Homeಕರ್ನಾಟಕಈ ರಘುರಾಮಶೆಟ್ಟರ ಮಂಡೆಯಲ್ಲಿ ಬುದ್ಧಿ ಉಂಟೊ!: ದೇವನೂರ ಮಹಾದೇವ

ಈ ರಘುರಾಮಶೆಟ್ಟರ ಮಂಡೆಯಲ್ಲಿ ಬುದ್ಧಿ ಉಂಟೊ!: ದೇವನೂರ ಮಹಾದೇವ

“ಇತ್ತೀಚೆಗೆ ’ಲವ್ ಕೇಸರಿ’ ಅಂತ ರಂಗಪ್ರವೇಶ ಮಾಡಿದೆ. ಕೇಸರಿ ಅಂದರೆ ವಿರಕ್ತ! ಈ ಲವ್ ಮತ್ತು ಆ ವಿರಕ್ತಿ ಹೇಗೆ ಕೂಡುತ್ತವೆ? ವಿರಕ್ತಿ ಇರುವವರನ್ನು ಲವ್ ಮಾಡಿದರೆ, ಮಾಡಿದವರ ಪಾಡೇನು?”

- Advertisement -
- Advertisement -

[ಬೆಂಗಳೂರಿನ ಗಾಂಧಿಭವನದಲ್ಲಿ ಇಂದು (ಏಪ್ರಿಲ್‌ 16) ನಡೆದ ‘ಬೇರೆಯೇ ಮಾತು- ಕೃತಿ ಬಿಡುಗಡೆ ಕಾರ್ಯಕ್ರಮ’ದಲ್ಲಿ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಮಾಡಿದ ಭಾಷಣದ ಪೂರ್ಣ ಪಠ್ಯ]

ನಾನೀಗ ಅಷ್ಟಾಗಿ ಎಲ್ಲಿಗೂ ಹೋಗುತ್ತಿಲ್ಲ. ಆರೋಗ್ಯ ಕೈ ಕೊಡುತ್ತಿದೆ. ಆದರೂ ಇಲ್ಲಿಗೆ ಬಂದೆ. ಕಾರಣ – ರಘುರಾಮಶೆಟ್ಟರು ಪ್ರಜಾವಾಣಿಯಲ್ಲಿ ಇದ್ದಾಗಿಲಿಂದಲೂ ನನಗೆ ಗೊತ್ತು. ಮುಂಗಾರು ಪತ್ರಿಕೆ ನಡೆಸುತ್ತಿರುವಾಗಲೂ ನನಗೆ ಗೊತ್ತು. ಅವರು ಇವತ್ತು ಕಣ್ಮರೆಯಾಗುತ್ತಿರುವ ಸಾಮಾಜಿಕ ನ್ಯಾಯದ ಪ್ರತೀಕವಾಗಿದ್ದರು. ದಲಿತರು, ಹಿಂದುಳಿದವರು, ಹಳ್ಳಿಗರು, ಅಸಹಾಯಕರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುವಂತಾಗಬೇಕೆಂದು ತಹತಹಿಸುತ್ತಿದ್ದರು. ಇದನ್ನೇ ತನ್ನ ಕಾರ್‍ಯಕ್ಷೇತ್ರದಲ್ಲೂ ಅಳವಡಿಸಿಕೊಂಡಿದ್ದ ವಡ್ಡರ್ಸೆಯವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ ಸಮುದಾಯಕ್ಕೆ ಸೇರಿದವರು. ಈಗ ಅವರು ಇಲ್ಲ. ಬಂಟರೂ ನೆನಪಿಸಿಕೊಳ್ಳುತ್ತಿಲ್ಲ. ಶೆಟ್ಟರು ತಮ್ಮ ಹೃದಯದಲ್ಲಿಟ್ಟುಕೊಂಡಿದ್ದ ತಳಸಮುದಾಯದವರೂ ನೆನಪಿಸಿಕೊಳ್ಳುತ್ತಿಲ್ಲ. ಈ ಸಂಕಟಕ್ಕಾಗಿ ಬಂದೆ.

