Homeಎಕಾನಮಿಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

- Advertisement -
- Advertisement -

ಯಾವುದೇ ರೋಗ ಬಂದಾಗ ಚಿಕಿತ್ಸೆಗೂ ಮುನ್ನ ವೈದ್ಯರು ರೋಗಪರೀಕ್ಷೆ ಮಾಡುತ್ತಾರೆ. ಇದನ್ನು ಡಯೋಗ್ನೋಸಿಸ್ ಎನ್ನುತ್ತಾರೆ. ನಂತರವಷ್ಟೇ ಚಿಕಿತ್ಸೆಗೆ ಮುಂದಾಗುವುದು. ಇಂದಿನ ಆರ್ಥಿಕ ಕುಸಿತ, ಉದ್ಯೋಗ ನಷ್ಟದ ಸಮಸ್ಯೆಗೆ ಮೊದಲು ಸರ್ಕಾರ ಮಾಡಬೇಕಾದ್ದು ಇದೇ ವಿಧಾನ. ಇದಕ್ಕೆ ಮೂಲಕಾರಣ ಶೋಧಿಸಿ ಚಿಕಿತ್ಸೆಗೆ ಮುಂದಾಗಬೇಕು. ಆದರೆ ನಮ್ಮ ಸರ್ಕಾರದ ದೊಡ್ಡ ಸಮಸ್ಯೆಯೆಂದರೆ ದೇಶದ ಆರ್ಥಿಕ ಕುಸಿತವನ್ನು ಒಪ್ಪಿಕೊಳ್ಳದಿರುವುದು.

ಇದು ಹೇಗೆಂದರೆ ಒಬ್ಬನಿಗೆ ತೀವ್ರ ಕಾಯಿಲೆ ಬಂದರೂ ಆತ ಆಸ್ಪತ್ರೆಗೆ ಹೋಗದೇ ನಾನು ಚೆನ್ನಾಗಿದ್ದೇನೆ ಎಂದು ನಟಿಸದಂತೆ ಮಾಡುವುದಾಗಿದೆ. ಆದರೆ ಎಷ್ಟು ದಿನ ಮಾಡುತ್ತಾನೆ? ಅದರ ಲಕ್ಷಣಗಳು ಎದುರಿರುವವರಿಗೆ ಗೊತ್ತಾಗಿಯೇ ಆಗುತ್ತೇ ಅಲ್ಲವೇ? ಇಂದಿನ ಭಾರತದ ಪರಿಸ್ಥಿತಿಯು ಇದಕ್ಕಿಂತ ಭಿನ್ನವಾಗಿಲ್ಲ. ಸಮಸ್ಯೆ ಏನೆಂದರೆ ಚಿಕಿತ್ಸೆ ಪಡೆಯುವುದು ತಡವಾದಷ್ಟು ರೋಗ ಉಲ್ಬಣಿಸುತ್ತದೆ.. ಇಂದು ಅದೇ ಆಗುತ್ತಿದೆ. ಸರ್ಕಾರ ಮಾಡದಿದ್ದರೂ ದೇಶದ ಜವಾಬ್ದಾರಿಯುತ ನಾಗರಿಕರಾದ ನಾವು ಕಾರಣಗಳನ್ನು ಮತ್ತು ಪರಿಹಾರವನ್ನು ಸೂಚಿಸುವ ಕೆಲಸ ಮಾಡಬೇಕಿದೆ. ದೇಶದ ಉಳಿವಿನ ದೃಷ್ಟಿಯಿಂದ ಇದು ಮಹತ್ವದ ಕೆಲಸ. ಹಾಗಾದರೆ ಬನ್ನಿ, ಇಂದಿನ ಸ್ಥಿತಿಗೆ ಮೂಲಕಾರಣಗಳನ್ನು ಶೋಧಿಸೋಣ.

