Homeಕರ್ನಾಟಕವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದಕ್ಕೆ, ವಿದ್ಯುತ್ ಮಸೂದೆ ವಾಪಸ್ಸಾತಿ ಹಾಗೂ ರೈತರ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಒಂಬತ್ತು ತಿಂಗಳಿಂದಲೂ ದೆಹಲಿ ಗಡಿಗಳಲ್ಲಿ ರೈತ ಹೋರಾಟ ನಡೆಯುತ್ತಿದ್ದರೂ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಒಕ್ಕೂಟ ಸರ್ಕಾರ ನಿರಾಕರಿಸುತ್ತಾ ನಡೆದಿದ್ದರೆ, ಕೇಂದ್ರ ರೈತ ಕಲ್ಯಾಣ ಮತ್ತು ಕೃಷಿ ಸಚಿವೆ ಶೋಭಾ ಕರಂದ್ಲಾಜೆರವರು ಸ್ವತಃ ಗದ್ದೆಗಿಳಿದು ನಾಟಿ ಕೆಲಸದಲ್ಲಿ ಭಾಗಿಯಾಗಿ ಮಾಧ್ಯಮಗಳಿಗೆ ಪೋಟೋ ಪೋಸ್ ನೀಡಿದ್ದಾರೆ.

ಆದರೆ ತಾವು ಭಾಗಿಯಾಗಿರುವ ಸಂಪುಟ ಅನುಮೋದನೆ ನೀಡಿರುವ ವಿದ್ಯುತ್ ಮಸೂದೆ 2021ರ ಬಗ್ಗೆ ಅಪ್ಪಿತಪ್ಪಿಯೂ ಮಾತಾಡಿಲ್ಲ. ಈಗಷ್ಟೇ ಮೊಟುಕುಗೊಂಡು ಮುಕ್ತಾಯವಾದ ಸಂಸತ್ತಿನಲ್ಲಿ ಮಂಡನೆಯಾಗದೇ ಈ ಮಸೂದೆ ಉಳಿದುಕೊಂಡಿದೆ! ಈ ವಿದ್ಯುತ್ ಮಸೂದೆಯನ್ನು ವಾಪಸ್ಸು ಪಡೆಯುವುದಾಗಿ ಪ್ರತಿಭಟನಾ ರೈತರಿಗೆ ಇದೇ ಕೇಂದ್ರ ಸರ್ಕಾರ ವಾಗ್ದಾನ ಮಾಡಿತ್ತು. ಈ ಮಾತನ್ನೂ ಸಹ ಉಳಿಸಿಕೊಳ್ಳಲಿಲ್ಲ.

ಈ ವಿದ್ಯುತ್ ಮಸೂದೆ 2021 ಸಂಸತ್ತಿನಲ್ಲಿ ಮಂಡನೆಯಾಗುವ ದಿನ ಇಡೀ ದೇಶದಾದ್ಯಂತ ವಿದ್ಯುತ್ ಕಾರ್ಮಿಕರು ಮುಷ್ಕರಕ್ಕೆ ತಯಾರಿ ನಡೆಸಿದ್ದರು. ದೇಶದೆಲ್ಲೆಡೆ ರೈತರ ಆಕ್ರೋಶ ಭುಗಿಲೇಳುವ ಸ್ಪಷ್ಟ ಸೂಚನೆಯಿಂದಾಗಿ ಈ ಮಸೂದೆ ಮಂಡನೆಯ ಮುಂದೂಡಲ್ಪಟ್ಟಿದೆ.

