Homeಮುಖಪುಟರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

- Advertisement -
- Advertisement -

ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರುವಂತೆ ಮಾಡಿದೆ. ಈ ರೈತ ಹೋರಾಟದ ಯಶಸ್ಸಿನಲ್ಲಿ ಪಂಜಾಬ್ ರೈತರು ಅತಿ ಮಹತ್ವದ ಪಾತ್ರ ವಹಿಸಿದ್ದರು. ಮೊದಲಿಗೆ ಅಲ್ಲಿನ 32 ಸಂಘಟನೆಗಳು ಒಟ್ಟಾಗಿ ದೆಹಲಿಗೆ ಧಾವಿಸಿ ಇಡೀ ಪ್ರಪಂಚವೇ ತಮ್ಮೆಡೆಗೆ ತಿರುಗಿ ನೋಡುವಂತೆ ಮಾಡಿದರು. ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ದಿಟ್ಟವಾಗಿ ಹೋರಾಡಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮತ್ತು ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆಗಾಗಿ ಸಮಿತಿ ರಚಿಸುವಂತೆ ಮಾಡಿದರು. ಈಗ ಎಲ್ಲರ ಪ್ರಶ್ನೆ ಮುಂಬರುವ ಫೆಬ್ರವರಿ 20ರಂದು ರಾಜ್ಯದಲ್ಲಿ ನಡೆಯುವ ಚುನಾವಣೆಯಲ್ಲಿ ರೈತರ ಬೆಂಬಲ ಯಾರಿಗಿರುತ್ತದೆ ಎಂಬುದು ಮತ್ತು ಆ ಬೆಂಬಲದೊಂದಿಗೆ ಆ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಬಲ್ಲುದೇ ಎಂದು.

ಇದಕ್ಕೆ ಉತ್ತರ ಅಷ್ಟು ಸರಳವಾಗಿಲ್ಲ. ಆದರೆ ಬಿಜೆಪಿ ಅಂತೂ ರೈತ ದ್ರೋಹಿ ಪಕ್ಷ ಎಂಬ ಹಣೆಪಟ್ಟಿ ಪಡೆದಿದೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಮರಿಂದರ್ ಸಿಂಗ್‌ರವರ ಪಂಜಾಬ್ ಲೋಕ್ ಕಾಂಗ್ರೆಸ್ ಸಹ ರೈತರ ವಿರೋಧ ಎದುರಿಸಬೇಕಾಗಿದೆ. ಈ ನಡುವೆ ರೈತರ ಕೆಲವು ಸಂಘಟನೆಗಳು ತಾವೇ ಸಂಯುಕ್ತ ಸಮಾಜ್ ಮೋರ್ಚಾ ಎಂಬ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಅದರಿಂದ ಅಂತರ ಕಾಯ್ದುಕೊಂಡಿದೆ. ಈ ಎಲ್ಲಾ ಕಾರಣಗಳಿಗಾಗಿ ಈ ಬಾರಿಯ ಚುನಾವಣೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಅಮರಿಂದರ್ ಸಿಂಗ್‌

ರೈತ ಹೋರಾಟವೊಂದೇ ಚುನಾವಣೆಯನ್ನು ನಿರ್ಧರಿಸುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಈ ಬಾರಿ ಪಂಜಾಬ್ ಜನರು ಎಲ್ಲಾ ಪಕ್ಷದ ಅಭ್ಯರ್ಥಿಗಳನ್ನು ಪ್ರಶ್ನಿಸುತ್ತಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆ ತೋರಿಸಿ ಅನ್ನುತ್ತಿದ್ದಾರೆ. ಪಂಜಾಬ್ ಹೆಚ್ಚು ಸಾಲ ಮಾಡಿದ ರಾಜ್ಯಗಳ ಪಟ್ಟಿಯಲ್ಲಿರವುದೇಕೆ ಎಂದು ಕೇಳುತ್ತಿದ್ದಾರೆ. ಇವನ್ನು ಹೊರತುಪಡಿಸಿ “ಪಂಜಾಬ್‌ನ ಮೂರು ಭಾಷಿಕ ಪ್ರದೇಶಗಳು, ಜಾತಿ, ಧರ್ಮ, ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳು ಹಾಗೂ ಪ್ರತಿ ಕ್ಷೇತ್ರದ ಅಭ್ಯರ್ಥಿಗಳು ಯಾರು ಎಂಬೆಲ್ಲಾ ಅಂಶಗಳು ಈ ಚುನಾವಣೆಯಲ್ಲಿ ಯಾರು ಬಹುಮತ ಪಡೆಯುತ್ತಾರೆ ಎಂಬುದನ್ನು ನಿರ್ಧರಿಸುತ್ತವೆ” ಎನ್ನುತ್ತಾರೆ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಯುವ ರೈತ ಬಲ್ಜಿತ್ ಸಿಂಗ್.

