‘ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಜನ ಸಾಮಾನ್ಯರ ಬದುಕು ದಯನೀಯ ಸ್ಥಿತಿಯಲ್ಲಿದೆ. ಇಂತಹ ಸಮಯದಲ್ಲಿ ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “’ಒಂದು ವೇಳೆ ಸರ್ಕಾರ ಈ ನಿರ್ಧಾರ ಒಂದು ವಾರದ ಒಳಗಾಗಿ ಕೈಬಿಡದಿದ್ದರೆ, 17ನೇ ತಾರೀಕಿನಿಂದ 20ನೇ ತಾರೀಕಿನವರೆಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಎಸ್ಕಾಂ ಸಂಸ್ಥೆಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ 23ರಿಂದ 28ನೇ ತಾರೀಕಿನ ನಡುವೆ ಒಂದು ದಿನ ಪ್ರತಿಯೊಂದು ತಾಲೂಕು ಮಟ್ಟದಲ್ಲೂ ಪ್ರತಿಭಟನೆ ನಡೆಸಲು ಯೋಚಿಸಿರುವುದಾಗಿ ತಿಳಿಸಿದ್ದಾರೆ.
‘ಕೊರೋನಾ ಪಿಡುಗಿನಿಂದ ದೇಶ ತತ್ತರಿಸಿದೆ. ಈ ಸಮಯದಲ್ಲಿ ಎಲ್ಲರೂ ಮಾನವೀಯತೆಗೆ ಗೌರವ ತೋರಿ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡುತ್ತಾ ಬಂದಿದ್ದೇವೆ. ಆದರೆ ಸರ್ಕಾರ ಮಾತ್ರ ಜನಸಾಮಾನ್ಯರ ಮೇಲೆ ಸವಾರಿ ಮಾಡತ್ತಿದೆ ಎಂದರು.
ಇದನ್ನೂ ಓದಿ: ಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ: ಡಿ.ಕೆ. ಶಿವಕುಮಾರ್
ರಾಜ್ಯದಲ್ಲಿ ಮಳೆ ಹೆಚ್ಚಾದಾಗ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಹೆಚ್ಚಾಗಿ ಉತ್ಪಾದನೆ ಮಾಡುವುದನ್ನು ನಾವು ನೋಡಿದ್ದೇವೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹೀಗಿರುವಾಗ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಿಸಿ ವಿದ್ಯುತ್ ದರ ಏರಿಕೆ ಮಾಡಿದ್ದು ಸರಿಯಲ್ಲ. ಮಳೆ ಹೆಚ್ಚಾಗಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವ ಹೊತ್ತಲ್ಲಿ ಸರ್ಕಾರ ವಿದ್ಯುತ್ ದರ ಕಡಿಮೆ ಮಾಡಬಹುದಿತ್ತು. ಆದರೆ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.
’ನಾನು ಪಕ್ಷದ ಪರವಾಗಿ, ರಾಜ್ಯದ ಆರೂವರೆ ಕೋಟಿ ಜನರ ಪರವಾಗಿ, ಈ ಜನ ವಿರೋಧಿ ನಿರ್ಧಾರವನ್ನು ಖಂಡಿಸುತ್ತೇನೆ. ಇದು ಕೈಗಾರಿಕೆ, ವ್ಯಾಪಾರಿ, ರೈತರು ಹಾಗೂ ಮಧ್ಯಮ ವರ್ಗದ ಜನರ ವಿರುದ್ಧ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರ ಕೂಡಲೇ ಈ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ’ ಎಂದಿದ್ದಾರೆ.
ಮುಂದಿನ ಒಂದೂವರೆ ವರ್ಷಗಳ ಕಾಲ ಇಂತಹ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಜನರ ಧ್ವನಿಯಾಗಿ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗ ಇರುವ ದರವನ್ನೇ ಮುಂದುವರಿಸಬೇಕು ಇಲ್ಲದಿದ್ದರೇ ಪ್ರತಿಭಟನೆ ನಡೆಸಿಯೇ ನಡೆಸುತ್ತೇವೆ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಮುಖಂಡರಾದ ಡಾ. ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಉಪಸ್ಥಿತರಿದ್ದರು.
ವಿದ್ಯತ್ ದರತ ಏರಿಕೆ ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದರ ಕಡಿತಗೊಳಿಸುವಂತೆ ಪತ್ರ ಬರೆದಿದ್ದರು.