ಈ ದೇಶದಲ್ಲಿರುವ ಸಂಪನ್ಮೂಲಗಳ ಸದ್ಬಳಕೆ ಆದರೆ, ಅದರಿಂದ ದೇಶದ ಎಲ್ಲರಿಗೂ ಉದ್ಯೋಗ, ಆಹಾರ, ವಸತಿ ಕಲ್ಪಿಸುವುದು ಯಾವ ರೀತಿಯಿಂದಲೂ ಕಷ್ಟವಲ್ಲ. ಆದರೆ, ಇಂದು ದೇಶದ ಸಂಪತ್ತು ಮತ್ತು ಹಣ ಎಲ್ಲೆಡೆ ಚಲಾವಣೆಯಾಗುವ ಬದಲು ಕೆಲವೇ ಕಡೆ ಶೇಖರಣೆಯಾಗುತ್ತಿದೆ. 135 ಕೋಟಿಯಷ್ಟು ದೊಡ್ಡ ಜನಸಂಖ್ಯೆಯಿರುವ ನಮ್ಮ ದೇಶದಲ್ಲಿ ಹಣ ಮತ್ತು ಸಂಪತ್ತು ಸದಾ ಚಲಾವಣೆಯಲ್ಲಿರಬೇಕು. ಆಗ ಮಾತ್ರವೇ ಉತ್ಪಾದನೆ, ಮಾರಾಟ, ಲಾಭ, ಉದ್ಯೋಗ, ಖರ್ಚು ಈ ಸರಪಳಿ ಸರಾಗವಾಗಲು ಸಾಧ್ಯ. ಆದರೆ ಕಳೆದ 7-8 ವರ್ಷಗಳಿಂದ ಈ ಸರಪಳಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮೊದಲಿಗೆ ಇದು ಉತ್ಪಾದನಾ ಕ್ಷೇತ್ರದಲ್ಲಿ ಕುಂಠಿತವಾಗುವುದರೊಂದಿಗೆ ಆರಂಭವಾಯಿತು. ಆಗ ಸರ್ಕಾರ ಇದನ್ನು ಸರಿಮಾಡಲು ದೊಡ್ಡ ಬಂಡವಾಳಿಗರಿಗೆ ಮತ್ತಷ್ಟು ಮಗದಷ್ಟು ಸಾಲವನ್ನು ಕೊಟ್ಟು, ಅವರ ತೆರಿಗೆ ಮನ್ನಾ ಮಾಡುವುದರ ಜೊತೆಗೆ ಒಂದಷ್ಟು ಸಾಲವನ್ನು ಮನ್ನಾ ಮಾಡಿತು. ಆದರೂ ಸಮಸ್ಯೆ ಬಗೆಹರಿಯದೇ ಮತ್ತಷ್ಟು ಹೆಚ್ಚಾಗುತ್ತಾ ಸಾಗಿತು.

ಏಕೆಂದರೆ, ಉದ್ಯೋಗ ಸೃಷ್ಟಿಸದ ಆದರೆ ಹೂಡಿಕೆದಾರರಿಗೆ ಹೆಚ್ಚಿನ ಲಾಭ ತರುವ ಕ್ಷೇತ್ರಗಳಿಗೆ ಸರ್ಕಾರದ ಒತ್ತು ಹೆಚ್ಚಾಗಿತ್ತು. ಇದು ಯುಪಿಎ ಕಾಲದಲ್ಲೇ ಶುರುವಾಗಿತ್ತು; ಎನ್‍ಡಿಎ ಕಾಲದಲ್ಲಿ ಇನ್ನೂ ಹೆಚ್ಚಾಯಿತು. ಅದರ ಜೊತೆಗೆ ಈ ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಆಗಿಂದಾಗ್ಗೆ ಬರುವ ಬಿಕ್ಕಟ್ಟು ಸಹಾ ತಲೆದೋರಿದೆ. ಅಂದರೆ ಕೋಟಿಗಟ್ಟಲೆ ಜನರು ಕೊಳ್ಳಬಹುದಾದಷ್ಟು ಸರಕುಗಳನ್ನು (ಉದಾಹರಣೆಗೆ ಕಾರು ಇತ್ಯಾದಿ) ಕೊಂಡ ನಂತರ, ಸರಕು ಉತ್ಪಾದನೆ ಹೆಚ್ಚಳವಾಗುತ್ತಾ ಹೋದ ಹಾಗೆ ಜನರು ಕೊಳ್ಳುವ ಪ್ರಮಾಣವೂ ಏರುತ್ತಾ ಹೋಗುವುದಿಲ್ಲ. ಆಗ ಸರಕು ಉತ್ಪಾದನೆ ಬೀಳುತ್ತದೆ. ಬದಲಿಗೆ ಸಾಮಾನ್ಯ ಜನರಿಗೆ ಉದ್ಯೋಗ ನೀಡುವ ಕ್ಷೇತ್ರಗಳಿಗೆ ಪ್ರೋತ್ಸಾಹ ಹೆಚ್ಚಾಗಿ, ಜನರ ಕೈಯ್ಯಲ್ಲಿ ಹಣ ಹೆಚ್ಚಾದರೆ ಹೆಚ್ಚು ಸರಕು ಕೊಳ್ಳುತ್ತಾರೆ. ಅದಾಗದೇ ಇದ್ದಲ್ಲಿ ಬಿಕ್ಕಟ್ಟು ಉಂಟಾಗುತ್ತದೆ.