ಓಡುವ ಕುದುರೆ ಬೆನ್ನೇರಿದ ಕಾಂಗ್ರೆಸ್ ಚುನಾವಣೆಗೆ ಆರು ತಿಂಗಳು ಇರುವಂತೆಯೇ ಕಾಂಗ್ರೆಸ್ ಮುಖ್ಯಮಂತ್ರಿ ಸ್ಥಾನದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್‌ರವರನ್ನು ಕೆಳಗಿಳಿಸಿ ದಲಿತ ಸಮುದಾಯದ ಚರಣ್‌ಜಿತ್ ಸಿಂಗ್ ಚನ್ನಿಯವರನ್ನು ಸಿಎಂ ಮಾಡಿತು. ಇದಕ್ಕೆ ಮುಖ್ಯ ಕಾರಣ ನವಜೋತ್ ಸಿಂಗ್ ಸಿಧುವಾಗಿದ್ದರೂ ಚನ್ನಿ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಲ್ಪಾವಧಿಯಲ್ಲಿ ಒಳ್ಳೆಯ ಹೆಸರು ಗಳಿಸಿದ್ದಾರೆ. ಜನರ ಕೈಗೆ ಸಿಗುವ ಸಿಎಂ ಎಂಬ ಮಾತು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ. ತೀವ್ರ ಭ್ರಷ್ಟಾಚಾರ ಮತ್ತು ಜನರಿಗೆ ಸಿಗುತ್ತಿಲ್ಲ ಎಂಬುದು ಹಿಂದಿನ ಸಿಎಂ ಅಮರಿಂದರ್ ಮೇಲಿದ್ದ ಆರೋಪ. ಅದನ್ನು ಚೆನ್ನಿ ತೊಡೆದುಹಾಕಿ ಬರುವ ಚುನಾವಣೆಯಲ್ಲಿ ತಾನೇ ಸಿಎಂ ಅಭ್ಯರ್ಥಿ ಎಂಬ ಸಂದೇಶ ರವಾನಿಸಿದ್ದಾರೆ.

ಪಂಜಾಬ್‌ನಲ್ಲಿ 34 ಎಸ್‌ಸಿ ಮೀಸಲು ಕ್ಷೇತ್ರಗಳಿವೆ. ಶೇ.32ರಷ್ಟು ಸಂಖ್ಯೆಯ ದಲಿತ ಸಮುದಾಯವಿದೆ. ಅವರಲ್ಲಿ ಹೆಚ್ಚಿನವರು 2017ರಲ್ಲಿ ಆಪ್ ಪಕ್ಷಕ್ಕೆ ಮತ ಚಲಾಯಿಸಿದ್ದರು ಎಂಬ ವರದಿಯಿದೆ. ಆಪ್ ಚಿಹ್ನೆ ಪೊರಕೆಯಾಗಿದ್ದ ಕಾರಣಕ್ಕೂ ಬಹಳಷ್ಟು ದಲಿತರು ಅದು ನಮ್ಮದು ಎಂದುಕೊಂಡು ಬೆಂಬಲಿಸಿದ್ದರು. ಈ ಬೆಂಬಲ ಈಗಲೂ ಉಳಿದಿದೆ ಎನ್ನಲಾಗುತ್ತಿದ್ದರೂ, ಚನ್ನಿಯವರು ಸಹ ದಲಿತರಾದ್ದರಿಂದ ಕಾಂಗ್ರೆಸ್‌ಗೆ ಒಂದಷ್ಟು ದಲಿತ ಸಮುದಾಯದ ಮತಗಳು ಬರುವುದು ಗ್ಯಾರಂಟಿ.