ಮೋದಿ ಸರ್ಕಾರ ಅಂಗೀಕರಿಸಿರುವ ಕೃಷಿ ಕಾಯ್ದೆಗಳಿಂದ ವಿದ್ಯುತ್ ಮಸೂದೆ 2021ಅನ್ನು ಬೇರ್ಪಡಿಸಿ ನೋಡಲು ಸಾಧ್ಯವಿಲ್ಲ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳು. ದೇಶದ ರೈತರಲ್ಲಿ ಶೇ.70ಕ್ಕೂ ಹೆಚ್ಚು ಇರುವ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರನ್ನು ಕೃಷಿ ರಂಗದಿಂದಲೇ ಒಕ್ಕಲೆಬ್ಬಿಸುವ ಉದ್ದೇಶದ ಕೃಷಿ ಕಾಯ್ದೆಗಳ ವೇಗವರ್ಧಕವಾಗಿ ಈ ಪ್ರಸ್ತಾಪಿತ ವಿದ್ಯುತ್ ಕಾಯ್ದೆ ಕೆಲಸ ಮಾಡಲಿದೆ.

ನವ ಉದಾರೀಕರಣ ಆರ್ಥಿಕ ನೀತಿಗಳು ಜಾರಿಗೆ ಬಂದನಂತರ ದೇಶದ ಪ್ರತಿಯೊಂದು ರಂಗವನ್ನು ಖಾಸಗಿ ಕಾರ್ಪೊರೆಟ್ ದೈತ್ಯರಿಗೆ ವಹಿಸಲು ಮತ್ತು ಅವರಿಗಷ್ಟೇ ಅನುಕೂಲ ಕಲ್ಪಿಸಲು ಕಾಯ್ದೆಗಳು ರೂಪುಗೊಂಡಿವೆ. ವಿದ್ಯುತ್ ರಂಗದ ಇಂತಹ ಒಂದು ಕಾಯ್ದೆಯಾಗಿ ವಿದ್ಯುತ್ ಕಾಯ್ದೆ 2003 ಜಾರಿಗೆ ಬಂತು. ಈ ಕಾಯ್ದೆಯ ಮುಂದಿನ ಅವತರಣಿಕೆಯೇ ವಿದ್ಯುತ್ ಮಸೂದೆ 2021 ಆಗಿದೆ.

ಹಲವಾರು ದಶಕಗಳಿಂದ ರಾಜ್ಯ ಸರ್ಕಾರಗಳಿಂದ ಸ್ಥಾಪಿಸಲ್ಪಟ್ಟು ಅವುಗಳ ಮಾಲೀಕತ್ವದಲ್ಲಿರುವ ವಿದ್ಯುಚ್ಛಕ್ತಿ ಸರಬರಾಜು ಜಾಲವನ್ನು ಖಾಸಗೀಕರಣಗೊಳಿಸುವುದೇ ಈ ಕಾಯ್ದೆಯ ಗುರಿಯಾಗಿದೆ. ಇದನ್ನು ಈ ಮಸೂದೆ ಬಹಳ ಸ್ಪಷ್ಟವಾಗಿ ಹೇಳುತ್ತಿದೆ.

ವಿದ್ಯುಚ್ಛಕ್ತಿಯು ಸಂವಿಧಾನದ ಸಮವರ್ತಿ ಪಟ್ಟಿಯಲ್ಲಿ ಇರುವುದನ್ನು ನಿರ್ಲಕ್ಷಿಸಿ, ಹಲವಾರು ವಿಷಯಗಳ ಮೇಲೆ ರಾಜ್ಯಕ್ಕೆ ಇರುವ ಹಕ್ಕುಗಳನ್ನು ಈ ಮಸೂದೆ ಸಂಪೂರ್ಣವಾಗಿ ನಿರಾಕರಿಸುತ್ತದೆ. ಆದರೆ ವಿದ್ಯುಚ್ಛಕ್ತಿ ದರ ಹೆಚ್ಚಳದ ಅಪಘಾತದಿಂದ ಜನತೆಯನ್ನು ಪಾರುಮಾಡಲು ಇರುವ ಸಬ್ಸಿಡಿಯನ್ನು ನೀಡಲು ಬೇಕಾದ ಹಣಕಾಸಿನ ಭಾರವನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ರಾಜ್ಯಗಳ ಮೇಲೆ ಹಾಕಿದೆ.

