HomeUncategorizedಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಹಲವು ಕಂಪನಿಗಳು ದೇಣಿಗೆ ನೀಡಿದ ಬೆನ್ನಲ್ಲೇ ಲಾಭ ಪಡೆದಿವೆ. ಇನ್ನೂ ಕೆಲವು ಐಟಿ, ಇಡಿ ದಾಳಿಯ ಬಳಿಕ ದೇಣಿಗೆ ನೀಡಿವೆ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿವೆ. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಗೊತ್ತಾಗಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯಲ್ಲಿ ಯಾವ ಕಂಪನಿ, ಎಷ್ಟು ದೇಣಿಗೆ ನೀಡಿದೆ ಎಂಬ ಅಂಕಿ ಅಂಶಗಳಿವೆ. ಆದರೆ, ಯಾರಿಗೆ ನೀಡಿದ್ದಾರೆ ಎಂಬುವುದು ಸ್ಪಷ್ಟವಾಗಿ ಇಲ್ಲ. ಆದರೂ, ದೇಣಿಗೆ ನೀಡಿದ ಬಳಿಕ ಹೆಚ್ಚಿನ ಕಂಪನಿಗಳು ಕೇಂದ್ರದ ಬಿಜೆಪಿ ಸರ್ಕಾರದ ಕಡೆಯಿಂದ ವಿವಿಧ ಲಾಭಗಳನ್ನು ಪಡೆದಿರುವುದು ಕಂಡು ಬಂದಿದೆ.

ಈ ಕುರಿತು ಕಾಂಗ್ರೆಸ್ ನಾಯಕರ ಜೈರಾಮ್ ರಮೇಶ್ ಕೆಲವೊಂದು ವಿವರಣೆಗಳನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವುಗಳು ಹೀಗಿವೆ..

2019 ರಿಂದ 1,300ಕ್ಕೂ ಹೆಚ್ಚು ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಈ ಮೂಲಕ ಬಿಜೆಪಿ 6,000 ಕೋಟಿ ರೂಪಾಯಿ ದೇಣಿಗೆ ಪಡೆದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದ ಕಂಪನಿಗಳು ತಕ್ಷಣವೇ ಸರ್ಕಾರದಿಂದ ಭಾರೀ ಪ್ರಯೋಜನಗಳನ್ನು ಪಡೆದ ಅನೇಕ ಉದಾಹರಣೆಗಳಿವೆ.

  • ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಏಪ್ರಿಲ್ 2023ರಲ್ಲಿ ಕಂಪನಿಯು 140 ಕೋಟಿ ರೂ. ದೇಣಿಗೆ ನೀಡಿತ್ತು. ಇದಾಗಿ ಒಂದು ತಿಂಗಳ ಬಳಿಕ ಕಂಪನಿಯು ಕೇಂದ್ರ ಸರ್ಕಾರದಿಂದ 14,400 ಕೋಟಿ ರೂ. ವೆಚ್ಚದ ಥಾಣೆ-ಬೊರಿವಲಿ ಅವಳಿ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿದೆ.
  • ಅಕ್ಟೋಬರ್ 7, 2022ರಂದು ಜಿಂದಾಲ್ ಸ್ಟೀಲ್ & ಪವರ್ ಕಂಪನಿ 25 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿತ್ತು. ಇದಾಗಿ ಕೇವಲ ಮೂರು ದಿನಗಳ ಬಳಿಕ, ಅಂದರೆ 10 ಅಕ್ಟೋಬರ್ 2022 ರಂದು ಕಂಪನಿಯು ಗರೇ ಪಾಲ್ಮಾ IV/6 ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿದೆ.

ಚುನಾವಣಾ ಬಾಂಡ್ ನೀಡಿದ ಟಾಪ್ 30 ದಾನಿಗಳ ಪೈಕಿ 14 ದಾನಿಗಳ ಮೇಲೆ ಇಡಿ, ಸಿಬಿಐ, ಐಟಿ ದಾಳಿ ನಡೆದಿದೆ. ಇದನ್ನು ಹಪ್ತಾ ವಸೂಲಿ ಎಂದು ಬಣ್ಣಿಸಿರುವ ಜೈರಾಮ್ ರಮೇಶ್, “ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಂಪನಿ ಮತ್ತು ವ್ಯಕ್ತಿಗಳನ್ನು ಬೆದರಿಸಿದ ನಂತರ ಬಿಜೆಪಿಗೆ ದೇಣಿಗೆ ಪಡೆದಿದೆ” ಎಂದು ಆರೋಪಿಸಿದ್ದಾರೆ.