ಇನ್ನು ಮೋದಿಯವರ ಭದ್ರತಾ ಲೋಪ ಆರೋಪದ ಸಂದರ್ಭದಲ್ಲಿ ಅದನ್ನು ಚನ್ನಿಯವರು ನಿಭಾಯಿಸಿದ ರೀತಿಗೆ ಒಂದು ದೊಡ್ಡ ವರ್ಗದಿಂದ ಪ್ರಶಂಸೆ ವ್ಯಕ್ತವಾಗಿತ್ತು. ಭದ್ರತಾ ಲೋಪ ಸಂಭವಿಸಿಲ್ಲ, ಮೋದಿಯವರ ಚುನಾವಣಾ ರ್‍ಯಾಲಿಗೆ ಜನ ಬಾರದೇ ಇದ್ದುದ್ದಕ್ಕೆ ಈ ನಾಟಕ ಆಡುತ್ತಿದ್ದಾರೆ ಎಂದು ಅವರು ಬಹಿರಂಗವಾಗಿ ಆರೋಪಿಸಿದ್ದರು. ಫ್ಲೈ ಓವರ್‌ನಲ್ಲಿ ಪ್ರತಿಭಟಿಸುತ್ತಿದ್ದರು ಎಂದು 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿದ್ದರು. ಮಾಧ್ಯಮಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದಲ್ಲದೆ, ಮಾಧ್ಯಮಗಳ ಎದುರೇ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಬಳಿ ತೆರಳಿ ಬಿಜೆಪಿ ಸದಸ್ಯರ ಕೈ ಹಿಡಿದು ಮಾತನಾಡಿಸುವ ಸಂಯಮ ತೋರಿದ್ದರು. ಬಿಜೆಪಿ ಪಂಜಾಬಿಯನ್ನರನ್ನು ಆರೋಪಿಗಳನ್ನಾಗಿಸುತ್ತಿದೆ ಎಂಬ ಭಾವನೆಗೆ ಪುಷ್ಟಿ ನೀಡಿ ಮಾಧ್ಯಮಗಳನ್ನು ನಿಭಾಯಿಸಿದ್ದರು. ಈ ಎಲ್ಲಾ ಘಟನೆಗಳ ಜೊತೆಗೆ ಅವರೊಬ್ಬ ಸಮರ್ಥ ಆಡಳಿತಗಾರ ಎಂಬ ಹೆಸರು ಅವರಿಗೆ ಧನಾತ್ಮವಾಗಿ ಕೆಲಸ ಮಾಡುತ್ತಿದೆ. ದೆಹಲಿ ರೈತ ಹೋರಾಟದಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ ಸಮರ್ಪಕ ಪರಿಹಾರ, ಸರ್ಕಾರಿ ಉದ್ಯೋಗ ನೀಡುವುದು, ಹೊಸ ಯೋಜನೆಗಳನ್ನು ಘೋಷಿಸುವುದು ಸೇರಿ ಚನ್ನಿಯವರು ಅಲ್ಪಾವಧಿಯಲ್ಲಿ ಮುನ್ನಲೆಗೆ ಬಂದಿದ್ದಾರೆ.

