Homeಕರ್ನಾಟಕ'ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ' ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

- Advertisement -
- Advertisement -

‘ಅಪ್ರತಿಮ ದೇಶಪ್ರೇಮಿ, ಕ್ರಾಂತಿಕಾರಿ ಆಡಳಿತಗಾರ ಟಿಪ್ಪು ಸುಲ್ತಾನ್ ವಿರುದ್ಧ ಚೇಷ್ಟೆಯ ಕಟ್ಟುಕತೆ ಉರಿಗೌಡ ನಂಜೇಗೌಡರನ್ನು ಛೂ ಬಿಟ್ಟಾಗ ಅವು ನೆಗೆದುಬಿದ್ದವು. ನಮ್ಮ ಸಂತರು ಹೇಳುವ ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ಈ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ ಎಂದು ನನಗನ್ನಿಸುತ್ತಿದೆ’ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಹೇಳಿದರು.

ಮಂಡ್ಯದಲ್ಲಿ ಹಿಂದುತ್ವ ಕೋಮುವಾದಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ರಾಜಕೀಯಕ್ಕಾಗಿ ಸೃಷ್ಟಿಸಿದ ಧ್ವಜ ವಿವಾದದ ವಿರುದ್ಧ ಗುರುವಾರ ನಡೆದ ‘ಮಂಡ್ಯ ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳಿವಿಗಾಗಿ ಶಾಂತಿ, ಸೌಹಾರ್ದತೆ, ಸಹಬಾಳ್ವೆಗಾಗಿ ಪ್ರತಿಭಟನಾ ಧರಣಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಳೆ-ಬೆಳೆ ಇಲ್ಲದ ನಮ್ಮ ಕಡೆಯ ಜನರು ಮಂಡ್ಯ ಜಿಲ್ಲೆಯ ಗದ್ದೆಸೀಮೆಗೆ ಕಟಾವು ಟೈಮಲ್ಲಿ ಕೂಲಿನಾಲಿಗೆ ಹೋಗಿ ಬರುತ್ತಿದ್ದರು. ಅವರು ಮಂಡ್ಯ ಜಿಲ್ಲೆಯಲ್ಲಿ ಎಲ್ಲೆಲ್ಲು ಹಸಿರಾಗಿರುವ ಪರಿ, ನೀರು ಹರಿಯುವ ವೈಭೋಗ ವರ್ಣಿಸುತ್ತಿದ್ದರು. ನಾನು ಮಂಡ್ಯದ ಅಳಿಯನಾದ ಮೇಲೆ, ಗೆಳೆಯ ಕೆ.ಎಸ್.ಪುಟ್ಟಣ್ಣಯ್ಯ ಅವರ ಜೊತೆ ‘ಸರ್ವೋದಯ ಕರ್ನಾಟಕ’ ಪಕ್ಷ ಕಟ್ಟಿ ಇಲ್ಲಿ ಹೆಚ್ಚು ಓಡಾಡಿದ ಮೇಲೆ ನನಗೆ ತಿಳೀತು. ಇವರಿಗೂ ಇವರದೇ ಆದ ಕಷ್ಟ ಸುಖ, ದುಃಖ ದುಮ್ಮಾನಗಳು ಇವೆ ಅಂತ. ಈಗ ನಾನು ಮಾತಾಡಬೇಕಾಗಿರುವುದು ಇದಲ್ಲ; ಇಲ್ಲಿ ಹೆಚ್ಚಾಗಿ ನೀರು ಮಾತ್ರ ಹರಿಯುತ್ತಿಲ್ಲ. ಈ ನೆಲದಲ್ಲಿ ಕಣ್ಣಿಗೆ ಕಾಣದ ಒಳಿತಿನ ಅಂತರಲವೂ ಹರಿಯುತ್ತಿದೆ’ ಎಂದರು.