ರಾಜ್ಯ ನಿಗಮಗಳಿಗೆ ಅಧ್ಯಕ್ಷರನ್ನು ಮತ್ತು ಸದಸ್ಯರನ್ನು ನೇಮಕ ಮಾಡುವ ಅಧಿಕಾರವನ್ನು ಈ ಮಸೂದೆ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಇಂತಹ ಕ್ರೂರ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳ ಮೇಲೆ ದಬ್ಬಾಳಿಕೆ ನಡೆಸಲು ಅನುವು ಮಾಡಿಕೊಡುತ್ತದೆ. ಇದು ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಮಾಡುವ ಸರ್ವಾಧಿಕಾರದ ದಾಳಿಯಲ್ಲದೇ ಬೇರೇನಲ್ಲ.

ರಾಜ್ಯಗಳಿಗೆ ತಮ್ಮದೇ ಆದ ಅಭಿವೃದ್ಧಿ ಕಣ್ಣೋಟವನ್ನು ಯೋಜಿಸಲು, ಅಂದಾಜಿಸಲು ಹಾಗೂ ಜಾರಿ ಮಾಡಲು ಅಧಿಕಾರವಿದೆ. ಆದರೆ ಈ ಕಾಯ್ದೆ ಇಂತಹ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಇದರಿಂದ ಪೂರ್ತಿಯಾಗಿ ರಾಜ್ಯಗಳ ಅಧಿಕಾರ ನಾಶವಾಗಲಿದೆ. ಈ ಕಾಯ್ದೆ ಸಂಪೂರ್ಣವಾಗಿ ಸಂವಿಧಾನದ ಮೂಲಭೂತ ತತ್ವ ಫೆಡರಿಲಿಸಂಗೆ (ಒಕ್ಕೂಟ ವಾದ) ವಿರುದ್ಧವಾಗಿದೆ.

ಈ ಕಾಯ್ದೆಯು ವಿದ್ಯುತ್ ವ್ಯಾಪಾರದ ರಾಷ್ಟ್ರೀಯ ಗಡಿಗಳನ್ನು ಕೂಡ ತೆಗೆದುಹಾಕುತ್ತದೆ. ಅಂದರೆ ಖಾಸಗಿ ವಲಯವು ಮುಕ್ತವಾಗಿ ಯಾವುದೇ ಗಡಿಗಳ ಹಂಗಿಲ್ಲದೇ ಯಾವುದೇ ದೇಶಕ್ಕಾದರೂ ವಿದ್ಯುತ್ ಪೂರೈಸಬಹುದು. ಇದು ದೇಶದ ಭದ್ರತೆಗೆ ಭಾರೀ ಅಪಾಯವನ್ನು ತಂದೊಡ್ಡುವ ಕ್ರಮ ಕೂಡ ಆಗಬಲ್ಲದು.

ಈ ಕಾಯ್ದೆಯ ಕಾರಣದಿಂದ ವಿದ್ಯುತ್ ಬೇಡಿಕೆ ಹಾಗೂ ಪೂರೈಕೆಗಳ ನಡುವಿನ ಸಮನ್ವಯ ಹಾಗೂ ನಿಯಂತ್ರಣ ವ್ಯವಸ್ಥೆ ಸಂಪೂರ್ಣವಾಗಿ  ಧ್ವಂಸವಾಗುತ್ತದೆ. ಖಾಸಗಿ ಕಂಪನಿಗಳ ಲಾಭಕೋರತನ ಮತ್ತು ವ್ಯಾಪಕವಾದ ಭ್ರಷ್ಟಾಚಾರಕ್ಕೂ ದೊಡ್ಡ ಪ್ರಮಾಣದಲ್ಲಿ ಅವಕಾಶವನ್ನು ಮಾಡಿಕೊಡಲಿದೆ. ವಿದ್ಯುತ್ ರಂಗದಲ್ಲಿ ಖಾಸಗೀಕರಣಕ್ಕೆ ಅವಕಾಶ ಮಾಡಿಕೊಟ್ಟ ವಿದ್ಯುತ್ ಕಾಯ್ದೆ 2003ರ ನಂತರವೇ ವಿದ್ಯುತ್ ಖರೀದಿ ಹಗರಣಗಳು ನಡೆದಿರುವುದನ್ನು ನಾವು ಗಮನಿಸಬಹುದು.