ಚರಣ್‌ಜಿತ್ ಸಿಂಗ್ ಚನ್ನಿ

ಪಕ್ಷದ ಆಂತರಿಕ ಸಮೀಕ್ಷೆಗಳಲ್ಲಿ ಚನ್ನಿ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಕಾಂಗ್ರೆಸ್‌ನ ಕೆಲ ಮುಖಂಡರು ತಿಳಿಸಿದ್ದಾರೆ. ನಟ ಸೋನು ಸೂದ್‌ರವರ ಸಹೋದರಿ ಕಾಂಗ್ರೆಸ್ ಸೇರಿದ ನಂತರ ಸೋನು ಸೂದ್ ಸಹ ಚನ್ನಿ ಪರವಾಗಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಸನ್ನಿವೇಶಗಳು ಚನ್ನಿಯವರ ಪರವಾಗಿವೆ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಓಡುವ ಕುದುರೆಯ ಬೆನ್ನೇರಿದೆ. ಆದರೆ ತಾನು ಸಿಎಂ ಆಗಬೇಕು ಎಂದು ಕನಸು ಕಾಣುತ್ತಿರುವ ನವಜೋತ್ ಸಿಂಗ್ ಸಿಧು ಕಾಂಗ್ರೆಸ್‌ಗೆ ಮುಳುವಾಗುವ ಸಂಭವವಿದೆ. ಕಾಂಗ್ರೆಸ್ ಇನ್ನೂ ಪಕ್ಷದ ಸಿಎಂ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸದಿದ್ದರೂ ಚನ್ನಿ ಬಹುತೇಕ ಖಚಿತ ಅಭ್ಯರ್ಥಿ ಎನ್ನಲಾಗುತ್ತಿದೆ. ಒಂದು ಪಕ್ಷ ನವಜೋತ್ ಸಿಂಗ್ ಸಿಧು ಬಂಡಾಯವೆದ್ದಲ್ಲಿ ಅದು ಕಾಂಗ್ರೆಸ್ ಪಾಲಿಗೆ ಬಹುದೊಡ್ಡ ನಷ್ಟವಾಗಲಿದೆ.

ಆಪ್ ಈ ಬಾರಿಯೂ ಟ್ರೇನ್ ಮಿಸ್ ಮಾಡಿಕೊಳ್ಳಲಿದೆಯೇ?

ದೆಹಲಿಯ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಆಮ್ ಆದ್ಮಿ ಪಕ್ಷ 2017ರ ಪಂಜಾಬ್ ಚುನಾವಣೆಯಲ್ಲಿಯೂ ಅಧಿಕಾರ ಹಿಡಿಯುವ ಕನಸು ಕಂಡಿತ್ತು. ಉತ್ತಮ ಹೋರಾಟ ನೀಡಿದ ಆಪ್ ಮೊದಲ ಚುನಾವಣೆಯಲ್ಲಿಯೇ ಶೇ.23.80ರಷ್ಟು ಮತಗಳೊಂದಿಗೆ 20 ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನದೊಂದಿಗೆ ಅಧಿಕೃತ ವಿರೋಧ ಪಕ್ಷವಾಯಿತು. ಅದಕ್ಕೂ ಮುಂಚೆ ಅಧಿಕಾರದಲ್ಲಿದ್ದ ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ಮೈತ್ರಿಕೂಟವನ್ನು ಮೂರನೇ ಸ್ಥಾನಕ್ಕೆ ತಳ್ಳಿತ್ತು. 2017ರಲ್ಲಿ ಆಪ್‌ಗೆ ಮುಳುವಾಗಿದ್ದು ನಾಯಕತ್ವದ ಮುಖ. ಆಗ ಆಪ್‌ಗೆ ಕೊನೆ ಕ್ಷಣದವರೆಗೂ ಮುಖ್ಯಮಂತ್ರಿ ಅಭ್ಯರ್ಥಿ ಸಿಕ್ಕಿರಲಿಲ್ಲ.

