ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಮಾಜಿ ಶಾಸಕನಿಂದ 2 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಇಂದು (ಅ.19) ಬಂಧಿಸಿದ್ದಾರೆ.
ಪ್ರಲ್ಹಾದ್ ಜೋಶಿಯವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಅಣ್ಣನ ಮಗ ಅಜಯ್ ಜೋಶಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಇಬ್ಬರ ಬಂಧನದ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲಕ್ಕೇರಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಅಥಣಿಯ ಇಂಜಿನಿಯರ್ ಸೋಮಶೇಖರ್ ನಾಯಕ್ ಹಾಗೂ ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ವಿಜಯಕುಮಾರಿ ಅವರನ್ನು ಶುಕ್ರವಾರ ಬಂಧಿಸಲಾಗಿದೆ.
ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಾಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ದೇವಾನಂದ್ ಅವರ ಪತ್ನಿ ಸುನಿತಾ ಚವ್ಹಾಣ್ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಪ್ರಕರಣ : ಇಬ್ಬರ ಬಂಧನ