ಉತ್ಪಾದನಾ ಸಾಮರ್ಥ್ಯವನ್ನು ದಕ್ಷವಾಗಿ, ಪರಿಸರ ಸ್ನೇಹಿಯಾಗಿ ಬಳಸಿಕೊಳ್ಳುವುದಕ್ಕೆ ಕೂಡ ಈ ಕಾಯ್ದೆ ಅಡ್ಡಿಯಾಗುತ್ತದೆ. ಖಾಸಗಿ ಕಂಪನಿಗಳಿಗೆ ಲಾಭ ಮಾತ್ರವೇ ಮುಖ್ಯವಾಗುವುದರಿಂದ ಈ ಕಾಯ್ದೆಯಿಂದ ಪರಿಸರ ನಾಶಕ್ಕೆ ಅತಿ ಹೆಚ್ಚಿನ ಉತ್ತೇಜನ ಸಿಗಲಿದೆ.

ವಿದ್ಯುತ್ ದರ ಏರಿಕೆಯ ಪ್ರಸ್ತಾಪಕ್ಕೆ ಸಾರ್ವಜನಿಕ ಅಹವಾಲು ಆಲಿಸಿ, ಪರಿಣಾಮಗಳನ್ನು ಅಂದಾಜಿಸುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಂತಹ (KERC) ನಿಯಂತ್ರಕ ವ್ಯವಸ್ಥೆ ರದ್ದಾಗಿ ಕೃಷಿಕರು, ನೇಕಾರರು, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಅಹವಾಲಿಗೆ ಈ ಕಾಯ್ದೆಯಿಂದ ಅವಕಾಶವೇ ಇರುವುದಿಲ್ಲ.

ಈ ಕಾಯ್ದೆಯಿಂದ ನಿಗಮಗಳ ನಡುವೆ ಅಂದರೆ ನಗರ ಪ್ರದೇಶದ ವಿದ್ಯುತ್ ನಿಗಮಗಳು ಹಾಗೂ ಗ್ರಾಮೀಣ ಪ್ರದೇಶದ ನಿಗಮಗಳ ನಡುವೆ ಇದ್ದ ಕ್ರಾಸ್ ಸಬ್ಸಿಡಿ ಮತ್ತು ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ರಾಹಕರುಗಳ ನಡುವೆ ಇದ್ದ ಕ್ರಾಸ್ ಸಬ್ಸಿಡಿಗಳು ರದ್ದಾಗಲಿವೆ. ಇದರಿಂದಾಗಿ ನಿರುದ್ಯೋಗ ಬಹಳಷ್ಟು ಹೆಚ್ಚಲಿದೆ. ನೀರಾವರಿ ಪಂಪ್‌ಸೆಟ್‌ಗಾಗಲಿ, ಕುಟೀರ ಜ್ಯೋತಿ-ಭಾಗ್ಯಜ್ಯೋತಿ ಬಳಕೆದಾರರಿಗಾಗಲಿ ರಿಯಾಯಿತಿ ವಿದ್ಯುತ್ ಸೌಲಭ್ಯ ವಿದ್ಯುತ್ ಕಂಪನಿಗಳಿಂದ ಸಿಗುವುದಿಲ್ಲ. ವಿದ್ಯುತ್ ವಿತರಣೆಯಲ್ಲಿ ಪ್ರಾಂಚೈಸಿಗಳು, ಗುತ್ತಿಗೆ, ಹೊರಗುತ್ತಿಗೆ, ಏಜೆಂಟ್-ದಲ್ಲಾಳಿಗಳ ವ್ಯವಸ್ಥೆ ಜಾರಿಗೆ ಈ ಕಾಯ್ದೆ ಅವಕಾಶ ಮಾಡಿ ಕೊಡಲಿದೆ.