ಅಧಿಕಾರಕ್ಕೆ ಬರುವ ಮುನ್ನ ನರೇಂದ್ರ ಮೋದಿಯವರು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮಾತುಕೊಟ್ಟಿದ್ದರು. ಆ ಕುರಿತು ಪರಿಣಾಮಕಾರಿ ಯೋಜನೆಗಳನ್ನೇನೂ ರೂಪಿಸದೇ, ಆಡಳಿತಕ್ಕೆ ಬಂದ ಎರಡೂವರೆ ವರ್ಷಗಳ ನಂತರ ಏಕಾಏಕಿ ನೋಟು ಅಮಾನ್ಯೀಕರಣಕ್ಕೆ ಕೈಹಾಕಿದರು. ಇದು ಮುಂದಾಲೋಚನೆಯಿಲ್ಲದ ಅತ್ಯಂತ ಮೂರ್ಖ ಕ್ರಮವೆಂಬುದು ಇಂದು ಗೊತ್ತಾಗುತ್ತಿದೆ. ಇದರಿಂದ ಒಂದಷ್ಟು ಹಣ ಬ್ಯಾಂಕುಗಳತ್ತ ಹರಿದುಬಂದರೂ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಕೃಷಿ ಕ್ಷೇತ್ರ, ಬೃಹತ್ ಅಸಂಘಟಿತ ವಲಯ ದೊಡ್ಡ ಸಮಸ್ಯೆಗೆ ಸಿಲುಕಿತು. ನಂತರ ಮೋದಿಯವರು ಜಾರಿಗೆ ತಂದ ಜಿಎಸ್‍ಟಿ ಈ ಜನರನ್ನು ಮತ್ತಷ್ಟು ಹೈರಾಣಾಗಿಸಿತು. ನೋಟು ಅಮಾನ್ಯೀಕರಣದಿಂದ ಕೊಳ್ಳುವ ಶಕ್ತಿ ಕಳೆದುಕೊಳ್ಳುತ್ತಿದ್ದ ಜನರಿಗೆ ಹೆಚ್ಚಿನ ತೆರಿಗೆ ಹೊರೆ ಹೊರಿಸಿ ಗಾಯದ ಮೇಲೆ ಬರೆ ಎಳೆಯಲಾಯಿತು.