  • ಹೆಟೆರೊ ಫಾರ್ಮಾ ಮತ್ತು ಯಶೋದಾ ಆಸ್ಪತ್ರೆಯಂತಹ ಕಂಪನಿಗಳು ತನಿಖಾ ಸಂಸ್ಥೆಗಳ ದಾಳಿಗೆ ಒಳಗಾದ ಬಳಿಕ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ.
  • ಆದಾಯ ತೆರಿಗೆ (ಐಟಿ) ಇಲಾಖೆಯು ಡಿಸೆಂಬರ್ 2023ರಲ್ಲಿ ಶಿರಡಿ ಸಾಯಿ ಎಲೆಕ್ಟ್ರಿಕಲ್ಸ್ ಮೇಲೆ ದಾಳಿ ನಡೆಸಿತ್ತು. ಇದೇ ಕಂಪನಿ ಜನವರಿ 2024ರಲ್ಲಿ ಚುನಾವಣಾ ಬಾಂಡ್ ಮೂಲಕ 40 ಕೋಟಿ ರೂ. ದೇಣಿಗೆ ನೀಡಿದೆ.
  • ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ಸ್ ಲಿಮಿಟೆಡ್, ರೂ. 1,200 ಕೋಟಿ ಮೌಲ್ಯದ ಬಾಂಡ್ ಖರೀದಿಸುವ ಮೂಲಕ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
  • ಏಪ್ರಿಲ್ 2, 2022 ರಂದು ಈ ಕಂಪನಿ ಮೇಲೆ ಇಡಿ ದಾಳಿ ನಡೆಸಿತ್ತು. ಇದಾಗಿ 5 ದಿನಗಳ ನಂತರ, ಅಂದರೆ ಏಪ್ರಿಲ್ 7ರಂದು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 100 ಕೋಟಿ ರೂ. ದೇಣಿಗೆ ನೀಡಿದೆ.
  • ಅಕ್ಟೋಬರ್ 2023ರಲ್ಲಿ ಐಟಿ ಇಲಾಖೆಯು ಫ್ಯೂಚರ್ ಕಂಪನಿ ಮೇಲೆ ದಾಳಿ ನಡೆಸಿತ್ತು. ಅದೇ ತಿಂಗಳು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 65 ಕೋಟಿ ರೂ. ದೇಣಿಗೆ ನೀಡಿದೆ.

ಕೇಂದ್ರ ಸರ್ಕಾರದಿಂದ ಕೆಲ ದಾಖಲೆಗಳನ್ನು ಸ್ವೀಕರಿಸಿದ ಬೆನ್ನಲ್ಲೇ ಕಂಪನಿಗಳು ದೇಣಿಗೆ ನೀಡಿವೆ. ಇದನ್ನು ಜೈರಾಮ್ ರಮೇಶ್ ಕಿಕ್ ಬ್ಯಾಕ್ ಎಂದು ಆರೋಪಿಸಿದ್ದಾರೆ.

  • ವೇದಾಂತ ಕಂಪನಿಯು 3 ಮಾರ್ಚ್ 2021ರಂದು ರಾಧಿಕಪೂರ್ ವೆಸ್ಟ್ ಖಾಸಗಿ ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿತ್ತು. ಇದಾಗಿ ಒಂದು ತಿಂಗಳ ನಂತರ ಏಪ್ರಿಲ್ 2021ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 25 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಇಂಜಿನಿಯರಿಂಗ್ ಕಂಪನಿಯು ಆಗಸ್ಟ್ 2020ರಲ್ಲಿ 4,500 ಕೋಟಿ ರೂ. ವೆಚ್ಚದ ಜೊಜಿಲಾ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿತ್ತು. ಅಕ್ಟೋಬರ್ 2020ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 20 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಕಂಪನಿಯು ಡಿಸೆಂಬರ್ 2022ರಲ್ಲಿ ಬಿಕೆಸಿ ಬುಲೆಟ್ ರೈಲು ನಿಲ್ದಾಣದ ಗುತ್ತಿಗೆಯನ್ನು ಪಡೆದಿತ್ತು. ಅದೇ ತಿಂಗಳು ಕಂಪನಿ 56 ಕೋಟಿ ರೂ. ದೇಣಿಗೆ ನೀಡಿದೆ.

ಚುನಾವಣಾ ಬಾಂಡ್‌ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಿದ ಯೋಜನೆಯಾಗಿದೆ. ತಿದ್ದುಪಡಿಯ ವೇಳೆ ಯಾವುದೇ ಕಂಪನಿಯ ಲಾಭದ ಒಂದು ಸಣ್ಣ ಶೇಕಡಾವಾರು ಭಾಗವನ್ನು ಮಾತ್ರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬಹುದೆಂಬ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.