ಚಿಲ್ಲರೆ ವಹಿವಾಟಿನ ಮೇಲೆ ನಿಯಂತ್ರಣ ಮತ್ತು ಏಕಸ್ವಾಮ್ಯ ಸಾಧಿಸಲು ಅಂಬಾನಿ ಕಾರ್ಪೊರೆಟ್ ಸಂಸ್ಥೆಯ ಹಿತಾಸಕ್ತಿ ಹೇಗೆ ಕೃಷಿ ಕಾನೂನುಗಳ ಜಾರಿಯ ಹಿಂದೆ ಕೆಲಸ ಮಾಡಿದೆಯೋ ಅದೇ ರೀತಿ ವಿದ್ಯುತ್ ರಂಗದ ಮೇಲೆ ನಿಯಂತ್ರಣ ಮತ್ತು ಏಕಸ್ವಾಮ್ಯ ಸಾಧಿಸುವ ಅದಾನಿಯ ಹಿತಾಸಕ್ತಿ ಈ ಪ್ರಸ್ತಾಪಿತ ಕಾಯ್ದೆಯ ಹಿಂದೆ ಅಡಗಿದೆ. ವಿದ್ಯುತ್ ಆಟೋಮೊಬೈಲ್ ಇಂಡಸ್ಟ್ರಿಯ ವಹಿವಾಟಿನ ಮೇಲೆ ಏಕಸ್ವಾಮ್ಯ ಸಾಧಿಸಲು ವಿದ್ಯುತ್ ಉತ್ಪಾದನೆ, ಸರಬರಾಜು, ವಿತರಣೆ ಮೇಲೆ ಏಕಸ್ವಾಮ್ಯ ಸಾಧಿಸಲು ಅದಾನಿಯಂತಹ ಕಾರ್ಪೊರೇಟ್ ದೈತ್ಯರಿಗೆ ನೆರವಾಗುವುದು ಈ ಮಸೂದೆಯ ಗುಪ್ತ ಕಾರ್ಯಸೂಚಿಯಾಗಿದೆ.

ಕೃಷಿ ಅರ್ಥಿಕತೆ ಮೇಲೆ ಈ ಕಾಯ್ದೆ ಅತ್ಯಂತ ಕೆಟ್ಟ ಪರಿಣಾಮಗಳನ್ನು ಉಂಟುಮಾಡುತ್ತದೆ. ರಾಜ್ಯದಲ್ಲಿ ಸುಮಾರು 25 ಲಕ್ಷ ಸಕ್ರಮ ಪಂಪ್ ಸೆಟ್‌ಗಳು ಸೇರಿ ಸುಮಾರು 40 ಲಕ್ಷ ನೀರಾವರಿ ಪಂಪ್‌ಸೆಟ್‌ಗಳು ಇವೆ. ದುಬಾರಿ ವಿದ್ಯುತ್ ದರಗಳಿಂದಾಗಿ ದೇಶದೆಲ್ಲೆಡೆ ಕೋಟ್ಯಂತರ ಕೃಷಿಕರು ದಿವಾಳಿಯಾಗಲಿದ್ದಾರೆ. ಇದರಿಂದ ಆಹಾರದ ಬೆಲೆಗಳ ತೀವ್ರ ಏರಿಕೆ ಜೊತೆಗೆ ದೇಶದ ಆಹಾರ ಭದ್ರತೆಗೆ ಭಾರೀ ದೊಡ್ಡ ಅಪತ್ತು ಬರಲಿದೆ.

