ಇಲ್ಲದವರಿಗೆ ಯಾರೂ ಇಲ್ಲವಾ? ಉದಾಹರಣೆಗೆ, ನಮ್ಮೆಲ್ಲರಿಗೂ ಮಾತಾಪಿತೃಗಳಾದ ಬುಡಕಟ್ಟು ಆದಿವಾಸಿಗಳಿಗೆ ವಿಧಾನಸಭೆಯಲ್ಲಿ ಹಾಗೂ ಜನಪ್ರತಿನಿಧಿ ಸಂಸ್ಥೆಗಳಲ್ಲಿ ಪ್ರಾತಿನಿಧ್ಯ. ಜೊತೆಗೆ ಒಂದು ನಿಗಮವಾದರೂ ಕನಿಷ್ಠ ಇರಬೇಕಿತ್ತಲ್ಲವೆ? ಹೀಗೆಯೇ ಅಲೆಮಾರಿ, ಪೌರಕಾರ್ಮಿಕ, ದೇವದಾಸಿ ಹಿನ್ನೆಲೆಯ ಸಮುದಾಯಗಳಿಗೂ ಕೂಡ. ಇವರ ಸಮಸ್ಯೆ ನಮ್ಮ ಸಮಸ್ಯೆಯೂ ಆಗಬೇಕು. ಆಗ ನಾವು ಸಂವೇದನಾಶೀಲತೆ ಪಡೆದುಕೊಳ್ಳುತ್ತೇವೆ. ಇವು ನಮ್ಮನ್ನು ಹೆಚ್ಚು ಮನುಷ್ಯರನ್ನಾಗಿಸುತ್ತದೆ. ನಮ್ಮ ಸೈದ್ಧಾಂತಿಕತೆಯ ಬುಡ ಭದ್ರವಾಗುತ್ತದೆ. ಅದಕ್ಕಾಗಿ ನಮ್ಮ ಮೊದಲ ಆದ್ಯತೆಯ ಡಿಮ್ಯಾಂಡ್‌ಗಳು ಇವಾಗಿ, ತದನಂತರ ನಮ್ಮವು ಎಂಬ ಅಂತಃಕರಣ ನಮ್ಮದಾಗಬೇಕಿದೆ’ ಎಂದರು.

‘ನಮ್ಮ ಸಮಸ್ಯೆಗಳ ಸರಮಾಲೆಗಳ ಜೊತೆಗೆ ಮುಂದೆ ಕೆಲವೇ ದಿನಗಳಲ್ಲಿ 2024ರ ಲೋಕಸಭಾ ಚುನಾವಣೆ ಎದುರಾಗುತ್ತಿದೆ. ಆರ್‌ಎಸ್‌ಎಸ್‌ನ ಗುರು ಶ್ರೀ ಗೋಳ್ವಾಲ್ಕರ್ “ಚಾತುರ್ವಣ್ರ ಸಮಾಜವೇ ದೇವರು” ಎಂದು ಹೇಳುತ್ತಾರೆ. ಇದನ್ನೆ ಸಾವರ್ಕರ್ ‘ಹಿಂದುತ್ವ’ ಅನ್ನುತ್ತಾರೆ. ಕೇಂದ್ರ ಸರ್ಕಾರ ಇದನ್ನೆ ಅನುಷ್ಠಾನ ಮಾಡಲು ಹೊರಟಿರುವುದು. ಒಟ್ಟಿನಲ್ಲಿ ಒಕ್ಕಲುತನದ ಶೂದ್ರರು ಅನ್ನಿಸಿಕೊಂಡವರು, ದುಡಿಯುವ ಜನರು ಮೇಲಿನವರಿಗೆ ಸೇವಕರಾಗಿರಬೇಕು, ಕಾಲಾಳುಗಳಾಗಿರಬೇಕು ಎಂಬುದೇ ಇವರ ಮರ್ಮ. ಇದನ್ನು ನಾವು ಎಲ್ಲರಿಗೂ ಮನದಟ್ಟು ಮಾಡಬೇಕಿದೆ’ ಎಂದರು ಹೇಳಿದರು.