ವಡ್ಡರ್ಸೆಯವರ ’ಮುಂಗಾರು’ ಪತ್ರಿಕೆಯನ್ನು ನಾನು ಬಿಡುಗಡೆ ಮಾಡಿದ್ದೆ. ರಘುರಾಮ ಶೆಟ್ಟರು, ನನ್ನನ್ನು ಬಿಡದೆ ಹೆಚ್ಚೂಕಮ್ಮಿ ಎಳೆದುಕೊಂಡೇ ಹೋಗಿ ನನ್ನಿಂದ ಬಿಡುಗಡೆ ಮಾಡಿಸಿದರು. ಇಸವಿ 84, ಸೆಪ್ಟೆಂಬರ್ ದಿನಾಂಕ 9. ತೇಜಸ್ವಿ ಅಧ್ಯಕ್ಷತೆ ವಹಿಸಿದ್ದರು. ಅಂತೂ ಬಿಡುಗಡೆ ಮಾಡಿದೆ. ಐದಾರು ವಾಕ್ಯಗಳನ್ನೂ ಮಾತಾಡಿದೆ. ಐದಾರು ಅಂದರೆ ಐದಾರು ವಾಕ್ಯಗಳು ಮಾತ್ರವೇ. ಅಲ್ಲಿ ಹೇಗೆ ಮಾತಾಡಿದೆನೊ ಹಾಗಾಗೆ ಈಗಲೂ ನೆನಪಿದೆ. ಬಹುಶಃ ನನ್ನ ಆ ಮಾತುಗಳ ಮೋಹಕ್ಕೆ ನಾನೇ ಒಳಗಾಗಿಬಿಟ್ಟಿದ್ದೆ ಅನ್ನಿಸುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾನು ಅಲ್ಲಿ ಮಾತಾಡಿದ್ದು ಇಷ್ಟು: “ದಕ್ಷಿಣ ಕನ್ನಡದ ಜಿಲ್ಲೆಯವರು ವಿದ್ಯಾವಂತರು, ಬುದ್ಧಿವಂತರು ಎಂಬ ಮಾತು ನಮ್ಮ ಕಡೆ ಪ್ರಚಲಿತವಿದೆ. ಜೊತೆಗೆ ಇದು ಭೂತಾರಾಧನೆ, ಯಕ್ಷಗಾನದ ನೆಲ. ಇಲ್ಲಿನವರಿಗೆ ರಘುರಾಮಶೆಟ್ಟರ ’ಮುಂಗಾರು’ ಪತ್ರಿಕೆ ಸಾಹಸ ಹೇಗೆ ಕಾಣಿಸಬಹುದು ಎಂಬ ಕುತೂಹಲ ನನಗೆ. ನೀವು ಹೀಗೆ ಅಂದುಕೊಳ್ಳಬಹುದು: ’ಈ ರಘುರಾಮ ಶೆಟ್ಟರ ಮಂಡೆಯಲ್ಲಿ ಬುದ್ದಿ ಉಂಟೋ? ಈ ಬಾಲಕರನ್ನು ಕಟ್ಟಿಕೊಂಡುಬಂದು ಸಮರಕ್ಕೆ ಹೊರಟಿದ್ದಾರಲ್ಲ!’ ಅಂತ. ಆದರೆ ನೆನಪಿಡಿ – ಈ ರಘುರಾಮ ಶೆಟ್ಟಿ ಎಂಬ ವ್ಯಕ್ತಿ ನೀವು ಆರಾಧಿಸುವ ಭೂತದೈವದಂತೆ. ಈ ಬಾಲಕರು ಅಭಿಮನ್ಯುಗಳು” – ಇದಷ್ಟೆ ಅಂದು ನಾನು ಮುಂಗಾರು ಪತ್ರಿಕೆ ಬಿಡುಗಡೆ ಮಾಡಿ ಮಾತಾಡಿದ್ದು!

