ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ದುರ್ವ್ಯಾಖ್ಯಾನ ಮಾಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವವರ ವಿರುದ್ದ ‘ಸುನ್ನಿ ಯುವಜನ ಸಂಘ’ (SYS) ಮತ್ತು ಕರ್ನಾಟಕ ಸಮಿತಿಯು ಫೆಬ್ರವರಿ 25ರ ಶುಕ್ರವಾರದಂದು “ಅವಳನ್ನು ಅಟ್ಟಾಡಿಸ ಬೇಡಿ” ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದಾದ್ಯಂತ ವಿವಿಧ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನಾ ಸಭೆಗಳು ನಡೆಸಲಿದೆ.
ರಾಜ್ಯದ ಬಿಜೆಪಿ ಸರ್ಕಾರ ಹೇರಿದ್ದ, ಹಿಜಾಬ್ ನಿಷೇಧ ಕ್ರಮವನ್ನು ಪ್ರಶ್ನಿಸಿ ಉಡುಪಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಆದರೆ ಈ ತೀರ್ಪನ್ನು ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿ, ರಾಜ್ಯದಾದ್ಯಂತ ಶಾಲೆ-ಕಾಲೇಜಿನಲ್ಲಿ ಕಲಿಯುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಮುಸ್ಲಿಂ ಶಿಕ್ಷಕಿಯರಿಗೆ ಹಿಜಾಬ್ ವಿಚಾರದಲ್ಲಿ ಕಿರುಕುಳ ನೀಡಲಾಗುತ್ತಿದೆ.
ಇದನ್ನು ವಿರೋಧಿಸಿರುವ SYS ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. “ಹಿಜಾಬ್ ವಿಚಾರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಅವರಿಗೆ ಶಿಕ್ಷಣವನ್ನು ನಿರಾಕರಿಸಲಾಗುತ್ತಿದೆ. ಶಾಲಾಡಳಿತ ಮತ್ತು ಶಿಕ್ಷಕರು ಏಕಪಕ್ಷೀಯ ಧೋರಣೆ ಮಾಡುತ್ತಾ ತಾರತಮ್ಯ ಎಸಗುತ್ತಿದ್ದಾರೆ” ಎಂದು SYS ತನ್ನ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.
“ಶಿಕ್ಷಣ ಸಂಸ್ಥೆಗಳಲ್ಲಿ ಹೊರಗಿನವರ ಹಸ್ತಕ್ಷೇಪ ನಡೆಸಲಾಗುತ್ತಿದೆ. ಅಲ್ಲದೆ, ಮಾಧ್ಯಮ ಪತ್ರಿನಿಧಿಗಳು ದುರ್ವರ್ತನೆ ತೋರುತ್ತಿದ್ದಾರೆ. ಈ ಮೂಲಕ ಶಾಲಾ-ಕಾಲೇಜುಗಳನ್ನು ಕೋಮುವಾದದ ಪ್ರಯೋಗ ಶಾಲೆ ಮಾಡಲಾಗುತ್ತಿದೆ” ಎಂದು ಹೇಳಿರುವ SYS, ಈ ಎಲ್ಲಾ ಸಂವಿಧಾನ ವಿರೋಧಿ ಕೃತ್ಯಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ತೊಂದರೆಗೊಳಗಾದ ವಿದ್ಯಾರ್ಥಿನಿಯರಿಗೆ ಸಲಹೆಗಳು