ಇತ್ತ ಬ್ಯಾಂಕುಗಳಿಂದ ಸಾವಿರಾರು ಕೋಟಿ ಸಾಲ ಪಡೆದಿದ್ದ ಉದ್ದಿಮೆಪತಿಗಳು ತಾವು ಉತ್ಪಾದಿಸಿದ ವಸ್ತುಗಳು ಮಾರಾಟವಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಅದರಲ್ಲಿ ಒಂದಷ್ಟು ಜನ ದೇಶ ಬಿಟ್ಟು ಓಡಿಹೋದರು. ಬ್ಯಾಂಕುಗಳು ದಿವಾಳಿಯಾಗಲು ಆರಂಭಿಸಿದವು. ಏಕೆಂದರೆ ಸುಮಾರು 13 ಲಕ್ಷ ಕೋಟಿಯಷ್ಟು ಸಾಲವನ್ನು ಈ ಉದ್ದಿಮೆಪತಿಗಳು ಮರುಪಾವತಿ ಮಾಡಿರಲಿಲ್ಲ. ಅದನ್ನು ಎನ್‍ಪಿಎ ಎಂಬ ಹೆಸರಿನೊಂದಿಗೆ ಮನ್ನಾ ಮಾಡಲಾಯಿತು. ಕೆಲವು ಉದ್ದಿಮೆಪತಿಗಳು ನಷ್ಟ ಹೊಂದಿದ್ದರೆ ಮುಖೇಶ್ ಅಂಬಾನಿ, ಗೌತಮ್ ಅದಾನಿಯಂತಹ ಕುಳಗಳು ಲಾಭದ ಮೇಲೆ ಲಾಭ ಪಡೆದರು. ತೆರಿಗೆಯ ಹೊರೆಯನ್ನು ತಪ್ಪಿಸಿಕೊಳ್ಳಲು ಇವರು ವಿದೇಶಗಳಲ್ಲಿ ತಮ್ಮ ಕಂಪನಿಗಳನ್ನು ರಿಜಿಸ್ಟರ್ ಮಾಡಿಸಿ ಅವುಗಳ ಹೆಸರಿನಲ್ಲಿ ಹಣವನ್ನು ಭಾರತದಲ್ಲಿ ಹೂಡಿಕೆ ಮಾಡಿ ಲೂಟಿ ಹೊಡೆಯಲು ಮುಂದಾದರು.

ಈ ಖಾಸಗಿ ಕುಳಗಳು ಮತ್ತಷ್ಟು ಲಾಭ ಮಾಡುವುದಕ್ಕಾಗಿ ಸರ್ಕಾರಿ ಸ್ವಾಮ್ಯದ ಕೈಗಾರಿಕೆಗಳನ್ನು ನಿರ್ಲಕ್ಷಿಸಲಾಯಿತು. ಭಾರತದ ಬಹುದೊಡ್ಡ ಸರ್ಕಾರೀ ಸ್ವಾಮ್ಯದ ಕಂಪನಿಯಾಗಿದ್ದ ಓಎನ್‍ಜಿಸಿ ಕಂಪನಿಯ ಕಚ್ಛಾ ತೈಲ ಸಂಸ್ಕರಣ ಘಟಕಗಳನ್ನು ಮುಖೇಶ್ ಅಂಬಾನಿ ಬಾಯಿಗೆ ಹಾಕಲಾಯಿತು. ಆತ ನಿಯಮ ಮೀರಿ ಒಎನ್‍ಎನ್‍ಜಿಸಿಯ ಕೊಳವೆ ಬಾವಿಗೂ ಕನ್ನ ಹಾಕಿದ್ದು, ಆ ಕೇಸಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗಳೆರಡೂ ಅಂಬಾನಿಯ ಪರವೇ ನಿಂತಿವೆ. ಇಂತಹ ಹಲವು ನೀತಿಗಳ ಪರಿಣಾಮವಾಗಿ ಆ ಸರ್ಕಾರಿ ಕಂಪನಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಷ್ಟಕ್ಕೆ ಬಂದು ನಿಂತಿದೆ. ಇನ್ನು ದೇಶದ ಮೂಲೆಮೂಲೆಗೆ ಟೆಲಿಕಾಂ ಸೇವೆ ನೀಡಿದ ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್‍ಗೆ ಇದುವರೆಗೂ 4ಜಿ ಸೇವೆಯನ್ನು ನೀಡಿಲ್ಲ. ಆದರೆ ಖಾಸಗಿ ಜಿಯೊ ಕಂಪನಿ 5ಜಿ ಫೈಬರ್‍ನೆಟ್ ಬ್ರಾಡ್‍ಬ್ಯಾಂಡ್ ಸೇವೆ ಕೊಡಲು ಮುಂದಾಗಿದೆ. ಈ ಜಿಯೊಗೆ ಮೊದಲ ದಿನದ ಜಾಹಿರಾತು ಕೊಟ್ಟವರು ಯಾರು ನೆನಪಿಸಿಕೊಳ್ಳಿ. ಈಗ ಬಿಎಸ್‍ಎನ್‍ಎಲ್ ಬಳಿ ತನ್ನ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದೇ ಪರದಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತ ಸರ್ಕಾರ ಏನು ಮಾಡಿದೆ ಗೊತ್ತೆ? ಬಿ.ಎಸ್.ಎನ್.ಎಲ್ ಎಲ್ಲಿಂದಲೂ ಸಾಲ ಪಡೆಯಬಾರದೆಂಬ ನಿರ್ಬಂಧ ವಿಧಿಸಿದೆ. ಅಂದರೆ ಬಲವಂತವಾಗಿ ಅದರ ಉಸಿರು ನಿಲ್ಲಿಸಲು ಸರ್ಕಾರವೇ ಮುಂದಾಗಿದೆ.