ಇದು ಶೆಲ್ ಕಂಪನಿಗಳಿಗೆ ಕಪ್ಪು ಹಣವನ್ನು ದೇಣಿಗೆ ನೀಡಲು ಅನುವು ಮಾಡಿ ಕೊಟ್ಟಿದೆ. ಇಂತಹ ಹಲವು ಅನುಮಾನಾಸ್ಪದ ಪ್ರಕರಣಗಳಿವೆ. ಉದಾಹರಣೆಗೆ ಕ್ವಿಕ್ ಸಪ್ಲೈ ಚೈನ್ ಲಿಮಿಟೆಡ್ ಎಂಬ ಕಂಪನಿಯು ರೂ. 410 ಕೋಟಿ ದೇಣಿಗೆ ನೀಡಿದೆ. ಈ ಕಂಪನಿಯ ಸಂಪೂರ್ಣ ಷೇರು ಬಂಡವಾಳ ಕೇವಲ 130 ಕೋಟಿ ರೂ. ಮಾತ್ರ.

ಎಸ್‌ಬಿಐ ಒದಗಿಸಿದ ಡೇಟಾವು ಏಪ್ರಿಲ್ 2019ರಿಂದ ಮಾರಾಟ ಮಾಡಿದ ಬಾಂಡ್‌ಗಳದ್ದಾಗಿದೆ. ಆದರೆ ಎಸ್‌ಬಿಐ ಮಾರ್ಚ್ 2018 ರಲ್ಲಿ ಮೊದಲ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಹಾಗಾಗಿ, ಡೇಟಾದಿಂದ 2,500 ಕೋಟಿ ರೂ. ಮೌಲ್ಯದ ಬಾಂಡ್‌ಗಳು ಕಾಣೆಯಾಗಿವೆ. ಮಾರ್ಚ್ 2018 ರಿಂದ ಏಪ್ರಿಲ್ 2019 ರವರೆಗಿನ ಈ ಕಾಣೆಯಾದ ಬಾಂಡ್‌ಗಳ ಡೇಟಾ ಎಲ್ಲಿದೆ? ಉದಾಹರಣೆಗೆ, ಬಾಂಡ್‌ಗಳ ಮೊದಲ ಕಂತಿನಲ್ಲಿ ಬಿಜೆಪಿ ಶೇ. 95 ಹಣವನ್ನು ಪಡೆದುಕೊಂಡಿದೆ. ಬಿಜೆಪಿ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಅಂಕಿ ಅಂಶಗಳ ವಿಶ್ಲೇಷಣೆ ಮುಂದುವರಿದಂತೆ, ಬಿಜೆಪಿಯ ಭ್ರಷ್ಟಾಚಾರದ ಇನ್ನೂ ಅನೇಕ ಪ್ರಕರಣಗಳು ಬಯಲಿಗೆ ಬರಲಿವೆ. ನಾವು ವಿಶಿಷ್ಟ ಬಾಂಡ್‌ಗಳ ಐಡಿ ಸಂಖ್ಯೆ ಅಥವಾ ಸೀರಿಯಲ್ ನಂಬರ್ ಬಹಿರಂಗಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ. ಇದರಿಂದ ಯಾವ ಪಕ್ಷ, ಯಾರಿಂದ ಎಷ್ಟು ದೇಣಿಗೆ ಪಡೆದಿದೆ ಎಂಬುವುದು ಗೊತ್ತಾಗಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ 1,260 ಕಂಪನಿಗಳು ಹಾಗೂ ವ್ಯಕ್ತಿಗಳು 12,769 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿದ್ದು, ಇದರಲ್ಲಿ ಅಗ್ರ 20 ಕಂಪನಿಗಳ ಪಾಲು 5,945 ಕೋಟಿ ರೂಪಾಯಿ. ಅಂದರೆ ಒಟ್ಟು ಮೌಲ್ಯದ ಸುಮಾರು ಶೇಕಡ 50ರಷ್ಟು.

ದೇಣಿಗೆ ನೀಡಿದ ಸುಮಾರು 500 ಕಂಪನಿಗಳ ಪೈಕಿ 28 ಕಂಪನಿಗಳು 2019ರ ಏಪ್ರಿಲ್ 12ರ ಬಳಿಕ ಸ್ಥಾಪನೆಯಾದ ಕಂಪನಿಗಳು. 20 ಅಗ್ರ ಖರೀದಿದಾರ ಕಂಪನಿಗಳ ಪೈಕಿ 13 ಕಂಪನಿಗಳ ಹಣಕಾಸು ಫಲಿತಾಂಶ ಲಭ್ಯವಿದ್ದು, ತಮ್ಮ ನಿವ್ವಳ ಲಾಭದ ಪ್ರಮಾಣಾನುಸಾರ ಈ ಕಂಪನಿಗಳು ಬಾಂಡ್ ಖರೀದಿಸಿವೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...