ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ನಡೆದಿದ್ದ ಕೊಲೆ ಪ್ರಕರಣಗಳು ಮತ್ತು ಸೌಜನ್ಯ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಕುರಿತು ನಿರಂತರ ಸುದ್ದಿ ಮಾಡಿದ್ದಕ್ಕೆ ಕೋರ್ಟ್ ಮೂಲಕ ಆದೇಶ ಕೊಡಿಸಿ ‘ಈದಿನ.ಕಾಮ್’ ಯೂಟ್ಯೂಬ್ ಚಾನೆಲ್ ಅನ್ನು ಬ್ಲಾಕ್ ಮಾಡಿಸಲಾಗಿತ್ತು. ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ನ ಸುನೀಲ್ ದತ್ ಯಾದವ್ ಅವರ ಪೀಠವು ಚಾನೆಲ್ ‘ಬ್ಲಾಕ್’ ಆದೇಶಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.
‘ಈದಿನ’ ಯೂಟ್ಯೂಬ್ ಚಾನೆಲ್ ನಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ಚರ್ಚೆ ಮಾಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿತ್ತು. ಆದರೆ, ಈ ಬೆದರಿಕೆಗೆ ತಲೆಬಾಗದ ಸಂಸ್ಥೆಯು ನ್ಯಾಯಾಂಗ ಹೋರಾಟಕ್ಕೆ ಮುಂದಾಗಿತ್ತು.
2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಆರೋಪಿಗಳು ಯಾರು ಎಂಬುದು ಹತ್ತು ವರ್ಷದ ಬಳಿಕವೂ ಇನ್ನೂ ಪತ್ತೆಯಾಗಿಲ್ಲ. ಇದೊಂದೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ.
ಊರಿನ ಪ್ರಭಾವಿ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿಬರುತ್ತಿರುವ ಹೊತ್ತಿನಲ್ಲಿ, ಅದರ ಕುರಿತು ವಸ್ತುನಿಷ್ಠ ವರದಿ ಮಾಡಿದ ಹಲವು ಸ್ವತಂತ್ರ ಮಾಧ್ಯಮಗಳು ಮತ್ತು ಯೂಟ್ಯೂಬರ್ಗಳ ಮೇಲೆ ಕೋರ್ಟ್ ಮೂಲಕ ನಿರ್ಬಂಧ ಹೇರಲಾಗುತ್ತಿದೆ. ಅದೇ ಪ್ರಭಾವಿ ಕುಟುಂಬದ ಕಾನೂನು ತಂಡವು, ಈದಿನ.ಕಾಮ್, ಕುಡ್ಲ ರಾಂಪ್ ಪೇಜ್, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣನವರ್ ಸೇರಿದಂತೆ ಹಲವರ ವಿರುದ್ಧ ಕೋರ್ಟ್ನಿಂದ ‘ಬ್ಲಾಕೆಂಟ್’ ಆದೇಶದ ಮೂಲಕ ವಿಡಿಯೊ ಪ್ರಕಟಿಸದಂತೆ ತಡೆ ತಂದಿದ್ದರು.
ಈದಿನ.ಕಾಮ್ ಸೇರಿದಂತೆ ಹಲವು ಚಾನೆಲ್ಗಳ ತಡೆಗೆ ಕೋರ್ಟ್ ಯೂಟ್ಯೂಬ್ ಸಂಸ್ಥೆಗೆ ಆದೇಶ ನೀಡಿದ್ದು, ಈ ಬೆಳವಣಿಗೆಯನ್ನು ಹಲವರು ಖಂಡಿಸಿದ್ದಾರೆ. ಆರೋಪಿತ ‘ಪ್ರಭಾವಿ ಕುಟುಂಬ’ವು ಕಾನೂನುನಿನ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ. ಭಾರತೀಯ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಬರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈದಿನ ತಂಡದ ಪರವಾಗಿ ವಾದಿಸಿದ ಹೈಕೋರ್ಟ್ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ, “ಭಾರತದ ಐಟಿ ಕಾಯ್ದೆ ಅಡಿಯಲ್ಲಿ ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ವಿಷಯವನ್ನು ಪ್ರಕಟಿಸಿದಲ್ಲಿ ಮಾತ್ರ ನಿರ್ಬಂಧಿಸಲು ಅಥವಾ ಬ್ಲಾಕ್ ಮಾಡುವ ಅಧಿಕಾರವನ್ನು ಹೊಂದಿದೆ. ಆದರೆ, ಅದ್ಯಾವುದನ್ನು ಮಾಡದೇ ಇದ್ದರೂ ಕೂಡ ಈ ಹಿಂದಿನ ಮಧ್ಯಂತರ ಆದೇಶದ ಮೇರೆಗೆ ಈದಿನ ಯೂಟ್ಯೂಬ್ ಅನ್ನು ಬ್ಲಾಕ್ ಮಾಡಲಾಗಿದೆ. ಈದಿನ ಸಂಸ್ಥೆಯು ಈಗಾಗಲೇ 3.8 ಲಕ್ಷ ಚಂದಾದಾರರನ್ನು ಹೊಂದಿದ್ದು, ಈದಿನ ಡಾಟ್ ಕಾಮ್ ಮಾಧ್ಯಮವು ಕಳೆದ ಮೂರು ವರ್ಷಗಳಿಂದ ಸಮಾಜದ, ಸಮುದಾಯದ ಉನ್ನತಿಗಾಗಿ ಕೆಲಸ ಮಾಡುತ್ತಿರುವ ಜವಾಬ್ದಾರಿಯುವ ಮಾಧ್ಯಮ ಸಂಸ್ಥೆಯಾಗಿದೆ. ಹಾಗಾಗಿ, ಈ ಬ್ಲಾಕ್ ಮಾಡುವಂತೆ ಮಾಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್ಗೆ ನಿರ್ದೇಶನ ನೀಡಬೇಕು” ಎಂದು ವಿನಂತಿಸಿದರು.
ಈ ಮನವಿಯನ್ನು ಪುರಸ್ಕರಿಸಿದ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು, ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್ಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ, ಈ ಹಿಂದಿನ ಸಿವಿಲ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದರು. ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶವನ್ನು ಹೈಕೋರ್ಟ್ ಪ್ರಕಟಿಸಲಿದೆ.
ಈ ದಿನ ಡಾಟ್ ಕಾಮ್ ತಂಡದ ಪರವಾಗಿ ಹೈಕೋರ್ಟ್ನಲ್ಲಿ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ , ಮೈತ್ರೇಯಿ ಕೃಷ್ಣನ್ ವಾದಿಸಿದರು. ಧರ್ಮಸ್ಥಳ ದೇವಸ್ಥಾನ ಟ್ರಸ್ಟ್ನ ಪರವಾಗಿ ಹಿರಿಯ ವಕೀಲ, ಮಾಜಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಹಾಜರಿದ್ದರು.
ಈ ಹಿಂದಿನ ಹೈಕೋರ್ಟ್ನ ಮಧ್ಯಂತರ ಆದೇಶದಿಂದಾಗಿ ಈದಿನ ಯೂಟ್ಯೂಬ್ ಚಾನೆಲ್ನನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿದ್ದರಿಂದ ಈದಿನ ಟಿವಿ ಯೂಟ್ಯೂಬ್ ಚಾನೆಲ್ ಕಾರ್ಯ ನಿರ್ವಹಿಸುತ್ತಿತ್ತು.
ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್ಗಳು ಬ್ಲಾಕ್; ‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?