‘ಇದಕ್ಕೆ ಒಂದೆರಡು ಉದಾಹರಣೆ; ಇಸವಿ 1939, ಸ್ಥಳ: ಕೆರೆಗೋಡು ಪಕ್ಕದ ಹೊನಗಾನಹಳ್ಳಿ, ಅಲ್ಲೊಬ್ಬರು ಪ್ರಜ್ಞೆ ಇರುವ ವ್ಯಕ್ತಿ ಪುಟ್ಟಣ್ಣ ಅಂತ. ಇವರು ತಮ್ಮ ಊರ ಕೆರೆಯಲ್ಲಿ ಅಸ್ಪೃಶ್ಯರೂ ನೀರು ಬಳಸುವಂತೆ ಮಾಡುತ್ತಾರೆ. ಆ ಊರಿನ ಜಾತಿ ಮೂಢಾತ್ಮರು ಪುಟ್ಟಣ್ಣನವರಿಗೆ ಹಿಗ್ಗಾಮುಗ್ಗಾ ಥಳಿಸುತ್ತಾರೆ. ಅಂದು ಪುಟ್ಟಣ್ಣ ‘ಮನುಷ್ಯರಿಲ್ಲದ ಈ ಊರಲ್ಲಿ ನಾನು ಇರಲ್ಲ’ ಅಂತ ನಿರ್ಧರಿಸಿ ಹೇಮಗಿರಿಬೆಟ್ಟದಲ್ಲಿ ನೆಲೆಸುತ್ತಾರೆ. ಅಲ್ಲೊಂದು ವಿದ್ಯಾಸಂಸ್ಥೆಯನ್ನು ಸ್ಥಾಪಿಸುತ್ತಾರೆ; ಇದು ಮಂಡ್ಯ ಮಣ್ಣೆಳಗೆ ಹರಿಯುತ್ತಿರುವ ಐಕ್ಯತೆಯ ಚೈತನ್ಯ’ ಎಂದರು.

