ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಬಂಧಿಸಿದ ತಿರುಚಿದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತೆಲಂಗಾಣ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿಗೆ ಸಮನ್ಸ್ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.
ದೆಹಲಿ ಪೊಲೀಸರು ರೇವಂತ್ ರೆಡ್ಡಿಯನ್ನು ವಿಚಾರಣೆಗಾಗಿ ಮೇ 1 ರಂದು ಕರೆದಿದ್ದಾರೆ, ಜೊತೆಗೆ ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳು ತರಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ತಿರುಚಿದ ವೀಡಿಯೊಗಳನ್ನು ಹಂಚಿಕೊಂಡ ಕೆಲವು ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನೂ ಐದು ಜನರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯ ಮತ್ತು ಬಿಜೆಪಿಯ ದೂರಿನ ಮೇರೆಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ದೆಹಲಿ ಪೊಲೀಸ್ ವಿಶೇಷ ಘಟಕವು ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.
“ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮುದಾಯಗಳ ನಡುವೆ ಅಸಂಗತತೆಯನ್ನು ಉಂಟುಮಾಡುವ ಉದ್ದೇಶದಿಂದ ಕೆಲವು ತಿರುಚಿದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ; ‘ರಾಜ್ಯದ ಮನರೇಗಾ ಕಾರ್ಮಿಕರ ವೇತನವನ್ನು ಯಾವಾಗ ಕೊಡ್ತೀರಾ..’; ಸರ್ಕಾರವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್ ತಿರುಗೇಟು