ಇದನ್ನೂ ಓದಿರಿ: ಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

ನಿಜ, ಮುಂಗಾರು ಪತ್ರಿಕೆಯ ಸಂಪಾದಕಾ ಮಂಡಲಿಯಲ್ಲಿದ್ದ ಆ ಬಾಲಕರು ಅಭಿಮನ್ಯುಗಳೇ ಆಗಿದ್ದರು. ಅವರು ಚಕ್ರವ್ಯೂಹ ಭೇದಿಸಬಲ್ಲವರಾಗಿದ್ದರು ಕೂಡ. ಆದರೆ ಅವರು ತಮ್ಮ ಅಪಕ್ವ ಆದರ್ಶಕ್ಕೆ ಬಲಿಯಾಗಿ ಕೆಲವೇ ತಿಂಗಳುಗಳಲ್ಲಿ ಮುಂಗಾರುವಿನಿಂದಲೇ ನಿರ್ಗಮನರಾದರು. ಇದನ್ನೆಲ್ಲಾ ನೋಡಿದಾಗ ಅನ್ನಿಸಿತು – ಆ ಬಾಲಕರು ಚಕ್ರವ್ಯೂಹ ಬೇಧಿಸಬಲ್ಲವರಾಗಿದ್ದರು, ನಿಜ. ಆದರೆ ಚಕ್ರವ್ಯೂಹ ಸದೆ ಬಡಿದು ಹೊರಬಂದು ಯುದ್ಧ ಗೆಲ್ಲುವುದು ಗೊತ್ತಿರಲಿಲ್ಲ. ಹುಲಿಯಂತಾಡುವುದು ಗೊತ್ತಿತ್ತು. ಬೆಕ್ಕಿನಂತೆ ಮರಹತ್ತಿ ಉಳಿಯುವುದು ಗೊತ್ತಿರಲಿಲ್ಲ. ಬಹುಶಃ ಈಗ ಆ ಮಾಜಿ ಬಾಲಕರಿಗೂ ಹೀಗೇ ಅನ್ನಿಸುತ್ತಿರಬಹುದು.

ಈ ಎಲ್ಲಾ ಆಗಿ ಮುಂಗಾರು ಪತ್ರಿಕೆಯಿಂದ ನಿರ್ಗಮಿಸಿದ ಈ ಬಾಲಕರು ನನಗೂ ಅಚ್ಚುಮೆಚ್ಚಿನವರೇ ಆಗಿದ್ದರು. ಆಗ ತುಂಬಾ ತೊಳಲಾಟಕ್ಕೆ ಒಳಗಾದೆ. ಹೆಚ್ಚುಕಮ್ಮಿ ಒಂಟಿಯಾದ ರಘುರಾಮಶೆಟ್ಟರ ಮನಃಸ್ಥಿತಿಯನ್ನು ಊಹಿಸಿಕೊಳ್ಳಲಾರದಾದೆ ಅಥವಾ ಅದನ್ನು ನೆನಪಿಸಿಕೊಳ್ಳಲೂ ಇಷ್ಟಪಡಲಾರೆನೇನೋ.