‘ಇನ್ನೊಂದು, ಇಸವಿ 1931ರ ರಾಜರ ಆಳ್ವಿಕೆಯ ಕಾಲ; ಸ್ಥಳ ಸೋಮನಹಳ್ಳಿ, ಇಲ್ಲೊಂದು ಧೀರೋದಾತ್ತ ಹೃದಯವಂತಿಕೆಯ ಚಿಲುಮೆ ಇದೇ ನೆಲದಿಂದ ಉಕ್ಕುತ್ತದೆ. ಇದಕ್ಕೆ ಕಾರಣರು ಎಸ್.ಸಿ.ಮಲ್ಲಯ್ಯ. ಇವರು ಪ್ರಜಾಪ್ರತಿನಿಧಿ ಸಭೆಯ ಸದಸ್ಯರೂ ಆಗಿದ್ದರು. ಇವರು ‘ಒಕ್ಕಲಿಗರ ವಸತಿ ನಿಲಯ’ ಸ್ಥಾಪಿಸಿ, ಅಲ್ಲಿ ಅಸ್ಪೃಶ್ಯ ಮಕ್ಕಳನ್ನೂ ಜೊತೆಗೆ ಸೇರಿಸಿ ಅವರ ವಿದ್ಯಾಭ್ಯಾಸವನ್ನೂ ನೋಡಿಕೊಂಡಿದ್ದರು. ಅಷ್ಟೇ ಅಲ್ಲ, ಊರಾಚೆ ಇದ್ದ ಅಸ್ಪೃಶ್ಯರನ್ನು ತಮ್ಮ ಮನೆ ಎದುರಿಗಿನ ತಮ್ಮದೇ ಜಾಗ ನೀಡಿ ಸಹಬಾಳ್ವೆಯಿಂದ ಸಮಾನವಾಗಿ ವಾಸಿಸುವಂತೆ ಮಾಡಿದ್ದರು. ಗಾಂಧಿ ಈ ಊರಿಗೆ ಭೇಟಿ ನೀಡಿ ಬೆರಗಾಗುತ್ತಾರೆ. ಪಂಚಮರ ಪ್ರತ್ಯೇಕ ಶಾಲೆಯು ಕಷ್ಟಪಟ್ಟು ನಡೆಯುತ್ತಿದ್ದ ಆ ಕಾಲದಲ್ಲಿ ಬೆರೆತು ಒಳಗೊಳ್ಳುವ ಈ ಚೋದ್ಯ ಈ ಊರಲ್ಲಿ ಸಂಭವಿಸಿದೆ.
ಮತ್ತೊಂದು.. ಕೋಡಳ್ಳಿ ಶಿವರಾಂ ಉಜ್ಜನಿಯ ಚೌಡೇಶ್ವರಿ ದೇವಸ್ಥಾನದಲ್ಲಿ ಕೊಂಡ ಹಾಯುವುದನ್ನು ನೋಡಲು ಕರೆದೊಯ್ದಿದ್ದರು. ದಾರಿಯಲ್ಲಿ ಒಂದು ಸೇತುವೆ ಬಳಿ ಕಾರು ಗಕ್ಕನೆ ನಿಂತಿತು; ಕೆಳಕ್ಕೆ ಇಳಿದೆವು. ಶಿವರಾಂ ಹೇಳಿದರು.. ಈ ಸೇತುವೆ ಕಟ್ಟಿದ ಕಂಟ್ರಾಕ್ಟರ್ ಸ್ವಾತಂತ್ರ್ಯ ಪೂರ್ವದ ನಿಡುಘಟ್ಟದ ಅಣ್ಣೆಗೌಡ. ಆ ಸೇತುವೆಯಲ್ಲಿ ಹುಳುಕು ಹುಡುಕಿ ಮೇಲಿನವರು ಒಂದಾಣೆ ದಂಡ ಹಾಕಿದಾಗ ಅವಮಾನ ತಾಳಲಾರದೆ ಸ್ವಾಭಿಮಾನಿ ಅಣ್ಣೆಗೌಡ ಆ ಸೇತುವೆಯಿಂದಲೇ ಕೆಳಕ್ಕೆ ಬಿದ್ದು ಪ್ರಾಣ ತ್ಯಜಿಸುತ್ತಾರೆ. ನಾನು ಸುಸ್ತಾಗಿ ಗಟ್ಟಿಮುಟ್ಟಾಗಿದ್ದ ಆ ಸೇತುವೆ ಮೇಲೆ ಕುಳಿತುಕೊಂಡೆ. ಒಂದೆರಡು ಸಿಗರೇಟು ಸೇದಿದೆ. ಇಂತವು ಎಷ್ಟೊ ಇನ್ನೆಷ್ಟೋ ಈ ನೆಲದೊಳಗೆ ಉಸಿರಾಡುತ್ತ ಕುಳಿತಿವೆ’ ಎಂದು ಹಳೆ ಘಟನೆಗಳನ್ನು ಸಭೆಯ ಮುಂದಿಟ್ಟರು.

‘ಜೊತೆಗೇ, ನಾವು ಕಂಡಂತೆ ಸಾಂಸ್ಕೃತಿಕ ನಾಯಕರಾಗಿದ್ದ ಕೆ.ವಿ.ಶಂಕರೇಗೌಡರು ರಾಜಕಾರಣಿಯೂ ಆಗಿದ್ದರು. ಸಚಿವರಾಗಿ ನ್ಯಾಯವಂತಿಕೆಯ ಆಡಳಿತ ನಡೆಸಿದ್ದನ್ನು ಕಂಡಿದ್ದೇವೆ. ರಾಜ್ಯದ ಜನಪರ ಹೋರಾಟಗಳಿಗೆ ನಾಯಕತ್ವ ಕೊಟ್ಟ ಕೆ.ಎಸ್.ಪುಟ್ಟಣ್ಣಯ್ಯನವರ ಹೃದಯ ಬಡಿತಗಳೂ ಈ ನೆಲದಲ್ಲಿದೆ. ಹೀಗೆಲ್ಲಾ ಚೈತನ್ಯದ ಅಂತರಲ ಈ ಭೂಮಿಯಲ್ಲಿ ಹರಿಯುತ್ತಿದ್ದುದರಿಂದಲೇ, ಅಪ್ರತಿಮ ದೇಶಪ್ರೇಮಿ, ಕ್ರಾಂತಿಕಾರಿ ಆಡಳಿತಗಾರ ಟಿಪ್ಪು ಸುಲ್ತಾನ್ ವಿರುದ್ಧ ಚೇಷ್ಟೆಯ ಕಟ್ಟುಕತೆ ಉರಿಗೌಡ ನಂಜೇಗೌಡರನ್ನು ಛೂ ಬಿಟ್ಟಾಗ ಅವು ನೆಗೆದುಬಿದ್ದವು. ನಮ್ಮ ಸಂತರು ಹೇಳುವ ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ಈ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ ಎಂದು ನನಗನ್ನಿಸುತ್ತಿದೆ’ ಎಂದು ಬಣ್ಣಿಸಿದರು.

