Homeಕರೋನಾ ತಲ್ಲಣಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಮೇ 2 ರಂದು ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

- Advertisement -
- Advertisement -

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ. ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ನಿರ್ದಿಷ್ಟವಾದ ವರದಿಯನ್ನೂ ಮಾಡಿಲ್ಲ ಎಂದು ಮಂಗಳವಾರ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಹೇಳಿದೆ.

ಆರೋಗ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು, ಆರೋಗ್ಯವು ರಾಜ್ಯ ಪಟ್ಟಿಯಲ್ಲಿರುವ ವಿಷಯವಾಗಿದೆ. ಆರೋಗ್ಯದ ಬಗ್ಗೆ ರಾಜ್ಯ ಸರ್ಕಾರಗಳು ಕಾಳಜಿವಹಿಸಬೇಕು ಎಂದು ಹೇಳಿದ್ದಾರೆ.

“2ನೇ ಅಲೆಯಲ್ಲಿ ಸಾವುಗಳ ಬಗ್ಗೆ ವರದಿ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ವಿವರವಾದ ಮಾರ್ಗಸೂಚಿಗಳನ್ನು ನೀಡಿತ್ತು. ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸಚಿವಾಲಯಕ್ಕೆ ಸಾವುಗಳ ಬಗ್ಗೆ ವರದಿಯನ್ನು ನೀಡಿವೆ. ಆದರೆ, ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಬಗ್ಗೆ ನಿರ್ದಿಷ್ಟ ವರದಿಯಿಲ್ಲ. ಹಾಗಾಗಿ ಆಮ್ಲಜನಕ ಕೊರತೆಯಿಂದ ಸಾವುಗಳು ಸಂಭವಿಸಿಲ್ಲ” ಎಂದು ಅವರು ಹೇಳಿದ್ದಾರೆ.

ಇದರೊಂದಿಗೆ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಬೇಡಿಕೆಯಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯ ಒಪ್ಪಿಕೊಂಡಿದೆ. ಹಾಗಿದ್ದ ಮೇಲೆ, ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಲಿಲ್ಲವೇ..? ಎಂಬ ಪ್ರಶ್ನೆಗಳು ಮತ್ತಷ್ಟು ಹುಟ್ಟಿಕೊಂಡಿವೆ.

ಇದನ್ನೂ ಓದಿ: ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ಕೊರೊನಾ ರೋಗಿಗಳ ಸಾವಿಗೆ ಆಮ್ಲಜನಕ ಕೊರತೆ ಒಂದು ಕಾರಣ ಎಂದು ಉಲ್ಲೇಖಿಸಿದ ಕೆಲವು ಆಸ್ಪತ್ರೆಗಳ ಪಟ್ಟಿ ಹೀಗಿವೆ.

ಚಾಮರಾಜನಗರ ಜಿಲ್ಲಾಸ್ಪತ್ರೆ, ಕರ್ನಾಟಕ: ಮೇ 2 ರಂದು ರಾತ್ರಿ 10.30 ರಿಂದ ನಾಲ್ಕು ಗಂಟೆಗಳ ಕಾಲ ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕರ ಸಮಿತಿಯನ್ನು ರಚಿಸಿತ್ತು. ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎ.ಎಸ್.ವೇಣುಗೋಪಾಲ್ ಗೌಡ ನೇತೃತ್ವದ ಸಮಿತಿಯು, ಆಕ್ಸಿಜನ್‌ ಕೊರತೆಯಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಪ್ರಾಥಮಿಕ ವರದಿಯಲ್ಲಿ ದೃಢಪಡಿಸಿತ್ತು.

ಬಾತ್ರಾ ಆಸ್ಪತ್ರೆ, ದೆಹಲಿ: ಆಮ್ಲಜನಕದ ಕೊರತೆಯಿಂದಾಗಿ ತಮ್ಮ ಆಸ್ಪತ್ರೆಯಲ್ಲಿ 11 ರೋಗಿಗಳು ಮತ್ತು ವೈದ್ಯರು ಸಾವನ್ನಪ್ಪಿದ್ದಾರೆ ಎಂದು ದೆಹಲಿಯ ಬಾತ್ರಾ ಆಸ್ಪತ್ರೆ ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಸ್ಪತ್ರೆಯಲ್ಲಿ ಭಾರಿ ಪ್ರಮಾಣದ ಆಮ್ಲಜನಕ ಕೊರತೆಯಿದೆ ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಂಶು ಬಂಕಟಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಜೈಪುರ ಗೋಲ್ಡನ್ ಆಸ್ಪತ್ರೆ, ದೆಹಲಿ: ಆಕ್ಸಿಜನ್ ಕೊರತೆಯಿಂದಾಗಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಕೂಡ ಏಪ್ರಿಲ್ 24 ರಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಮ್ಲಜನಕದ ಕೊರತೆಯಿಂದಾಗಿ ಸಂಭವಿಸಿದ ಸಾವುಗಳ ಬಗ್ಗೆ ತನಿಖೆ ನಡೆಸಲು ದೆಹಲಿ ಸರ್ಕಾರ ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಜೂನ್ 4 ರಂದು ವರದಿ ಮಾಡಿದೆ.