ಆಗ ಆದ ಒಂದು ಪ್ರಕರಣವನ್ನು ಪ್ರಸ್ತಾಪಿಸುವೆ. ಪತ್ರಿಕೆ ಆರಂಭಿಸಿದ ಕೆಲವೇ ದಿನಗಳಲ್ಲಿ ಆರ್ಥಿಕ ಮುಗ್ಗಟ್ಟು ತತ್ತರಿಸುವಂತೆ ಮಾಡುತ್ತದೆ. ಪತ್ರಿಕೆ ಉಳಿಸಿ ನಡೆಸಲು ರಘುರಾಮ ಶೆಟ್ಟರು ಹೆಣಗಾಡತೊಡಗಿದ್ದರು. ಇದನ್ನು ಮಾಜಿ ಬಾಲಕ ದಿನೇಶ್ ಅಮಿನ್‌ಮಟ್ಟು ಈಗ ಬಿಡುಗಡೆಯಾಗುತ್ತಿರುವ ’ಬೇರೆ ಮಾತು’ ಪುಸ್ತಕದ ತಮ್ಮ ’ಗುರು ನಮನ’ದಲ್ಲಿ ಬರೆಯುತ್ತಾರೆ: “ಈ ಶೀತಲ ಸಮರ ನಡೆಯುತ್ತಿದ್ದ ದಿನಗಳಲ್ಲಿಯೇ ಒಮ್ಮೆ ವಡ್ಡರ್ಸೆಯವರು ನ್ಯೂಸ್ ಪ್ರಿಂಟ್ ಖರೀದಿ ಸಮಸ್ಯೆ ಬಗೆಹರಿಸಲು ಎಸ್.ಬಂಗಾರಪ್ಪನವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರು. ಬಂಗಾರಪ್ಪನವರು ತಮಗೆ ಗೊತ್ತಿದ್ದ ಅಬಕಾರಿ ಉದ್ಯಮಿಯೊಬ್ಬರಿಗೆ ಫೋನ್ ಮಾಡಿ ಒಂದು ಲಾರಿ ನ್ಯೂಸ್ ಪ್ರಿಂಟ್ ಕಳಿಸಲು ಹೇಳಿದ್ದರು. ಅದರ ಮರುದಿನದ ಮುಂಗಾರು ಪತ್ರಿಕೆಯ ಮುಖಪುಟದಲ್ಲಿ ಸೀರೆ ಉಟ್ಟು, ಬಳೆ ತೊಟ್ಟು, ಇಂದಿರಾಗಾಂಧಿಯವರ ಮನೆ ಮುಂದೆ ನಿಂತ ಬಂಗಾರಪ್ಪನವರ ವ್ಯಂಗ್ಯಚಿತ್ರ ಪ್ರಕಟವಾಗಿತ್ತು. ಅದು ಬಂಗಾರಪ್ಪನವರು ಮರಳಿ ಕಾಂಗ್ರೆಸ್ ಪಕ್ಷ ಸೇರಲು ಮಾತುಕತೆ ನಡೆಯುತ್ತಿದ್ದ ಕಾಲವಾಗಿತ್ತು. ಇದು ತಮ್ಮ ಸಹದ್ಯೋಗಿಗಳು ಉದ್ದೇಶಪೂರ್ವಕವಾಗಿ ಮಾಡಿದ ಕೀಟಳೆ ಎಂದು ವಡ್ಡರ್ಸೆಯವರು ಬಹಳ ನೊಂದಿದ್ದರು. ಪತ್ರಿಕೆಯಲ್ಲಿ ವ್ಯಂಗ್ಯಚಿತ್ರ ಪ್ರಕಟವಾದ ದಿನ ಅಳುಕುತ್ತಲೇ ಭೇಟಿಯಾದ ಪತ್ರಿಕೆಯ ನಿರ್ದೇಶಕರೊಬ್ಬರಿಗೆ ’ನನಗೆ ಶೆಟ್ರು ಏನೆಂದು ಗೊತ್ತು, ಶೆಟ್ರಿಗೆ ಬೇಜಾರು ಮಾಡ್ಕೊಳ್ಳಬೇಡಿ ಎಂದು ಹೇಳಿ’ ಬಂಗಾರಪ್ಪನವರೇ ಸಮಾಧಾನ ಮಾಡಿ ಕಳುಹಿಸಿದ್ದರಂತೆ. ಆಗ ಬಂಗಾರಪ್ಪನವರ ಪ್ರಭುದ್ಧತೆ ನನಗೂ ಸ್ವಲ್ಪ ಸಮಾಧಾನ ನೀಡಿತ್ತು. ಒಟ್ಟಿನಲ್ಲಿ ಮುಂಗಾರು ಸಮರ ಹೊರಗೆ ಮಾತ್ರವಲ್ಲ. ಒಳಗೂ ನಡೆಯತೊಡಗಿತ್ತು. ಇದನ್ನು ಏನೆಂದು ಕರೆಯಬೇಕೋ ಗೊತ್ತಾಗುತ್ತಿಲ್ಲ. ವಿಧಿಯಾಟ ಅನ್ನಲು ಮನಸ್ಸಾಗುತ್ತಿಲ್ಲ!

ನನಗೂ ಈಗಲೂ ಒಂದು ಕನ್‌ಫ್ಯೂಷನ್ ಗೊಂದಲ ಇದೆ. ಈ ರಘುರಾಮಶೆಟ್ಟರು ನಾಯಕನೋ ಅಥವಾ ದುರಂತ ನಾಯಕನೋ ಅಂತ. ಒಂದು ದೊಡ್ಡ ಕನಸನ್ನು ಕಂಡು ಅದಕ್ಕೊಂದು ಮನೆ ಕಟ್ಟಿ, ಆ ಮನೆಯ ಭಾರವನ್ನು ಹೊತ್ತು, ಅದು ಕುಸಿಯುತ್ತಿದ್ದರೂ ಛಲ ಬಿಡದೆ ನೆಲಕಚ್ಚುತ್ತಾರಲ್ಲ ಇದನ್ನು ನೋಡಿದರೆ ದುರಂತ ನಾಯಕ ಎಂದೆನ್ನಿಸುತ್ತದೆ. ಆದರೆ ಅದೇ ಆ ಕ್ಷಣದಲ್ಲೆ, ಈ ವಡ್ಡರ್ಸೆ ರಘುರಾಮಶೆಟ್ಟಿ ಎಂಬ ಸಾಹಸಿಗ ’ಮುಂಗಾರು’ ಪ್ರಕಾಶನ ಸಂಸ್ಥೆ ಎಂಬ ಓದುಗರೇ ಮಾಲೀಕರಾಗಿದ್ದ ಪಬ್ಲಿಕ್ ಲಿಮಿಡೆಟ್ ಕಂಪನಿ ರಚಿಸಿ, ಓದುಗರ ಒಡೆತನದ ಸಂಸ್ಥೆ ಕಟ್ಟುತ್ತಾರಲ್ಲ – ಇದು ಇಂದು ಮಾಡಬೇಕಾಗಿರುವ ಸಾಹಸವಾಗೇ ಉಳಿದಿದೆ. ಈ ಸಂಪತ್ತನ್ನು ರಘುರಾಮಶೆಟ್ಟರು ನಾಡಿಗೆ ಬಿಟ್ಟು ಹೋಗಿದ್ದಾರೆ. ಇದನ್ನು ನೆನೆದು, ನಾಯಕಪಟ್ಟ ಮತ್ತು ದುರಂತ ನಾಯಕಪಟ್ಟ ಈ ಎರಡನ್ನೂ ತಕ್ಕಡಿಯಲ್ಲಿಟ್ಟು ತೂಗಿದಾಗ, ತಕ್ಕಡಿ ಮೇಲೆ ಕೆಳಗೆ ತೂಗಿ ತೂಗಿ, ನಾಯಕಪಟ್ಟ ಒಂದು ಗುಲಗಂಜಿ ತೂಕ ಹೆಚ್ಚಾಗಿ ತೂಗಿ, ಗೆದ್ದು ನಿಲ್ಲುತ್ತದೆ.