ಈ ಬಾರಿ ಭಗವಂತ್ ಮನ್‌ರವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಅಂತಿಮ ಕ್ಷಣದಲ್ಲಿ ಆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಆಪ್ ಪ್ರಯತ್ನಿಸಿದೆ. ಇಷ್ಟು ದಿನ ತೆಗೆದುಕೊಂಡಿದ್ದಕ್ಕೆ ಬೇರೆ ಯಾರೂ ಸಿಗಲಿಲ್ಲ ಎಂಬುದೇ ಕಾರಣವಾಗಿದೆ. ಮನ್ ಇದ್ದುದರಲ್ಲೇ ವಾಸಿ ಎಂಬ ಅಂತಿಮ ಆಯ್ಕೆಯಾಗಿದೆ. ಕೆಲ ಸಮೀಕ್ಷೆಗಳು ಆಪ್ ಪರವಾಗಿಯೇ ಬಂದಿವೆ. ಉತ್ತಮ ವಾಗ್ಮಿಯೂ ಆದ ಭಗವಂತ್ ಮನ್‌ರನ್ನು ಪಂಜಾಬ್ ಜನ ತಮ್ಮ ಸಿಎಂ ಎಂದು ಸ್ವೀಕರಿಸುತ್ತಾರೆಯೇ ಎಂಬ ಸಂದೇಹ ಬಹಳಷ್ಟು ಜನರಿಗಿದೆ.

ಭಗವಂತ್ ಮನ್‌

ಇನ್ನೊಂದೆಡೆ ರೈತರು ಸ್ಥಾಪಿಸಿರುವ ಸಂಯುಕ್ತ ಸಮಾಜ್ ಮೋರ್ಚಾ ಪಕ್ಷವು ಆಪ್ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆ, ರೈತರು ಆಪ್ ಬೆಂಬಲಿಸುತ್ತಾರೆ ಎಂಬ ಮಾತು ಸಹ ಹರಿದಾಡುತ್ತಿದೆ. ಇವೆಲ್ಲವೂ ಮತಗಳಾಗಿ ಎಷ್ಟು ಬದಲಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ಅಮರಿಂದರ್ ಸಿಂಗ್ ಕಾಂಗ್ರೆಸ್‌ನ ಸಿಎಂ ಆಗಿದ್ದರೆ ಆಪ್‌ಗೆ ಈ ಚುನಾವಣೆಯಲ್ಲಿ ಬಹುಮತ ಸಾಧಿಸುವ ಸಾಧ್ಯತೆಯಿತ್ತು. ಆದರೆ ಅಮರಿಂದರ್ ಬದಲಿಗೆ ಚನ್ನಿ ಸಿಎಂ ಆದ ನಂತರ ಕಾಂಗ್ರೆಸ್‌ಗೆ ಹೊಸ ಶಕ್ತಿ ಬಂದಿದೆ. ಹಾಗಾಗಿ ಅಲ್ಪ ಅಂತರದಲ್ಲಿ ಆಪ್ ಈ ಬಾರಿಯೂ ಟ್ರೇನ್ ಮಿಸ್ ಮಾಡಿಕೊಳ್ಳುತ್ತದೆ ಎಂಬುದು ಕೆಲವು ರಾಜಕೀಯ ಪಂಡಿತರ ಅಭಿಮತ.

ಶಿರೋಮಣಿ ಅಕಾಲಿ ದಳದ ಸ್ಥಿತಿಯೇನು?