‘ಜೊತೆಗೆ, ಇಂತಹ ಆರ್‌ಎಸ್ಎಸ್‌ನ ಬಿಜೆಪಿ ಸರ್ಕಾರ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಮೊದಲು ಜನ ಸಮುದಾಯಗಳಿಗೆ ದನಿ ಕೊಡುವ, ಆಸರೆಯಾಗುವ ಜನಾಂದೋಲನಗಳ ಕಾಲು ಕತ್ತರಿಸಲಾಗುತ್ತದೆ. ಈಗಾಗಲೇ ಕುಂಟುತ್ತ ನಡೆಯುತ್ತಿರುವ ಮಾಧ್ಯಮಗಳು ತೆವಳುತ್ತ ನಡೆಯುವಂತೆ ಮಾಡಲಾಗುತ್ತದೆ. ಆಡಿದ್ದೇ ಆಟ ನಡೆದಿದ್ದೇ ದಾರಿ ಎಂಬಂತೆ ಒಂಟಿ ಸಲಗನಂತೆ ತುಳಿದುಕೊಂಡು ಓಡಾಡುತ್ತಿರುವ ಈ ಆರ್‌ಎಸ್‌ಎಸ್ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಉಳಿಗಾಲ ಉಂಟೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಕೊನೆಯದಾಗಿ.. ಮಂಡ್ಯಕ್ಕೆ ಒಂದು ಕಿವಿಮಾತು; ಹೊನಗಾನಹಳ್ಳಿಯ ಅತಂತ್ರ ಮಹಾತ್ಮ ಪುಟ್ಟಣ್ಣ ಊರು ಬಿಟ್ಟು ಬೆಟ್ಟ ಸೇರಿಕೊಂಡರಲ್ಲಾ, ಅಂತಹದೇ ವ್ಯಕ್ತಿತ್ವದ ವ್ಯಕ್ತಿಯೊಬ್ಬ ಈಗ ಕೋಲಾರದ ತೇರಹಳ್ಳಿ ಬೆಟ್ಟದಿಂದ ಮೇಲುಕೋಟೆ ಬೆಟ್ಟಕ್ಕೆ ಬಂದು ಸೇರಿಕೊಂಡಿದ್ದಾನೆ. ಇವನ ಹೆಸರು ಕೆ. ರಾಮಯ್ಯ. ಇವನು ಇನ್ನೊಂದು ಬೆಟ್ಟಕ್ಕೆ ಜಿಗಿಯುವ ಮುನ್ನ, ಬಲೆ ಹಾಕಿ ಬಂಧಿಸಿಟ್ಟುಕೊಳ್ಳಿರಿ. ಇವಗೆ ನೆಲಕ್ಕೆ ಕಿವಿಗೊಟ್ಟು ಆಲಿಸಿ ಆ ಸ್ಪಂದನಗಳಿಗೆ ಆಕಾರ ಕೊಡುವ ಸಿದ್ದಿ ಇರುವಂತಿದೆ. ಇವನಿಂದ ಮಂಡ್ಯದ ನೆಲದಲ್ಲಿ ಅಂತರಗಂಗೆಯಾಗಿ ಹರಿಯುತ್ತಿರುವ ಚೈತನ್ಯಗಳ ಜೀವಂತ ಕತೆಗಳು ಮಕ್ಕಳ ಪುಸ್ತಿಕೆಗಳಾಗಿ ಮೂಡಿ ಬರಲಿ, ಈ ತುತ್ತು ಕೊಟ್ಟು ಮಕ್ಕಳನ್ನು ಬೆಳೆಸಿದರೆ ನಾಳೆ ಮಂಡ್ಯ ಬೆಳಗುತ್ತದೆ’ ಎಂದು ದೇವನೂರ ಮಹಾದೇವ ತಮ್ಮ ಭಾಷಣ ಮುಗಿಸಿದರು.

ಇದನ್ನೂ ಓದಿ; ತಮಿಳುನಾಡು: ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾದ ‘ಮಲಯಾಳಿ ಬುಡಕಟ್ಟು’ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...