ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ವಿ ರಾಜು ಅವರು ಇಂದು (ಫೆ.18) ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದರು.
ಇಡಿಯನ್ನು ರಾಜ್ಯದಲ್ಲಿ (ಪಶ್ಚಿಮ ಬಂಗಾಳದಲ್ಲಿ) ಆಯುಧವನ್ನಾಗಿ ಬಳಸಲಾಗುತ್ತಿದೆ ಎಂಬ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರ ವಾದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ರಾಜು ಅವರು, “ಇಡಿಯನ್ನು ಆಯುಧವನ್ನಾಗಿ ಮಾಡಲಾಗಿಲ್ಲ, ಬದಲಾಗಿ ಅದನ್ನು ಪಶ್ಚಿಮ ಬಂಗಾಳದಲ್ಲಿ ಭಯಭೀತಗೊಳಿಸಲಾಗಿದೆ” ಎಂದರು.
ಪಶ್ಚಿಮ ಬಂಗಾಳ ಸರ್ಕಾರವು ತನಿಖೆಗೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ಇಡಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 18ಕ್ಕೆ ಮುಂದೂಡಿತು.
ಇಡಿಯು ಪಶ್ಚಿಮ ಬಂಗಾಳದ ಆಡಳಿತರೂಢ ಟಿಎಂಸಿ ಪಕ್ಷದ ರಾಜಕೀಯ ಸಲಹಾ ಸಂಸ್ಥೆಯಾದ ಐ-ಪ್ಯಾಕ್ ಕಚೇರಿಯಲ್ಲಿ ನಡೆಸುತ್ತಿದ್ದ ಶೋಧ ಕಾರ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಸಂವಿಧಾನದ 32ನೇ ವಿಧಿಯಡಿ ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯದ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಸಲ್ಲಿಸಲಾದ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ನಡೆಸಿತು.
ಇಡಿ ಅಧಿಕಾರಿಗಳ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ದಾಖಲಿಸಿರುವ ಮೂರು ಎಫ್ಐಆರ್ಗಳ ಮುಂದಿನ ಪ್ರಕ್ರಿಯೆಗಳಿಗೆ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಈ ಪ್ರಕರಣವು ದೇಶದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ. ಒಂದು ವೇಳೆ ಈ ಹಂತದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸದಿದ್ದರೆ, ರಾಜ್ಯದಲ್ಲಿ ‘ಅರಾಜಕತೆ’ ಅಥವಾ ಕಾನೂನು ರಹಿತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದೆ.
ಜನವರಿ 8ರಂದು ಶೋಧ ಕಾರ್ಯ ನಡೆದ ಐ-ಪ್ಯಾಕ್ ಕಚೇರಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ಕ್ಯಾಮರಾಗಳು ಹಾಗೂ ದೃಶ್ಯಾವಳಿಗಳನ್ನು ಹೊಂದಿರುವ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಯಾವುದೇ ಬದಲಾವಣೆ ಮಾಡದೆ ಸಂರಕ್ಷಿಸಿಡಬೇಕೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಇತ್ತೀಚೆಗೆ, ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸಿದ್ದು, ಇಡಿ ಅರ್ಜಿಯ ಸಿಂಧುತ್ವವನ್ನೇ ಪ್ರಶ್ನಿಸಿದೆ. ಇದೇ ರೀತಿಯ ವಿಷಯಕ್ಕೆ ಸಂಬಂಧಿಸಿದ ವಿಚಾರಣೆಯು ಈಗಾಗಲೇ ಕಲ್ಕತ್ತಾ ಹೈಕೋರ್ಟ್ನಲ್ಲಿ ಬಾಕಿ ಇರುವುದರಿಂದ, ಸುಪ್ರೀಂ ಕೋರ್ಟ್ನಲ್ಲಿ ಈ ಅರ್ಜಿಯು ವಿಚಾರಣೆಗೆ ಅರ್ಹವಲ್ಲ ಎಂದು ರಾಜ್ಯ ಸರ್ಕಾರ ವಾದಿಸಿದೆ.
ಇಡಿಯು ಸಂವಿಧಾನದ 32ನೇ ವಿಧಿಯಡಿ ಅರ್ಜಿ ಸಲ್ಲಿಸುವುದನ್ನು ರಾಜ್ಯವು ವಿರೋಧಿಸಿದೆ. ಈ ವಿಧಿಯು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಇರುವುದೇ ಹೊರತು, ಕೇಂದ್ರದ ತನಿಖಾ ಸಂಸ್ಥೆಯು ಇದನ್ನು ಬಳಸಲು ಸಾಧ್ಯವಿಲ್ಲ ಎಂಬುದು ಪಶ್ಚಿಮ ಬಂಗಾಳ ಸರ್ಕಾರದ ವಾದವಾಗಿದೆ.
ಇಡಿಯು ಯಾವುದೇ ಮುನ್ಸೂಚನೆ ನೀಡದೆ ಶೋಧ ನಡೆಸುವ ಮೂಲಕ ವ್ಯಕ್ತಿಗಳ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದೆ ಮತ್ತು ತನಿಖೆಯ ನೆಪದಲ್ಲಿ ರಾಜಕೀಯ ಡೇಟಾವನ್ನು ಪಡೆಯಲು ಪ್ರಯತ್ನಿಸುತ್ತಿದೆ ಎಂದು ಅಫಿಡವಿಟ್ನಲ್ಲಿ ಆರೋಪಿಸಲಾಗಿದೆ.
ಚುನಾವಣಾ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಈ ಶೋಧ ನಡೆಸಲಾಗಿದೆ ಮತ್ತು ಇಡಿ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದೆ ಎಂದು ರಾಜ್ಯ ಸರ್ಕಾರವು ಪ್ರತಿಪಾದಿಸಿದೆ. ವಾದ-ಪ್ರತಿವಾದಗಳನ್ನು ಗಮನಿಸಿದ ಸುಪ್ರೀಂ ಕೋರ್ಟ್, ಇಡಿ ತನ್ನ ಉತ್ತರವನ್ನು ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮಾರ್ಚ್ 18, 2026ಕ್ಕೆ ಮುಂದೂಡಿದೆ.