ಆದರೆ, ಸಮಿತಿಯನ್ನು ಸ್ಥಾಪಿಸಲು ಒಕ್ಕೂಟ ಸರ್ಕಾರ ಅನುಮೋದನೆ ನೀಡಲಿಲ್ಲ ಎಂದು ಸಿಸೋಡಿಯಾ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ದೆಹಲಿ ಘಟಕವು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಇದೇ ರೀತಿಯ ಸಮಿತಿಯನ್ನು ರಚಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೇಖನವೊಂದು ಉಲ್ಲೇಖಿಸಿದೆ.

ಆನಂದ್ ಆಸ್ಪತ್ರೆ ಮತ್ತು ಉತ್ತರ ಪ್ರದೇಶದ ಕೆಎಂಸಿ ಆಸ್ಪತ್ರೆ: ಏಪ್ರಿಲ್ 27 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ಕನಿಷ್ಠ ಏಳು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಮೂವರು ಆನಂದ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಉಳಿದವರು ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಯ ಅಧಿಕಾರಿಗಳು ಆಕ್ಸಿಜನ್ ಕೊರತೆಯಿಂದ ಸಂಭವಿಸಿದ ಸಾವುಗಳನ್ನು ದೃಢಪಡಿಸಿದ್ದರು. ಆದರೆ ಮೀರತ್‌ನ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಅವರು ಆಮ್ಲಜನಕದ ಕೊರತೆಯಿಂದಾಗಿ ಉಂಟಾದ ಸಾವುಗಳ ಬಗ್ಗೆ ಆಸ್ಪತ್ರೆಗಳು ಯಾವುದೇ ವರದಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ.

ನೀಲಕಂಠ ಆಸ್ಪತ್ರೆ, ಪಂಜಾಬ್: ವೈದ್ಯಕೀಯ ಆಮ್ಲಜನಕದ ಪೂರೈಕೆ ಕೊರತೆಯಿಂದಾಗಿ ಅಮೃತಸರದ ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಘಟನೆಗೆ ಆಸ್ಪತ್ರೆ ಅಧಿಕಾರಿಗಳು ಜಿಲ್ಲಾಡಳಿತವನ್ನು ಹೊಣೆಗಾರರನ್ನಾಗಿ ಮಾಡಿದ್ದರು. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಆದೇಶದ ಮೇರೆಗೆ ಇಬ್ಬರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿತ್ತು.

ರಾಜಸ್ಥಾನದ ಹೊಸ ವೈದ್ಯಕೀಯ ಕಾಲೇಜು ಆಸ್ಪತ್ರೆ: ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಜಸ್ಥಾನದ ಕೋಟಾದ ಹೊಸ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀಕ್ಷಕ ನಿಲೇಶ್ ಜೈನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಏಪ್ರಿಲ್ 21 ರಂದು ವರದಿ ಮಾಡಿದೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ಹರಿಯಾಣದ ಸೋನಿ ಬರ್ನ್ ಆಸ್ಪತ್ರೆ: ಹರಿಯಾಣದ ಹಿಸಾರ್‌ನ ಸೋನಿ ಬರ್ನ್ ಆಸ್ಪತ್ರೆಯಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಐದು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಸಾವುಗಳು ಆಕ್ಸಿಜನ್‌ ಕೊರತೆಯಿಂದಲೇ ಸಂಭವಿಸಿವೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಆಮ್ಲಜನಕದ ಪೂರೈಕೆಯ ಕೊರತೆಯ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದೇನೆ, ಆದರೆ “ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ಆರೋಪಗಳನ್ನು ನಿರಾಕರಿಸಿದ್ದರು. ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

ಆಕ್ಸಿಜನ್ ಕೊರತೆಯಿಂದ ಸಂಭವಿಸದ ಸಾವುಗಳ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ವರದಿ ಹೀಗಿದೆ.

ಆಮ್ಲಜನಕದ ಕೊರತೆ ಅಥವಾ ಆಮ್ಲಜನಕದ ದೊರೆಯದೇ ಇದ್ದಿದ್ದರಿಂದಾಗಿ ಸಂಭವಿಸಿದ ಸಾವುಗಳ ಸಂಖ್ಯೆಯ ಡೇಟಾಬೇಸ್ ಅನ್ನು ಸ್ವಯಂಸೇವಕರು, ಸಂಶೋಧಕರು, ವಕೀಲರು, ಜರ್ನಲಿಸ್ಟ್‌ಗಳು, ವಿದ್ಯಾರ್ಥಿಗಳು ಕಲೆಹಾಕಿದ್ದಾರೆ.  ಕೊನೆಯದಾಗಿ ಮೇ 27 ರಂದು ನವೀಕರಿಸಿದ ಡೇಟಾಬೇಸ್ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ದೇಶದಲ್ಲಿ 619 ಸಾವುಗಳು ದಾಖಲಾಗಿವೆ.


ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...