2012ರಲ್ಲಿ ಶೇ.34.73% ರಷ್ಟು ಮತಗಳೊಂದಿಗೆ 56 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಮೈತ್ರಿಯೊಂದಿಗೆ ಅಧಿಕಾರ ಹಿಡಿದಿದ್ದ ಅಕಾಲಿ ದಳ 2017ರ ವೇಳೆಗೆ ಕೇವಲ ಶೇ.25.24 ಮತಗಳೊಂದಿಗೆ 15 ಸ್ಥಾನಕ್ಕೆ ಕುಸಿಯುವ ಮೂಲಕ ಹೀನಾಯ ಸ್ಥಿತಿ ತಲುಪಿತ್ತು. ಈ ಬಾರಿ ಸುಧಾರಿಸಿಕೊಂಡು ಅಧಿಕಾರಕ್ಕೆ ಬರುವ ಕನಸು ಕಂಡಿದ್ದ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡಿದ್ದು ರೈತ ಹೋರಾಟ. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಾಗ ಅಕಾಲಿ ದಳ ಆರಂಭದಲ್ಲಿ ಅದನ್ನು ಬೆಂಬಲಿಸಿತ್ತು. ಆದರೆ ಯಾವಾಗ ಪಂಜಾಬ್ ರೈತರು ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದರೋ ಅಕಾಲಿ ದಳ ಸಹ ಉಲ್ಟಾ ಹೊಡೆದು ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದು ತಾನು ರೈತರ ಪರ ಎಂದು ಘೋಷಿಸಿತು. ಆದರೆ ರೈತರು ಅದನ್ನು ಒಪ್ಪಿಕೊಂಡಿದ್ದಾರೆಯೇ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬಹುಮತ: ಶಿರೋಮಣಿ ಅಕಾಲಿ ದಳ & ಬಿಜೆಪಿ ಮೈತ್ರಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್

ಬಿಎಸ್‌ಪಿ ಪಕ್ಷವು ಅಕಾಲಿ ದಳದ ಜೊತೆ ಮೈತ್ರಿ ಮಾಡಿಕೊಂಡು ದಲಿತ ಮತಗಳ ಮೇಲೆ ಕಣ್ಣಿಟ್ಟಿದೆ. ಇದು ಅಕಾಲಿ ದಳಕ್ಕೆ ವರವಾಗಿ ಪರಿಣಮಿಸಿದೆ. ಅಲ್ಲದೆ ಕಾಂಗ್ರೆಸ್-ಆಪ್ ನಡುವಿನ ಮತ ವಿಭಜನೆಯಲ್ಲಿ ಲಾಭ ಪಡೆಯಲು ಅಕಾಲಿ ದಳ ನೋಡುತ್ತಿದೆ. ಆದರೂ ಅದಕ್ಕೆ ನಿರೀಕ್ಷಿತ ಸ್ಥಾನಗಳು ದಕ್ಕುವ ಸೂಚನೆಗಳು ಕಾಣುತ್ತಿಲ್ಲ.

ಬಿಜೆಪಿ ಮತ್ತು ಅಮರಿಂದರ್ – ಆಟಕ್ಕುಂಟು, ಲೆಕ್ಕಕ್ಕಿಲ್ಲ

ಕಳೆದ ಚುನಾವಣೆಯಲ್ಲಿ 3 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದ್ದ ಬಿಜೆಪಿ ಈ ಬಾರಿ ತಿಣಕಾಡಬೇಕಾದ ಪರಿಸ್ಥಿತಿಯಲ್ಲಿದೆ. ಈ ಚುನಾವನೆಯಲ್ಲಿ ಬಿಜೆಪಿ, ಅಕಾಲಿ ದಳ ಬಿಟ್ಟು ಅಮರಿಂದರ್ ಸಿಂಗ್ ಪಕ್ಷದ ಜೊತೆಗಿನ ಮೈತ್ರಿಯೊಂದಿಗೆ ಚುನಾವಣೆಗೆ ಹೋಗುತ್ತಿದೆ. ನಗರ ಭಾಗದಲ್ಲಿ ಒಂದಷ್ಟು ನೆಲೆ ಹೊಂದಿರುವ ಅದು ಗ್ರಾಮೀಣ ಭಾಗದಲ್ಲಿ ಪೂರಾ ನೆಲಕಚ್ಚಲಿದೆ ಎನ್ನಲಾಗುತ್ತಿದೆ.

ಇನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಹೊರಬಂದು ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಸ್ಥಾಪಿಸಿರುವ ಕ್ಯಾಪ್ಟನ್ ಅಮರಿಂದರ್ ಸಹ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದ್ದಾರೆ. ಆರಂಭದಲ್ಲಿ ಬಿಜೆಪಿ ಸೇರುವುದಿಲ್ಲ ಎಂದಿದ್ದ ಅವರು ಕೊನೆಗೆ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದ್ದಾರೆ. ಅದು ಫಲ ಕೊಡುವುದು ದೂರದ ಮಾತಾಗಿದೆ.

