ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣದ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂಡಿಯಾ ಮೈತ್ರಿ ಪಕ್ಷಗಳ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾವು ಕರ್ನಾಟಕದಲ್ಲಿ ಇಂಡಿಯಾ ಬಣದ 10 ಪಕ್ಷಗಳ ಬೆಂಬಲದ ಬಗ್ಗೆ ಚರ್ಚಿಸುತ್ತಿದ್ದೇವೆ, ಅವರು ಎಷ್ಟು ಮತಗಳನ್ನು ತರುತ್ತಾರೆ ಎಂಬುವುದು ಮುಖ್ಯವಲ್ಲ. ಮಿತ್ರ ಪಕ್ಷಗಳ ತತ್ವ, ಸಿದ್ಧಾಂತ, ಬದ್ದತೆ ಮುಖ್ಯ. ನಾವೆಲ್ಲ ಈ ಹಿಂದೆ ಅನೇಕ ಚುನಾವಣೆಗಳನ್ನು ಬೇರೆ, ಬೇರೆಯಾಗಿ ಎದುರಿಸಿದ್ದೇವೆ. ಆದರೆ, ಇಂದು ಪ್ರಜಾಪ್ರಭುತ್ವದ ಉಳಿವಿಗೆ ಒಂದಾಗಿದ್ದೇವೆ ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಿದ್ದವು, ಸಿಪಿಐ ಪಕ್ಷವು 17,000 ಮತಗಳನ್ನು ಗಳಿಸಿತು ಮತ್ತು ದೇವೇಗೌಡರು ಕೇವಲ 12,000 ಮತದಾನದ ಅಂತರದಿಂದ ಚುನಾವಣೆಯಲ್ಲಿ ಸೋತರು. 2024ರ ಚುನಾವಣೆಯಲ್ಲಿ ಅಂತಹ ಪರಿಸ್ಥಿತಿ ನಮಗೆ ಬೇಕಾಗಿಲ್ಲ. ಆದ್ದರಿಂದ, ನಮಗೆ ಎಲ್ಲಾ ಮೈತ್ರಿ ಪಕ್ಷಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡಲು, ನಾವು ಈ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರ ಮೇಲೆ ಬಿಜೆಪಿ ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಈ ಕ್ರಮವನ್ನು ನಾವು ಒಂದೇ ಧ್ವನಿಯಲ್ಲಿ ಖಂಡಿಸುತ್ತೇವೆ, ಚುನಾವಣಾ ಬಾಂಡ್ಗಳ ಪ್ರಕರಣದಲ್ಲಿ ಬಿಜೆಪಿ ಸ್ಪಷ್ಟ ಪ್ರತಿಕ್ರಿಯೆ ನೀಡುತ್ತಿಲ್ಲ, ಅವರು ಎಡಪಕ್ಷಗಳಿಗೆ 11 ಕೋಟಿ ರೂ.ಗೆ ನೋಟಿಸ್ ನೀಡಿದ್ದಾರೆ, ಈ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ದೇಶದ ಜನರಿಗೆ ಉತ್ತರಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಾವು ಇಂಡಿಯಾ ಬ್ಲಾಕ್ ಪಕ್ಷಗಳ ಸಮನ್ವಯ ಸಮಿತಿಯನ್ನು ರಚಿಸುತ್ತೇವೆ. ಎಲ್ಲಾ ಮೈತ್ರಿ ಪಾಲುದಾರರು ನಮಗೆ ಬೆಂಬಲ ಪತ್ರವನ್ನು ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್ಗೆ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಅನುಕೂಲವಾಗಲಿದೆ. ರಾಜಕಾರಣದಲ್ಲಿ 49 ಎಂದರೆ ಸೊನ್ನೆ, 51 ಎಂದರೆ ನೂರು ಎಂದರ್ಥ. ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಧ್ರುವನಾರಾಯಣ್ 1 ಮತದಿಂದ ಗೆದ್ದಿದ್ದರು. ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಲ್ಲೇ ಗೆದ್ದರು. ಸೌಮ್ಯಾ ರೆಡ್ಡಿ 16 ಮತಗಳಿಂದ ಸೋತರು, ಹೀಗಾಗಿ ಒಂದೊಂದು ಮತವೂ ಮುಖ್ಯ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಕಾಂಗ್ರೆಸ್ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಪಕ್ಷಗಳ ಬೆಂಬಲವನ್ನು ಕೂಡ ಪಡೆಯಲು ಮುಂದಾಗಿದೆ. ಮತ ವಿಭಜನೆಯನ್ನು ತಡೆಗಟ್ಟಲು ಮಹತ್ವದ ತಂತ್ರವನ್ನು ರೂಪಿಸುತ್ತಿದೆ.
ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್ ಬಣ) ಸೇರ್ಪಡೆ