‘ಇಂತಹ ನೆಲದಲ್ಲಿ, 1938ರಲ್ಲಿ ಶಿವಪುರ ಸ್ವಾತಂತ್ರ್ಯ ಧ್ವಜಸ್ಮಾರಕಕ್ಕೆ ನಾಕಾರು ಎಕರೆ ಭೂಮಿ ನೀಡಿದ ಈಡಿಗ ಸಮುದಾಯದ ಉದಾರ ವ್ಯಕ್ತಿ ಜೀವಿಸಿದ್ದ ಈ ಮಣ್ಣಲ್ಲಿ, ಧ್ವಜಾರೋಹಣ ಸಂದರ್ಭದಲ್ಲಿ ಮೊದಲ ಏಟುತಿಂದ ಧೀಮಂತ ಮಹಿಳೆಯ ಈ ನೆಲದಲ್ಲಿ ಇತ್ತೀಚೆಗೆ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಬಂದು ಊರನ್ನು ಛಿದ್ರಗೊಳಿಸಿದೆ. ದೇವರು, ಧರ್ಮ, ಧ್ವಜ, ಬಣ್ಣ ಇವುಗಳನ್ನು ಹಣ ಮಾಡುವುದಕ್ಕೆ, ಅಧಿಕಾರ ಹಿಡಿಯುವುದಕ್ಕೆ ನಿಜಭಕ್ತಿ ಇಲ್ಲದ ಕೆಲವರು ದುರುಪಯೋಗಪಡಿಸಿಕೊಂಡ ಪರಿಣಾಮ ಇದು. ಛಿದ್ರತೆ, ಭಿನ್ನಬಾವ ಹೆಚ್ಚುತ್ತಿದೆ. ಅಂದರೆ, ಯಾಕೋ ದೆವ್ವ, ಪಿಶಾಚಿಗಳು ಅಲ್ಲಿಗೆ ಎಂಟ್ರಿ ಕೊಟ್ಟಿವೆ ಅಂತಲೇ ಅರ್ಥ; ಮಂಡ್ಯ ನೆಲದಲ್ಲಿ ಯಾರೂ ಇದನ್ನು ನಿರೀಕ್ಷಿಸಿರಲಿಲ್ಲ’ ಎಂದರು.