ಸರ್ಕಾರದ ಬಳಿ ಹಣವಿಲ್ಲವೇ?

ಮೋದಿ ನೇತೃತ್ವದ ಸರ್ಕಾರ ಜಿಎಸ್‍ಟಿ ಮೂಲಕ ಅಧಿಕ ತೆರಿಗೆ ವಿಧಿಸಿ ಹಣ ಸಂಗ್ರಹಿಸಿತು. ರಾಜ್ಯಗಳು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಕಟ್ಟುವಂತಾಯಿತು. ಜಾಗತಿಕ ಮಾರುಕಟ್ಟೆಯಲ್ಲಿ 6 ವರ್ಷಗಳಿಂದಲೂ ಪೆಟ್ರೋಲಿಯಂ ಕಚ್ಛಾ ತೈಲದ ಬೆಲೆ ಅರ್ಧಕ್ಕಿಂತ ಕಡಿಮೆಯಾಗಿದ್ದರೂ ಭಾರತದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ದರ ಏರುತ್ತಲೇ ಇದೆ. ಏಕೆಂದರೆ ಕಡಿಮೆಯಾದ ತೈಲದ ಬೆಲೆಗೆ ಹೆಚ್ಚೆಚ್ಚು ತೆರಿಗೆ ಹಾಕಿ ಬೆಲೆ ಹೆಚ್ಚಾಗುವಂತೆ ನೋಡಿಕೊಳ್ಳಲಾಗಿದೆ. ಜನಸಾಮಾನ್ಯರು ಬಳಸುವ ದಿನಬಳಕೆಯ ವಸ್ತುಗಳ ಬೆಲೆ ಏರುತ್ತಲೇ ಇದೆ. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ಕೋಟಿ ಲಾಭವಾಗಿದೆ. ಹಾಗಾದರೆ ಈ ಹಣವೆಲ್ಲಾ ಎಲ್ಲಿ ಹೋಯಿತು? ಸರ್ಕಾರ ತನ್ನ ಬಳಿ ಇದ್ದ ಹಣವನ್ನು ಯಾರ ಜೇಬಿಗೆ ಹಾಕಿದರು?

ಇದಲ್ಲದೇ, ಮೋದಿ ಸರ್ಕಾರ ಬರುವ ಹೊತ್ತಿಗೆ ಎಲ್ಲಾ ತೆರಿಗೆ ಸಂಗ್ರಹವನ್ನೂ ಆನ್‍ಲೈನ್ ಮಾಡುವ ಕೆಲಸ ಆರಂಭವಾಗಿಯಾಗಿತ್ತು. ಹಾಗಾಗಿ tax compliance ಹೆಚ್ಚಾಗಿ ತೆರಿಗೆ ಸಂಗ್ರಹವೂ ಆಗಿದೆ.

ಇಂದಿನ ಬಿಕ್ಕಟ್ಟೇನು? ಪರಿಹಾರ ಹೇಗೆ?

