ಪಶ್ಚಿಮ ಉತ್ತರ ಪ್ರದೇಶದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಕೆಲವೇ ದಿನಗಳಲ್ಲಿ, ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.
ಚುನಾವಣಾ ಅವಧಿಯಲ್ಲಿ ತಮ್ಮ ರಾಜ್ಯಗಳೊಳಗಿನ ಚುನಾವಣೆ ಪ್ರಚಾರಕ್ಕೆ ಬರುವವರಿಗೆ ಸೂಕ್ತ ಭದ್ರತೆ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದೆ.
ಫೆಬ್ರವರಿ 5 ರಂದು ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, “ಐದು ರಾಜ್ಯಗಳ ಶಾಸಕಾಂಗ ಸಭೆಗಳಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರು ಭದ್ರತಾ ಸಮಸ್ಯೆಗಳನ್ನು ಎದುರಿಸಿದ್ದಾರೆ ಎಂಬುದು ತಮ್ಮ ಗಮನಕ್ಕೆ ಬಂದಿದೆ” ಎಂದು ಇಸಿ ಹೇಳಿದೆ.
’ಸ್ಟಾರ್ ಪ್ರಚಾರಕರು ಚುನಾವಣಾ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಯಲು ಅವರ ಭದ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅವರು ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂಬ ವಿಷಯ ತಿಳಿದುಕೊಂಡಿದ್ದು, ಅವರನ್ನು ಚುನಾವಣಾ ಪ್ರಚಾರಗಳಿಗೆ ನೇಮಿಸುವ ರಾಜಕೀಯ ಪಕ್ಷಗಳು ಚುನಾವಣೆ ನಡೆಸುವ ಅವಧಿಯಲ್ಲಿ ರಾಜ್ಯದೊಳಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು” ಎಂದು ಹೇಳಿದೆ.
ಇದನ್ನೂ ಓದಿ: ‘ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 2 ಸಿಎಂ, 3 ಡಿಸಿಎಂ’: ಅಸಾದುದ್ದೀನ್ ಓವೈಸಿ
ಚುನಾವಣಾ ಆಯೋಗದ ಪತ್ರವು ಯಾವುದೇ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸದಿದ್ದರೂ, ಇತ್ತಿಚೇಗೆ ಗುಂಡಿನ ದಾಳಿಗೆ ಒಳಗಾದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಪ್ರಮುಖ ಸ್ಟಾರ್ ಪ್ರಚಾರಕರಾಗಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರಿಗೆ ಅಗತ್ಯ ಭದ್ರತೆ ಒದಗಿಸಲು ಭೇಟಿಯ ಯೋಜನೆ, ಮಾರ್ಗದ ನಕ್ಷೆ ಮತ್ತು ಇತರ ಅಗತ್ಯ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಮತ್ತು ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಒದಗಿಸಬೇಕು ಎಂದು ಆಯೋಗ ಸೂಚಿಸಿದೆ.
“ಸ್ಟಾರ್ ಪ್ರಚಾರಕರ ಭದ್ರತಾ ವ್ಯವಸ್ಥೆಗಳನ್ನು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಿಂದ ನೇಮಕವಾದ ರಾಜ್ಯ ಮಟ್ಟದಲ್ಲಿ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಮೇಲ್ವಿಚಾರಣೆ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಉತ್ತರ ಪ್ರದೇಶದ ಮೀರತ್ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿಯಾದ ಬೆನ್ನಲ್ಲೇ ಈ ಆದೇಶ ನೀಡಲಾಗಿದೆ. ಮೀರತ್ನ ಕಿತೌಧ್ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ: ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