“ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ,” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್ಶಿಪ್ ವಿರೋಧಿಸಿ ನಡೆಯುತ್ತಿರುವ ಹೋರಾಟದ ಹಿಂದೆ ರಾಜಕೀಯ ಪ್ರೇರಿತ ಕುಮ್ಮಕ್ಕಿದೆ ಎಂದು ಆರೋಪಿಸಿರುವ ಅವರು, ಈ ಯೋಜನೆಗೆ ಅಡಿಪಾಯ ಹಾಕಿದ್ದೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂಬುದನ್ನು ದಾಖಲೆ ಸಮೇತ ಬಹಿರಂಗಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ (ಜುಲೈ 15) ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಬಿಡದಿ ಯೋಜನೆಯ ಸುತ್ತ ಹಬ್ಬಿರುವ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಜಮೀನು ಕೊಡಲು ಇಷ್ಟವಿಲ್ಲದ ರೈತರು ತಮ್ಮ ಜಮೀನಿನಲ್ಲಿ ಎಂದಿನಂತೆ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು. ಯಾರಿಗೆ ಇಷ್ಟವಿದೆಯೋ ಅವರು ಮಾತ್ರ ಸರ್ಕಾರಕ್ಕೆ ಜಮೀನು ನೀಡಬಹುದು. ಬಲವಂತವಾಗಿ ಒಂದು ಗುಂಟೆ ಜಮೀನನ್ನೂ ಸರ್ಕಾರ ವಶಪಡಿಸಿಕೊಳ್ಳುವುದಿಲ್ಲ. ನಿನ್ನೆ ಬಿಡದಿಯಲ್ಲಿ ನಡೆದ ಪ್ರತಿಭಟನೆಯ ಘಟನೆ ನನಗೆ ತೀವ್ರ ಮನಸ್ಸಿಗೆ ನೋವುಂಟು ಮಾಡಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದಾಗಿ ಅಧಿಕಾರಿಗಳಿಗೆ ತೊಂದರೆ ನೀಡಲಾಗಿದೆ. ರೈತರನ್ನು ದಾರಿ ತಪ್ಪಿಸುವ ವ್ಯವಸ್ಥಿತ ಸಂಚು ಇದರ ಹಿಂದೆ ನಡೆಯುತ್ತಿದೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಜಮೀನು ಕೊಡಲು ಇಷ್ಟವಿಲ್ಲದ ರೈತರು ತಮ್ಮ ಜಮೀನಿನಲ್ಲಿ ಎಂದಿನಂತೆ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು. ಯಾರಿಗೆ ಇಷ್ಟವಿದೆಯೋ ಅವರು ಮಾತ್ರ ಸರ್ಕಾರಕ್ಕೆ ಜಮೀನು ನೀಡಬಹುದು. ಬಲವಂತವಾಗಿ ಒಂದು ಗುಂಟೆ ಜಮೀನನ್ನೂ ಸರ್ಕಾರ ವಶಪಡಿಸಿಕೊಳ್ಳುವುದಿಲ್ಲ. ನಿನ್ನೆ ಬಿಡದಿಯಲ್ಲಿ ನಡೆದ ಪ್ರತಿಭಟನೆಯ ಘಟನೆ ನನಗೆ ತೀವ್ರ ಮನಸ್ಸಿಗೆ ನೋವುಂಟು ಮಾಡಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದಾಗಿ ಅಧಿಕಾರಿಗಳಿಗೆ ತೊಂದರೆ ನೀಡಲಾಗಿದೆ. ರೈತರನ್ನು ದಾರಿ ತಪ್ಪಿಸುವ ವ್ಯವಸ್ಥಿತ ಸಂಚು ಇದರ ಹಿಂದೆ ನಡೆಯುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಬಿಡದಿ ಟೌನ್ಶಿಪ್ ನನ್ನ ಕನಸಿನ ಯೋಜನೆ ಎಂದು ನಾನು ಎಲ್ಲೂ ಹೇಳಿಕೊಂಡಿಲ್ಲ. ಇದಕ್ಕೆ ನಾನು ಶಂಕುಸ್ಥಾಪನೆಯನ್ನೂ ನೆರವೇರಿಸಿಲ್ಲ. ಈ ಯೋಜನೆಯ ಪಿತಾಮಹ ಆಗುವ ಆಸೆಯೂ ನನಗಿಲ್ಲ. ನಾನು ಹುಟ್ಟಾ ರೈತನ ಮಗ, ರೈತರ ಕಷ್ಟ ಏನೆಂಬುದು ನನಗೆ ಚೆನ್ನಾಗಿ ಗೊತ್ತಿದೆ. ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಹಿಂದಿನ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಕೆಲಸವನ್ನಷ್ಟೇ ನಾನು ಮಾಡುತ್ತಿದ್ದೇನೆ, ಎಂದು ಸಿಎಂ ಹೇಳಿದರು.
ತಮ್ಮ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನಾಯಕರು ನಡೆಸುತ್ತಿರುವ ವಾಗ್ದಾಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಇಡೀ ಯೋಜನೆಯ ಇತಿಹಾಸವನ್ನು ಬಿಚ್ಚಿಟ್ಟ ಸಿಎಂ ಶಿವಕುಮಾರ್ 23 ಸೆಪ್ಟೆಂಬರ್ 2006 ರಂದು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರದೇ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಸುತ್ತಮುತ್ತ 5 ಉಪನಗರಗಳನ್ನು (ಟೌನ್ಶಿಪ್) ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿತ್ತು. ಬಿಎಂಆರ್ಡಿಎ ಮೂಲಕ ಪಿಪಿಪಿ ಮಾದರಿಯಲ್ಲಿ ಗ್ಲೋಬಲ್ ಟೆಂಡರ್ ಕರೆಯಲು ನಿರ್ಧರಿಸಲಾಗಿತ್ತು. ಅಂದು ಆರ್ ಅಶೋಕ್ ಕೂಡ ಸಂಪುಟದಲ್ಲಿದ್ದರು.