ವಾರದ ಹಿಂದೆ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಆರ್ಥಿಕತೆಯನ್ನು ಸುಧಾರಿಸಲು ಕಲ್ಲಿದ್ದಲು ಗಣಿಗಾರಿಕೆ ಮತ್ತು ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ಹೂಡಿಕೆಗೆ 100% ಅವಕಾಶ ಕೊಡುತ್ತೇವೆ. ಆಗ ಹೂಡಿಕೆ ಹೆಚ್ಚಾಗುತ್ತದೆ ಎಂದರು. ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಜಿ.ಎಸ್.ಟಿಯಲ್ಲಿ ಸಡಿಲಿಕೆ ಮಾಡುತ್ತೇವೆ, ಸ್ಟಾರ್ಟಪ್‍ಗಳಿಗೆ ತೆರಿಗೆ ವಿನಾಯಿತಿ ಕೊಡುತ್ತೇವೆ ಎಂದು ಘೋಷಿಸಿದ್ದಲ್ಲದೇ, 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಾಗಿ ವಿಲೀನ ಮಾಡುತ್ತೇವೆ ಎಂದರು. ಅಷ್ಟೂ ಸಾಲದೆಂಬಂತೆ ಆರ್.ಬಿ.ಐನಿಂದ 1.75 ಲಕ್ಷ ಕೋಟಿ ಮೀಸಲು ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಇದ್ಯಾವುದರಿಂದಲೂ ಸಮಸ್ಯೆ ಬಗೆಹರಿಯುವುದಿಲ್ಲ ಬದಲಿಗೆ ಹೆಚ್ಚಾಗುತ್ತದೆ. ಆಗಲೇ ಹೇಳಿದಂತೆ ರೋಗಕ್ಕೆ ಕಾರಣವನ್ನು ತಿಳಿಯದೇ ಚಿಕಿತ್ಸೆ ನೀಡಲಾಗುತ್ತಿದೆ.

ಭಾರತದಕ್ಕೆ ಹೂಡಿಕೆಯ ಕೊರತೆಯಾಗಿಲ್ಲ ಬದಲಿಗೆ ಬೇಡಿಕೆಯ ಕೊರತೆಯಾಗಿದೆ. ಇದನ್ನು ಸರ್ಕಾರ ಆದಷ್ಟು ಬೇಗ ಅರ್ಥಮಾಡಿಕೊಳ್ಳಬೇಕು. ಭಾರತದಲ್ಲಿ ಉತ್ಪಾದನಾ ಕ್ಷೇತ್ರ ಕುಂಠಿತವಾಗಲು ಕಾರಣ ಕೊಳ್ಳಲು ಜನರ ಬಳಿ ಸಾಕಷ್ಟು ಹಣವಿಲ್ಲ. ಹಾಗಾಗಿಯೇ ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪನಿಯಾದ ಮಾರುತಿ ಸುಝುಕಿ ಬಳಿ 55 ಸಾವಿರ ಕೋಟಿ ರೂ.ಗಳ ಕಾರುಗಳು ಮಾರಾಟವಾಗದೇ ಬಿದ್ದಿವೆ. ಅವರ ವ್ಯಾಪಾರ ಶೇ.30ರಷ್ಟು ಕುಸಿದಿದೆ. ಒಳಉಡುಪುಗಳ ಮಾರಾಟ ಶೇ.20ರಷ್ಟು ಕುಸಿದಿದೆ. ಪಾರ್ಲೆಜಿ ಬಿಸ್ಕೆಟ್‍ಗಳ ಮಾರಾಟದಲ್ಲಿ ಭಾರೀ ಕಡಿತ ಉಂಟಾಗಿದೆ ಎಂದು ಕಂಪನಿಯ ಸಿಇಓ ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ. ಅರ್ಧದಷ್ಟು ಅಪಾರ್ಟ್‍ಮೆಂಟ್‍ಗಳು ಕೊಳ್ಳುವವರಿಲ್ಲದೇ ಖಾಲಿ ಬಿದ್ದಿವೆ. ಗೃಹ ನಿರ್ಮಾಣ ಕ್ಷೇತ್ರ ಕುಸಿದ ಪರಿಣಾಮ ಸಿಮೆಂಟ್, ಕಬ್ಬಿಣದ ಕೊಳ್ಳುವಿಕೆ ಕಡಿಮೆಯಾಗಿದೆ. ಈ ಎಲ್ಲಾ ಕಂಪನಿಗಳಲ್ಲಿ ಉದ್ಯೋಗಿಗಳನ್ನು ಕಿತ್ತುಹಾಕುತ್ತಿದ್ದಾರೆ.