ಸಂಯುಕ್ತ ಸಮಾಜ್ ಮೋರ್ಚಾ

ಸುಮಾರು 20 ರೈತ ಸಂಘಟನೆಗಳು ಸೇರಿ ಚುನಾವಣೆ ಹತ್ತಿರದಲ್ಲಿ ಸಂಯುಕ್ತ ಸಮಾಜ್ ಮೋರ್ಚಾ ಎಂಬ ಪಕ್ಷ ಸ್ಥಾಪಿಸಿದ್ದರೂ ಅದು ಪರಿಣಾಮ ಬೀರಲು ಸಾಧ್ಯವಾಗುವುದಿಲ್ಲ. ಏಕೆಂದರೆ ರೈತ ಹೋರಾಟ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಬೆಂಬಲಿಸಿಲ್ಲ. ಇದಕ್ಕೆ ದೊಡ್ಡ ನಾಯಕರಿಲ್ಲ ಮತ್ತು ಪಂಜಾಬ್‌ನಾದ್ಯಂತ ನೆಲೆ ಇಲ್ಲ ಎನ್ನುತ್ತಾರೆ ಬಲ್ಜಿತ್ ಸಿಂಗ್.

ಬಹುಮತ: ಕಾಂಗ್ರೆಸ್ ಮುಖ್ಯಮಂತ್ರಿ: ಅಮರಿಂದರ್ ಸಿಂಗ್

ಅತಂತ್ರ ವಿಧಾನಸಭೆಯ ಸಾಧ್ಯತೆ?

117 ಕ್ಷೇತ್ರಗಳ ಪಂಜಾಬ್‌ನಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಆಪ್ ನಡುವೆ ನೇರ ಪೈಪೋಟಿ ಇರಲಿದೆ. ಕಾಂಗ್ರೆಸ್‌ಗೆ ಹೆಚ್ಚಿನ ಸಾಧ್ಯತೆಯಿದ್ದರೂ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಲ್ಲಿ ನವಜೋತ್ ಸಿಂಗ್ ಸಿಡಿದೇಳುವ ಸಾಧ್ಯತೆ ಇದೆ. ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಭ್ಯರ್ಥಿ ಎಂದಾದರೂ ಅದು ಸಹ ಕಾಂಗ್ರೆಸ್‌ಗೆ ಒಳ್ಳೆಯದು ಮಾಡುವುದಿಲ್ಲ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಯಾವೊಂದು ಪಕ್ಷವೂ ಬಹುಮತ (59 ಸ್ಥಾನಗಳನ್ನು ಗೆಲ್ಲಬೇಕು) ಗಳಿಸುವುದು ಕಷ್ಟ ಎನ್ನಲಾಗುತ್ತಿದೆ. ಹಾಗಾಗಿ ಅತಂತ್ರ ವಿಧಾನಸಭೆ ಸಾಧ್ಯತೆಯನ್ನು ತಳ್ಳ ಹಾಕುವಂತಿಲ್ಲ. ಆದರೆ ಇತ್ತೀಚೆಗೆ ನಡೆದ ಚಂಢೀಗಡ ನಗರಪಾಲಿಗೆ ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಿದ್ದ ಆಪ್ (14) ಮತ್ತು 8 ಸ್ಥಾನಗಳಿಸಿದ್ದ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿಲ್ಲ. ಹಾಗಾಗಿ 12 ಸ್ಥಾನ ಗಳಿಸಿದ್ದ ಬಿಜೆಪಿ ತೆರೆಮರೆಯಲ್ಲಿ ಅಧಿಕಾರ ಹಿಡಿದಿದೆ. ಆದರೆ ವಿಧಾನಸಭೆಯಲ್ಲಿ ಏನಾಗಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಸಂಸದ ಭಗವಂತ್ ಮಾನ್ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...