Homeಕರ್ನಾಟಕಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ರೀತಿ ನಕಲಿ ಪತ್ರವನ್ನು ಸೃಷ್ಟಿಸಲಾಗಿದೆ.

- Advertisement -
- Advertisement -

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸೋಲಿನ ಹತಾಶೆಯಲ್ಲಿ ಬಿಜೆಪಿ ತನ್ನ ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ನೀಡಿದೆ. ಬಿಜೆಪಿಯ ನಕಲಿ ಮೋರ್ಚಾವು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಸರ್ಕಾರಿ ಲೆಟರ್ ಹೆಡ್, ಹಾಗೂ ಸಿದ್ದರಾಮಯ್ಯನವರ ಸಹಿ ನಕಲು ಮಾಡಿದ್ದು ಗಂಭೀರ ಅಪರಾಧ. ಚುನಾವಣಾ ಆಯೋಗ ಹಾಗೂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದವರೆಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದೆ.

ನಕಲಿ ಪತ್ರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯನವರು, “ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ಪಕ್ಷ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮ‌ಕೈಗೊಳ್ಳಲು ಒತ್ತಾಯಿಸಲಿದ್ದೇನೆ” ಎಂದಿದ್ದಾರೆ.

ನಕಲಿ ಪತ್ರದಲ್ಲಿ ಏನಿದೆ?

ಕಳೆದ ಮೂರು ವರ್ಷದಿಂದ ವಿರೋಧ ಪಕ್ಷದ ನಾಯಕನಾಗಿ ಆಡಳಿತರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾ ಪ್ರಾಮಾಣಿಕವಾಗಿ ಹೋರಾಟ ಮಾಡಿದ್ದೇನೆ. ಅದರಲ್ಲೂ ಚುನಾವಣೆ ವರ್ಷದಲ್ಲಿ ಅವಕಾಶ ಸಿಕ್ಕ ಕಡೆ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿರುವ ಪ್ರಯತ್ನ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿಯಾಗಿ ವಿರೋಧ ಪಕ್ಷದ ನಾಯಕಕ್ಕಾಗಿ ಪಕ್ಷಕ್ಕಾಗಿ ನಿಷ್ಠೆಯಿಂದ ನಡೆದುಕೊಂಡು ಬಂದಿದ್ದೇನೆ. ಪಕ್ಷ ನನಗೆ ಸ್ಥಾನಮಾನಗಳನ್ನು ನೀಡಿ ಗೌರವಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಜೀವನಪರ್ಯಂತ ಆಭಾರಿಯಾಗಿರುತ್ತೇನೆ. ಈ ಭಾರಿ ಮತ್ತೊಮ್ಮೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಅವರ ಕೈ ಬಲಪಡಿಸಬೇಕೆಂಬ ಇಚ್ಛೆ ಅಗಾಧವಾಗಿವೆ.

ಆದರೆ ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಬಹಳ ಬೇಸರವನ್ನುಂಟು ಮಾಡಿದೆ. ಇಡೀ ರಾಜ್ಯದ ತುಂಬಾ ಸುತ್ತಾಡಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು. ತಮಗಿಂತ ವಯಸ್ಸಿನಲ್ಲಿ ಕಿರಿಯರು  ಹಾಗೂ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ತೀವ್ರ ಅಸಮಾಧಾನವಿದೆ.

ಕಳೆದ ಒಂದು ವರ್ಷದಿಂದ ರಾಹುಲ್ ಗಾಂಧಿಯವರ ತಂಡ ನೀಡಿದ ಮಾರ್ಗದರ್ಶನದಂತೆ ಉತ್ತಮವಾಗಿ ಕ್ಯಾಂಪೇನ್ ಮಾಡಿಕೊಂಡು ಬಂದಿದ್ದೇವೆ. ಡಿ.ಕೆ.ಶಿವಕುಮಾರ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲಾ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೆ. ಆದರೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್‌ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿರುತ್ತಾರೆ.

ಟಿಕೆಟ್ ಹಂಚಿಕೆ ವಿಷಯದಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿ.ಕೆ.ಶಿವಕುಮಾರ್ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್‌ಗೆ ನನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ತರಿಕೇರಿಯ ಒಬಿಸಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣನಿಗೂ ಟಿಕೆಟ್ ಸಿಗದಂತೆ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ನನ್ನ ಪ್ರಯತ್ನದ ಫಲವಾಗಿ ಅದು ಅವರ ಕೈಯಿಂದ ಸಾಧ್ಯವಾಗಲಿಲ್ಲ. ಶಿವಕುಮಾರ್‌ ಅವರ ಕುತಂತ್ರದಿಂದ ಒಬಿಸಿ ಸಮುದಾಯ ನನ್ನ ವಿರುದ್ಧ ತಿರುಗಿಬೀಳುವಂತೆ ಮಾಡಿದ್ದಾರೆ.

“ವರುಣಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ದಲಿತರು ನನ್ನ ವಿರುದ್ಧ ತಿರುಗಿ ಬೀಳುವಂತೆ ಹಣದ ಹೊಳೆಯನ್ನೇ ಹರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನವರಿಗೂ ಕೋಟಿ ಕೋಟಿ ಫಂಡಿಂಗ್ ಮಾಡಿದ್ದಾರೆ”- ಹೀಗೆ ನಕಲಿಪತ್ರ ಪುಂಕಾನುಪುಂಕವಾಗಿ ವಿಷಯಗಳನ್ನು ಪೋಣಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...