ಯಾಕೀಗೆ ಆಯಿತು? ಆಗಲೇ ಹೇಳಿದ ಹಾಗೆ ಮುಂದಾಲೋಚನೆಯಿಲ್ಲದ ನೋಟು ರದ್ದತಿ ಮತ್ತು ಜಿಎಸ್‍ಟಿಯ ಹೊಡೆತ.. ಇದರ ಜೊತೆಗೆ ಕೃಷಿಯ ನಷ್ಟ ಸೇರಿಕೊಂಡರೆ ಇನ್ನೇನಾಗುತ್ತದೆ. ಒಂದು ಕಡೆ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಜನರಿಗೆ ಆದಾಯವಿಲ್ಲದೇ ಇರುವ ಸಂದರ್ಭದಲ್ಲಿ ಕೊಳ್ಳುವ ಶಕ್ತಿ ಹೇಗೆ ಬರುತ್ತದೆ? ಕೊಳ್ಳದಿದ್ದರೆ ಉತ್ಪಾದನೆ ಹೆಚ್ಚಾಗುವುದಾದರೂ ಹೇಗೆ? ಉತ್ಪಾದನೆಯೇ ಇಲ್ಲವೆಂದ ಮೇಲೆ ಉದ್ಯೋಗಗಳು ಎಲ್ಲಿಂದ?

ಹಾಗಾಗಿ ಸರ್ಕಾರ ಸಮಸ್ಯೆಯನ್ನು ಪರಿಹರಿಸಬೇಕಾದರೆ ಮೊದಲು ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಬೇಕು. ಅಂದರೆ ಅವರ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು ಮತ್ತು ಆ ಕೊರತೆಯನ್ನು ತುಂಬಿಕೊಳ್ಳಲು ಅತೀ ಶ್ರೀಮಂತರ ಮೇಲಿನ ತೆರಿಗೆಯನ್ನು ಹೆಚ್ಚು ಮಾಡಬೇಕು. ಜನರ ಕೈಲಿ ದುಡ್ಡು ಹರಿದಾಡಬೇಕಾದರೆ ಕಲ್ಯಾಣ ಕಾರ್ಯಕ್ರಮಗಳನ್ನು ಸರ್ಕಾರ ಹೆಚ್ಚು ಮಾಡಬೇಕು. ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಹೆಚ್ಚು ಹಣ ಹೂಡಿಕೆ ಮಾಡಬೇಕು. ಮುಖ್ಯವಾಗಿ ಕೃಷಿಯನ್ನು ಮೇಲೆತ್ತಬೇಕು. ಏಕೆಂದರೆ ಇಂದಿಗೂ ದೇಶದ ಅತಿಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರ ಕೃಷಿ. ನಂತರದ ಸ್ಥಾನ ಅಸಂಘಟಿತ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಸ್ವಂತ ಉದ್ಯೋಗಗಳು. ಇವರ ಮೇಲಿನ ಅವೈಜ್ಞಾನಿಕ ಜಿಎಸ್‍ಟಿ ಹೊರೆಯನ್ನು ತಗ್ಗಿಸಬೇಕು.