ಇಂದಿನ ನಮ್ಮ ಮಾಧ್ಯಮ ಕ್ಷೇತ್ರ ಅದರಲ್ಲೂ ದೃಶ್ಯ ಮಾಧ್ಯಮ ಕ್ಷೇತ್ರದ ಅವನತಿ ಕಂಡು ದುಃಖಿತನಾಗಿ ನನ್ನ ಸುಪ್ತಮನಸ್ಸು ರಘುರಾಮ ಶೆಟ್ಟರಿಗೆ ನಾಯಕ ಪಟ್ಟವನ್ನೆ ಆಯ್ಕೆ ಮಾಡಿತ್ತೇನೊ ಎಂದೆನಿಸುತ್ತದೆ. ಇರಲಿ, ಇದು ಮುಖ್ಯವೇ ಅಲ್ಲ. ಇಂದು ಮಾಧ್ಯಮ ಕ್ಷೇತ್ರವು ಸಮಸ್ಯೆಗಳನ್ನು ವರದಿ ಮಾಡುತ್ತಿವೆಯೊ? ಅಥವಾ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿವೆಯೊ ಗೊತ್ತೇ ಆಗುತ್ತಿಲ್ಲ. ಉದಾಹರಣೆಗೆ ಹಿಜಾಬ್ ಕೇಸ್‌ನಲ್ಲಿ ನಿಜವಾದ ಸಮಸ್ಯೆಯ ಪಾಲೆಷ್ಟು, ಇದನ್ನು ಸಮಸ್ಯಾತ್ಮಕ ಮಾಡಿದ ಮಾಧ್ಯಮಗಳ ಪಾಲೆಷ್ಟು? ನಿರ್ಧರಿಸಿ ಹೇಳುತ್ತೀರಾ? ಇದೇ ರೀತಿ ಅನೇಕಾನೇಕ ಉದಾಹರಣೆಗಳನ್ನು ಹೇಳಬಹುದು. ಮಾಧ್ಯಮ ಕ್ಷೇತ್ರ ತನ್ನ ನೀತಿ, ನಿಯಮ, ಸಂಯಮ, ಮಾನ ಮಾರ್‍ಯದೆ, ಘನತೆಗಳನ್ನು ತಾನೇ ತುಳಿದು ನಿಂತಿದೆ. ಇಂಥ ಸಂದರ್ಭದಲ್ಲಿ ರಘುರಾಮ ಶೆಟ್ಟರು ನೆನಪಾಗುತ್ತಾರೆ. ನೆನಪಾಗಬೇಕೂ ಕೂಡ. ಅವರ ಕನಸು ’ಓದುಗ ಒಡೆತನದ ಮಾಧ್ಯಮ’ದ ಪ್ರಯತ್ನ ಇಂದಾದರೂ ನನಸಾಗಬೇಕಾಗಿದೆ.

