ಕೊರೊನಾ 2ನೇ ಅಲೆಯಲ್ಲಿ ಆಗಿರುವ ನಷ್ಟಕ್ಕೆ ರೈತರಿಗೆ ಸರ್ಕಾರದಿಂದ ಈವರೆಗೂ ಪರಿಹಾರ ಸಿಕ್ಕಿಲ್ಲ. ಬೆಳೆಗೆ ಬೆಲೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಸರ್ಕಾರ ಇದ್ಯಾವುದರ ಬಗ್ಗೆಯೂ ಚಿಂತಿಸದೇ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
‘ಹೊಸ ಸರ್ಕಾರ ಬಂದಿದೆ, ಜನರ ರಕ್ಷಣೆ ಮಾಡುತ್ತದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ. ಹಾರ-ತುರಾಯಿ ಹಾಕಿಸಿಕೊಳ್ಳುವವರಿಗೆ ನಾನು ಬೇಡ ಎನ್ನುವುದಿಲ್ಲ. ಕೋವಿಡ್ ಸೋಂಕು ನಿಯಂತ್ರಿಸಬೇಕು. ಎಲ್ಲರೂ ತಮ್ಮ ಕ್ಷೇತ್ರಗಳಿಗೆ ಹೋಗಿ ಎಂದು ಸಿಎಂ ಸೂಚಿಸಿದ್ದಾರೆ’ ಎಂದರು.
’ಎಲ್ಲಿ ಹೋದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ, ಅವರು ಬೆಳೆದ ಟಮೋಟೋ, ತರಕಾರಿಗಳಿಗೆ ಬೆಲೆ ಸಿಗದೇ ಎಸೆಯುತ್ತಿದ್ದಾರೆ. ನೂತನ ಮುಖ್ಯಮಂತ್ರಿಗಳು ಬಂದಿದ್ದಾರೆ, ಅವರಾದರೂ ರೈತರು, ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರನ್ನು ಉಳಿಸುತ್ತಾರಾ ನೋಡಬೇಕು’ ಎಂದು ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!
ಜಗದೀಶ್ ಶೆಟ್ಟರ್ ಅವರು ಮಂತ್ರಿಯಾಗಿದ್ದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚಿಂತನೆ ಮಾಡಬೇಕಿದೆ, ಅಧಿವೇಶನ ಕರೆಯುತ್ತೇವೆ ಎಂದಿದ್ದರು. ಈಗ ಉತ್ತರ ಕರ್ನಾಟಕ ಭಾಗದ ಮುಖ್ಯಮಂತ್ರಿಗಳೇ ಇದ್ದಾರೆ. ಯಾವಾಗ ಕರೆಯುತ್ತಾರೋ ನೋಡೋಣ. ತರಾತುರಿಯಲ್ಲಿ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರ ಮನೆ ಮೇಲೆ ಇಡಿ ದಾಳಿ ಬಗ್ಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್, ’ನನಗೆ ಇರುವ ಕಾನೂನು ಅರಿವಿನ ವಿಚಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ನಾನು ಈ ಬಗ್ಗೆ ವೈಯಕ್ತಿಯವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಖಾಸಗಿಯಾಗಿ ನನ್ನ ಅನುಭವವನ್ನು ಅವರೊಟ್ಟಿಗೆ ಹಂಚಿಕೊಳ್ಳಲು ಸಿದ್ಧನಿದ್ದೇನೆ. ಸಾರ್ವಜನಿಕವಾಗಿ ಈ ಬಗ್ಗೆ ಮಾತನಾಡುವುದಿಲ್ಲ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
’ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕುರಿತಾಗಿ ಜಮೀರ್ ಆಹ್ಮದ್ ಮಾಡಿರುವ ಆರೋಪಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.