Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...