‘ನನಗೆ ಅನಿಸುವಂತೆ, ಇಗಾಗಲೆ ಜನತಾದಳ (ಜಾತ್ಯಾತೀತ) ಪಕ್ಷವು ಜಾತ್ಯಾತೀತವನ್ನು ತುಳಿದು, ‘ಚಾತುತ್ವರ್ಣ ಸಮಾಜವನ್ನೇ ತನ್ನ ದೇವರು’ ಅಂದುಕೊಂಡ ಆರ್‌ಎಸ್‌ಎಸ್‌ನ ಬಿಜೆಪಿ ಪಕ್ಷವನ್ನು ಆಲಂಗಿಸಿಕೊಂಡಿದ್ದು ಕಾರಣ; ಆ ಗಳಿಗೆಯಲ್ಲಿ ಅದರ ನೈತಿಕತೆ ಪತನವಾಯ್ತು. ಕೇವಲ ತಮ್ಮ ಹತ್ತು ತಿಂಗಳ ಪ್ರಧಾನಮಂತ್ರಿ ಅವಧಿಯಲ್ಲಿ ನೆನಪಲ್ಲಿಡುವಂತಹ ಕಾರ್ಯ ನಿರ್ವಹಿಸಿದಂತಹ ಮುತ್ಸದ್ಧಿ ಹೆಚ್.ಡಿ.ದೇವೇಗೌಡರ ಪಕ್ಷಕ್ಕೆ ಈ ಅವನತಿ ಬರಬಾರದಿತ್ತು. ಈಗ ಜನತಾದಳದ ಬೆನ್ನ ಮೇಲೆ, ತಲೆ ಮೇಲೆ ಸಂಘ ಪರಿವಾರದ ಬಿಜೆಪಿಯ ಛಿದ್ರಕಾರಿ ಶಕ್ತಿಗಳು ಸವಾರಿ ಮಾಡುತ್ತಿವೆ; ಆದ್ದರಿಂದ, ಕೆರಗೋಡು ಪ್ರಕರಣ ಉಂಟಾಗಿದೆ’ ಎಂದು ಜೆಡಿಎಸ್ ನಾಯಕರ ನಡೆಯನ್ನು ಖಂಡಿಸಿದರು.

‘ಈ ಕೆರಗೋಡು ಪ್ರಕರಣಕ್ಕೆ ನನಗೆ ಅನ್ನಿಸುವುದಿಷ್ಟೇ.. ಅದನ್ನು ನೋಡುವುದು ಬೇಡ, ನಮ್ಮನ್ನು ನಾವು ನೋಡಿಕೊಳ್ಳೋಣ. ನನ್ನನ್ನೂ ಸೇರಿ ನಾವೆಲ್ಲರೂ ಏನೇನೋ ಮಾಡಬೇಕಿತ್ತೊ, ಎಷ್ಟೆಷ್ಟೋ ಮಾಡಬೇಕಿತ್ತೊ ಅವುಗಳನ್ನು ಮಾಡಲಿಲ್ಲ. ಅದಕ್ಕೆ ಕೆರಗೋಡು ಪ್ರಕರಣ ನಡೆದಿದೆ. ಅವರು ಪಂಜು ಹಿಡಿದುಕೊಂಡು ಸಮಾಜದಲ್ಲಿ ಬೆಂಕಿ ಹಂಚಲು ಬಂದರೆ, ನಾವು ಮನೆಮನೆಗಳಲ್ಲಿ ಸಹಬಾಳ್ವೆಯ ಹಣತೆಯ ಬೆಳಕು ಬೆಳಗಿಸೋಣ’ ಎಂದು ಸಲಹೆ ನೀಡಿದರು.