ಯಾಕೋ ಮಾತು ಗಂಭೀರ ಆಯ್ತು. ಇದನ್ನು ಬರೆಯುವಾಗ ಟಿ.ವಿ.ಯಲ್ಲಿ ಕತ್ತಿ ಝಳಪಿಸುತ್ತಾ ’ಲವ್ ಕೇಸರಿ ಸುದ್ದಿ’ ಬರುತ್ತಿತ್ತು. ’ಲವ್ ಜಿಹಾದ್’ಅನ್ನು ’ಅವರು’ ಮಾಡುತ್ತಾರೆಂದು ’ಇವರೇ’ ಆರೋಪಿಸಿ ಅದಕ್ಕೆ ಪ್ರತಿಯಾಗಿ ’ಇವರು’ ಲವ್ ಕೇಸರಿ ಮಾಡಿ ಎಂದು ಅಬ್ಬರಿಸುತ್ತಿದ್ದರು. ’ಅವರು’ ಕಳ್ಳತನ ಮಾಡುತ್ತಾರೆಂದು ’ಇವರೇ’ ಆರೋಪಿಸಿ ’ಇವರು’ ದರೋಡೆ ಮಾಡಬೇಕು ಎಂಬಂತಿತ್ತು ಆ ವಾದ!. ಈ ಟೈಮ್‌ನಲ್ಲೇ ನನಗೊಬ್ಬ ಕಿಡಿಗೇಡಿ ಹುಡುಗ ಪೋನ್ ಮಾಡಿ ತನ್ನ ಪರಿಚಯ ಮಾಡಿಕೊಂಡು, ’ಸರ್, ನಾನು ನಿಮ್ಮ ಅಭಿಮಾನಿ’ ಅಂದ. ’ಆಯ್ತಪ್ತ ಆಯ್ತು ಏನ್ ಸಮಾಚಾರ?’ ಎಂದೆ. ’ನಾನೊಂದು ಪದ್ಯ ಹಾಡ್ತೀನಿ, ನನ್ನ ಹೆಸರನ್ನು ಯಾರಿಗೂ ಹೇಳಬಾರದು’ ಅಂದುದಕ್ಕೆ ’ಆಯ್ತು, ನಾನು ಬೇರೆಯವರಿಗೆ ಹೇಳಿದರೆ ಒಂದು ಲಕ್ಷ ಕೋಡ್ತೀನಿ, ಟ್ರಾಫಿಕ್‌ನಲ್ಲಿದ್ದೇನೆ, ಬೇಗ ಹಾಡ್ರಪ್ಪ’ ಎಂದು ಮನೆಯಲ್ಲೇ ಕೂತು ಅಂದೆ. ಅವನು ಜಾನಪದ ಮಟ್ಟಲ್ಲಿ ಹಾಡಿದ. ನಾನು ಅವನಿಗೆ ಶರಣಾದೆ ಎಂದೆ. ಯಾಕೆಂದರೆ ಅವನು ಹಾಡಿದ್ದು ಲವ್ ಕೇಸರಿ, ಲವ್ ಜಿಹಾದ್‌ಗೆ ಉತ್ತರವಾಗಿತ್ತು. ಅವನ ಹಾಡು ಇದು:

ಮಾವಾ, ಮಾವಾ ಕೇಳೊ ಮಂಗ್ಯಾ
ಕತ್ತಿ ಝಳಪಿಸುತ ಬಂದು, ನನ ಮುಂದ ನಿಂದು
ಹಿಂಗ ಲವ್ ಮಾಡು ಲವ್ ಮಾಡು ಅಂದರ
ಹೆಂಗ ಮಾಡಲೊ ಲವ್ವ, ಹೆಂಗ ಮಾಡಲೊ ಲವ್ವ
ನಿನ್ನ ಎದೆಯೊಳಗ ಇಲ್ಲದ ಲವ್ವ, ಮಾಡೆಂದರ ಹೆಂಗ ಮಾಡಲೋ ಲವ್ವ
ಲವ್ ಲವ್ ಅಂದರ ಏನು ಮಾವ ಏನು ಮಾವ?
ಕೇಳೊ ಮಾವಾ ಹೇಳುತೀನಿ, ನಾ ಹೇಳಿದ ಮೇಲ ನೀ ಕೇಳು
ಲವ್ವಲ್ಲಿ ಯುದ್ಧ ಯಾಕೋ ಮಾವ, ಲವ್ವೇ ಧರ್ಮವು ಕೇಳು
ಲವ್ವಂದರ ಕಾಮಾನಬಿಲ್ಲು, ಅದರೊಳಗೈತಿ ರಂಗು ರಂಗೇಳು
ಏಕ ಬಣ್ಣವಾದರದು ವಾಕರಿಕೆಯೊ, ಬಣ್ಣಬಣ್ಣದ ಓಕುಳಿಯೋ ಲವ್ವು,
ಮಾವ, ರಂಗು ರಂಗಲ್ಲಿ ಬಾರೊ ಕತ್ತಿ ಮುರಿದೆಸದು ಬಾರೋ
ಲವ್ವು ಮಾಡೋಣು ಬಾರೊ ಓಕುಳಿಯ ಆಡೋಣು ಬಾರೊ

