ವ್ಯಕ್ತಿಗಳಿಬ್ಬರು ರಸ್ತೆ ಬದಿಯಲ್ಲಿರುವ ಅಂಗಡಿಯೊಂದರ ಬಾಗಿಲನ್ನು ಆಯಧಗಳನ್ನು ಬಳಸಿ ಒಡೆದು ಹಾಕುತ್ತಿರುವ ಸಂದರ್ಭದಲ್ಲಿ ಇಬ್ಬರು ಸೇನಾ ಸಿಬ್ಬಂದಿ ತಮ್ಮ ವಾಹನವನ್ನು ನಿಲ್ಲಿಸಿ ಅವರ ಮೇಲೆ ಗನ್ಪಾಯಿಂಟ್ ತೋರಿಸಿ ನೆಲದ ಮೇಲೆ ಕುಳಿತುಕೊಳ್ಳಲು ಹೇಳುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ಭಾರತೀಯ ಸೈನಿಕರು ಎಷ್ಟು ಪ್ರಾಮುಖ್ಯತೆ ಪಡೆದಿದೆ ಎಂಬುದನ್ನು ತಪ್ಪದೆ ಅರ್ಥ ಮಾಡಿಕೊಳ್ಳಿ. ಏಕೆಂದರೆ ಜಿಹಾದಿಗಳಿಗೆ ನಮ್ಮ ಹೆಮ್ಮೆಯ ಖಡಕ್ ಸೈನಿಕರು ಮಾತ್ರ ಬುದ್ಧಿ ಕಲಿಸಬಲ್ಲರು. ಜಾಗೋ ಭಾರತ್ ಭಾರತೀಯ ಸನಾತನ ಹಿಂದೂ ನಾವೆಲ್ಲ ಒಂದು. ಜಿಹಾದಿಗಳ ಹುಟ್ಟಡಗಿಸಲು ಬಿಜೆಪಿ ಭಾರತ ದೇಶಕ್ಕೆ, ಬಹಳ ಮುಖ್ಯವಾಗಿ ಬೇಕಾಗಿದೆ”ಎಂಬ ಬರಹದೊಂದಿಗೆ 17, ಸೆಪ್ಟೆಂಬರ್ 2024 ರಂದು ಮಲ್ಲಿಕಾರ್ಜುನ ಎಂಬ ಎಕ್ಸ್ ಖಾತೆ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಘಟನೆ ಭಾರತದಲ್ಲಿ ನಡೆದಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋದಲ್ಲಿ ನಡೆದ ಘಟನೆ ಭಾರತದಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಹುಡುಕಿದಾಗ, ಆಗಸ್ಟ್ 17, 2024 ರಂದು ಬಾಂಗ್ಲಾದೇಶದ ಮಾಧ್ಯಮ ಜಮುನಾ ಟಿವಿ ತನ್ನ ಯೂಟ್ಯೂಬ್ ಚಾನಲ್ನಲ ಅಪ್ಲೋಡ್ ಮಾಡಿರುವ ವಿಡಿಯೋವೊಂದು ಕಂಡು ಬಂದಿದೆ. ವಿಡಿಯೋಗೆ ನೀಡಿದ ವಿವರಣೆಯ ಪ್ರಕಾರ ಬಾಂಗ್ಲಾದೇಶದ ಫರೀದ್ಪುರದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಸೇನೆಯು ವ್ಯಕ್ತಿಗಳನ್ನು ಬಂಧಿಸಿದೆ.

ಆಗಸ್ಟ್ 17, 2024 ರಂದು ಬಾಂಗ್ಲಾದೇಶದ ವೆಬ್ಸೈಟ್ ಢಾಕಾ ಪೋಸ್ಟ್ ಪ್ರಕಟಿಸಿದ ವರದಿ ಪ್ರಕಾರ, ಆಗಸ್ಟ್ 14 ರಂದು ಫರೀದ್ಪುರದ ಬೋಲ್ಮರಿಯಲ್ಲಿ ಬಿಎನ್ಪಿ ಬಣಗಳ ನಡುವಿನ ಗಲಾಟೆಯ ಸಂದರ್ಭ ಬಾಂಗ್ಲಾದೇಶ ಸೇನೆಯು ಈ ವ್ಯಕ್ತಿಗಳನ್ನು ಬಂಧಿಸಿದೆ. ಒಂದು ಪಕ್ಷದ ಕಾರ್ಯಕರ್ತರು ಇನ್ನೊಂದು ಪಕ್ಷದ ಅಂಗಡಿಗಳನ್ನು ಧ್ವಂಸಗೊಳಿಸಲು ಮುಂದಾಗಿದ್ದರು. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ತುತುಲ್ ಹೊಸೈನ್ (28) ಮತ್ತು ದುಖು ಮಿಯಾ (30) ಎಂದು ಗುರುತಿಸಲಾಗಿದೆ. ವೈರಲ್ ವಿಡಿಯೋದಲ್ಲಿರುವ ಇಬ್ಬರನ್ನು ಸೇನೆಯು ಬಂಧಿಸಿ ಪೊಲೀಸರಿಗೆ ಒಪ್ಪಿಸಿದೆ ಎಂದು ಬೋಲ್ಮರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಶಾಹಿದುಲ್ ಇಸ್ಲಾಂ ಹೇಳಿದ್ದಾರೆ’ ಎಂದು ವರದಿಯಲ್ಲಿದೆ.
ಒಟ್ಟಿನಲ್ಲಿ, ಅಂಗಡಿ ಬಾಗಿಲುಗಳನ್ನು ಒಡೆಯುತ್ತಿದ್ದ ಇಬ್ಬರು ಜಿಹಾದಿಗಳನ್ನು ಭಾರತೀಯ ಸೈನಿಕರು ಬಂಧಿಸಿದ್ದಾರೆ ಎಂದು ಬಾಂಗ್ಲಾದೇಶದ ಫರೀದ್ಪುರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ : FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?