‘ಹಾಗೆ ಇನ್ನೊಂದು ಮಾತು.. ನಂನಮ್ಮ ಸಂಘಟನೆಗಳು ಹೋರಾಡುವುದು, ಬೇಡಿಕೆ ಇಡುವುದು ಎಲ್ಲವೂ ತಾವು ಪ್ರತಿನಿಧಿಸುವ ಸಮುದಾಯಗಳದು ಮಾತ್ರ. ಇದರಾಚೆಗೆ ನಾವು ನೋಡಿದ್ದೀವಾ? ಹಾಗಾದರೆ, ಹೇಳುವವರು.. ಕೇಳುವವರು ಯಾರೂ ಇಲ್ಲದವರಿಗೆ ಯಾರೂ ಇಲ್ಲವಾ? ಉದಾಹರಣೆಗೆ, ನಮ್ಮೆಲ್ಲರಿಗೂ ಮಾತಾಪಿತೃಗಳಾದ ಬುಡಕಟ್ಟು ಆದಿವಾಸಿಗಳಿಗೆ ವಿಧಾನಸಭೆಯಲ್ಲಿ ಹಾಗೂ ಜನಪ್ರತಿನಿಧಿ ಸಂಸ್ಥೆಗಳಲ್ಲಿ ಪ್ರಾತಿನಿಧ್ಯ. ಜೊತೆಗೆ ಒಂದು ನಿಗಮವಾದರೂ ಕನಿಷ್ಠ ಇರಬೇಕಿತ್ತಲ್ಲವೆ? ಹೀಗೆಯೇ ಅಲೆಮಾರಿ, ಪೌರಕಾರ್ಮಿಕ, ದೇವದಾಸಿ ಹಿನ್ನೆಲೆಯ ಸಮುದಾಯಗಳಿಗೂ ಕೂಡ. ಇವರ ಸಮಸ್ಯೆ ನಮ್ಮ ಸಮಸ್ಯೆಯೂ ಆಗಬೇಕು. ಆಗ ನಾವು ಸಂವೇದನಾಶೀಲತೆ ಪಡೆದುಕೊಳ್ಳುತ್ತೇವೆ. ಇವು ನಮ್ಮನ್ನು ಹೆಚ್ಚು ಮನುಷ್ಯರನ್ನಾಗಿಸುತ್ತದೆ. ನಮ್ಮ ಸೈದ್ಧಾಂತಿಕತೆಯ ಬುಡ ಭದ್ರವಾಗುತ್ತದೆ. ಅದಕ್ಕಾಗಿ ನಮ್ಮ ಮೊದಲ ಆದ್ಯತೆಯ ಡಿಮ್ಯಾಂಡ್‌ಗಳು ಇವಾಗಿ, ತದನಂತರ ನಮ್ಮವು ಎಂಬ ಅಂತಃಕರಣ ನಮ್ಮದಾಗಬೇಕಿದೆ’ ಎಂದರು.

‘ನಮ್ಮ ಸಮಸ್ಯೆಗಳ ಸರಮಾಲೆಗಳ ಜೊತೆಗೆ ಮುಂದೆ ಕೆಲವೇ ದಿನಗಳಲ್ಲಿ 2024ರ ಲೋಕಸಭಾ ಚುನಾವಣೆ ಎದುರಾಗುತ್ತಿದೆ. ಆರ್‌ಎಸ್‌ಎಸ್‌ನ ಗುರು ಶ್ರೀ ಗೋಳ್ವಾಲ್ಕರ್ “ಚಾತುರ್ವಣ್ರ ಸಮಾಜವೇ ದೇವರು” ಎಂದು ಹೇಳುತ್ತಾರೆ. ಇದನ್ನೆ ಸಾವರ್ಕರ್ ‘ಹಿಂದುತ್ವ’ ಅನ್ನುತ್ತಾರೆ. ಕೇಂದ್ರ ಸರ್ಕಾರ ಇದನ್ನೆ ಅನುಷ್ಠಾನ ಮಾಡಲು ಹೊರಟಿರುವುದು. ಒಟ್ಟಿನಲ್ಲಿ ಒಕ್ಕಲುತನದ ಶೂದ್ರರು ಅನ್ನಿಸಿಕೊಂಡವರು, ದುಡಿಯುವ ಜನರು ಮೇಲಿನವರಿಗೆ ಸೇವಕರಾಗಿರಬೇಕು, ಕಾಲಾಳುಗಳಾಗಿರಬೇಕು ಎಂಬುದೇ ಇವರ ಮರ್ಮ. ಇದನ್ನು ನಾವು ಎಲ್ಲರಿಗೂ ಮನದಟ್ಟು ಮಾಡಬೇಕಿದೆ’ ಎಂದರು ಹೇಳಿದರು.