ಹೆಂಗಪ್ಪ ಇದು? ’ಲವ್ ಜಿಹಾದ್’ ಅಂತೆ, ಲವ್ ಅಂದರೆ ಎಲ್ಲರಿಗೂ ಗೊತ್ತು. ಜಿಹಾದ್ ಅಂದರೆ ಧರ್ಮ ಯುದ್ಧ ಅಂತೆ! ನಿಜವಾದ ಲವ್ ಧರ್ಮವನ್ನೂ ಮೀರುತ್ತದೆ. ಇನ್ನು ಲವ್ ಮತ್ತು ಯುದ್ಧ ಅಜಗಜಾಂತರ ಕ್ರಿಯೆಗಳು. ಹಾಗೇ ಇತ್ತೀಚೆಗೆ ’ಲವ್ ಕೇಸರಿ’ ಅಂತ ರಂಗಪ್ರವೇಶ ಮಾಡಿದೆ. ಕೇಸರಿ ಅಂದರೆ ವಿರಕ್ತ! ಈ ಲವ್ ಮತ್ತು ಆ ವಿರಕ್ತಿ ಹೇಗೆ ಕೂಡುತ್ತವೆ? ವಿರಕ್ತಿ ಇರುವವರನ್ನು ಲವ್ ಮಾಡಿದರೆ, ಮಾಡಿದವರ ಪಾಡೇನು? ಜೊತೆಗೆ ಇದು ಗಂಡಸರ ಸಮಸ್ಯೆಯಾಗಿಬಿಟ್ಟಿದೆ. ಹೆಣ್ಣೆಂದರೆ ಮನಸ್ಸೆ ಇಲ್ಲದ ಕೀಲುಗೊಂಬೆ ಅಂತ ಈ ಗಂಡಸರು ಅಂದುಕೊಂಡಂತಿದೆ- ಹೀಗೆಲ್ಲಾ ಧರ್ಮ ಸೂಕ್ಷ್ಮತೆಯ ಚಿಂತೆ ಮಾಡುತ್ತಾ ನನ್ನ ತಲೆ ಕೆಟ್ಟು ಎಕ್ಕುಟ್ಟೋಗಿತ್ತು. ಇಂಥ ಸಂಕಷ್ಟದಲ್ಲಿ ಆ ಕಿಡಿಗೇಡಿ ಹುಡುಗನ ಜಾನಪದ ಮಟ್ಟು ಬಂದು ನನ್ನ ತಲೆ ನೇವರಿಸಿ ಸಾಂತ್ವಾನ ನೀಡಿತು. ಅದಕ್ಕಾಗಿ ಅವನಿಗೆ ಕೃತಜ್ಞತೆಗಳು.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಕ್ಷಮೆ ಇರಲಿ, ನಾನು ಇಷ್ಟು ಮಾತಾಡಬೇಕೆಂದುಕೊಂಡಿರಲಿಲ್ಲ.. ಈಗೊಂದು ವಿಸ್ಮಯ ಹೇಳಿ ನನ್ನ ಮಾತು ಮುಗಿಸುತ್ತೇನೆ. ಎಲ್ಲರಿಗೂ ಗೊತ್ತಿದೆ. ಅಸಮಾನತೆ ಮೌಲ್ಯದ ಚಾತುರ್‍ವರ್ಣದ ಹಿಂದೂ ಗುಂಪಿನ ಪ್ರತಿಪಾದಕ ಆರ್‌ಎಸ್‌ಎಸ್‌ನ ಶ್ರೀ ಗೋಲ್ವಾಲ್ಕರ್ ಹಾಗೂ ಹಿಂಸಾಮೂರ್ತಿ ಶ್ರೀ ನಾಥುರಾಂ ಗೋಡ್ಸೆಯರ ಕುಮೌಲ್ಯಗಳನ್ನು ಭಾರತದಲ್ಲೆಡೆ ಬಿತ್ತಿ ಬೆಳೆಯಲು ನಾಗಪುರ್ ಆರ್‌ಎಸ್‌ಎಸ್ ಅವಿರತ ಪ್ರಯತ್ನಿಸುತ್ತಲೇ ಇದೆ. ಭಾರತದ ತುಂಬೆಲ್ಲಾ ಗೋಲ್ವಾಲ್ಕರ್ ಮತ್ತು ಗೋಡ್ಸೆ ನಿರ್ಮಾಣ ಮಾಡಲು ಸ್ಥಳಾವಕಾಶಕ್ಕಾಗಿ ಈ ಚಾತುರ್‍ವರ್ಣದ ಹಿಂದೂ ಗುಂಪು, ಭಾರತವನ್ನೆಲ್ಲಾ ಆವರಿಸಿಕೊಂಡಿರುವ ಗಾಂಧಿ ಮತ್ತು ಅಂಬೇಡ್ಕರ್‌ರನ್ನು ನಿರ್ನಾಮ ಮಾಡಲು ಸತತವಾಗಿ ಗಾಂಧಿ ಅಂಬೇಡ್ಕರ್ ಎಂಬ ಆಲ ಮತ್ತು ಅರಳಿಮರಗಳನ್ನು ಕೊಚ್ಚಿ ತರಿದು ಕತ್ತರಿಸಿ ತುಳಿದು ಏನೆಲ್ಲಾ ಮಾಡುತ್ತಿದೆ. ಆದರೂ, ಆದರೂನುವೆ ಪೌರತ್ವ ಕಾಯ್ದೆ ತಿದ್ದುಪಡಿ (ಸಿಎಎ, ಎನ್‌ಆರ್‌ಸಿ) ಸಂದರ್ಭ ಬುಗಿಲೆದ್ದಾಗ ಅದರೊಳಗಿಂದ ಮೂಡಿದ ಗಾಂಧಿ ಅಂಬೇಡ್ಕರ್ ಪ್ರಭಾವಳಿ ಭಾರತದ ತುಂಬಾ ಆವರಿಸಿಕೊಳ್ಳುವ ಪರಿ, ಇದೇನು ಚೋದ್ಯ! ಆಗ ಜನರ ಬೇಗುದಿಗೆ ಗಾಂಧಿ ಅಂಬೇಡ್ಕರ್ ಸಾಂತ್ವನ ನೀಡಿದರೆ? ಗಾಂಧಿಯವರನ್ನು ಕಡೆದು ಸತ್ವವನ್ನಷ್ಟೇ ತೆಗೆದಿಟ್ಟುಕೊಂಡು ಪ್ರತಿಮೆ ಮಾಡಿ ನಿಲ್ಲಿಸಿದರೆ ಅದರೊಳಗಿಂದ ’ಸಹನೆ ಮತ್ತು ಪ್ರೀತಿ’ ಸೂಸುತ್ತದೆ. ಹಾಗೆ ಅಂಬೇಡ್ಕರ್‌ಗಾಗಿಯೂ ಈ ನೆಲ ಕಾತರಿಸುತ್ತಿದೆ. ನ್ಯಾಯಕ್ಕೆ ನ್ಯಾಯದ ಹಕ್ಕೇ ಇಲ್ಲದ ಸಂದರ್ಭದಲ್ಲಿ ನ್ಯಾಯಕ್ಕೇನೇ ನ್ಯಾಯದ ಹಕ್ಕು ಸಿಗುವಂತಾಗಲು ಕಾರಣರು ಅಂಬೇಡ್ಕರ್. ಅಂಬೇಡ್ಕರ್‌ರನ್ನು ಕಡೆದು ಸತ್ವವನ್ನಷ್ಟೆ ತೆಗೆದಿಟ್ಟುಕೊಂಡು ಪ್ರತಿಮೆ ಮಾಡಿ ನಿಲ್ಲಿಸಿದರೆ ಅದರೊಳಗಿಂದ ನ್ಯಾಯ, ಸಮಾನತೆ ಸೂಸುತ್ತದೆ. ಸಹನೆ, ಪ್ರೀತಿ, ನ್ಯಾಯ ಸಮಾನತೆಯ ಜಲಕ್ಕಾಗಿ ಭಾರತದ ನೆಲ ಚಾತಕ ಪಕ್ಷಿಯಂತೆ ಕಾಯುತ್ತಿಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇವನೂರು ಮಹಾದೇವ ಅವರ ಈ ಮಾತುಗಳು ಸಕಾಲಿಕವೂ ಅರ್ತಗರ್ಬಿತವೂ ಆಗಿವೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...