ಸಾರ್ವಜನಿಕ ತೆರಿಗೆ ಹಣದಿಂದ ನಿರ್ಮಿಸಿರುವ ಸರ್ಕಾರಿ ಪವರ್ ಗ್ರಿಡ್ ಮುಂತಾದ ಮೂಲ ಸೌಕರ್ಯಗಳು ಪೂರ್ತಿಯಾಗಿ ಖಾಸಗಿ ಕೈಗಳಿಗೆ ಹಸ್ತಾಂತರವಾಗುವುದರಿಂದ ಗ್ರಿಡ್ ಚಾನಲ್‌ಗಳನ್ನು ಮರು ಜೋಡಿಸಿಕೊಳ್ಳುತ್ತಾರೆ ಮತ್ತು ಪ್ರತ್ಯೇಕ ಗ್ರಿಡ್‌ಗಳನ್ನು ಸ್ಥಾಪಿಸಿಕೊಳ್ಳುತ್ತಾರೆ. ಇದರಿಂದ ಮೀಟರ್ ಕಿತ್ತು ಹಾಕಿದರೂ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯ ಜಾಲವೇ ಇಲ್ಲದಂತಾಗುತ್ತದೆ.

ಈಗ ಇರುವ ದುಬಾರಿ ವಿದ್ಯುತ್ ದರದಿಂದ ದೇಶದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ನರಳುತ್ತಿವೆ. ಖಾಸಗೀಕರಣಗೊಂಡ ಮೇಲೆ ಈ ವಿದ್ಯುತ್ ದರಗಳು ಮತ್ತಷ್ಟು ದುಬಾರಿಯಾಗುವುದರಿಂದ ಈ ಕ್ಷೇತ್ರಗಳ ಉತ್ಪಾದನೆ ಮತ್ತು ಉದ್ಯೋಗದ ಪರಿಸ್ಥಿತಿ ಸಂಪೂರ್ಣ ನಾಶವಾಗಲಿದೆ.

ಇತ್ತೀಚೆಗೆ ಕರ್ನಾಟಕದ ನೂತನ ವಿದ್ಯುತ್ ಮಂತ್ರಿ ಸುನಿಲ್ ಕುಮಾರ್, ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸುವುದಿಲ್ಲ, ಇವೆಲ್ಲಾ ಊಹಾಪೋಹ ಎಂದು ಹೇಳಿಕೆ ನೀಡಿದ್ದಾರೆ. ಇದೇ ರೀತಿ ಕಳೆದ ವರ್ಷ ಕೂಡ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಎಪಿಎಂಸಿಗಳು ಮುಚ್ಚುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಕೇವಲ ಒಂದೇ ವರ್ಷದಲ್ಲಿ ರಾಜ್ಯದ ಎಪಿಎಂಸಿಗಳು ಮುಚ್ಚುವ ಹಂತಕ್ಕೆ ಬಂದಿವೆ. ಪಂಪ್‌ಸೆಟ್‌ಗಳಿಗೆ ಮೀಟರ್
ಹಾಕಲಿಲ್ಲ ಅಂದರೆ ವಿದ್ಯುತ್ ಸಂಪರ್ಕವೇ ಇರುವುದಿಲ್ಲ!

ನೋಟು ರದ್ದತಿ (ಡಿಮಾನೆಟೈಸೇಶನ್), ಜಿಎಸ್‌ಟಿ ಮುಂತಾದ ಕ್ರಮಗಳಿಂದ ಈಗಾಗಲೇ ಭಾರೀ ಸಂಕಟದಲ್ಲಿರುವ ರೈತರು, ಸಣ್ಣ ಕೈಗಾರಿಕೆಗಳು ಈ ವಿದ್ಯುತ್ ಕಾಯ್ದೆಯಿಂದ ಮೇಲೆ ಏಳಲಾರದ ಹೊಡೆತ ಅನುಭವಿಸಲಿದ್ದಾರೆ.