‘ಜೊತೆಗೆ, ಇಂತಹ ಆರ್‌ಎಸ್ಎಸ್‌ನ ಬಿಜೆಪಿ ಸರ್ಕಾರ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಮೊದಲು ಜನ ಸಮುದಾಯಗಳಿಗೆ ದನಿ ಕೊಡುವ, ಆಸರೆಯಾಗುವ ಜನಾಂದೋಲನಗಳ ಕಾಲು ಕತ್ತರಿಸಲಾಗುತ್ತದೆ. ಈಗಾಗಲೇ ಕುಂಟುತ್ತ ನಡೆಯುತ್ತಿರುವ ಮಾಧ್ಯಮಗಳು ತೆವಳುತ್ತ ನಡೆಯುವಂತೆ ಮಾಡಲಾಗುತ್ತದೆ. ಆಡಿದ್ದೇ ಆಟ ನಡೆದಿದ್ದೇ ದಾರಿ ಎಂಬಂತೆ ಒಂಟಿ ಸಲಗನಂತೆ ತುಳಿದುಕೊಂಡು ಓಡಾಡುತ್ತಿರುವ ಈ ಆರ್‌ಎಸ್‌ಎಸ್ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಉಳಿಗಾಲ ಉಂಟೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಕೊನೆಯದಾಗಿ.. ಮಂಡ್ಯಕ್ಕೆ ಒಂದು ಕಿವಿಮಾತು; ಹೊನಗಾನಹಳ್ಳಿಯ ಅತಂತ್ರ ಮಹಾತ್ಮ ಪುಟ್ಟಣ್ಣ ಊರು ಬಿಟ್ಟು ಬೆಟ್ಟ ಸೇರಿಕೊಂಡರಲ್ಲಾ, ಅಂತಹದೇ ವ್ಯಕ್ತಿತ್ವದ ವ್ಯಕ್ತಿಯೊಬ್ಬ ಈಗ ಕೋಲಾರದ ತೇರಹಳ್ಳಿ ಬೆಟ್ಟದಿಂದ ಮೇಲುಕೋಟೆ ಬೆಟ್ಟಕ್ಕೆ ಬಂದು ಸೇರಿಕೊಂಡಿದ್ದಾನೆ. ಇವನ ಹೆಸರು ಕೆ. ರಾಮಯ್ಯ. ಇವನು ಇನ್ನೊಂದು ಬೆಟ್ಟಕ್ಕೆ ಜಿಗಿಯುವ ಮುನ್ನ, ಬಲೆ ಹಾಕಿ ಬಂಧಿಸಿಟ್ಟುಕೊಳ್ಳಿರಿ. ಇವಗೆ ನೆಲಕ್ಕೆ ಕಿವಿಗೊಟ್ಟು ಆಲಿಸಿ ಆ ಸ್ಪಂದನಗಳಿಗೆ ಆಕಾರ ಕೊಡುವ ಸಿದ್ದಿ ಇರುವಂತಿದೆ. ಇವನಿಂದ ಮಂಡ್ಯದ ನೆಲದಲ್ಲಿ ಅಂತರಗಂಗೆಯಾಗಿ ಹರಿಯುತ್ತಿರುವ ಚೈತನ್ಯಗಳ ಜೀವಂತ ಕತೆಗಳು ಮಕ್ಕಳ ಪುಸ್ತಿಕೆಗಳಾಗಿ ಮೂಡಿ ಬರಲಿ, ಈ ತುತ್ತು ಕೊಟ್ಟು ಮಕ್ಕಳನ್ನು ಬೆಳೆಸಿದರೆ ನಾಳೆ ಮಂಡ್ಯ ಬೆಳಗುತ್ತದೆ’ ಎಂದು ದೇವನೂರ ಮಹಾದೇವ ತಮ್ಮ ಭಾಷಣ ಮುಗಿಸಿದರು.

ಇದನ್ನೂ ಓದಿ; ತಮಿಳುನಾಡು: ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾದ ‘ಮಲಯಾಳಿ ಬುಡಕಟ್ಟು’ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...