20 ನವೆಂಬರ್ 2006 ರಂದು ಅಂದಿನ ಸಿಎಂ ಕುಮಾರಸ್ವಾಮಿ ಅವರು ಈ ಪ್ರದೇಶದ ಖಾಸಗಿ ಜಮೀನುಗಳಲ್ಲಿ ಯಾವುದೇ ಪ್ರಾಧಿಕಾರವಾಗಲಿ, ವ್ಯಕ್ತಿಯಾಗಲಿ ಪೂರ್ವಾನುಮತಿ ಇಲ್ಲದೆ ಯಾವುದೇ ಅಭಿವೃದ್ಧಿ ಮಾಡಬಾರದು ಎಂದು ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ಆ ಜಾಗವನ್ನು ‘ರೆಡ್ ಝೋನ್’ ಎಂದು ಗುರುತಿಸಿದ್ದರು.
ಅಷ್ಟೇ ಅಲ್ಲದೆ, ಅಂದು ಗ್ರಾಮಠಾಣಾದ ಆಸ್ತಿ, ಮನೆಗಳನ್ನು ಒಕ್ಕಲೆಬ್ಬಿಸಲು ಪರಿಹಾರ ಮೊತ್ತ ಘೋಷಿಸಿ ಆದೇಶ ಹೊರಡಿಸಲಾಗಿತ್ತು. ಖಾಸಗಿ ರಿಯಲ್ ಎಸ್ಟೇಟ್ ದೈತ್ಯ ‘ಡಿಎಲ್ಎಫ್’ಗೆ ಅವಕಾಶ ನೀಡಿ 400 ಕೋಟಿ ರೂ. ಸೆಕ್ಯುರಿಟಿ ಡೆಪಾಸಿಟ್ ಕಟ್ಟಿಸಿಕೊಳ್ಳಲಾಗಿತ್ತು. 2010ರಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗಲೂ ಇದೇ ಯೋಜನೆಯನ್ನು ಮುಂದುವರಿಸಿ ಎರಡನೇ ಬಾರಿಗೆ ಜಾಗತಿಕ ಟೆಂಡರ್ ಕರೆಯಲಾಗಿತ್ತು.
ಈ ದಾಖಲೆಗಳನ್ನು ಪ್ರದರ್ಶಿಸಿದ ಡಿ.ಕೆ.ಶಿವಕುಮಾರ್, ಈಗ ಹೇಳಿ ಕುಮಾರಣ್ಣಾ, ರಿಯಲ್ ಎಸ್ಟೇಟ್ ದಂಧೆ ಮಾಡಿದ್ದು ಯಾರು? ನಾನಾ ಅಥವಾ ನೀವಾ? ಎಂದು ನೇರ ಪ್ರಶ್ನೆ ಹಾಕಿದರು.
ನಾನು ಸಿಎಂ ಆಗಿರುವುದನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ
ನಾನು ಮುಖ್ಯಮಂತ್ರಿಯಾಗಿರುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರಿಗೆ ಸರಿಯಾಗಿ ನಿದ್ದೆಯೂ ಬರುತ್ತಿಲ್ಲ. ನನ್ನನ್ನು ಜೈಲಿಗೆ ಕಳುಹಿಸಲು ವರ್ಷಗಳಿಂದ ಸಂಚು ರೂಪಿಸುತ್ತಿದ್ದಾರೆ ಎಂಬುದು ರಾಜ್ಯದ ಜನತೆಗೆ ತಿಳಿದಿದೆ. ‘ಡಿಕೆಶಿ ಜೈಲಿಗೆ ಹೋಗುವ ದಿನ ಹತ್ತಿರ ಬಂದಿದೆ’ ಎಂದು ಕುಮಾರಣ್ಣ ಇಂದೂ ಹೇಳಿದ್ದಾರೆ. ಅವರಿಗೆ ಒಳ್ಳೆಯದಾಗಲಿ, ನನಗೆ ಜೈಲು ಹೊಸದೇನಲ್ಲ, ಎಂದು ತಿರುಗೇಟು ನೀಡಿದರು.
ಬಿಡದಿ ಟೌನ್ಶಿಪ್ ಯೋಜನೆಯ ಮುಂದಿನ ಹಾದಿಯ ಬಗ್ಗೆ ವಿವರಿಸಿದ ಮುಖ್ಯಮಂತ್ರಿಗಳು, ಈ ಯೋಜನೆಯ ಸಾಧಕ-ಬಾಧಕಗಳನ್ನು ಪರಿಶೀಲಿಸಲು ಶೀಘ್ರದಲ್ಲೇ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು. ಮುಂದಿನ ಸಚಿವ ಸಂಪುಟ (ಕ್ಯಾಬಿನೆಟ್) ಸಭೆಯಲ್ಲಿ ಈ ಸಮಿತಿ ರಚನೆಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು. ಈ ಸಮಿತಿಯು ನೀಡುವ ವರದಿಯ ಆಧಾರದ ಮೇಲೆಯೇ ಯೋಜನೆಯ ಮುಂದಿನ ಭವಿಷ್ಯವನ್ನು ನಿರ್ಧರಿಸಲಾಗುವುದು, ಎಂದು ಪ್ರಕಟಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ರಾಮನಗರ ಜಿಲ್ಲೆಯ ಶಾಸಕ ಬಾಲಕೃಷ್ಣ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