ಇದರ ಜೊತೆಜೊತೆಗೆ ಸ್ಥಳೀಯ ಸಂಪನ್ಮೂಲಗಳನ್ನಾಧರಿಸಿದ ಸ್ಥಳೀಯ ಉದ್ಯೋಗಕ್ಕೆ ಒತ್ತು ಕೊಡಬೇಕು. ಸ್ಥಳೀಯ ಜನರಿಗೆ ಉದ್ಯೋಗದ ಜೊತೆಗೆ ಲಾಭವೂ ಸಿಕ್ಕರೆ ಅವರು ಕೂಡಿಡುವುದಿಲ್ಲ. ಖರ್ಚು ಮಾಡುತ್ತಾರೆ.. ನಿಧಾನಕ್ಕೆ ಬೇಡಿಕೆ ಹೆಚ್ಚಾಗುತ್ತದೆ. ಮಹಾನಗರಗಳಲ್ಲಿ ಭಾರೀ ಕೈಗಾರಿಕೆಗಳನ್ನು ಸ್ಥಾಪಿಸುವ ಬದಲು ವಿಕೇಂದ್ರೀಕೃತವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಒತ್ತು ನೀಡಬೇಕು. ಕೃಷಿಯನ್ನು ವೈಜ್ಞಾನಿಕ ಉನ್ನತ ದರ್ಜೆಗೇರಿಸಿ ರಫ್ತಿಗೆ ಉತ್ತೇಜನ ನೀಡಬೇಕು.

ತುರ್ತಾಗಿ ಮಾಡಬೇಕಾದುದೇನು?

ನಷ್ಟದಲ್ಲಿರುವ ಕಾರ್ಖಾನೆಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯದೇ ಅವರಿಗೆ ರಕ್ಷಣೆ ನೀಡಬೇಕು. ಆರ್ಥಿಕ ಪುನಶ್ಚೇತನ ಕಾಣುವವರೆಗೂ ಸರ್ಕಾರ ಮತ್ತು ಕಂಪನಿಗಳು ಅವರಿಗೆ ಸಂಬಳ ನೀಡುವ ಜವಾಬ್ದಾರಿ ತೆಗೆದುಕೊಳ್ಳಬೇಕು

ಉದ್ಯೋಗ ಸಚಿವಾಲಯವನ್ನು ಸ್ಥಾಪಿಸಿ ಉದ್ಯೋಗ ಕಳೆದುಕೊಂಡವರ ನೋಂದಣಿಯಾಗಬೇಕು. ಹೊಸ ಉದ್ಯೋಗಗಳ ಅವಕಾಶಗಳನ್ನು ಪಾರದರ್ಶಕಗೊಳಿಸಬೇಕು.

ಸಣ್ಣ ಮತ್ತು ಮಧ್ಯಮ ಕಾರ್ಖಾನೆಗಳ ಮಾಲೀಕರಿಗೆ ಬ್ಯಾಂಕುಗಳು ಈ ವರ್ಷ ಹೆಚ್ಚಿನ ಸಾಲ ನೀಡಬೇಕು ಮತ್ತು ಸಾಲ ಮರುಪಾವತಿಗೆ ಕನಿಷ್ಠ ಮೂರು ವರ್ಷಗಳ ಕಾಲಾವಧಿ ನೀಡಬೇಕು. ಅವೈಜ್ಞಾನಿಕ ಶೇ.18% ಜಿ.ಎಸ್.ಟಿ ತೆಗೆದುಹಾಕಿ ಶೇ.5%ಗೆ ಇಳಿಸಬೇಕು.

ಸರ್ಕಾರವು ನಷ್ಟದಲ್ಲಿರುವ ಆಟೋಮೊಬೈಲ್ ಮತ್ತಿತರ ಕ್ಷೇತ್ರಗಳಿಗೆ ಒಂದು ಪ್ಯಾಕೇಜ್ ಘೋಷಣೆ ಮಾಡಿ ಮಾಲೀಕರು ಮತ್ತು ಕಾರ್ಮಿಕರಿಬ್ಬರ ಹಿತ ಕಾಯಬೇಕು.

ಸರ್ಕಾರದ ನೀತಿಗಳು ಕೂಡಲೇ ಬದಲಾಗಬೇಕು. ದೊಡ್ಡ ಬಂಡವಾಳಿಗರಿಗೆ ಸಾಲ ನೀಡುವುದು ನಿಲ್ಲಬೇಕು. ಅವರನ್ನು ಸಾಲವನ್ನು ವಸೂಲು ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರವನ್ನು ದಕ್ಷಗೊಳಿಸಬೇಕು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...