ವಿದ್ಯುತ್ ಕ್ಷೇತ್ರದ ಕಾರ್ಮಿಕರು ಅತ್ಯಂತ ಕೆಟ್ಟ ರೀತಿಯಲ್ಲಿ ಬಲಿಪಶುಗಳಾಗಲಿದ್ದಾರೆ. ಬಹುಸಂಖ್ಯಾತ ಕಾಯಂ ನೌಕರರು ಹಂಗಾಮಿ ನೌಕರರಾಗಿ ಪರಿವರ್ತಿತರಾಗಲಿದ್ದಾರೆ. ಹೊರಗುತ್ತಿಗೆ, ಗುತ್ತಿಗೆ ಆಧಾರದ ನೇಮಕಾತಿ ಹಾಗೂ ಫ್ರಾಂಚೈಸಿಗಳನ್ನು ತೊಡಗಿಸಿಕೊಳ್ಳುವುದು ಸರ್ವೇಸಾಮಾನ್ಯವಾಗಲಿದೆ. ವೇತನ, ಸಾಮಾಜಿಕ ಭದ್ರತೆಯೂ ಸೇರಿದಂತೆ ಎಲ್ಲಾ ಕಾನೂನಾತ್ಮಕ ಸೌಲಭ್ಯ ಮತ್ತು ಪರಿಹಾರ-ಸವಲತ್ತುಗಳಲ್ಲಿ ತೀವ್ರ ಕಡಿತ ಉಂಟಾಗುತ್ತದೆ. ಇದರಿಂದ ವಿದ್ಯುತ್ ರಂಗದ ಕಾರ್ಮಿಕರು ಬೀದಿಗೆ ಬೀಳುತ್ತಾರೆ.

ಇಂದಿನ ಆಧುನಿಕವಾದ ಪರಿಸ್ಥಿತಿಯಲ್ಲಿ ವಿದ್ಯುತ್ ಮತ್ತು ಸಾರಿಗೆ ಅತ್ಯಂತ ಆಯಕಟ್ಟಿನ ವಲಯಗಳಾಗಿವೆ. ಈ ಕ್ಷೇತ್ರಗಳ ಖಾಸಗೀಕರಣವು ಇಡೀ ದೇಶವನ್ನೇ ದಿವಾಳಿಯಂಚಿಗೆ ಕೊಂಡೊಯ್ಯಲಿದೆ. ಎನ್ರೋನ್‌ನಂತಹ ವಿದ್ಯುತ್ ಹಗರಣಗಳು ಇನ್ನು ಮುಂದೆ ಸರಣಿಯೋಪಾದಿಯಲ್ಲಿ ಬರಲಿವೆ. ಆದ್ದರಿಂದ ಈ ಕಾಯ್ದೆ ಕುರಿತು ಜಾಗೃತಿ ಬೆಳೆಸಿಕೊಂಡು ವಿದ್ಯುತ್ ಖಾಸಗೀಕರಣದ ವಿರುದ್ಧ ನಡೆಯುತ್ತಿರುವ ಪ್ರತಿರೋಧದಲ್ಲಿ ಎಲ್ಲರೂ ಧ್ವನಿ ಎತ್ತಬೇಕಿದೆ. ಬೆಂಬಲಕ್ಕೆ ನಿಲ್ಲಬೇಕಿದೆ.

ಟಿ. ಯಶವಂತ

ಟಿ. ಯಶವಂತ
ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿಯಲ್ಲಿ ವಾಸವಾಗಿರುವ ಯಶವಂತ್, ಹೊಸ ತಲೆಮಾರಿನ ಸಾಮಾಜಿಕ ಕಾರ್ಯಕರ್ತರು. ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಕ್ರಿಯವಾಗಿರುವ ಅವರು ಈ ಸದ್ಯ ಪ್ರಾಂತ ರೈತ ಸಂಘದ ಸಂಘಟಕರು.


ಇದನ್ನೂ ಓದಿ: ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...