ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ರಾಜ್ಯ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸದಸ್ಯನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಬ್ರಹ್ಮರಥೋತ್ಸವ ಸಮಿತಿ ರಚಿಸಿ ಸರ್ಕಾರ ಹೊರಡಿಸಿರುವ ಆದೇಶ ಪತ್ರ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಸಮಿತಿಯ ಪಟ್ಟಿಯೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ‘ನವಾಝ್’ ಎಂಬ ಸದಸ್ಯನ ಹೆಸರಿದೆ. ಬಿಜೆಪಿ ತನ್ನ ಪೋಸ್ಟ್ನಲ್ಲಿ ಈ ಕೆಳಗಿನಂತೆ ಬರೆದುಕೊಂಡಿದೆ.
“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ರಚಿಸಿರುವ ಸಮಿತಿಯ ಸದಸ್ಯನಾಗಿ ನವಾಝ್ ಎಂಬ ವ್ಯಕ್ತಿಯನ್ನು ಸರ್ಕಾರ ನೇಮಿಸಿದೆ. ಹಿಂದೂ ದೇವಸ್ಥಾನಗಳನ್ನು ಪ್ರಯತ್ನ ನಡೆಸಿದ ಬಳಿಕ, ಹಿಂದೂ ವಿರೋಧಿ ಸಿದ್ದರಾಮಯ್ಯ ಅವರು, ಈಗ ಹಿಂದೂಯೇತರ ವ್ಯಕ್ತಿಯನ್ನು ಸಮಿತಿಗೆ ನೇಮಿಸುವ ಮೂಲಕ ದೇವಸ್ಥಾನ ಮತ್ತು ಅದರ ಸಂಪತ್ತನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.”
“ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಹಕ್ಕು ಕಿತ್ತು ಒಂದು ಸಮುದಾಯಕ್ಕೆ ಕೊಡುವ ರಾಹುಲ್ ಗಾಂಧಿಯ ಕನಸಿನ ಯೋಜನೆಯನ್ನು ಜಾರಿಗೊಳಿಸುವ ತವಕದಲ್ಲಿದೆ. ಇಂದು ಇದು ಕರ್ನಾಟಕದ ಒಂದು ದೇವಸ್ಥಾನವಾಗಿರಬಹುದು. ಆದರೆ, ನಾಳೆ ಭಾರತದ ಎಲ್ಲಾ ದೇವಸ್ಥಾನಗಳಲ್ಲಿ ಆಗುತ್ತದೆ. ಕಾಂಗ್ರೆಸ್ ಬಗ್ಗೆ ಎಚ್ಚರವಾಗಿರಿ.”
ಪ್ರಸ್ತುತ, ಎಕ್ಸ್ನಿಂದ ಬಿಜೆಪಿ ತನ್ನ ಪೋಸ್ಟ್ ಡಿಲಿಟ್ ಮಾಡಿದೆ
ಫ್ಯಾಕ್ಟ್ಚೆಕ್ : ಬಿಜೆಪಿ ಆರೋಪಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೇವಸ್ಥಾನದ ಬ್ರಹ್ಮರಥೋತ್ಸವದ ಸಮಿತಿಗೆ ಸದಸ್ಯನಾಗಿ ಮುಸ್ಲಿಂ ವ್ಯಕ್ತಿಯನ್ನು ನೇಮಿಸಿದೆಯಾ? ಎಂದು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಿಜೆಪಿ ಮಾಡಿರುವ ಆರೋಪ ಸುಳ್ಳು ಎಂದು ತಿಳಿದು ಬಂದಿದೆ.
ಬಿಜೆಪಿಯ ಆರೋಪದ ಕುರಿತು ಮೇ 8, 2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ತಿಳಿಸಿದಂತೆ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ಸಮಿತಿ ರಚಿಸುವಾಗ ಅನ್ಯ ಧರ್ಮದ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನೇಮಿಸಿಕೊಳ್ಳುವುದು ಬಹಳ ಹಿಂದಿನಿಂದಲೂ ನಡೆದುಕೊಂಡ ಬಂದ ಸಂಪ್ರದಾಯ. ಅದರಂತೆ ಈ ಬಾರಿಯೂ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದೆ.
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು… pic.twitter.com/nQmgmdUZXH
— Siddaramaiah (@siddaramaiah) May 8, 2024
ಗಮನಾರ್ಹವಾಗಿ, ಈ ಹಿಂದೆ (2021-22) ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗಲೂ ದೇವಸ್ಥಾನ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗಳಿಗೆ ಸ್ಥಾನ ನೀಡಲಾಗಿತ್ತು. 2020ರಲ್ಲಿ ಇಮ್ತಿಯಾಝ್ ಪಾಷಾ ಎಂಬವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಎಂಬವರನ್ನು ಸದಸ್ಯರನ್ನಾಗಿ ಮಾಡಿತ್ತು. ಈ ಕುರಿತ ಸರ್ಕಾರದ ಆದೇಶ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.
“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಅಪಪ್ರಚಾರಕ್ಕೆ @BJP4Karnataka ಇಳಿದಿದೆ.
ಆದರೆ ವಾಸ್ತವದಲ್ಲಿ ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ.… https://t.co/HpiSpEkS3p pic.twitter.com/OogUMFP9QC
— Ramalinga Reddy (@RLR_BTM) May 8, 2024
ಹಿಂದೂ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರು ಕೂಡ ಎಕ್ಸ್ನಲ್ಲಿ ದಾಖಲೆಗಳನ್ನು ಹಂಚಿಕೊಂಡಿದ್ದು, “ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬುವುದು ಸುಳ್ಳು